Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Thursday, January 27, 2011

Bhagavad Gita Kannada Chapter-02 Shloka_ 1-3

ಅಧ್ಯಾಯ ಎರಡು
ಯುದ್ಧ ಮಾಡುವುದಿಲ್ಲ ಎಂದು ಕೈಚಲ್ಲಿ ರಥದಲ್ಲಿ ಕುಸಿದು ಕುಳಿತ ಅರ್ಜುನನಿಗೆ ಶ್ರೀಕೃಷ್ಣನ ಉಪದೇಶ ಎರಡನೇ ಅಧ್ಯಾಯದಿಂದ ಆರಂಭವಾಗುತ್ತದೆ. ಈ ಅಧ್ಯಾಯ ಇಡೀ ಭಗವದ್ಗೀತೆಗೆ ಪಂಚಾಂಗ ರೂಪದಲ್ಲಿದ್ದು, ಸಮಗ್ರ ಸಂದೇಶದ ಸಾರವನ್ನು ವ್ಯಾಸರು ಇಲ್ಲಿ ಸೆರೆ ಹಿಡಿದಿದ್ದಾರೆ.ಇಲ್ಲಿ  ಬರುವ ಉಪದೇಶದ ವಿಸ್ತಾರ ರೂಪವೇ ಇತರ ಹದಿನಾರು ಅಧ್ಯಾಯಗಳು.
ಸಂಜಯ ಉವಾಚ
ತಂ ತಥಾ ಕೃಪಯಾSSವಿಷ್ಟಮಶ್ರುಪೂರ್ಣಾಕುಲೇಕ್ಷಣಮ್
ವಿಷೀದಂತಮಿದಂ ವಾಕ್ಯಮುವಾಚ ಮಧುಸೂದನಃ

ಸಂಜಯ ಉವಾಚ-ಸಂಜಯ ಹೇಳಿದನು:
ತಮ್  ತಥಾ ಕೃಪಯಾ ಆವಿಷ್ಟಮ್ ಅಶ್ರು ಪೂರ್ಣ ಅಕುಲ ಈಕ್ಷಣಮ್ 
ವಿಷೀದಂತಮ್ ಇದಮ್ ವಾಕ್ಯಮ್ ಉವಾಚ ಮಧುಸೂದನಃ -ಹಾಗೆ ಕಾರುಣ್ಯಕ್ಕೊಳಗಾಗಿ ಕಂಬನಿ ತುಂಬಿ ಕಣ್ಣು ಮಸುಕಾಗಿ ಉಮ್ಮಳಿಸುತ್ತಿರುವ ಅವನನ್ನು ಕಂಡು ಕೃಷ್ಣ ಈ ಮಾತು ನುಡಿದ.

ಅರ್ಜುನನಿಗೆ  ಇಡೀ ಸಮಾಜದ, ಜನಾಂಗದ ಮೇಲೆ ಅನುಕಂಪ. ಯುದ್ಧ ಮಾಡುವುದರಿಂದ ಜನಾಂಗ ಹತ್ಯೆಗೆ ಕಾರಣವಾಗುತ್ತೇವೆ ಎನ್ನುವುದು ಆತನ ತಲೆಯಲ್ಲಿ ತುಂಬಿ ಹೋಗಿದೆ. ಕೃಪೆಯ ಆವೇಶದಿಂದ ಕಣ್ಣಲ್ಲಿ ನೀರಿಳಿಯುತ್ತಿದೆ. ಅಜ್ಞಾನದ ಮಂಜು ಮನಸ್ಸನ್ನು ವಿಕ್ಷಿಪ್ತಗೊಳಿಸಿದೆ. ತರ್ಕದ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ನೋಡುತ್ತಿದ್ದಾನೆ. ಇದು ಸಹಜ ಪ್ರವೃತ್ತಿ ಅಲ್ಲ, ಇದೊಂದು ಆವೇಶ. ಇದಕ್ಕೆ ಕೃಷ್ಣ ನಿಷ್ಠುರವಾಗಿ ಉತ್ತರಿಸುತ್ತಾನೆ.

ಶ್ರೀಭಗವಾನುವಾಚ
ಕುತಸ್ತ್ವಾ ಕಶ್ಮಲಮಿದಂ ವಿಷಮೇ ಸಮುಪಸ್ಥಿತಮ್ 
ಅನಾರ್ಯಜುಷ್ಟಮಸ್ವರ್ಗ್ಯಮಕೀರ್ತಿಕರಮರ್ಜುನ

ಶ್ರೀ ಭಗವಾನ್ ಉವಾಚ-ಭಗವಂತ ಹೇಳಿದನು:
ಕುತಃ ತ್ವಾ ಕಶ್ಮಲಮ್ ಇದಮ್  ವಿಷಮೇ ಸಮುಪಸ್ಥಿತಮ್ 
ಅನಾರ್ಯ ಜುಷ್ಟಮ್ ಅಸ್ವರ್ಗ್ಯಮ್ ಅಕೀರ್ತಿ ಕರಮ್ ಅರ್ಜುನ - ಅರ್ಜುನ, ಇಂಥ ಸಂಕಟದಲ್ಲಿ ಬಲ್ಲವರು ಮೆಚ್ಚದ, ಅಲ್ಲಿ ಸ್ವರ್ಗಕ್ಕೆ ಸಲ್ಲದ, ಇಲ್ಲಿ ಹೆಸರುಗೆಡಿಸುವ ಈ ಕೊಳೆ ನಿನ್ನನ್ನೇಕೆ ಕವಿಯಿತು?

"ಎಲ್ಲಿಂದ ಬಂತು ನಿನಗೆ ಈ ಬುದ್ಧಿ? ಈ ಭೌತಿಕ  ಕೊಳೆ ನಿನಗೆ ಹೇಗೆ ಅಂಟಿತು? ಇಂತಹ ತುರ್ತುಪರಿಸ್ಥಿತಿಯಲ್ಲಿ, ತಕ್ಷಣ ಕಾರ್ಯಪ್ರವೃತ್ತರಾಗಬೇಕಾದ ಈ ಕ್ಷಣದಲ್ಲಿ ಇದೇನು ಹೊಲಸು ಯೋಚನೆ? ಆರ್ಯರಾದವರು ಯಾರೂ ಈ ರೀತಿ ಎಂದೂ ಯೋಚಿಸುವುದಿಲ್ಲ. ಇಂಥಹ ವಿಚಾರದಾರೆಯಿಂದ- ಪರದಲ್ಲಿ ಸ್ವರ್ಗವಿಲ್ಲ ಹಾಗು ಇಹದಲ್ಲಿ ಕೀರ್ತಿ ಇಲ್ಲ. ತಿಳಿದವರು, ಜ್ಞಾನಿಗಳು, ಹಿರಿಯರು ಎಂದೂ ಈ ರೀತಿ ಯೋಚನೆ ಮಾಡುವುದಿಲ್ಲ"-ಎಂದು ನಿಷ್ಠುರವಾಗಿ ಅರ್ಜುನನ ಸಂಪೂರ್ಣ ವಾದವನ್ನು ಒಂದೇ ಮಾತಿನಲ್ಲಿ ಹೊಡೆದು ಹಾಕಿದ ಕೃಷ್ಣ.  ಇಲ್ಲಿ ಬಳಕೆಯಾದ "ಆರ್ಯ" ಎನ್ನುವ ಪದ ಜನಾಂಗ ವಾಚಕ ಪದ ಅಲ್ಲ. ಆರ್ಯ ಎಂದರೆ ತಿಳುವಳಿಕೆ ಇರುವವರು, ವಯೋವೃದ್ಧ ಜ್ಞಾನಿಗಳು, ಗೌರವಾನ್ವಿತರು ಎಂದರ್ಥ. ಕನ್ನಡದಲ್ಲಿ  'ಅಯ್ಯಾ' ಎನ್ನುವ ಪದಕ್ಕೆ ಇದೇ ಅರ್ಥವಿದೆ.

