ಆಶ್ಚರ್ಯವತ್ ಪಶ್ಯತಿ ಕಶ್ಚಿದೇನಂ ಆಶ್ಚರ್ಯವದ್ ವದತಿ ತಥೈವ ಚಾನ್ಯಃ ।
ಆಶ್ಚರ್ಯವಚ್ಚೈನಮನ್ಯಃ ಶೃಣೋತಿ ಶ್ರುತ್ವಾSಪ್ಯೇನಂ ವೇದ ನಚೈವ ಕಶ್ಚಿತ್ ॥೨೯॥
ಆಶ್ಚರ್ಯವತ್ ಪಶ್ಯತಿ ಕಶ್ಚಿತ್ ಏನಮ್ ಆಶ್ಚರ್ಯವತ್ ವದತಿ ತಥಾ ಏವ ಚ ಅನ್ಯಃ
ಆಶ್ಚರ್ಯವತ್ ಚ ಏನಮ್ ಅನ್ಯಃ ಶೃಣೋತಿ ಶ್ರುತ್ವಾ ಅಪಿ ಏನಮ್ ವೇದ ನ ಚ ಏವ ಕಶ್ಚಿತ್-- ಯಾರಾದರೂ ಈ ಜೀವತತ್ವವನ್ನು ಅಥವಾ ಭಗವಂತನನ್ನು ಕಂಡುಕೊಂಡರೆ ಅದೊಂದು ಅಚ್ಚರಿಯಂತೆ. ಇನ್ನೊಬ್ಬ ಅಂದು ತೋರಿಸಿದರೆ ಅದೊಂದು ಅಚ್ಚರಿಯಂತೆ. ಮಗದೊಬ್ಬ ಅದನ್ನು ಕೇಳಿ ತಿಳಿದರೆ ಅದೂ ಒಂದಚ್ಚರಿಯಂತೆ.[ಯಾರೋ ಒಬ್ಬ ಭಗವಂತನನ್ನು ಅಚ್ಚರಿಗೊಂಡು ನೋಡುತ್ತಾನೆ. ಯಾರೋ ಒಬ್ಬ ಅಚ್ಚರಿಗೊಂಡು ಆಡುತ್ತಾನೆ. ಯಾರೋ ಒಬ್ಬ ಅವನನ್ನು ಅಚ್ಚರಿಗೊಂಡು ಕೇಳುತ್ತಾನೆ] ಎಷ್ಟು ಕೇಳಿದರೂ ಜೀವವನ್ನಾಗಲಿ, ಭಗವಂತನನ್ನಾಗಲಿ ಸರಿಯಾಗಿ ಅರಿತವನು ಯಾರೂ ಇಲ್ಲ.
ಇದು ಜೀವ ಹಾಗು ಭಗವಂತನ ಬಗ್ಗೆ ಇರುವ ಶ್ಲೋಕ. ಭಗವಂತನನ್ನು ಕಂಡವರು ವಿರಳ. ಒಂದು ವೇಳೆ ಬಹಳ ಸಾಧನೆಯಿಂದ ಆತನನ್ನು ಕಂಡುಕೊಂಡರೆ, ಕಂಡವರ ಉದ್ಗಾರ ಕೇವಲ ಅಚ್ಚರಿ. ಅದೊಂದು ವಿಸ್ಮಯ. ಈ ವಿಶ್ವವೇ ಒಂದು ಅದ್ಬುತ, ಹಾಗಿರುವಾಗ ವಿಶ್ವವನ್ನು ನಿರ್ಮಿಸಿದ ಆ ಭಗವಂತ ಅದೆಷ್ಟು ಅದ್ಬುತವಿರಬಹುದು? ಆದ್ದರಿಂದ ಆತನನ್ನು ಕಂಡವರು ಆತನ ಬಗ್ಗೆ ವರ್ಣಿಸಲಾರರು. ಒಂದು ವೇಳೆ ವರ್ಣಿಸಿದರೆ ಕೇಳುವವನಿಗೆ ಅದೊಂದು ಅಚ್ಚರಿ. ಯಾರು ಎಷ್ಟೇ ಕೇಳಲಿ ಕೊನೆಗೆ ಭಗವಂತ ಕೇವಲ ಅಚ್ಚರಿಯಾಗೇ ಉಳಿಯುತ್ತಾನೆ. ಏಕೆಂದರೆ ಭಗವಂತನನ್ನು ತಿಳಿಯುವುದು ಅಸಾಧ್ಯ.
