Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Tuesday, March 22, 2011

Bhagavad Gita Kannada Chapter-03_Shloka_3-5


ಭಗವಾನುವಾಚ ।
ಲೋಕೇsಸ್ಮಿನ್  ದ್ವಿವಿದಾ ನಿಷ್ಠಾ ಪುರಾ ಪ್ರೋಕ್ತಾ ಮಯಾsನಘ          
ಜ್ಞಾನಯೋಗೇನ ಸಾಂಖ್ಯಾನಾಂ ಕರ್ಮಯೋಗೇನ ಯೋಗಿನಾಮ್         ॥೩॥

ಭಗವಾನುವಾಚ-ಭಗವಂತ ನುಡಿದನು:
ಲೋಕೇ ಅಸ್ಮಿನ್  ದ್ವಿ ವಿಧಾ ನಿಷ್ಠಾ ಪುರಾ ಪ್ರೋಕ್ತಾ ಮಯಾ ಅನಘ
ಜ್ಞಾನಯೋಗೇನ ಸಾಂಖ್ಯಾನಾಮ್   ಕರ್ಮಯೋಗೇನ ಯೋಗಿನಾಮ್--ಓ ಪಾಪದೂರನೆ, ಈ ಲೋಕದಲ್ಲಿ ಎರಡು ಬಗೆಯ ಇರವನ್ನು (ಮುಕ್ತಿಯನ್ನು) ನಾನು ಹಿಂದೆ ಹೇಳಿರುವೆ: ಜ್ಞಾನಮಾರ್ಗಿಗಳಿಗೆ ಜ್ಞಾನ ಪ್ರಧಾನವಾದ ಸಾಧನೆಯಿಂದ; ಕರ್ಮಮಾರ್ಗಿಗಳಿಗೆ ಕರ್ಮಪ್ರಧಾನವಾದ ಸಾಧನೆಯಿಂದ.

