Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Friday, November 25, 2011

Bhagavad GitA in Kannada Chapter-14 Shloka 26-27


ಇಲ್ಲಿಯ ತನಕ ತ್ರಿಗುಣಗಳ ಬಗ್ಗೆ ಮತ್ತು ತ್ರಿಗುಣಾತೀತರ ಸ್ವಭಾವದ ಬಗ್ಗೆ ವಿವರಿಸಿದ ಕೃಷ್ಣ, ಕೊನೆಯ ಎರಡು ಶ್ಲೋಕದಲ್ಲಿ ನಾವು ತ್ರಿಗುಣಾತೀತರಾಗುವ ಬಗೆ ಹೇಗೆ ಎನ್ನುವುದನ್ನು ವಿವರಿಸುತ್ತಾನೆ. ನಮ್ಮ ಎಲ್ಲ ಪ್ರವೃತ್ತಿಯೂ ಈ ಮೂರು ಗುಣಗಳ ಪರಿಮಿತಿಯಲ್ಲಿ ಇರುವಾಗ ತ್ರಿಗುಣವನ್ನು ಮೀರಿ ನಿಲ್ಲುವುದು ನಮಗೆ ಕಲ್ಪನಾತೀತ. ಹಾಗಾಗಿ ಇಲ್ಲಿ ಕೃಷ್ಣ ನಮಗೆ ತ್ರಿಗುಣಾತೀತರಾಗಲು ಇರುವ ಏಕಮಾತ್ರ ಮಾರ್ಗವನ್ನು ವಿವರಿಸುತ್ತಾನೆ.

ಮಾಂ ಚ ಯೋSವ್ಯಭಿಚಾರೇಣ ಭಕ್ತಿಯೋಗೇನ ಸೇವತೇ      
ಸ ಗುಣಾನ್ ಸಮತೀತ್ಯೈತಾನ್ ಬ್ರಹ್ಮಭೂಯಾಯ ಕಲ್ಪತೇ              ೨೬

ಮಾಮ್ಯಃ ಅವ್ಯಭಿಚಾರೇಣ ಭಕ್ತಿಯೋಗೇನ ಸೇವತೇ   
ಸಃ ಗುಣಾನ್ ಸಮತೀತ್ಯ ಏತಾನ್ ಬ್ರಹ್ಮಭೂಯಾಯ ಕಲ್ಪತೇ – ನನ್ನನ್ನು ಎಡೆಬಿಡದೆ ಭಕ್ತಿಯಿಂದ ಆರಾಧಿಸುವವನು ಈ ಗುಣಗಳ ಕಟ್ಟನ್ನು ಹರಿದು, ಚೇತನ ಪ್ರಕೃತಿಯಂತೆ ಭಗವಂತನ ಭಕ್ತಿಗೆ ಪಾತ್ರನಾಗುತ್ತಾನೆ.[ಚೇತನ ಪ್ರಕೃತಿಯನ್ನು ಸೇರುತ್ತಾನೆ].

ನಾವು ನಾವಾಗಿ ತ್ರಿಗುಣಾತೀತರಾಗಬೇಕು ಎಂದು ಪ್ರಯತ್ನಿಸಿದರೆ ಆ ಪ್ರಯತ್ನದಲ್ಲಿ ನಾವು ಯಶಸ್ಸನ್ನು ಕಾಣಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ಎಲ್ಲ ಯೋಚನೆ ತ್ರಿಗುಣದಲ್ಲೇ ಸುತ್ತುತ್ತಿರುತ್ತದೆ. ಇದೊಂದು ಚಕ್ರಭ್ರಮಣ. ಈ ಚಕ್ರ ಭ್ರಮಣದಿಂದ ಪಾರು ಮಾಡಲು ಆ ಚಕ್ರಧಾರಿಯೇ ಬರಬೇಕು. ದ್ವಾದಶಸ್ತೋತ್ರದಲ್ಲಿ ಹೇಳುವಂತೆ: “ತ್ರಿಗುಣಾತೀತ ವಿಧಾರಕ ಪರಿತೋ ದೇಹಿ ಸುಭಕ್ತಿಮ್”. ತ್ರಿಗುಣಾತೀತರನ್ನು ಧಾರಣೆ ಮಾಡುವವ ಆ ಭಗವಂತ. ಆದ್ದರಿಂದ ತ್ರಿಗುಣಾತೀತರಾಗಲು ಇರುವ ಮಾರ್ಗ ಒಂದೆ-ಆ ಭಗವಂತನಲ್ಲಿ ಶರಣಾಗುವುದು. ಲಕ್ಷ್ಮೀಸಮೇತನಾದ ಆ ಭಗವಂತನಲ್ಲಿ ಏಕನಿಷ್ಠೆಯಿಂದ ಅನನ್ಯ ಭಕ್ತಿ ಮಾಡುವುದರಿಂದ – ಲಕ್ಷ್ಮಿಯಿಂದ ಹದಿನೈದು ಬಂಧನದ ಬೇಲಿಯನ್ನು ಧರಿಸಿ ಪ್ರಪಂಚಕ್ಕೆ ಬಂದ ನಾವು, ಈ ಎಲ್ಲಾ ಬಂಧವನ್ನು ಕಳಚಿಕೊಂಡು ಮರಳಿ ತಾಯಿಯ ಮಡಿಲನ್ನು ಸೇರಬಹುದು.          

ಬ್ರಹ್ಮಣೋ ಹಿ ಪ್ರತಿಷ್ಠಾSಹಮಮೃತಸ್ಯಾವ್ಯಯಸ್ಯ ಚ
ಶಾಶ್ವತಸ್ಯ ಚ ಧರ್ಮಸ್ಯ ಸುಖಸ್ಯೈಕಾಂತಿಕಸ್ಯ ಚ ೨೭

ಬ್ರಹ್ಮಣಃ  ಹಿ ಪ್ರತಿಷ್ಠಾಮ್ ಅಮೃತಸ್ಯವ್ಯಯಸ್ಯ ಚ
ಶಾಶ್ವತಸ್ಯ ಚ ಧರ್ಮಸ್ಯ ಸುಖಸ್ಯ ಐಕಾಂತಿಕಸ್ಯ ಚ –ಅಳಿವಿರದ ಬದಲಾಗದ ಚಿತ್ ಪ್ರಕೃತಿಗೂ ನಾನೆ ಆಸರೆ-ನೆಲೆ. ಸನಾತನ ಧರ್ಮಕ್ಕೆ ಮತ್ತು ಕೇವಲ ಸುಖಮಯವಾದ ಮೋಕ್ಷಕ್ಕೆ ಕೂಡ.

ಮೂರು ಗುಣಗಳನ್ನು ಮೀರಿ ನಿಂತಾಗ ಜೀವದ ಸಹಜ-ಶಾಶ್ವತ ಧರ್ಮ ಅಭಿವ್ಯಕ್ತವಾಗುತ್ತದೆ. ಈ ಸ್ಥಿತಿಯಲ್ಲಿ  ಬ್ರಹ್ಮತತ್ವವಾದ ಚಿತ್ ಪ್ರಕೃತಿ(ಶ್ರೀಲಕ್ಷ್ಮಿ)ಗೂ ಆಸರೆಯಾದ  ಆ ಭಗವಂತವಂತನನ್ನು ಮೋಕ್ಷದಲ್ಲಿ ಸೇರಬಹುದು.   

No comments:

Post a Comment