ಇದೇ ರೀತಿ ಜೀವ. ಆತ್ಮ ಸಾಕ್ಷಾತ್ಕಾರ ಆದಾಗ ನಮಗಾಗುವುದು ಕೇವಲ ವಿಸ್ಮಯ. ಅದನ್ನು ವರ್ಣಿಸುವುದು ಅಸಾಧ್ಯ. ಜೀವ ಒಂದು ಬೆಳಕಿನ ಪುಂಜ. ಅದೊಂದು ಮಹಾನ್ ಅಚ್ಚರಿ. ಅದು ಸೂರ್ಯನಿಗಿಂತ ಪ್ರಖರ, ಚಂದ್ರನಿಗಿಂತ ತಂಪಾದ ಬೆಳಕು. ಜೀವ ತತ್ವದ ಬಗ್ಗೆ ಕೇಳಿ ಅದರ ಬಗ್ಗೆ ಖಚಿತವಾದ ತೀರ್ಮಾನಕ್ಕೆ ಬರುವುದು ಅಸಾಧ್ಯ.
ದೇಹೀ ನಿತ್ಯಮವಧ್ಯೋSಯಂ ದೇಹೇ ಸರ್ವಸ್ಯ ಭಾರತ ।
ತಸ್ಮಾತ್ ಸರ್ವಾಣಿ ಭೂತಾನಿ ನ ತ್ವಂ ಶೋಚಿತುಮರ್ಹಸಿ ॥೩೦॥
ದೇಹೀ ನಿತ್ಯಮ್ ಅವಧ್ಯಃ ಅಯಮ್ ದೇಹೇ ಸರ್ವಸ್ಯ ಭಾರತ
ತಸ್ಮಾತ್ ಸರ್ವಾಣಿ ಭೂತಾನಿ ನ ತ್ವಮ್ ಶೋಚಿತುಮ್ ಅರ್ಹಸಿ - -ಓ ಭಾರತ, ಎಲ್ಲರ ದೇಹದಲ್ಲೂ ಇರುವ ಈ ಜೀವ ಎಂದೂ ಕೊಲ್ಲಲಾಗದ್ದು.[ಈ ಜೀವವನ್ನು ಕೊಲ್ಲುವುದು ಎಂದೂ ಸಾಧ್ಯವಿಲ್ಲ. ಏಕೆಂದರೆ ಎಲ್ಲರ ದೇಹದಲ್ಲೂ ಭಗವಂತ ಜೀವಕ್ಕೆ ಕಾವಲಿದ್ದಾನೆ] ಆದ್ದರಿಂದ ಎಲ್ಲ ಜೀವಿಗಳಿಗಾಗಿ ನೀನು ಅಳುವುದು ತರವಲ್ಲ.