ಈ ಹಿಂದೆ ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಹೇಳಿದ್ದ ಕೃಷ್ಣ,  ಯಾವ ನೆಲೆಯಲ್ಲಿ ಯಾವ  ಸ್ತರದಲ್ಲಿ ಯಾವುದು ಮುಖ್ಯ ಎನ್ನುವ ವಿಚಾರವನ್ನು ಇಲ್ಲಿ ವಿವರಿಸುತ್ತಾನೆ. ಕರ್ಮಯೋಗದ ಬಗ್ಗೆ ವಿಶೇಷ ವಿವರಣೆ ಇಲ್ಲಿಂದ ಆರಂಭವಾಗುತ್ತದೆ.
ಈ ಶ್ಲೋಕದಲ್ಲಿ 'ನಿಷ್ಠಾ' ಎನ್ನುವ ಪದ ಬಳಕೆಯಾಗಿದೆ. ಇಲ್ಲಿ 'ನಿಷ್ಠಾ' ಎಂದರೆ ಜೀವನದ ನಡೆ ಅಥವಾ ಕೊನೇಯ ಸ್ಥಿತಿ-ಅದೇ 'ಮೋಕ್ಷ'. ಕೃಷ್ಣ ಹೇಳುತ್ತಾನೆ: “ಸಾಧಕರಲ್ಲಿ ಎರಡು ವಿಧ -ಸಾಂಖ್ಯರು ಮತ್ತು ಯೋಗಿಗಳು" ಎಂದು. ಇಲ್ಲಿ ಸಾಂಖ್ಯರು ಎಂದರೆ ಜ್ಞಾನಮಾರ್ಗದಲ್ಲಿ ಸಾಧನೆ ಮಾಡುವವರು. ಯೋಗಿಗಳು ಎಂದರೆ ಕರ್ಮಸಾಧನೆಯ ಮೂಲಕ ಸಾಧನೆ ಮಾಡುವವರು.
ಈ ಶ್ಲೋಕವನ್ನು ಮೇಲ್ನೋಟದಲ್ಲಿ ನೋಡಿದರೆ: “ಜ್ಞಾನದ ಸಾಧಕರು ಜ್ಞಾನ ಮಾರ್ಗದಲ್ಲಿ ಹೋಗಬೇಕು, ಕರ್ಮದ ಮೂಲಕ ಸಾಧನೆ ಮಾಡುವವರು  ಕರ್ಮದ ದಾರಿಯಲ್ಲಿ ಹೋಗಬೇಕು” ಎಂದು ಹೇಳಿದಂತೆ ಕಾಣಿಸುತ್ತದೆ. ಇಲ್ಲಿ ಅರ್ಜುನ ಕರ್ಮದ ಮೂಲಕ ಸಾಧನೆ ಮಾಡಬೇಕಾದವ, ಆದ್ದರಿಂದ ಕೃಷ್ಣ ಆತನಲ್ಲಿ ಯುದ್ಧ ಮಾಡು ಎಂದು ಹೇಳಿದ ಎನ್ನುವಂತೆ ಕಾಣುತ್ತದೆ. ಆದರೆ ಅದು ನಿಜವಾದ ಅರ್ಥವಲ್ಲ. ನಿಮಗೆ ತಿಳಿದಂತೆ ಅರ್ಜುನ ಆ ಕಾಲದ ಮಹಾ ಜ್ಞಾನಿಗಳಲ್ಲಿ ಒಬ್ಬ. ಹಾಗಿರುವಾಗ ನಾವು ಈ ರೀತಿ ಮೇಲ್ನೋಟದ ಅರ್ಥವನ್ನು ಈ ಶ್ಲೋಕಕ್ಕೆ ಅರ್ಥೈಸಬಾರದು. ಇಲ್ಲಿ ಆಳವಾದ ಚಿಂತನೆ ಅಗತ್ಯ.
ಶಾಸ್ತ್ರಗಳಲ್ಲಿ ಹೇಳುವಂತೆ ಜ್ಞಾನದಿಂದ ಮಾತ್ರ ಮೋಕ್ಷಕ್ಕೆ ಹೋಗಲು ಸಾಧ್ಯ. ಮೋಕ್ಷಕ್ಕೆ ಬೇರೆ ಮಾರ್ಗವೇ ಇಲ್ಲ.  ಅಂದಮೇಲೆ ಮೋಕ್ಷ ಸಾಧನೆಗೆ ಜ್ಞಾನ ಬೇಕೇಬೇಕು. ಕರ್ಮವಿರುವುದು ಜ್ಞಾನಕ್ಕಾಗಿ. ಜ್ಞಾನಕ್ಕೆ ಪೂರಕವಲ್ಲದ ಕರ್ಮ ಕರ್ಮವಲ್ಲ. ಬೆಳಗಿನಿಂದ ಸಂಜೆಯ ತನಕ ಜಪ ಮಣಿ ಹಿಡಿದು ಮಡಿ-ಮಡಿ ಎಂದು ಕುಳಿತರೆ ಅದು ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯಲಾರದು. ನಾವು ಏನೇ ಕರ್ಮ ಮಾಡುವುದಿದ್ದರೂ ಅದನ್ನು ತಿಳಿದು ಮಾಡಬೇಕು. ಮಾಡುವ ಕರ್ಮ ಜ್ಞಾನಕ್ಕೆ ಪೂರಕವಾಗಿರಬೇಕು. ಆದ್ದರಿಂದ ಬರೀ ಜ್ಞಾನಯೋಗವೆಂದಾಗಲಿ, ಬರೀ ಕರ್ಮಯೋಗವೆಂದಾಗಲಿ ಇಲ್ಲ. ಕರ್ಮವಿಲ್ಲದೆ ಜ್ಞಾನವಿಲ್ಲ, ಜ್ಞಾನವಿಲ್ಲದೆ ಕರ್ಮವಿಲ್ಲ. ಛಾ೦ಧೋಕ್ಯ  ಉಪನಿಷತ್ತಿನಲ್ಲಿ  ಹೇಳುವಂತೆ: "ಯದೇವ ವಿದ್ಯಯಾ ಕರೋತಿ ಶ್ರದ್ಧೆಯ ಉಪನಿಷದಾ, ತದೇವ ವೀರ್ಯವತ್ತರ೦ ಭವತಿ , ವಿಜ್ಞಾನ೦ ಯಜ್ಞಾ೦ ತನುತೇ". ಅಂದರೆ “ನೀನು ಏನನ್ನೂ ಮಾಡಿದರೂ ತಿಳಿದು ಮಾಡು. ಜ್ಞಾನ ಪೂರ್ವಕವಾಗಿ ಮಾಡಿದ ಕರ್ಮ ಸಫಲ. ಇಲ್ಲದಿದ್ದರೆ ಅದು ವ್ಯರ್ಥ”. ಮಾಡುವ ಕರ್ಮವನ್ನು ಏತಕ್ಕಾಗಿ ಮಾಡುತ್ತಿದ್ದೇವೆ, ಮಾಡುವುದರ ಫಲವೇನು, ಮಾಡುವುದು ಹೇಗೆ-ಎನ್ನುವುದು ಗೊತ್ತಿರಬೇಕು. ಅಜ್ಞಾನದಿಂದ ಮಾಡುವ ಕರ್ಮ ವ್ಯರ್ಥವಾಗುತ್ತದೆ.  ಇಲ್ಲಿ ಕೃಷ್ಣ ಹೇಳಿರುವುದು ಒಂದು ಕರ್ಮಪ್ರದವಾದ ಮಾರ್ಗ(ಜನಕಾದಿಗಳಂತೆ) ಹಾಗು ಇನ್ನೊಂದು  ಜ್ಞಾನಪ್ರದವಾದ ಮಾರ್ಗ(ಸನಕಾದಿಗಳಂತೆ).