ಕ್ಲೈಬ್ಯಂ ಮಾಸ್ಮಗಮಃ ಪಾರ್ಥ ನೈತತ್ ತ್ವಯ್ಯುಪಪದ್ಯತೇ     
ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕ್ತ್ವೋತ್ತಿಷ್ಠ ಪರಂತಪ      

ಕ್ಲೈಬ್ಯಮ್  ಮಾ ಸ್ಮಗಮಃ  ಪಾರ್ಥ ನ ಏತತ್ ತ್ವಯಿ ಉಪಪದ್ಯತೇ
 ಕ್ಷುದ್ರಮ್  ಹೃದಯ ದೌರ್ಬಲ್ಯಮ್ ತ್ಯಕ್ತ್ವಾ  ಉತ್ತಿಷ್ಠ ಪರಮ್ ತಪ -ಪಾರ್ಥ, ಹೇಡಿಯಾಗಬೇಡ, ನಿನ್ನಲ್ಲಿ ಇದು ತರವಲ್ಲ. ಅರಿಗಳ ಎದೆಗೆಡಿಸುವ ವೀರನೆ, ಕೀಳರಿಮೆಯ ಎದೆಗೇಡಿತನವನ್ನು ತೊರೆದು ಎದ್ದು ನಿಲ್ಲು.