ಮೂಲಭೂತವಾಗಿ ಯಾರ ದೇಹದಲ್ಲಿರುವ ಜೀವವನ್ನೂ ಸಾಯಿಸುವುದು ಸಾಧ್ಯವಿಲ್ಲ. ದೇಹ ಸಾಯಬೇಕು ಎನ್ನುವುದು ವಿಧಿ ನಿಯಮ, ಹಾಗು ಅದಕ್ಕಾಗಿ ದುಃಖಪಡಬೇಕಾಗಿಲ್ಲ. ತನ್ನ ಸ್ವಂತ ಇಚ್ಛೆಯಿಂದ ದೇಹ ತ್ಯಜಿಸಲು ಸಾಧ್ಯವಿಲ್ಲ, ಹಾಗು ತ್ಯಜಿಸದೆ ಇರಲೂ ಸಾಧ್ಯವಿಲ್ಲ. "ಅಯಮ್ ದೇಹೇ ಸರ್ವಸ್ಯ ಭಾರತ" - "ರಕ್ಷಣೆ ಮಾಡುವ ಭಗವಂತ ಒಳಗೆ ಕುಳಿತಿರುವಾಗ ಹುಟ್ಟು ಸಾವಿಗೆ ನೀನು ಹೊಣೆಗಾರನಾಗಲಾರೆ. ಭರತ ವಂಶದಲ್ಲಿ ಹುಟ್ಟಿ ಬಂದ ನೀನು ಈ ಸತ್ಯವನ್ನು ಅರಿತುಕೊ" ಎನ್ನುತ್ತಾನೆ ಕೃಷ್ಣ. ಜೀವವೆಂಬ ಬೆಳಕಿನ ಕಿಡಿಯನ್ನು ತಿಳಿದಾಗ, ಅದರ ಅರಿವು ಬಂದಾಗ ಹುಟ್ಟು ಸಾವಿನ ಮರ್ಮ ತಿಳಿಯುತ್ತದೆ. ಆಗ ಸಾವು ಒಂದು ಆನಂದದ ಅನುಭವವಾಗುತ್ತದೆ.
ಕೃಷ್ಣನ ಈ ಎಲ್ಲಾ ವಿಶ್ಲೇಷಣೆಯನ್ನು ಕೇಳಿದಾಗ ನಮ್ಮಲ್ಲಿ ಒಂದು ಅಭಿಪ್ರಾಯ ಮೂಡಬಹುದು . "ಕೊಲ್ಲುವುದು ತಪ್ಪಲ್ಲ, ಏಕೆಂದರೆ ಜೀವಕ್ಕೆ ಸಾವಿಲ್ಲ. ಎಲ್ಲವೂ ದೈವೇಚ್ಛೆ. ಯಾರು ಯಾರನ್ನು ಬೇಕಾದರೂ ಕೊಲ್ಲಬಹುದು" ಎಂದು. ಆದರೆ ಅದು ಸರಿಯಲ್ಲ. ಏಕೆಂದರೆ ಈವರೆಗೆ ನಾವು ನೋಡಿದ ವಿಷಯ ಕೇವಲ ಬದುಕಿನ ಒಳನೋಟ. ಸಮಾಜ ಜೀವಿಗಳಾದ ನಾವು ಒಳಗಿನ ಅರಿವನ್ನು ಸಮಾಜದ ವಿರುದ್ಧ ಬಳಸುವುದು ಅಧರ್ಮ. ಶಾಸ್ತ್ರಕ್ಕೆ ಅನುಗುಣವಾಗಿರುವ ಸಮಾಜ ಧರ್ಮವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಮುಂದಿನ ಶ್ಲೋಕದಲ್ಲಿ ಕೃಷ್ಣ ಈ ವಿಚಾರವನ್ನು ಅರ್ಜುನನ ಮುಖೇನ ನಮಗೆ ಸ್ಪಷ್ಟಪಡಿಸುತ್ತಾನೆ.
ಸ್ವಧರ್ಮಮಪಿ ಚಾವೇಕ್ಷ್ಯ ನ ವಿಕಂಪಿತುಮರ್ಹಸಿ ।
ಧರ್ಮ್ಯಾದ್ಧಿ ಯುದ್ಧಾಚ್ಛ್ರೇಯೋSನ್ಯತ್ ಕ್ಷತ್ರಿಯಸ್ಯ ನ ವಿದ್ಯತೇ ॥೩೧॥
ಸ್ವಧರ್ಮಮ್ ಅಪಿ ಚ ಅವೇಕ್ಷ್ಯ ನ ವಿಕಂಪಿತುಮ್ ಅರ್ಹಸಿ
ಧರ್ಮ್ಯಾತ್ ಹಿ ಯುದ್ಧಾತ್ ಶ್ರೇಯಃ ಅನ್ಯತ್ ಕ್ಷತ್ರಿಯಸ್ಯ ನ ವಿದ್ಯತೇ -- ನಿನ್ನ ಧರ್ಮವನ್ನು ಕಂಡಾದರೂ ನೀನು ಎದೆಗೆಡಬಾರದು ಕ್ಷತ್ರಿಯನಾದವನಿಗೆ ನ್ಯಾಯದಿಂದ ಒದಗಿ ಬಂದ ಕಾಳಗಕ್ಕಿಂತ ಮಿಗಿಲಾದ ಏಳಿಗೆಯಿಲ್ಲ.
