Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Sunday, March 6, 2011

Bhagavad Gita Kannada-Chapter-02 Shloka-47

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ ।
ಮಾ ಕರ್ಮಫಲಹೇತುರ್ಭೂರ್ಮಾ ತೇ ಸಂಗೋSಸ್ತ್ವಕರ್ಮಣಿ ॥೪೭॥

ಕರ್ಮಣಿ ಏವ ಅಧಿಕಾರಃ ತೇ  ಮಾ ಫಲೇಷು ಕದಾಚನ
ಮಾ ಕರ್ಮಫಲ ಹೇತುಃ ಭೂಃ ಮಾ ತೇ ಸಂಗಃ ಅಸ್ತು ಅಕರ್ಮಣಿ --ಕರ್ಮದಲ್ಲಿ ಮಾತ್ರ ನಿನಗೆ ಹಕ್ಕು, ಫಲಗಳಲ್ಲಿ ಎಂದೂ ಇಲ್ಲ. ಫಲವನ್ನೇ ನಂಬಿ ಕರ್ಮ ಮಾಡಬೇಡ (ಕರ್ಮಕ್ಕೆ ಫಲ ನೀಡುವ ಶಕ್ತಿ ತಾನೆಂದು ಭ್ರಮಿಸಬೇಡ). ಅಂತೆಯೇ ನಿಷ್ಕ್ರಿಯತೆ ನಿನಗಂಟದಿರಲಿ.

ಈ ಶ್ಲೋಕವನ್ನು ಅಪಾರ್ಥ ಮಾಡಿಕೊಳ್ಳುವವರೆ ಹೆಚ್ಚು. ಕರ್ಮ ಮಾಡಬೇಕು ಆದರೆ ಫಲವನ್ನು ಬಯಸಬಾರದು ಅಂದರೆ ಏನು? ಇದು ಮನುಷ್ಯನನ್ನು ನಿಷ್ಕ್ರಿಯಗೊಳಿಸುತ್ತದೆ, ಎಂಬಿತ್ಯಾದಿ ವಾದಗಳನ್ನು ಈ ಶ್ಲೋಕದ ಮೇಲೆ ಅನೇಕ ಮಂದಿ ಮಂಡಿಸಿದ್ದಾರೆ. ಆದರೆ ಅವರ್ಯಾರೂ ಶ್ಲೋಕದ ನಿಜವಾದ ಅರ್ಥವನ್ನು ತಿಳಿಯಲು ಪ್ರಯತ್ನಿಸಿಲ್ಲ. ಇಲ್ಲಿ ಫಲವನ್ನು ಬಯಸಬೇಡ ಎಂದು ಎಲ್ಲಿಯೂ ಹೇಳಿಲ್ಲ. ಅದಕ್ಕೆ ಬದಲಾಗಿ ಫಲದಲ್ಲಿ ಅಧಿಕಾರ ಸಾಧಿಸಬೇಡ ಎಂದಿದ್ದಾನೆ ಕೃಷ್ಣ.
 ಕರ್ಮ ನಿನ್ನ ಕೈಯಲ್ಲಿದೆ- ಆದರೆ ಕರ್ಮ ಫಲ ಭಗವಂತನ ಕೈಯಲ್ಲಿದೆ. ನೀನು ನಾನೇ ಕರ್ಮ ಫಲದ ಹೇತು ಎಂದು ತಿಳಿಯಬೇಡ. ಕರ್ಮಫಲದ ಹೇತು ಭಗವಂತ ಎನ್ನುವ ಎಚ್ಚರ ನಿನಗಿರಲಿ ಎನ್ನುತ್ತಾನೆ ಕೃಷ್ಣ. ಇಲ್ಲಿ ಕೃಷ್ಣ ಬಯಕೆಯನ್ನು ನಿರಾಕರಣೆ ಮಾಡಿಲ್ಲ, ಆದರೆ 'ಹೀಗೇ ಆಗಬೇಕು' ಇಲ್ಲದಿದ್ದರೆ ನಾನು ಈ ಕರ್ಮವನ್ನು ಮಾಡಲಾರೆ ಎನ್ನುವ ಅಭಿಪ್ರಾಯ ಸರಿಯಲ್ಲ ಎಂದಿದ್ದಾನೆ. ಬಯಸುವ ಅಧಿಕಾರ ನಮಗಿದೆ ಆದರೆ ಫಲವನ್ನು ಕೊಡುವವ ಭಗವಂತ ಎನ್ನುವ ಪರಿಜ್ಞಾನ ಬೇಕು. ಎಷ್ಟೋ ಸಲ ನಾವು ಅರಿವಿಲ್ಲದೆ ತಪ್ಪನ್ನು ಬಯಸುತ್ತೇವೆ. ಆಗ ಭಗವಂತ ಅದನ್ನು ಕೊಡಲಾರ. ಏಕೆಂದರೆ ಯಾವುದು ಸರಿ, ಯಾವುದು ತಪ್ಪು ಎನ್ನುವ ಪರಿಜ್ಞಾನ ನಮಗಿಲ್ಲ. ಈ ಎಚ್ಚರ ಇದ್ದರೆ ನಮಗೆ ಫಲ ಸಿಗದಿದ್ದಾಗ ದುಃಖವಾಗುವುದಿಲ್ಲ. ನಾವು ಮಾಡುವ ಕರ್ಮವನ್ನು ನಿಷ್ಠೆಯಿಂದ ಭಗವದರ್ಪಣೆಯಾಗಿ ಮಾಡಿ, ಅದರಿಂದ ಏನು ಫಲ ಬಂತೋ ಅದನ್ನು ಹಾಗೇ ಸ್ವೀಕರಿಸುವ ಮನೋವೃತ್ತಿಯನ್ನು ಬೆಳೆಸಿಕೊಂಡರೆ ದುಃಖವಿರುವುದಿಲ್ಲ.
ಯಾವ ಕಾಲಕ್ಕೂ ನಿಷ್ಕ್ರೀಯನಾಗಿ ಕುಳಿತುಕೊಳ್ಳದೆ ಸದಾ ಕರ್ತವ್ಯ ಶೀಲನಾಗು ಎನ್ನುತ್ತಾನೆ ಕೃಷ್ಣ. ‘ಹೀಗೇ ಆಗಬೇಕು’, ‘ಇಂಥಹ ಫಲವೇ ಬರಬೇಕು’ ಎನ್ನುವ ವಿಚಾರವನ್ನು ಬಿಟ್ಟು, ಕರ್ತವ್ಯ ನಿರ್ವಹಿಸಿದಾಗ ಯಾವ ದುಃಖವೂ ಇಲ್ಲ. ಅದನ್ನು ಬಿಟ್ಟು ಫಲದಲ್ಲಿ ಅಧಿಕಾರ ಸಾಧಿಸಿದರೆ ಆ ಫಲ ದಕ್ಕದೇ ಇದ್ದಾಗ ಆಗುವ ಆಘಾತವ್ಯಾಕುಲತೆ(Mental depression) ಭಯಾನಕ. ಸೋಲನ್ನಾಗಲಿ ಗೆಲುವನ್ನಾಗಲಿ ಸಮನಾಗಿ ಕಾಣುವ ಮನಃಸ್ಥಿತಿ ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಈ ಹಿಂದೆ ಹೇಳಿದಂತೆ ನಾವು ಸೋಲಿನಲ್ಲಿ ಕಲಿತಷ್ಟು ಗೆಲುವಿನಲ್ಲಿ ಕಲಿಯಲಾಗದು. ಭಗವಂತ ನಮಗೆ ಫಲವನ್ನು ಕೊಡುವಾಗ ನಮ್ಮ ಒಳಿತನ್ನು ಗಮನದಲ್ಲಿಟ್ಟುಕೊಂಡು ಕೊಡುತ್ತಾನೆಯೇ ಹೊರತು , ನಾವು ಅಂದುಕೊಂಡಂತೆ ಅಲ್ಲ. ಬಂದದ್ದನ್ನು