Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Saturday, January 29, 2011

Bhagavad Gita Kannada Chapter-02-Shloka-11

ಶ್ರೀಭಗವಾನುವಾಚ
ಅಶೋಚ್ಯಾನನ್ವಶೋಚಸ್ತ್ವಂ ಪ್ರಜ್ಞಾವಾದಾಂಶ್ಚ ಭಾಷಸೇ   |
ಗತಾಸೂನಗತಾಸೂಂಶ್ಚ ನಾನುಶೋಚಂತಿ ಪಂಡಿತಾಃ        ೧೧

ಶ್ರೀ ಭಗವಾನ್ ಉವಾಚ-ಭಗವಂತ ಹೇಳಿದನು:
ಅಶೋಚ್ಯಾನ್ ಅನ್ವಶೋಚಃ ತ್ವಮ್ ಪ್ರಜ್ಞಾವಾದಾನ್ ಚ ಭಾಷಸೇ
ಗತ ಅಸೂನ್ ಅಗತ ಅಸೂನ್ ಚ  ನ ಅನುಶೋಚಂತಿ ಪಂಡಿತಾಃ -ಅಳಬಾರದವರಿಗಾಗಿ ನೀನು ಅಳುತ್ತಿರುವೆ. ತಿಳಿದವರು ಆಡದಂಥ ಮಾತುಗಳನ್ನು ತೋಚಿದಂತೆ ಆಡುತ್ತಿರುವೆ. ಅಳಿದವರ ಬಗೆಗಾಗಲಿ, ಅಳಿಯದವರ ಬಗೆಗಾಗಲಿ, ತಿಳಿದವರು ಅಳುವುದಿಲ್ಲ.

