Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Sunday, February 27, 2011

Bhagavad Gita Kannada Chapter-02-Shloka 33-38

ಅಥ ಚೇತ್ ತ್ವಂ ಧರ್ಮ್ಯಮಿಮಂ  ಸಂಗ್ರಾಮಂ ನ ಕರಿಷ್ಯಸಿ
ತತಃ ಸ್ವಧರ್ಮಂ ಕೀರ್ತಿಂ ಚ ಹಿತ್ವಾ ಪಾಪಮವಾಪ್ಸ್ಯಸಿ  ೩೩

ಅಥ ಚೇತ್  ತ್ವಮ್ ಧರ್ಮ್ಯಮ್  ಇಮಮ್   ಸಂಗ್ರಾಮಮ್  ನ ಕರಿಷ್ಯಸಿ
ತತಃ ಸ್ವಧರ್ಮಮ್  ಕೀರ್ತಿಮ್  ಚ ಹಿತ್ವಾ ಪಾಪಮ್ ಅವಾಪ್ಸ್ಯಸಿ-- ಒಂದೊಮ್ಮೆ, ನ್ಯಾಯದಿಂದ ಒದಗಿ ಬಂದ ಈ ಕಾಳಗವನ್ನು ನೀನು ಕೈಗೊಳ್ಳದಿದ್ದರೆ,  ಆಗ , ನಿನ್ನ ಧರ್ಮವನ್ನೂ ಹೆಸರನ್ನೂ ಕಳೆದುಕೊಂಡು ಪಾಪವನ್ನು ಗಳಿಸುವೆ.

ಮುಂದುವರಿದು ಕೃಷ್ಣ  ಅರ್ಜುನನಲ್ಲಿ ಹೇಳುತ್ತಾನೆ:  "ನೀನು ಪಾಪದ ಭಯದಿಂದ ಯುದ್ಧ ಬೇಡ ಎಂದು ಹೇಳುತ್ತಿರುವೆ. ಆದರೆ ಯುದ್ಧ ಮಾಡಿದರೆ ಮಾತ್ರ ಧರ್ಮ ಉಳಿಯುತ್ತದೆ, ಹಾಗು ನಿನಗೆ ಸ್ವರ್ಗದ ಬಾಗಿಲು ತೆರೆಯುತ್ತದೆ. ಇಲ್ಲದೆ  ಇದ್ದಲ್ಲಿ  ನರಕದ ಬಾಗಿಲು ನಿನ್ನನ್ನು ಸ್ವಾಗತಿಸಲಿದೆ" ಎಂದು.
ಇಲ್ಲಿ ನೆಡೆಯುತ್ತಿರುವುದು ಒಂದು ಧರ್ಮ ಸಂಗ್ರಾಮ. ಅರ್ಜುನ ಧರ್ಮದ ಪರ ನಿಂತ ಮಹಾರಥಿ. ಆತ ಇಂತಹ ಧರ್ಮ ಸಂಗ್ರಾಮದಲ್ಲಿ ಧರ್ಮದ ಪರ ಹೋರಾಡದಿದ್ದರೆ ಸಹಜ ಧರ್ಮಕ್ಕೆ ವಿರುದ್ಧವಾಗಿ ಹಾಗು  ಸಾಮಾಜಿಕ ಧರ್ಮವನ್ನು ಬಿಟ್ಟು ನೆಡೆದುಕೊಂಡಂತೆ. ಇದೊಂದು ಕಳಂಕ ಮತ್ತು ಮಹಾ ಪಾಪವಾಗುತ್ತದೆ. ಈ ರೀತಿ ಪಾಪದ ಭಯದಿಂದ ಬಳಲುತ್ತಿರುವ ಅರ್ಜುನನಿಗೆ ಕೃಷ್ಣ ಯಾವುದು ನಿಜವಾದ ಪಾಪ ಎನ್ನುವುದನ್ನು ಮನವರಿಕೆ ಮಾಡಿಸುತ್ತಿದ್ದಾನೆ.
ಪಾಪ   ಕೃತ್ಯ  ಯಾವುದು ಎನ್ನುವುದನ್ನು ಸಂದರ್ಭ ನಿರ್ಧರಿಸುತ್ತದೆ. ಉದಾಹರಣೆಗೆ  'ಸತ್ಯ ನುಡಿಯುವುದು ಪುಣ್ಯದ ಕೆಲಸ' ಎಂದು ಹೇಳಲಾಗದು. ಅದು ಪಾಪವೋ ಪುಣ್ಯವೋ ಎನ್ನುವುದನ್ನು ಸಂದರ್ಭ ನಿರ್ಣಯಿಸುತ್ತದೆ. ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಆಶ್ರಯ ಕೇಳಿ ಬಂದ ವ್ಯಕ್ತಿಯನ್ನು ಅಡಗಿಸಿಟ್ಟು, ದರೋಡೆಕೋರರು ಬಂದು ಪ್ರಶ್ನಿಸಿದಾಗ ಸತ್ಯ ನುಡಿಯುವುದು ಪಾಪದ ಕೆಲಸ.   ಅಡಗಿಸಿಟ್ಟ ವ್ಯಕ್ತಿಯ ರಕ್ಷಣೆಗೋಸ್ಕರ ಸುಳ್ಳನ್ನು ಹೇಳುವುದು ಪುಣ್ಯದ ಕೆಲಸ. ಇದೇ ರೀತಿ ಇಲ್ಲಿ ಅರ್ಜುನನಿಗೆ ಧರ್ಮದ ರಕ್ಷಣೆಗೋಸ್ಕರ  ಗುರು-ಪಿತಾಮಹರನ್ನು ಎದುರಿಸಿ ಹೋರಾಡುವುದೊಂದೇ  ಮಹಾ ಪುಣ್ಯದ ಕೆಲಸ ಎನ್ನುವುದನ್ನು ಕೃಷ್ಣ ಮನವರಿಕೆ ಮಾಡಿಸುತ್ತಿದ್ದಾನೆ.