ಬಂದಂತೆ ಸ್ವೀಕರಿಸಿ, ಎಂದೂ ನಿಷ್ಕ್ರೀಯನಾಗದೆ, ಫಲದಲ್ಲಿ ಅಧಿಕಾರವನ್ನು ಸಾಧಿಸದೆ ಮುನ್ನೆಡೆಯಬೇಕು ಎನ್ನುವುದು ಕೃಷ್ಣನ ಕರ್ಮ ಸಿದ್ಧಾಂತ. ಇಲ್ಲಿ ಅರ್ಜುನ ತಾನು ಧರ್ಮ ರಕ್ಷಣೆ ಮಾಡಲು, ಧರ್ಮದ ವಿಜಯಕ್ಕಾಗಿ ಯುದ್ಧ ಮಾಡುತ್ತೇನೆ ಅಂದುಕೊಳ್ಳುವುದು ತಪ್ಪಲ್ಲ. ಈ ಹಂತದಲ್ಲಿ ಸೋಲು-ಗೆಲುವಿನ ಬಗ್ಗೆ  ಯೋಚಿಸದೆ, ಅದನ್ನು ಪೂರ್ಣ ಭಗವಂತನಲ್ಲಿ ಅರ್ಪಿಸಿ, ತನ್ನ ಪಾಲಿಗೆ ಬಂದ ಕರ್ತವ್ಯವನ್ನು ನಿಷ್ಟೆಯಿಂದ ತನ್ನ ಶಕ್ತಿ ಮೀರಿ ನಿಭಾಯಿಸುವುದು ಆತನ ಧರ್ಮ. ಹೀಗೆ ಮಾಡಿದಾಗ ಯುದ್ಧದ ಪ್ರತಿಯೊಂದು ಹಂತದಲ್ಲಿ ಬರುವ ಫಲಿತಾಂಶ ಆತನನ್ನು ಕಂಗೆಡಿಸಲಾರವು. ಏನೇ ಫಲಿತಾಂಶ ಬಂದರೂ ಅದು ಭಗವಂತನ ಪ್ರಸಾದ ಎಂದು ಸ್ವೀಕರಿಸುತ್ತಾ ಮುಂದೆ ಸಾಗಬೇಕು ಅಷ್ಟೆ.

Saturday, March 5, 2011

Bhagavad Gita Kannada Chapter-02 Shloka 46

ಯಾವಾನರ್ಥ ಉದಪಾನೇ ಸರ್ವತಃ ಸಂಪ್ಲುತೋದಕೇ   
ತಾವಾನ್ ಸರ್ವೇಷು ವೇದೇಷು ಬ್ರಾಹ್ಮಣಸ್ಯ ವಿಜಾನತಃ    ॥೪೬॥

ಯಾವಾನ್ ಅರ್ಥಃ  ಉದಪಾನೇ ಸರ್ವತಃ ಸಂಪ್ಲುತ ಉದಕೇ
ತಾವಾನ್ ಸರ್ವೇಷು ವೇದೇಷು ಬ್ರಾಹ್ಮಣಸ್ಯ ವಿಜಾನತಃ --ಬಾವಿಯಿಂದ ಏನೇನು ಉಪಯೋಗವಿದೆಯೋ  ಅದೆಲ್ಲವೂ ತುಂಬಿ ಹರಿಯುವ ನೀರ ನೆಲೆಯಲ್ಲಿ ಒಳಗೊಂಡಿದೆ. ಎಲ್ಲಾ ವೇದಗಳಲ್ಲಿ ಏನು ಫಲವೋ ಅದು ಬ್ರಹ್ಮವನ್ನು ಬಲ್ಲ ವಿಜ್ಞಾನಿಯ ಫಲದಲ್ಲಿ ಒಳಗೊಂಡಿದೆ.[ಪ್ರಕೃತಿಯೆ ನೀರಂತೆ ಎಲ್ಲೆಡೆ ತುಂಬಿ ಹರಿಯುವ ಪ್ರಳಯದಲ್ಲಿ ಕೂಡಾ ತುಂಬಿದ ಕೊಡವಾಗಿ, ಇನ್ನೊಬ್ಬರ ಕಾಪಿಗೊಳಪಡದೆ, ಕಾಲಾದಿಗಳನ್ನು ನಿಯಮಿಸುವ ಭಗವಂತನಿಂದ ಎನಿತು ಲಭ್ಯವೋ -ಅದು ಎಲ್ಲ ವೇದಗಳನ್ನು ಬಲ್ಲ ಹಿರಿಯ ಜ್ಞಾನಿಗೆ ಮಾತ್ರ ಸುಲಭ]