ಇದು ಭಗವಂತನ ಉಪದೇಶದ ಮೊದಲ ನುಡಿ. ಇದು ಇಡೀ ಗೀತೆಗೆ ಪಂಚಾಂಗ ರೂಪದಲ್ಲಿದೆ. ಇಲ್ಲಿ ಕೃಷ್ಣ ಅರ್ಜುನನಿಗೆ ಹೇಳುತ್ತಾನೆ "ಯಾರಿಗೋಸ್ಕರ ಅಳಬಾರದೋ ಅಂತವರಿಗೋಸ್ಕರ ಅಳುತ್ತಿರುವೆ. ತುಂಬಾ ತಿಳಿದ ಮಹಾ ಜ್ಞಾನಿಯಂತೆ ಮಾತನಾಡುತ್ತಿರುವೆ" ಎಂದು. ಇದು ಅರ್ಜುನನ ದೌರ್ಬಲ್ಯಕ್ಕೆ ಕೃಷ್ಣ ಹಿಡಿದ ಕನ್ನಡಿ. ಇಲ್ಲಿ 'ನಿನಗೇನೂ ತಿಳಿದಿಲ್ಲ' ಎನ್ನುವ ಭಾವ ಕೂಡ ಸ್ಪಷ್ಟವಾಗಿದೆ. ಅರ್ಜುನನಿಗೆ ಕಾಡಿರುವುದು ಕೆಲವರು(ಗುರು-ಹಿರಿಯರು) ಸಾಯುತ್ತಾರೆ ಇನ್ನು ಕೆಲವರು(ದುಷ್ಟರು) ಬದುಕುತ್ತಾರಲ್ಲಾ ಎನ್ನುವ ಭಯ-ಅದರಿಂದಾಗಿ ದುಃಖ. ದುಃಖಕ್ಕೆ ಮೂಲ ಭಯ-ಭಯಕ್ಕೆ ಮೂಲ ಅಜ್ಞಾನ.
ಇಲ್ಲಿ ನಿಮಗೊಂದು ಪ್ರಶ್ನೆ ಬರಬಹುದು. ಭೀಷ್ಮ ದ್ರೋಣರಂತಹ ಮಹಾತ್ಮರು ಸತ್ತರೆ ಅಳುವುದು ತಪ್ಪೇ? ಈ ಪ್ರಶ್ನೆಗೆ ಉತ್ತರ ಸಿಗಬೇಕಾದರೆ ನಾವು ಹುಟ್ಟು ಸಾವಿನ ಗುಟ್ಟನ್ನು ಅರಿತಿರಬೇಕು. ಹುಟ್ಟು ಸಾವಿನ ಇನ್ನೊಂದು ಆಯಾಮ ತಿಳಿದಾಗ ನಮಗೆ ಈ ಪ್ರಶ್ನೆಗೆ ಉತ್ತರ ಸಿಗುತ್ತದೆ. ಜೀವ ಅನಾದಿನಿತ್ಯ; ಅದಕ್ಕೆಂದೂ ಸಾವಿಲ್ಲ. ಈ ಭೌತಿಕ ಶರೀರ ಜೀವಕ್ಕೆ ಒಂದು ಪಂಜರದಂತೆ. ಈ ಪಂಜರದಲ್ಲಿ ಸಿಕ್ಕಿ ಹಾಕಿಕೊಳ್ಳುವುದು ಹುಟ್ಟು. ಪಂಜರದಿಂದ ಹೊರ ಹೋಗುವುದು ಸಾವು. ಈ ಆಯಾಮದಲ್ಲಿ ನೋಡಿದರೆ ಹೊಸ ಅಂಗಿ ತೊಡುವುದು ಹುಟ್ಟು-ಹಳೆ ಅಂಗಿ ತೊರೆಯುವುದು ಸಾವು. ಈ ಜ್ಞಾನ ನಮಗಿದ್ದರೆ ನಮಗೆ ಸಾವಿನ ಭಯವಿರುವುದಿಲ್ಲ.
ಇಲ್ಲಿ ಕೃಷ್ಣ ಹೇಳುತ್ತಾನೆ: "ಜ್ಞಾನಿಗಳು ಆಡುವ ಮಾತನ್ನು ನೀನು ಆಡುತ್ತಿಲ್ಲ" ಎಂದು. ಏಕೆಂದರೆ ಜ್ಞಾನಿಗಳು ಹುಟ್ಟು-ಸಾವಿನ ಮರ್ಮವನ್ನು ಚನ್ನಾಗಿ ಅರಿತಿರುತ್ತಾರೆ. ನೀನು ಆಡುತ್ತಿರುವುದು ತಿಳುವಳಿಕೆಯ ಮಾತಲ್ಲ. ನಿನ್ನ ತಿಳುವಳಿಕೆಯೇ ವಿಶ್ವದ ಸತ್ಯ ಎನ್ನುವ ಭ್ರಮೆಯಿಂದ ನೀನು ಮಾತನಾಡುತ್ತಿದ್ದೀಯ ಎನ್ನುತ್ತಾನೆ ಕೃಷ್ಣ.
ಇಲ್ಲಿ ಕೃಷ್ಣ ಅರ್ಜುನ ಹಾಕಿದ ಎಲ್ಲಾ ಲೌಕಿಕ ಪ್ರಶ್ನೆಗಳನ್ನು ಬಿಟ್ಟು ಅವನಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುತ್ತಿದ್ದಾನೆ. ಅರ್ಜುನ ಕಂಡಿದ್ದು ಕೇವಲ ಐಹಿಕ ಪ್ರಪಂಚವಾದರೆ, ಕೃಷ್ಣ ಆತನಿಗೆ ಅದರಾಚೆಗಿನ ಸತ್ಯದ ಇನ್ನೊಂದು ಮುಖದ ಪರಿಚಯ ಮಾಡಿಸುತ್ತಿದ್ದಾನೆ.
ಸಾವು ಭಯಾನಕವಲ್ಲ,  ಹುಟ್ಟಿ ಬಂದವನಿಗೆ ಸಾವು ಅನಿವಾರ್ಯ. ಆತ್ಮಕ್ಕೆ ಎಂದೂ ಸಾವಿಲ್ಲ. ಆತ್ಮ ಅನಾದಿನಿತ್ಯ. ಆದರೆ ದೇಹ ನಾಶ ಅನಿವಾರ್ಯ. ಮನುಷ್ಯ ತನ್ನ ವಿಕೃತಿಯಿಂದ ಪ್ರಕೃತಿಯೆಡೆಗೆ ಪಯಣಿಸುವ ಕ್ರಿಯೆ ಸಾವು. ಆದ್ದರಿಂದ ಅಳಿದವರ ಬಗೆಗಾಗಲಿ, ಅಳಿಯದವರ ಬಗೆಗಾಗಲಿ, ತಿಳಿದವರು ಅಳುವುದಿಲ್ಲ ಎನ್ನುವುದನ್ನು ಇಲ್ಲಿ ಕೃಷ್ಣ ಅರ್ಜುನನಿಗೆ ಮನವರಿಕೆ ಮಾಡಿಸುತ್ತಿದ್ದಾನೆ.

No comments:

Post a Comment