ಅಕೀರ್ತಿಂ ಚಾಪಿ ಭೂತಾನಿ  ಕಥಯಿಷ್ಯಂತಿ ತೇSವ್ಯಯಾಮ್          
ಸಂಭಾವಿತಸ್ಯ ಚಾಕೀರ್ತಿರ್ಮರಣಾದತಿರಿಚ್ಯತೇ   ೩೪

ಅಕೀರ್ತಿಮ್  ಚ ಅಪಿ  ಚಾಪಿ ಭೂತಾನಿ ಕಥಯಿಷ್ಯಂತಿ ತೇ ಅವ್ಯಯಾಮ್
ಸಂಭಾವಿತಸ್ಯ ಚ ಅಕೀರ್ತಿ  ಮರಣಾತ್ ಅತಿರಿಚ್ಯತೇ--ಜನರು ನಿನ್ನ ಕೊನೆಯಿರದ ಕಳಂಕದ ಕಥೆಯನ್ನು ಆಡಿಕೊಳ್ಳುತ್ತಾರೆ.  ಮರ್ಯಾದೆಯ ಮನುಷ್ಯನಿಗೆ ಕೆಟ್ಟ ಹೆಸರು ಸಾವಿಗಿಂತ ದಾರುಣ.

ಸಾಮಾಜಿಕ ಪರಿಣಾಮದ ಬಗ್ಗೆ ವಿವರಿಸುತ್ತಾ ಕೃಷ್ಣ ಹೇಳುತ್ತಾನೆ: ಒಬ್ಬ ಮರ್ಯಾದಸ್ತ ಮಾನವನಿಗೆ ಆತನ ಕೀರ್ತಿ ನಾಶವಾದರೆ ಆತ ಅವಮಾನಕ್ಕೊಳಗಾಗುತ್ತಾನೆ. ಅದರಿಂದ ಆತ ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳಬಹುದು. ಜಗತ್ತಿನಲ್ಲಿ ಮಹಾನ್ ಬಿಲ್ಲೋಜ ಎನ್ನುವ ಕೀರ್ತಿ ಪಡೆದ ಅರ್ಜುನ ಈ ಧರ್ಮಯುದ್ಧದಲ್ಲಿ ಪಾಲ್ಗೊಳ್ಳದೇ ಇದ್ದಲ್ಲಿ, ಜನರು ಆತನನ್ನು ಹೇಡಿ ಎಂದು ಆಡಿಕೊಳ್ಳುತ್ತಾರೆ. ಇತಿಹಾಸದ ಪುಟಗಳಲ್ಲಿ ಆತನ ಹೇಡಿತನ ಮುಂದಿನ ಪೀಳಿಗೆಗೆ ಕೆಟ್ಟ ಉದಾಹರಣೆಯಾಗಿ ನಿಲ್ಲುತ್ತದೆ. 'ಬಂಧು ಸ್ನೇಹಕ್ಕಾಗಿ ಯುದ್ಧದಿಂದ ಹಿಂದೆ ಸರಿದ'  ಎಂದು ಯಾರೂ ಹೇಳಲಾರರು. ಯುದ್ಧಕ್ಕೆ ಹೆದರಿ ಓಡಿಹೋದ ಹೇಡಿ ಎಂದು ನೀಚವಾಗಿ ಬಯ್ಯುತ್ತಾರೆ. ಒಬ್ಬ ಮರ್ಯಾದಸ್ತ ಮನುಷ್ಯನಿಗೆ ಅಕೀರ್ತಿ ಎನ್ನುವುದು ಸಾವಿಗಿಂತ ಕೀಳು. ಒಬ್ಬ ಕ್ಷತ್ರಿಯ ಇದನ್ನು ಸಹಿಸಲಾರ.