ಈ ಶ್ಲೋಕ ಒಗಟಿನಂತಿದೆ. ನೇರವಾಗಿ ನೋಡಿದರೆ ಅರ್ಥ ತಿಳಿಯದ ಶ್ಲೋಕವಿದು.ಈ ಶ್ಲೋಕವನ್ನು ಅರ್ಥ ಮಾಡಿಕೊಳ್ಳಬೇಕಾದರೆ ನಾವು ಶ್ಲೋಕದಲ್ಲಿ ಮುಳುಗಬೇಕು. ಆಗ ಆಳದಲ್ಲಿನ ಮುತ್ತು ರತ್ನಗಳು ನಮಗೆ ಸಿಗುತ್ತವೆ. ನಾವು ನಮ್ಮ ಅಹಂಕಾರವನ್ನು ಸಂಪೂರ್ಣ ತೊರೆದು ಶರಣಾಗತಿಯಿಂದ(Total Submission) ನೋಡಿದಾಗ ಅದು ತನ್ನನ್ನು ತೆರೆದುಕೊಳ್ಳುತ್ತದೆ.    ಶ್ಲೋಕವನ್ನು ಸ್ವಲ್ಪ ಬಿಡಿಸಿ ಹೀಗೆ ಬರೆಯಬಹುದು:
ಯಾವಾನ್ ಅರ್ಥ ಉದಪಾನೇ  ಯಾವಾನ್ ಅರ್ಥ ಸರ್ವತಃ ಸಂಪ್ಲುತೋದಕೇ   
ತಾವಾನ್ ಸರ್ವೇಷು ವೇದೇಷು  ತಾವಾನ್ ಬ್ರಾಹ್ಮಣಸ್ಯ ವಿಜಾನತಃ
ಒಂದು  ಬಾವಿ ತೋಡಿ ಅದರಲ್ಲಿ ಬರುವ ನೀರಿನಿಂದ ಏನು ಪ್ರಯೋಜನವೋ, ಆ ಎಲ್ಲಾ ಪ್ರಯೋಜನಗಳ ಜೊತೆಗೆ ಇನ್ನೂ ಅನೇಕಾನೇಕ ಪ್ರಯೋಜನಗಳನ್ನು ತುಂಬಿ ಹರಿಯುವ ನೀರಿನ ನೆಲೆ ಕೊಡಬಲ್ಲದು. ಕರ್ಮ ಕಾಂಡವನ್ನು ಮಾಡುವವನ ಸ್ಥಿತಿ ಮನೆಯಲ್ಲಿ ಕಷ್ಟಪಟ್ಟು ಬಾವಿ ತೋಡಿ ಅದರಿಂದ ನೀರು ಸೇದಿದಂತೆ.  ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಂಡವನ ಸ್ಥಿತಿ ತುಂಬಿ ಹರಿಯುವ ನೀರಿನ ನೆಲೆಯ ದಡದಲ್ಲಿದ್ದಂತೆ. ಅಪರೋಕ್ಷ ಜ್ಞಾನಿ ಎಲ್ಲವುದರಲ್ಲೂ ಭಗವಂತನನ್ನು ಕಾಣುತ್ತಾನೆ. ಬ್ರಹ್ಮಜ್ಞಾನಿ ಸದಾ ನಿರ್ಮಲವಾಗಿ ತುಂಬಿ ಹರಿಯುವ ನೀರಿನ ನೆಲೆಯ ಪಕ್ಕ ನಿಂತವನಂತೆ. ಇಡೀ ವೇದವನ್ನು ಓದಿ ಕರ್ಮದಲ್ಲೇ ಕುಳಿತವನು ಬೆವರು ಸುರಿಸಿ ಬಾವಿಯಿಂದ ನೀರು ಸೇದುವವನಂತೆ.