ನ ಕರ್ಮಣಾಮನಾರಂಭಾನ್ನೈಷ್ಕರ್ಮ್ಯಂ ಪುರುಷೋsಶ್ನುತೇ ।
ನಚ ಸಂನ್ಯಸನಾದೇವ ಸಿದ್ಧಿಂ ಸಮಧಿಗಚ್ಛತಿ  ॥೪॥

ನ ಕರ್ಮಣಾಮ್ ಅನಾರಂಭಾತ್  ನೈಷ್ಕರ್ಮ್ಯಂ ಪುರುಷಃ ಅಶ್ನುತೇ
ನ ಚ ಸಂನ್ಯಸನಾತ್  ಏವ ಸಿದ್ಧಿಮ್  ಸಮಧಿಗಚ್ಛತಿ--ಕರ್ಮಗಳಲ್ಲಿ ತೊಡಗದೆ ಇರುವುದರಿಂದ ಸಾಧಕ ಕರ್ಮಗಳಿಂದ ಬಿಡುಗಡೆ ಹೊಂದುವುದಿಲ್ಲ. ಕರ್ಮ ಫಲವನ್ನು ತೊರೆದ ಮಾತ್ರಕ್ಕೆ ಸಿದ್ಧಿ ಪಡೆಯುವುದಿಲ್ಲ.