ಭಯಾದ್ ರಣಾದುಪರತಂ   ಮಂಸ್ಯಂತೇ ತ್ವಾಂ ಮಹಾರಥಾಃ         
ಯೇಷಾಂ ಚ ತ್ವಂ ಬಹುಮತೋ ಭೂತ್ವಾ ಯಾಸ್ಯಸಿ ಲಾಘವಮ್    ೩೫

ಭಯಾತ್  ರಣಾತ್ ಉಪರತಮ್  ಮಂಸ್ಯಂತೇ ತ್ವಾಮ್ ಮಹಾರಥಾಃ
ಯೇಷಾಮ್ ಚ ತ್ವಮ್ ಬಹುಮತಃ  ಭೂತ್ವಾ ಯಾಸ್ಯಸಿ ಲಾಘವಮ್--ಯಾರಿಗೆ ನೀನು ಘನತೆಯ ವ್ಯಕ್ತಿಯಾಗಿದ್ದೆಯೋ ಅಂಥ ಹಿರಿಯ ತೇರಾಳುಗಳೆದುರು ಹಗುರಾಗುವೆ;  ಅವರು ನಿನ್ನನ್ನು ಹೆದರಿ ಹೋರಾಡಲು ಹಿಂಜರಿದ ಹೇಡಿ ಎಂದು ಭಾವಿಸುತ್ತಾರೆ.
ಅವಾಚ್ಯವಾದಾಂಶ್ಚ ಬಹೂನ್ ವದಿಷ್ಯಂತಿ  ತವಾಹಿತಾಃ
ನಿಂದಂತಸ್ತವ ಸಾಮರ್ಥ್ಯಂ ತತೋ ದುಃಖತರಂ ನು ಕಿಮ್     ೩೬

ಅವಾಚ್ಯ ವಾದಾನ್ ಚ  ಬಹೂನ್ ವದಿಷ್ಯಂತಿ  ತವ ಅಹಿತಾಃ  ನಿಂದಂತಃ
  ತವ ಸಾಮರ್ಥ್ಯಮ್  ತತಃ  ದುಃಖತರಮ್  ನು ಕಿಮ್ --ನಿನಗಾಗದವರು ನಿನ್ನ ಕೆಚ್ಚನ್ನು ಹೀಗಳೆಯುತ್ತ, ಬಾಯಿ ತುಂಬ ಆಡಬಾರದ ಮಾತುಗಳನ್ನಾಡುತ್ತಾರೆ.  ಅದಕ್ಕು ಮಿಗಿಲಾದ ಸಂಕಟ ಏನುಂಟು ?