ಈ ಶ್ಲೋಕದಲ್ಲಿ 'ಬ್ರಾಹ್ಮಣ' ಎನ್ನುವ ಪದ ಬಂದಿದೆ. ಇದನ್ನು 'ಜಾತಿ' ಎಂದು ಪರಿಗಣಿಸಿದರೆ ಈ ಶ್ಲೋಕದ ನಿಜ ಸಂದೇಶ ತಿಳಿಯುವುದಿಲ್ಲ. ವೇದ ಗ್ರಂಥಗಳಲ್ಲಿ ಎಲ್ಲೂ ಜಾತಿಯ ಬಗ್ಗೆ ಪ್ರಸ್ತಾಪವಿಲ್ಲ.  ಬ್ರಾಹ್ಮಣ ಅಂದರೆ 'ಬ್ರಹ್ಮ ಅಣತೀತಿ'; ಅಂದರೆ ಬ್ರಹ್ಮ ತತ್ವವನ್ನು ಅರ್ಥ ಮಾಡಿಕೊಂಡವ ಎಂದರ್ಥ. 'ಬ್ರಹ್ಮ' ಎಂದರೆ ಎಲ್ಲಕ್ಕಿಂತ ದೊಡ್ಡದಾದದ್ದು. ಎಲ್ಲಕ್ಕಿಂತ ದೊಡ್ಡದು ವೇದ ಮತ್ತು ವೇದವೇದ್ಯನಾದ ಭಗವಂತ. ಆದ್ದರಿಂದ ವೇದವನ್ನು ಅರಿತವನು, ವೇದವೇದ್ಯ ಭಗವಂತನನ್ನು ಸಾಕ್ಷಾತ್ಕರಿಸಿಕೊಂಡವನು ಬ್ರಾಹ್ಮಣ.
ಬ್ರಹ್ಮನನ್ನು ಅಪರೋಕ್ಷವಾಗಿ ತಿಳಿದ ಜ್ಞಾನಿಗೆ ತುಂಬಿ ಹರಿವ ನೀರನ ಫಲವಾದರೆ, ಕರ್ಮಕನಿಗೆ ಬಾವಿಯ ಫಲ. ಶಾಸ್ತ್ರದಿಂದ ವಿಶಿಷ್ಟವಾದ ಅರಿವನ್ನು ಪಡೆದ ವಿಜ್ಞಾನಿ ಮಾತ್ರ ಭಗವಂತನನ್ನು ಕಾಣಬಲ್ಲ. ಇಲ್ಲಿ ವಿಜ್ಞಾನಿ ಅಂದರೆ ಯಾವುದೇ ಒಂದು ವಸ್ತುವಿನ ಬಗ್ಗೆ ತಳಸ್ಪರ್ಶಿ ಜ್ಞಾನ ಉಳ್ಳವನು ಎಂದರ್ಥ.
ಈ ಶ್ಲೋಕದಲ್ಲಿ ಇನ್ನೊಂದು ವಿಷಯವಡಗಿದೆ.  "ಸರ್ವತಃ ಸಂಪ್ಲುತೋದಕ" ಎಂದರೆ ನೀರು ತುಂಬಿದ ಸ್ಥಿತಿ. ಇಲ್ಲಿ ನೀರು ಎಂದರೆ ಪ್ರಳಯಜಲ. ಪ್ರಕೃತಿ ಸೂಕ್ಷ್ಮವಾದ  ಪರಮಾಣುವಿನ ಸಮುದ್ರ ರೂಪದಲ್ಲಿರುವ ಕಾಲ-ಪ್ರಳಯ ಕಾಲ. ಇಂತಹ ಪ್ರಳಯ ಸಮುದ್ರದಲ್ಲಿ ಮಲಗಿರುವವ 'ಉದಪಾನ'.  ಉತ್+ಅಪ+ಪಾನ-ಅಂದರೆ ಎಲ್ಲಕ್ಕಿಂತ ಉತ್ಕೃಷ್ಟವಾದ, ಸದಾ ಎಚ್ಚರದಿಂದಿರುವ(ಉತ್); ಎಲ್ಲರನ್ನು ಪಾಲಿಸುವ, ಹಾಗು ತನಗೆ ಹಿರಿದಾದ ಇನ್ನೊಬ್ಬ ಪಾಲಕನಿಲ್ಲದ ಸರ್ವೋತ್ತಮ(ಅಪ); ಎಲ್ಲರನ್ನೂ ನಿಯಂತ್ರಿಸುವ ಸರ್ವಚೇಷ್ಟಕ(ಅನ). ಈ ತತ್ವದ ಮೂಲಕ ಏನೇನು ಉಪಯೋಗವನ್ನು ಪಡೆಯಬಹುದೋ  ಆ ಉಪಯೋಗವನ್ನು ಸಮಸ್ತ ವೇದದಲ್ಲಿ, ವೇದದ ಒಂದೊಂದು ಮಂತ್ರದಲ್ಲಿ, ಮಂತ್ರದ ಒಂದೊಂದು ವಾಕ್ಯದಲ್ಲಿ, ವಾಕ್ಯದ ಒಂದೊಂದು ಪದದಲ್ಲಿ, ಪದದ ಒಂದೊಂದು ಅಕ್ಷರದಲ್ಲಿ ಭಗವಂತನನ್ನು ಕಾಣುವ  ಬ್ರಹ್ಮಜ್ಞಾನಿ ಪಡೆಯುತ್ತಾನೆ.