"ನಪುಂಸಕನಂತೆ ಮಾತನಾಡಬೇಡ. ಅರ್ಜುನನಲ್ಲಿ ಇಂತಹ ಹೇಡಿತನವನ್ನು ನಾನು ನಿರೀಕ್ಷಿಸಿರಲಿಲ್ಲ. ಇಂತಹ ಕ್ಷುದ್ರ ಮಾನಸಿಕ ದೌರ್ಬಲ್ಯವನ್ನು ತೊಡೆದುಹಾಕಿ, ವೀರನಾಗಿ ಅನ್ಯಾಯದ ವಿರುದ್ಧ ಹೋರಾಡು" ಎಂದು ಹೇಳಿ ಕೃಷ್ಣ, ಅರ್ಜುನನಿಗೆ  ದಿಗ್ಬ್ರಾಂತಿಗೊಳಿಸಿ ಚಿಕೆತ್ಸೆ(Shock Treatment) ನೀಡಿದ್ದಾನೆ.
ಕೃಷ್ಣ   ಏಕೆ ಹೀಗೆ ಹೇಳಿದ? ಆತ ಯುದ್ಧ ಹಾಗು ರಕ್ತಪಾತವನ್ನು ಬಯಸಿದ್ದನೇ ? ಇತ್ಯಾದಿ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಾಮಾನ್ಯ. ಇಲ್ಲಿ ಸೂಕ್ಷ್ಮವಾಗಿ ನೋಡಿದರೆ: ಯುದ್ಧವಾದರೆ ಸಾಮಾಜಿಕವಾಗಿ ಏನೇನು ತೊಂದರೆ ಆಗಬಹುದು ಎಂದು ಅರ್ಜುನ ಹೇಳಿದ್ದನೋ, ಅದಕ್ಕಿಂತ ಹತ್ತುಪಟ್ಟು ಅನ್ಯಾಯ ಯುದ್ಧವಾಗದೇ ಇದ್ದಿದ್ದರೆ ಆಗುತ್ತಿತ್ತು. ದುರ್ಯೋಧನ ಆ ಕಾಲದ ಮಹಾ ಲೋಕಕಂಟಕ. ತುಂಬಿದ ಸಭೆಯಲ್ಲಿ ತನ್ನ ಸ್ವಂತ ಅತ್ತಿಗೆಯ ಮಾನಭಂಗಕ್ಕೆ ಕೈ ಹಾಕಿದ ಆತ, ಅಧಿಕಾರದ ಗದ್ದುಗೆ ಏರಿದ್ದರೆ ಸಮಾಜದ ಪರಿಸ್ಥಿತಿ ಏನಾಗುತ್ತಿತ್ತು ಯೋಚಿಸಿ. ಇಲ್ಲಿ ಕೃಷ್ಣನ ಧೋರಣೆ ಈ ದೇಶದ ನಾಯಕತ್ವ ಮುಂದೆ ಯಾರ ಕೈ ಸೇರಬೇಕು ಎನ್ನುವುದೇ ಹೊರತು ಬಂಧು ಪ್ರೇಮವಲ್ಲ. ಗೆಲ್ಲುವುದು ಸೋಲುವುದಕ್ಕಿಂತ, ಅನ್ಯಾಯದ ವಿರುದ್ಧ ದ್ವನಿ ಎತ್ತುವುದು ಮುಖ್ಯ. ಅನ್ಯಾಯದ ವಿರುದ್ಧ ಹೋರಾಡಿ ಸತ್ತರೂ ತೊಂದರೆ ಇಲ್ಲ, ಆದರೆ ಅದರ  ವಿರುದ್ಧ ಸೆಟೆದು ನಿಲ್ಲಬೇಕು ಎನ್ನುವುದು ಕೃಷ್ಣನ ಸಂದೇಶ.
ಶ್ರೀ ಕೃಷ್ಣ ಮಹಾಭಾರತದ ಮುಖೇನ ನಮಗೆ ಧರ್ಮದ ಒಂದು ಹೊಸ ಸಿದ್ಧಾಂತವನ್ನು ಕೊಟ್ಟ. ಮಹಾಭಾರತಕ್ಕೆ ಮೊದಲು ಇದ್ದ ಧರ್ಮದ ಕಲ್ಪನೆಯೇ ಬೇರೆ. ಉದಾಹರಣೆಗೆ ಸತ್ಯ ಹೇಳುವುದು: ಇದ್ದದ್ದನ್ನು ಇದ್ದಂತೆ ಹೇಳುವುದು ಸತ್ಯ. ಆದರೆ ಕೃಷ್ಣನ ಪ್ರಕಾರ-ಯಾವ ಸುಳ್ಳು ಹೇಳುವುದರಿಂದ ಸಮಾಜಕ್ಕೆ ಹಿತವಾಗುತ್ತದೋ ಅದು ಸತ್ಯ; ಯಾವ ಸತ್ಯ ಹೇಳುವುದರಿಂದ ಸಮಾಜಕ್ಕೆ ಕೆಡುಕಾಗುತ್ತದೋ ಅದು ಸುಳ್ಳು. ಇನ್ನು ಹಿಂಸೆ: ಒಂದು ಹಿಂಸೆಯಿಂದ ಅನೇಕ ಅಹಿಂಸೆ ಸಾಧ್ಯವಾದರೆ ಅದು ಅಹಿಂಸೆ. ಉದಾಹರಣೆಗೆ ನರಭಕ್ಷಕ ಹುಲಿಯೊಂದು ಪ್ರತಿದಿನ ಊರಿಗೆ ದಾಳಿಯಿಟ್ಟು ಒಬ್ಬೊಬ್ಬರನ್ನೇ ತಿನ್ನುತ್ತಿದ್ದರೆ, ಅದನ್ನು ಕೊಲ್ಲುವುದು ಪ್ರಾಣಿ ಹಿಂಸೆ ಅಲ್ಲ. ಒಂದು ಯುದ್ಧದಿಂದ ತಲತಲಾಂತರದವರೆಗೆ ಅಹಿಂಸೆ ಸ್ಥಾಪನೆ ಸಾಧ್ಯವಾದರೆ ಯುದ್ಧಮಾಡುವುದರಲ್ಲಿ ತಪ್ಪಿಲ್ಲ. ಯಾವುದರಿಂದ ಸಜ್ಜನಿಕೆಯ ರಕ್ಷಣೆ ಆಗುತ್ತದೋ ಅದು ಸತ್ಯ. ಧರ್ಮಕ್ಕೆ ಭಾವ ಮುಖ್ಯ. ಯಾವ ಕಾರಣಕ್ಕಾಗಿ ಹೋರಾಡುತ್ತೇವೆ, ಅದರ ಹಿಂದೆ ಇರುವ ಉದ್ದೇಶ ಏನು ಎನ್ನುವುದು ಮುಖ್ಯ.

1 comment:

  1. Bhagavad Gita In Kannada: Bhagavad Gita Kannada Chapter-02 Shloka_ 1-3 >>>>> Download Now

    >>>>> Download Full

    Bhagavad Gita In Kannada: Bhagavad Gita Kannada Chapter-02 Shloka_ 1-3 >>>>> Download LINK

    >>>>> Download Now

    Bhagavad Gita In Kannada: Bhagavad Gita Kannada Chapter-02 Shloka_ 1-3 >>>>> Download Full

    >>>>> Download LINK Ol

    ReplyDelete