"ಯಾರು ನಿನ್ನನ್ನು ದೊಡ್ಡ ವೀರ ಎಂದು ಕೈ ಮುಗಿದು ತಲೆಬಾಗಿ ನಿಲ್ಲುತ್ತಿದ್ದರೋ, ಅವರು ನಿನ್ನನ್ನು ಹುಲ್ಲಿಗಿಂತ ಕಡೆಯಾಗಿ ನೋಡುತ್ತಾರೆ. ಸಮಾಜದಲ್ಲಿ ಉನ್ನತ ಪುರುಷನಾಗಿರುವ ನೀನು ಅವಮಾನಿತನಾಗಿ ಬದುಕಬೇಕಾಗುತ್ತದೆ. ಆಡಬಾರದ ಅಸಭ್ಯ ಮಾತುಗಳು ಹುಟ್ಟಿಕೊಳ್ಳುತ್ತವೆ. ಇದರಿಂದ ಈ ಹಿಂದಿನ ಸರ್ವ ಸಾಧನೆಯೂ ಸುಳ್ಳು ಎಂದು ಹೀಗಳೆದು ಆಡಿಕೊಳ್ಳುತ್ತಾರೆ".
ಒಬ್ಬ 'ಉತ್ತಮ ನ್ಯಾಯಾಧೀಶ ' ಎಂದು ಹೆಸರು ಪಡೆದ ವ್ಯಕ್ತಿ, ಯಾವುದೋ ಒಂದು ಸಂದರ್ಭದಲ್ಲಿ  ತನ್ನ ಆತ್ಮೀಯ ಬಂಧುವಿಗೋಸ್ಕರ ಕೆಟ್ಟ ತೀರ್ಪನ್ನು ಕೊಟ್ಟರೆ, ಆತ ತನ್ನ ಸಂಪೂರ್ಣ ವ್ಯಕ್ತಿತ್ವವನ್ನು  ಕಳೆದುಕೊಳ್ಳುತ್ತಾನೆ. ಆತನ ಹಿಂದಿನ ಎಲ್ಲಾ ಸಾಧನೆಗಳು ಒಂದೇ ಕ್ಷಣದಲ್ಲಿ ಮಣ್ಣುಪಾಲಾಗುತ್ತದೆ. ಆತನಿಂದ ಶಿಕ್ಷೆಗೊಳಗಾದ ಅಪರಾಧಿಗಳು ಅಸಭ್ಯವಾಗಿ ಆತನನ್ನು ನಿಂದಿಸುತ್ತಾರೆ. ಇಲ್ಲಿ ಶ್ರೀಕೃಷ್ಣ ಅರ್ಜುನನಿಗೆ ಈ ಸಾಮಾಜಿಕ ಅರಿವನ್ನು ಕೊಡುತ್ತಿದ್ದಾನೆ.

ಹತೋ ವಾ ಪ್ರಾಪ್ಸ್ಯಸಿ ಸ್ವರ್ಗಂ ಜಿತ್ವಾ ವಾ ಭೋಕ್ಷ್ಯಸೇ ಮಹೀಮ್         
ತಸ್ಮಾದುತ್ತಿಷ್ಠ ಕೌಂತೇಯ ಯುದ್ಧಾಯ ಕೃತನಿಶ್ಚಯಃ   ೩೭

ಹತಃ  ವಾ ಪ್ರಾಪ್ಸ್ಯಸಿ ಸ್ವರ್ಗಮ್  ಜಿತ್ವಾ ವಾ ಭೋಕ್ಷ್ಯಸೇ ಮಹೀಮ್
ತಸ್ಮಾತ್ ಉತ್ತಿಷ್ಠ ಕೌಂತೇಯ ಯುದ್ಧಾಯ ಕೃತ ನಿಶ್ಚಯಃ-- ಸತ್ತರೆ ಸ್ವರ್ಗ ಸೇರುವೆ. ಗೆದ್ದರೆ ನೆಲವನ್ನಾಳುವೆ.     ಆದ್ದರಿಂದ,  ಕೌಂತೇಯ, ಹೋರಾಡುವ ತೀರ್ಮಾನ ತಳೆದು ಎದ್ದು ನಿಲ್ಲು.

"ಯುದ್ಧ ಮಾಡುವುದರಿಂದ ನಾವು ಗೆಲ್ಲುತ್ತೇವೆ ಎನ್ನುವುದು ತಿಳಿಯದು. ಧರ್ಮ ಯುದ್ಧದಲ್ಲಿ ಸತ್ತರೂ ಮೋಕ್ಷ, ಗೆದ್ದರೂ ಮೋಕ್ಷ. ಯಾವುದೋ ಸ್ವಾರ್ಥಕ್ಕಾಗಿ ಮಾಡುತ್ತಿರುವ ಯುದ್ಧವಿದಲ್ಲ. ಅನ್ಯಾಯದ ವಿರುದ್ಧ ಹೋರಾಡುವೆ ಎನ್ನುವ ಸಂಕಲ್ಪದಿಂದ ಎದ್ದು ನಿಂತು ಹೋರಾಡು" ಎನ್ನುತ್ತಾನೆ ಕೃಷ್ಣ.
ನಾವು ಮಾಡುವ ಕಾರ್ಯದಲ್ಲಿ ಧರ್ಮದ ಪರಿಜ್ಞಾನ ಮುಖ್ಯ. ಯಾವುದೇ ಸ್ವಾರ್ಥವಿಲ್ಲದೆ, ಧರ್ಮದ ಮಾರ್ಗವನ್ನು ಅನುಸರಿಸುವವನು ಎಂದೂ ಯಾವುದಕ್ಕೂ ಅಂಜುವ ಅಗತ್ಯವಿಲ್ಲ. ಧರ್ಮ ಮಾರ್ಗದಲ್ಲಿ ನಡೆದರೆ ನನಗೇನಾಗುತ್ತದೋ ಎನ್ನುವ ಭಯ ಬೇಡ. ಏಕೆಂದರೆ ಧರ್ಮದ ನಡೆಯಲ್ಲಿ ಪಲಿತಾಂಶ ಯಾವುದೇ ಇರಲಿ, ಅದು ನಮ್ಮನ್ನು ಮೋಕ್ಷಕ್ಕೆ ಕೊಂಡೊಯ್ಯುವ ಸಾಧನವಾಗಿರುತ್ತದೆ.
ಸುಖದುಃಖೇ ಸಮೇ ಕೃತ್ವಾ ಲಾಭಾಲಾಭೌ ಜಯಾಜಯೌ        
ತತೋ ಯುದ್ಧಾಯ ಯುಜ್ಯಸ್ವ ನೈವಂ ಪಾಪಮವಾಪ್ಸ್ಯಸಿ         ೩೮