ಇಲ್ಲಿ ಅರ್ಜುನನ ಸನಾತನ ಧರ್ಮ ಯಾವುದು? ಸಮಾಜ ಧರ್ಮ ಯಾವುದು? ಹಾಗು ಸ್ವಧರ್ಮ ಯಾವುದು? ಸನಾತನ ಧರ್ಮ ಹೇಳುತ್ತದೆ: ‘ಅನ್ಯಾಯದ ವಿರುದ್ಧ ಹೋರಡಲೇ ಬೇಕು’ ಎಂದು; ಸಮಾಜ ಧರ್ಮ ಹೇಳುತ್ತದೆ: ಕ್ಷತ್ರಿಯನಾದವನು ಅಧರ್ಮದ ವಿರುದ್ಧ ಹೋರಾಡಬೇಕು, ಸಮಾಜದ ರಕ್ಷಣೆ ಮಾಡಬೇಕು ಹಾಗು ಈ ಪುಣ್ಯ ಕಾರ್ಯದಲ್ಲಿ 'ತನ್ನವರು' ಎಂದು ನೋಡಬಾರದು ಎಂದು. ಇನ್ನು ಅರ್ಜುನ ಮೂಲತಃ ಕ್ಷತ್ರಿಯನಾದ್ದರಿಂದ ಆತನ ಸ್ವಧರ್ಮ ‘ಅನ್ಯಾಯದ ವಿರುದ್ಧ ಹೋರಾಟ’. ಇಲ್ಲಿ ವ್ಯಕ್ತಿಧರ್ಮ, ಸಮಾಜಧರ್ಮ ಹಾಗು ಸನಾತನಧರ್ಮ ಏಕವಾಗಿದೆ. ಆದ್ದರಿಂದ ಅನ್ಯಾಯದ ವಿರುದ್ಧ ಹೋರಾಡುವುದು ಮಹಾ ಪುಣ್ಯದ ಕೆಲಸ. ಸಮಾಜ ಸುರಕ್ಷತೆಗಾಗಿ ಹೋರಾಡುವುದು ಕ್ಷತ್ರಿಯನ ಮಹಾ ತಪಸ್ಸು. ಇದಕ್ಕಿಂತ ಪುಣ್ಯಕಾರ್ಯ ಇನ್ನೊಂದಿಲ್ಲ.
ಯದೃಚ್ಛಯಾ ಚೋಪಪನ್ನಂ ಸ್ವರ್ಗದ್ವಾರಮಪಾವೃತಮ್ ।
ಸುಖಿನಃ ಕ್ಷತ್ರಿಯಾಃ ಪಾರ್ಥ ಲಭಂತೇ ಯುದ್ಧಮೀದೃಶಮ್ ॥೩೨॥
ಯದೃಚ್ಛಯಾ ಚ ಉಪಪನ್ನಮ್ ಸ್ವರ್ಗ ದ್ವಾರಮ್ ಅಪಾವೃತಮ್
ಸುಖಿನಃ ಕ್ಷತ್ರಿಯಾಃ ಪಾರ್ಥ ಲಭಂತೇ ಯುದ್ಧಮ್ ಈದೃಶಮ್--ಇಂಥ ಕಾಳಗವೆಂದರೆ ದೈವೇಚ್ಛೆಯಿಂದ ಕೂಡಿಬಂದ, ತೆರೆದಿಟ್ಟ ಸ್ವರ್ಗದ ಬಾಗಿಲು. ಪಾರ್ಥ, ಭಾಗ್ಯವಂತರಾದ ಕ್ಷತ್ರಿಯರು ಮಾತ್ರವೇ ಇಂಥ ಅವಕಾಶ ಪಡೆಯುತ್ತಾರೆ.
