Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Thursday, January 20, 2011

Bhagavad Gita Kannada Chapter-01_ Shloka-41

ಅಧರ್ಮಾಭಿಭವಾತ್ ಕೃಷ್ಣ ಪ್ರದುಷ್ಯಂತಿ ಕುಲಸ್ತ್ರಿಯಃ
ಸ್ತ್ರೀಷು ದುಷ್ಟಾಸು ವಾರ್ಷ್ಣೇಯ ಜಾಯತೇ ವರ್ಣಸಂಕರಃ  ೪೧

ಅಧರ್ಮ ಅಭಿಭವಾತ್ ಕೃಷ್ಣ ಪ್ರದುಷ್ಯಂತಿ ಕುಲಸ್ತ್ರಿಯಃ  
ಸ್ತ್ರೀಷು ದುಷ್ಟಾಸು ವಾರ್ಷ್ಣೇಯ ಜಾಯತೇ ವರ್ಣಸಂಕರಃ -ಓ ವಾರ್ಷ್ಣೇಯ, ಅಧರ್ಮದ ಆಕ್ರಮಣದಿಂದ ಸಮಾಜದಲ್ಲಿ  ಹೆಣ್ಣು ಮಕ್ಕಳು ದಾರಿಗೆಡುತ್ತಾರೆ. ಅದರಿಂದ ಸಮಾಜ ವರ್ಣಸಂಕರಕ್ಕೀಡಾಗುತ್ತದೆ.

ಯುದ್ಧವಾದರೆ ಅದರಿಂದ ಯುವಕರೆಲ್ಲರೂ ಸಾಯುತ್ತಾರೆ. ಅಧರ್ಮ ಸಮಾಜವನ್ನು ಆಕ್ರಮಿಸುತ್ತದೆ. ಯುವಕರಿಲ್ಲದ ಸಮಾಜ ಸೃಷ್ಟಿಯಾಗುತ್ತದೆ. ಸಾಮಾಜಿಕವಾಗಿ ಸ್ತ್ರೀಗೆ ಭಧ್ರತೆ ಇಲ್ಲದಂತಾಗುತ್ತದೆ. ಅದರ ಪರಿಣಾಮ ಆಕೆಯ ಮುಗ್ಧತೆಯ ದುರುಪಯೋಗ. ಅದರಿಂದ ಸಮಾಜದಲ್ಲಿ ವರ್ಣಸಂಕರ ಉಂಟಾಗುತ್ತದೆ ಎನ್ನುತ್ತಾನೆ ಅರ್ಜುನ.
ಇಲ್ಲಿ ವರ್ಣಸಂಕರ ಎಂದರೆ ಜೀವದ ಬಣ್ಣ ಅಥವಾ ಸ್ವಭಾವ ಹಾಳಾಗುವುದು. ಹೆಣ್ಣಿಗೆ ಬಲವಂತವಾಗಿ ಆಕೆಯ ಮನಸ್ಸಿಗೆ ವಿರುದ್ಧವಾಗಿ ಉಚ್ಚ ಶಿಕ್ಷಣ ಕೊಡಬಾರದು ಎಂದು ಶಾಸ್ತ್ರಗಳಲ್ಲಿ ಉಲ್ಲೇಖವಿದೆ. ಕಾರಣ ಅದರಿಂದ ಆಕೆಯ ಗರ್ಭಕೋಶದ ಮೇಲೆ ಪರಿಣಾಮವಾಗುತ್ತದೆ. ಅದರ ಪರಿಣಾಮ ಹುಟ್ಟುವ ಮಗುವಿನ ಮೇಲೆ ಆಗುತ್ತದೆ. ಹೆಣ್ಣು ತನಗಿಷ್ಟವಿಲ್ಲದೆ ತನ್ನನ್ನು ತೊಡಗಿಸಿಕೊಂಡಾಗ; ಅನೇಕ ಪುರುಷರ ಸಂಗ ಮಾಡುವುದರಿಂದ; ಮುಂದಿನ ಸಂತಾನದ ಮೇಲೆ ಘೋರ ಪರಿಣಾಮವುಂಟಾಗುತ್ತದೆ. ಯಾರ ಮಾತನ್ನೂ ಕೇಳದ, ಯಾರ ನಿಯಮಕ್ಕೂ ಬಗ್ಗದ ವಿಕ್ಷಿಪ್ತ ಸಂತತಿ ಹುಟ್ಟುವ ಸಾಧ್ಯತೆ ಇದೆ. ಇದು ಇಲ್ಲಿ ಅರ್ಜುನ ಹೇಳುತ್ತಿರುವ  ವರ್ಣಸಂಕರ.
ಇಲ್ಲಿ ಅರ್ಜುನ ಕೃಷ್ಣನನ್ನು 'ವಾರ್ಷ್ಣೇಯ' ಎಂದು ಸಂಬೋಧಿಸಿದ್ದಾನೆ. ಯಾದವ ಮನೆತನದ ಹಿರಿಯ ರಾಜ ವೃಷ್ಣಿ.  ಆ ವಂಶದಲ್ಲಿ ಅವತರಿಸಿದ ಕೃಷ್ಣ ವಾರ್ಷ್ಣೇಯ. ಈ ಹೆಸರಿನ ಬಗ್ಗೆ ವೇದದಲ್ಲಿ ಉಲ್ಲೇಖವಿದೆ. ಬಯಸಿದ  ಅಭೀಷ್ಟವನ್ನು ಕೊಡುವ ಹಿರಿಯ ಶಕ್ತಿಗಳಾದ ದೇವತೆಗಳ ಒಡೆಯ ಭಗವಂತ ವಾರ್ಷ್ಣೇಯ. “ಎಲ್ಲರ ಅಭೀಷ್ಟವನ್ನು ಈಡೇರಿಸುವ, ಧರ್ಮ ಸಂಸ್ಥಾಪನೆಗಾಗಿ ಇಳಿದುಬಂದ ನೀನು, ಏಕೆ ಈ ಯುದ್ಧವನ್ನು ತಡೆಯುತ್ತಿಲ್ಲ” ಎನ್ನುವ ಧ್ವನಿ ಅರ್ಜುನನ ಈ ಸಂಬೋಧನೆಯಲ್ಲಿದೆ.

No comments:

Post a Comment