ಶಾಸ್ತ್ರಗಳಲ್ಲಿ  ಹೇಳುವಂತೆ 'ಕರ್ಮ ಬಂಧನದ ದಾರಿ ಹಾಗು ಜ್ಞಾನ ಬಿಡುಗಡೆಯ ದಾರಿ'. ಆದರೆ ಕೃಷ್ಣ ಹೇಳಿದ -ಮೋಕ್ಷಕ್ಕೆ ಜ್ಞಾನಪ್ರದವಾದ ಮತ್ತು ಕರ್ಮಪ್ರದವಾದ ಎರಡು ಮಾರ್ಗಗಳಿವೆ ಎಂದು. ಇಲ್ಲಿ ಅದರ ವಿವರಣೆ ಕೊಡುತ್ತಾನೆ ಕೃಷ್ಣ. “ಮೋಕ್ಷ ನಿಷ್ಕರ್ಮದಿಂದ ಪಡೆಯುವಂತದ್ದು-ಕರ್ಮ ಬಂಧಕ” ಅನ್ನುವುದಾದರೆ, ಒಂದು ಶರೀರದಲ್ಲಿ ಜೀವ ಏನೂ ಕರ್ಮ ಮಾಡದೆ ಇರಲು ಸಾಧ್ಯವೇ ಇಲ್ಲ. ದೇಹ ಬಂದ ಮೇಲೆ ಕರ್ಮ ಕ್ರಿಯೆ ನಡೆದೇ ನಡೆಯುತ್ತದೆ. ಕರ್ಮ ಮಾಡುವುದನ್ನು ಬಿಟ್ಟ ತಕ್ಷಣ ಮೋಕ್ಷ ದೊರೆಯದು. ಮೂಲತಃ ಕರ್ಮವನ್ನು ತೊರೆಯುವುದೂ ಸಾಧ್ಯವಿಲ್ಲ. ಜ್ಞಾನಕ್ಕೆ ಪೂರಕವಲ್ಲದ ಯಾಂತ್ರಿಕ ಕರ್ಮ ಬಂಧಕ.  ಜ್ಞಾನಕ್ಕೆ ಪೂರಕವಾದ ಕರ್ಮ ಎಂದೂ ಬಂಧಕವಲ್ಲ. ಕರ್ಮದ ಫಲವನ್ನು ಬಯಸದೇ ಇದ್ದ ತಕ್ಷಣ ಯಾವ ಸಿದ್ಧಿಯೂ  ಆಗದು. ಕೇವಲ ಕರ್ಮತ್ಯಾಗ ಮಾಡುವುದರಿಂದ ಎಂದೂ ಸಿದ್ಧಿ ಪಡೆಯಲು ಸಾಧ್ಯವಿಲ್ಲ.

ನಹಿ ಕಶ್ಚಿತ್ ಕ್ಷಣಮಪಿ ಜಾತು ತಿಷ್ಠತ್ಯಕರ್ಮಕೃತ್ ।
ಕಾರ್ಯತೇ ಹ್ಯವಶಃ ಕರ್ಮ ಸರ್ವಃ ಪ್ರಕೃತಿಜೈರ್ಗುಣೈಃ    ॥೫॥

ನ ಹಿ ಕಶ್ಚಿತ್ ಕ್ಷಣಮ್ ಅಪಿ ಜಾತು ತಿಷ್ಠತಿ ಅಕರ್ಮ ಕೃತ್
ಕಾರ್ಯತೇ ಹಿ ಅವಶಃ ಕರ್ಮ ಸರ್ವಃ ಪ್ರಕೃತಿಜೈಃ ಗುಣೈಃ--ಯಾವನೂ ಒಂದು ಕ್ಷಣ ಕೂಡಾ ಏನೂ ಮಾಡದೆ ತೆಪ್ಪಗಿರುವುದು ಸಾಧ್ಯವಿಲ್ಲ. ಪ್ರತಿಯೊಬ್ಬನೂ ಪ್ರಕೃತಿಯ ಗುಣಗಳಿಂದ ಅರಿವಿಲ್ಲದೆಯೇ (ಭಗವಂತನ ಅಧೀನವಾಗಿ) ಕರ್ಮ ಮಾಡುತ್ತಾನೆ.