ಸುಖ ದುಃಖೇ ಸಮೇ ಕೃತ್ವಾ ಲಾಭ ಅಲಾಭೌ ಜಯ ಅಜಯೌ
ತತಃ  ಯುದ್ಧಾಯ ಯುಜ್ಯಸ್ವ ನ ಏವಮ್  ಪಾಪಮ್ ಅವಾಪ್ಸ್ಯಸಿ--ಸುಖ-ದುಃಖಗಳನ್ನು, ಗಳಿಕೆ-ಇಳಿಕೆಗಳನ್ನು, ಸೋಲು-ಗೆಲುವನ್ನು ಒಂದೇ ನಿಟ್ಟಿನಿಂದ ಕಂಡು ಮತ್ತೆ ಹೋರಾಡತೊಡಗು. ಆಗ ನಿನಗೆ ಯಾವ  ಪಾಪವೂ ತಟ್ಟದು.

ಜೀವನದಲ್ಲಿ ಸುಖ-ದುಃಖ ಎನ್ನುವುದು ಅನಿವಾರ್ಯ. ಸುಖ-ದುಃಖ, ಗಳಿಕೆ-ಇಳಿಕೆ, ಸೋಲು-ಗೆಲುವು ಎಲ್ಲವನ್ನು ಸಮನಾಗಿ ಕಾಣುವವನಿಗೆ ಯಾವ ಪಾಪವೂ ಅಂಟದು. ಎಲ್ಲವನ್ನು ಸಮದೃಷ್ಟಿಯಿಂದ ಕಾಣುತ್ತ, ಕೇವಲ ಕರ್ತವ್ಯ ಪ್ರಜ್ಞೆಯಿಂದ ಹೋರಾಟ ಮಾಡುವುದು ಬದುಕಿನ ಯಶಸ್ವಿನ ಸೂತ್ರ. ಜಯಿಸಬೇಕು ಎನ್ನುವ ಸ್ವಾರ್ಥವಿಲ್ಲದೆ; ನಾವೇ ಲಾಭ ಗಳಿಸಬೇಕು-ಅವರು ಮಣ್ಣು ಮುಕ್ಕಲಿ ಎನ್ನುವ ದ್ವೇಷವಿಲ್ಲದೆ, ಎಲ್ಲವೂ ಭಗವಂತನ ಪ್ರಸಾದ ಎನ್ನುವ ಮನೋಭಾವನೆಯಿಂದ ಹೋರಾಡು ಎನ್ನುತ್ತಾನೆ ಕೃಷ್ಣ.
ಭಗವಂತನ ಈ ನುಡಿಯನ್ನು ಮನುಷ್ಯ ತನ್ನ  ಜೀವನದಲ್ಲಿ ಅಳವಡಿಸಿಕೊಂಡರೆ ಆತ ಎಂದೂ ದುಃಖಿ ಆಗಲಾರ. "ಬಂದದ್ದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ" ಎಂದು ಧರ್ಮ ಮಾರ್ಗದಲ್ಲಿ ಮುನ್ನುಗ್ಗುವವನಿಗೆ ಸದಾ ಸ್ವರ್ಗದ ಬಾಗಿಲು ತೆರೆದಿರುತ್ತದೆ. ಆತನಿಗೆ ದುಃಖ-ದುಃಖವಾಗಿ ಕಾಣಲಾರದು, ಸೋಲು-ಸೋಲಾಗಿ ಕಾಣಲಾರದು. ಆತನಿಗೆ ಇಹವೂ-ಸ್ವರ್ಗ ಪರವೂ-ಸ್ವರ್ಗ.