ಕಾಲು ಕೆದಕಿ ಯುದ್ಧ ಮಾಡುವುದು ತಪ್ಪು. ಆದರೆ ಇಲ್ಲಿ ಸಮಷ್ಟಿಯಾಗಿ ಬಂದ ಯುದ್ಧದ ಹೊಣೆಗಾರಿಕೆ ಪಾಂಡವರದ್ದಲ್ಲ. ತನ್ನಷ್ಟಕ್ಕೆ ಬಂದು ಎರಗಿದ ಈ ಯುದ್ಧ ದೈವೇಚ್ಛೆ. ಈಶ್ವರನ ಇಚ್ಚೆಯಂತೆ ಎಲ್ಲವೂ ಆಗುವಾಗ, ಏನು ಬಂತೋ ಅದನ್ನು ಹಾಗೇ ಸ್ವೀಕರಿಸಬೇಕು. ಅನ್ಯಾಯದ ವಿರುದ್ಧ ಧರ್ಮಯುದ್ಧ ಮಾಡಿದವನಿಗೆ ಸ್ವರ್ಗದ ಬಾಗಿಲು ಸದಾ ತೆರೆದಿರುತ್ತದೆ. ಇಂತಹ ಯುದ್ಧದ ಅವಕಾಶ ಒಬ್ಬ ಕ್ಷತ್ರಿಯನಿಗೆ ಬರಬೇಕಾದರೆ ಆತ ಪುಣ್ಯ ಮಾಡಿರಬೇಕು. ಇಂತಹ ಸಮಯದಲ್ಲಿ ಕ್ಷತ್ರಿಯನಾದವನು ಕಣ್ಮುಚ್ಚಿ ಕುಳಿತುಕೊಳ್ಳುವುದು ಮಹಾಪಾಪ.
ಇಲ್ಲಿ ನಮಗೆ ಕೃಷ್ಣ ಅರ್ಜುನನಲ್ಲಿ ಯುದ್ಧಮಾಡು ಎಂದು ಏಕೆ ಹೇಳುತ್ತಿದ್ದಾನೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ. ಪ್ರತಿಯೊಬ್ಬ ಮಾನವನೂ ಸನಾತನಧರ್ಮ, ಅದಕ್ಕನುಗುಣವಾಗಿ ಸಮಾಜಧರ್ಮ ಹಾಗು ಸಮಾಜ ಮತ್ತು ಸನಾತನ ಧರ್ಮಕ್ಕನುಗುಣವಾಗಿ ಸ್ವಧರ್ಮ-ಈ ನೆಲೆಯಲ್ಲಿ ತನ್ನ ಕರ್ತವ್ಯ ನಿರ್ವಹಿಸಬೇಕು. ಈ ನೆಲೆಯಲ್ಲಿ ಮಾಡಿದ ಯಾವ ಕಾರ್ಯವೂ ಪಾಪ ಕಾರ್ಯವಾಗದು. ಮುಂದಿನ ಶ್ಲೋಕದಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ವಿವರವನ್ನು ಕೃಷ್ಣ ಕೊಡುತ್ತಾನೆ. ಸನಾತನಧರ್ಮ, ಸಮಾಜಧರ್ಮ ಮತ್ತು ಸ್ವಧರ್ಮ ಅಂದರೆ ಏನು ಎನ್ನುವುದನ್ನು ಈಗಾಗಲೇ ಅಧ್ಯಾಯ ಒಂದರಲ್ಲಿ (ಶ್ಲೋಕ-೪೦) ವಿವರವಾಗಿ ವಿಶ್ಲೇಷಿಸಲಾಗಿದೆ.
No comments:
Post a Comment