ವೇದವನ್ನು ಕೇವಲ ಮೇಲ್ನೋಟದಲ್ಲಿ ಓದಿದರೆ ಅದರಿಂದ ಏನೂ ಉಪಯೋಗವಿಲ್ಲ. ವೇದದ ಸಮಗ್ರ ಮಂತ್ರದಲ್ಲಿ, ಮಂತ್ರದ ಒಂದೊಂದು ಅಕ್ಷರದಲ್ಲಿ ಭಗವಂತನನ್ನು ಕಂಡು ಭಗವನ್ಮಯನಾದಾಗಭಗವಂತನ ಸಮಸ್ತ ಅನುಗ್ರಹಕ್ಕೆ ಪಾತ್ರನಾಗಿ, ಸಮಗ್ರ ಉಪಯೋಗವನ್ನು ಪಡೆಯಬಹುದು.
“ಫಲ ಕಾಮನೆಯಿಂದ ಕರ್ಮಕಾಂಡ  ಬೇಡ, ಸಮಗ್ರವೇದವನ್ನು ಭಗವಂತನ ಚಿಂತನೆಗೆ ಮೀಸಲಿಡಿ” ಎಂದು ಹೇಳಿದ ಕೃಷ್ಣನ ಮಾತಿನಿಂದ ನಮಗೆ ಸ್ವಲ್ಪ ಗೊಂದಲವಾಗಬಹುದು. ಏಕೆಂದರೆ ವೇದದಲ್ಲಿ ಪ್ರತಿಯೊಂದು ಕಡೆ ಫಲವನ್ನು ಹೇಳಿದ್ದಾರೆ. ಏಕೆ ಹೀಗೆ ಎನ್ನುವ ಪ್ರಶ್ನೆ ನಮ್ಮಲ್ಲಿ ಮೂಡುತ್ತದೆ. ಈ ಹಿಂದೆ ಹೇಳಿದಂತೆ ಅಧ್ಯಾತ್ಮದ ಪಠ್ಯಪುಸ್ತಕ ಸಾಧನೆಯ ಎಲ್ಲಾ ಹಂತದಲ್ಲೂ-ಚಿಕ್ಕವರಿಂದ ದೊಡ್ಡವರಿಗೆ ಎಲ್ಲರಿಗೂ ಒಂದೆ. ಇನ್ನೂ ಆರಂಭದ ಹಂತದಲ್ಲಿರುವವರಿಗೆ ಏನನ್ನೂ ಬಯಸದೆ ನಿರ್ಲಿಪ್ತರಾಗಿ ಅನುಸರಿಸಿ ಎಂದು ಹೇಳಿದರೆ ಅವರಿಗೆ ವೇದಾಂತದ ಬಗ್ಗೆ ಆಸಕ್ತಿಯೇ ಬಾರದಿರಬಹುದು. ಅದಕ್ಕಾಗಿ, ಮಕ್ಕಳಿಗೆ ಬೆಲ್ಲ ಕೊಟ್ಟು ಔಷಧ ಕುಡಿಸಿದಂತೆ ವೇದಗಳಲ್ಲಿ ಫಲವನ್ನು ಹೇಳಿದ್ದಾರೆ. ಇದು  ವೇದಾಭ್ಯಾಸದ ಆರಂಭದ ಹಂತದಲ್ಲಿ ಉಪಯುಕ್ತ.

ಕರ್ಮ  ಮಾಡುವಾಗ ನಮ್ಮ ಮನಃಸ್ಥಿತಿ ಹೇಗಿರಬೇಕು ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ಕೃಷ್ಣ ವಿವರವಾಗಿ ಹೇಳಿದ್ದಾನೆ.