ಕರ್ಮತ್ಯಾಗದಿಂದ ಸಿದ್ಧಿ ಸಿಗದು. ಅಷ್ಟೇ ಅಲ್ಲ, ಕರ್ಮ ತ್ಯಾಗ ಮಾಡುವುದು ಸಾಧ್ಯವಿಲ್ಲ!  ನಮ್ಮ ಅನ್ನಮಯ ಮತ್ತು ಪ್ರಾಣಮಯ ಕೋಶ ನಿರಂತರ ಕಾರ್ಯ ನಿರ್ವಹಿಸುತ್ತಿರುತ್ತವೆ. ಬದುಕಿರುವಾಗ ನಿಷ್ಕ್ರೀಯರಾಗಿರುವುದು ಅಸಾಧ್ಯ. ಯಾವ ಕಾಲದಲ್ಲೂ ಕೂಡಾ ಒಂದು ಕ್ಷಣ ನಿಷ್ಕ್ರೀಯನಾಗಿ ಇರುವುದು ಸಾಧ್ಯವಿಲ್ಲ. "ಕಾರ್ಯತೇ ಹಿ ಅವಶಃ"-ದೇಹದ ಒಳಗಿರುವ ಜೀವ ದೇಹದ ಮೂಲಕ ಮನಸ್ಸಿನ ಮೂಲಕ, ಮಾತಿನ ಮೂಲಕ-ಕೆಲಸ ಮಾಡಿಸಲ್ಪಡುತ್ತದೆ. ಅದು ನಮ್ಮ ಸ್ವಾಧೀನದಲ್ಲಿರುವುದಿಲ್ಲ, ಅದು ಭಗವಂತನ ವಶ.
ಇಡೀ ವಿಶ್ವವೇ ಪ್ರಕೃತಿಯಿಂದ ಸೃಷ್ಠಿಯಾಗಿದೆ. ಅದರ ಮೂಲ ದ್ರವ್ಯ ಸತ್ವ-ರಜಸ್ಸು-ತಮಸ್ಸು. ಜೀವಕ್ಕೆ ಅದರದ್ದೇ ಆದ ಸ್ವಭಾವವಿರುತ್ತದೆ, ಅದಕ್ಕನುಗುಣವಾಗಿ ಪ್ರಕೃತಿಯ ಈ ತ್ರಿಗುಣಗಳ ಪ್ರಭಾವ ನಮ್ಮ ಮೇಲಾಗುತ್ತಿರುತ್ತದೆ. ಆದ್ದರಿಂದ  ನಿಷ್ಕ್ರೀಯತೆ ಎನ್ನುವುದು ಅರ್ಥ ಶೂನ್ಯ. ನಾವು ಜೀವನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕರ್ತವ್ಯ ಶೀಲರಾಗಬೇಕು. ಅದರೊಂದಿಗೆ ಮಾನಸಿಕವಾಗಿ ಐಹಿಕ ಪ್ರಪಂಚದಿಂದ ಆಚೆಗಿನ ಸತ್ಯದ ಕಡೆ ನಮ್ಮ ಮನಸ್ಸು ಜಾಗೃತವಾಗಿರಬೇಕು. ಈ ಎಚ್ಚರದಿಂದ ಎಲ್ಲಾ ಕರ್ತವ್ಯ ಕರ್ಮಗಳನ್ನು ಮಾಡಬೇಕು. ನಿಷ್ಕ್ರೀಯತೆ  ವೇದಾಂತವಲ್ಲ-ಕರ್ತವ್ಯಚ್ಯುತಿ ಅಧ್ಯಾತ್ಮವಲ್ಲ. ಭಗವಂತನ ಪ್ರಜ್ಞೆಯೊಂದಿಗೆ ನಿನ್ನ ಪಾಲಿನ ಕರ್ಮ ನೀನು ಮಾಡು. ಹೀಗೆ ಮಾಡಿದಾಗ ಕರ್ಮ ಮತ್ತು ಜ್ಞಾನ ಮಾರ್ಗಗಳು ಒಂದಕ್ಕೊಂದು ಪೂರಕವಾಗುತ್ತವೆ.

No comments:

Post a Comment