ಇಲ್ಲಿಯವರೆಗೆ ಕೃಷ್ಣ ಆತ್ಮ ತತ್ವದ ಬಗೆಗೆ ಸಾಕಷ್ಟು ವಿವರಣೆಯನ್ನು ಅರ್ಜುನನಿಗೆ ಹೇಳಿದ. ಬದುಕು ಅಂದರೇನುಸಾವು ಅಂದರೇನು? ಆತ್ಮ-ಪರಮಾತ್ಮ, ಆ ತತ್ವಗಳ ಅಂತರಂಗದ ರಹಸ್ಯವೇನು? ಇವು ಹೇಗೆ ಯಾವ ಬದಲಾವಣೆ ಇಲ್ಲದೆ ಅನಾದಿನಿತ್ಯ ಎನ್ನುವುದನ್ನು ವಿವರಿಸಿ, ಯುದ್ಧದ ಅವಶ್ಯಕತೆಯನ್ನು ಹೇಳಿದ.  ಇಲ್ಲಿಂದ ಮುಂದೆ ಕೃಷ್ಣ  ಸಾಂಖ್ಯದಿಂದ ಕರ್ಮದ ಕಡೆ ತಿರುಗುತ್ತಾನೆ.
ನಾವು ಮನಸ್ಸಿನಲ್ಲಿ ವೇದಾಂತವನ್ನು ಎಷ್ಟು  ರೂಢಿಸಿಕೊಂಡರೂ, ತತ್ಕಾಲದ ಮನುಷ್ಯನ ದುಃಖ ಅದಮ್ಯವಾಗಿರುತ್ತದೆ-ಎನ್ನುವುದನ್ನು ಗೀತೆ ಸ್ಪಷ್ಟವಾಗಿ ತಿಳಿಸುತ್ತದೆ. ಭಗವಂತನಿಂದ ಗೀತೆಯ ಉಪದೇಶವನ್ನು ಪಡೆದ ಅರ್ಜುನ, ತನ್ನ ಮಗ ಅಭಿಮನ್ಯು ಯುದ್ಧದಲ್ಲಿ ಸತ್ತಾಗ ಪುನಃ ವಿಚಲಿತನಾಗುವುದನ್ನು ನಾವು ಮಹಾಭಾರತದಲ್ಲಿ ಕಾಣುತ್ತೇವೆ. ಪೂರ್ಣವಾದ ಆತ್ಮಸಾಕ್ಷಾತ್ಕಾರ ಪಡೆಯುವುದು ಅಷ್ಟು ಸುಲಭದ ವಿಷಯವಲ್ಲ. ಆತ್ಮ ಅಜರ-ಅಮರ ಎಂದು ತಿಳಿದರಷ್ಟೇ ಸಾಲದು, ಪೂರ್ಣವಾಗಿ ತಿಳಿಯಬೇಕು. ಅಂತಹ  ಸ್ಥಿತಿಯಲ್ಲಿ ಎಲ್ಲಾ ದುಃಖವನ್ನು ಮರೆತು ಇರಬಹುದು. ಆದರೆ ಈ ಆತ್ಮ ತತ್ವವನ್ನು ತಿಳಿಯುವ ಬಗೆ ಹೇಗೆಆತ್ಮದ ಜ್ಞಾನವನ್ನು ಪಡೆಯುವ ಸಾಧನವೇನು? ಕೇಳಿದ ತಕ್ಷಣ ಸಾಕ್ಷಾತ್ಕಾರವಾಗಿ ಮನಸ್ಸಿನಲ್ಲಿ ಗಟ್ಟಿಯಾಗಿ ನಿಲ್ಲುವ ವಿಷಯ ಇದಲ್ಲ. ಅಂದಮೇಲೆ ಮಾನಸಿಕವಾಗಿ ಈ ಉತ್ತುಂಗದ ಸ್ಥಿತಿಯನ್ನು ತಲುಪುವುದು ಹೇಗೆ ಎಂದು ಕೃಷ್ಣ ಮುಂದೆ ವಿವರಿಸುತ್ತಾನೆ.

No comments:

Post a Comment