Bhagavad Gita Kannada Chapter-02-Shloka-45

ತ್ರೈಗುಣ್ಯವಿಷಯಾ ವೇದಾ ನಿಸ್ತ್ರೈಗುಣ್ಯೋ ಭವಾರ್ಜುನ   
ನಿರ್ದ್ವನ್ದ್ವೋ ನಿತ್ಯಸತ್ತ್ವಸ್ಥೋ ನಿರ್ಯೋಗಕ್ಷೇಮ ಆತ್ಮವಾನ್ ॥೪೫॥

ತ್ರೈಗುಣ್ಯ ವಿಷಯಾಃ ವೇದಾಃ ನಿಸ್ತ್ರೈಗುಣ್ಯಃ ಭವ ಅರ್ಜುನ
ನಿರ್ದ್ವಂದ್ವಃ  ನಿತ್ಯಸತ್ತ್ವಸ್ಥಃ ನಿರ್ಯೋಗಕ್ಷೇಮಃ ಆತ್ಮವಾನ್-- ವೇದಗಳು ಹೊರನೋಟಕ್ಕೆ ತ್ರಿಗುಣಗಳ ನಂಟನ್ನೇ ನಿರೂಪಿಸುತ್ತವೆ [ಒಳಗಿನಿಂದ ತ್ರಿಗುಣಗಳ ನಂಟಿನ ನಂಜನ್ನು ನಿವಾರಿಸುತ್ತವೆ]. ಓ ಅರ್ಜುನ, ನೀನು ತ್ರಿಗುಣಗಳ ನಂಟನ್ನು ನೀಗಿ ನಿಲ್ಲು.     ದ್ವಂದ್ವಗಳ ತಾಕಲಾಟ ತೊಡೆದು ಸದಾ ಭಗವಂತನಲ್ಲಿ ಬಗೆಯನ್ನಿಡು. ಯೋಗ-ಕ್ಷೇಮದ ಹೊಣೆಯನ್ನು ಅವನಿಗೊಪ್ಪಿಸಿ ಅವನೇ ಸ್ವಾಮಿ ಎಂದು ನಂಬಿ ನಡೆ.

ಈವರೆಗೆ ನಾವು ವೇದವನ್ನು ಹೇಗೆ ಅನುಸಂಧಾನ ಮಾಡಬೇಕು, ಅದರ ಮೇಲ್ನೋಟದ ಅರ್ಥದಿಂದ ಆಳಕ್ಕೆ ಹೇಗೆ ಇಳಿಯಬೇಕು ಎನ್ನುವುದನ್ನು ಕೃಷ್ಣ ಅರ್ಜುನನಿಗೆ ಹೇಳಿದ್ದನ್ನು ನೋಡಿದೆವು. ಇನ್ನಷ್ಟು ಸ್ಪಷ್ಟವಾಗಿ , ಅದು ಹೇಗೆ ಕಾಣುತ್ತದೆ ಹಾಗು ಅದನ್ನು ಹೇಗೆ ನೋಡಬೇಕು ಎನ್ನುವುದನ್ನು ಈ ಶ್ಲೋಕದಲ್ಲಿ ಕೃಷ್ಣ ಸ್ಪಷ್ಟವಾಗಿ ಹೇಳುತ್ತಾನೆ. ಇದು ಒಂದು ರೀತಿಯಲ್ಲಿ ಇಡೀ ಆಧ್ಯಾತ್ಮದ ಅನುಸಂಧಾನದ ಪ್ರಮುಖವಾದ ವಿಚಾರ. ಇಲ್ಲಿ ಕೃಷ್ಣ ಅದನ್ನು ಹೇಗೆ ಅನುಸಂಧಾನ ಮಾಡಬೇಕು, ಹಾಗು ನಮ್ಮ ಮನಸ್ಸನ್ನು  ಹೇಗೆ ಅಣಿಗೊಳಿಸಬೇಕು ಎಂದು ಹೇಳುತ್ತಾನೆ.
ನಮಗೆ ಮೇಲ್ನೋಟಕ್ಕೆ ವೇದ ಸತ್ವ-ರಜಸ್ಸು-ತಮೋಗುಣಗಳಿಗೆ(ತ್ರೈಗುಣ್ಯ) ಸಂಬಂಧಪಟ್ಟ ಪ್ರಾಪಂಚಿಕ ವಿಷಯ, ಹಾಗು ಕೇವಲ ಪ್ರಾಪಂಚಿಕ ಅರ್ಥವನ್ನೇ ಹೇಳುವಂತೆ  ಕಾಣುತ್ತದೆ-ಕೆಂಪು ಕನ್ನಡಕ ಧರಿಸಿದವನಿಗೆ ಪ್ರಪಂಚವೆಲ್ಲಾ ಕೆಂಪಾಗಿ ಕಾಣುವಂತೆ. ಉದಾಹರಣೆಗೆ: ಸಂತಾನ ವೃದ್ಧಿ, ಹಟ್ಟಿ ತುಂಬಾ ಹಸು, ಕೈತುಂಬ  ದುಡ್ಡು, ಮನೆತುಂಬ ಮಕ್ಕಳು, ರಾಜಸೂಯ, ಅಶ್ವಮೇಧ, ಪುರುಷಮೇಧ  ಇತ್ಯಾದಿ. ಇವು ವೇದದಲ್ಲಿ ಮೇಲ್ನೋಟಕ್ಕೆ ಕಾಣುವವು. ಇವೆಲ್ಲವೂ ತೀರಾ ಪ್ರಾಪಂಚಿಕ ವಿಷಯಗಳು.  ಇದರಿಂದಾಗಿ ವೇದ ನಮ್ಮನ್ನು ಆಧ್ಯಾತ್ಮದ ಆಳಕ್ಕೆ ಕೊಂಡೊಯ್ಯುವುದಿಲ್ಲ ಎನ್ನುವಂತೆ ಬಾಸವಾಗುತ್ತದೆ. ಆದರೆ ನಾವು ವೇದವನ್ನು ಅರ್ಥ ಮಾಡಿಕೊಳ್ಳಬೇಕಾದರೆ ಮೊದಲು ಪ್ರಾಪಂಚಿಕ ಪ್ರಭಾವವನ್ನು ದಾಟಿ  ನಿಲ್ಲಬೇಕು. ಪ್ರಾಪಂಚಿಕ ಪ್ರಭಾವ ಕೆಂಪು ಕನ್ನಡಕದಂತೆ. ಅದರ ಪ್ರಭಾವದಲ್ಲಿ ವೇದವನ್ನು ಕಂಡರೆ ನಮಗೆ ಕಾಣುವುದು ಕೇವಲ ಪ್ರಾಪಂಚಿಕ ವಿಷಯ ಮಾತ್ರ. ಅದಕ್ಕಾಗಿ ನಾವು ತ್ರೈಗುಣ್ಯವರ್ಜಿತರಾಗಬೇಕು. ಈ ತ್ರೈಗುಣ್ಯದ ಪ್ರಭಾವವನ್ನು ದಾಟಿ ನಮ್ಮ ನಿಜವಾದ ಸ್ವಭಾವ ಏನು ಎನ್ನುವುದನ್ನು ಗುರುತಿಸಿಕೊಂಡಾಗ ಶುದ್ಧ ಚಿಂತನೆ ಸಾಧ್ಯ. ತ್ರಿಗುಣದ ಬೇಲಿಯನ್ನು ದಾಟದೆ ಸತ್ಯ ತಿಳಿಯುವುದಿಲ್ಲ. ತ್ರಿಗುಣದ ಪ್ರಭಾವದಿಂದ ಪೂರ್ಣ ಆಚೆಗೆ ನಿಲ್ಲುವುದು ಅಸಾಧ್ಯ, ಆದರೆ ಈ ವಿಷಯ ಗೊತ್ತಿದ್ದು ಅದರ ಎಚ್ಚರ ಇದ್ದರೆ ನಾವು ಸಾಧನೆ ಮಾಡಲು ಸಾಧ್ಯ.  ನಾವು ಎಷ್ಟು ಅಪವಿತ್ರರಾಗಿರಲಿ, ಬಾಯಿಯಲ್ಲಿ ಭಗವಂತನ ನಾಮ ಸ್ಮರಣೆ, ನಮ್ಮೊಳಗೆ ಭಗವಂತನಿದ್ದಾನೆ ಎನ್ನುವ ಎಚ್ಚರ ನಮ್ಮನ್ನು ಶುದ್ಧವಾಗಿಸುತ್ತದೆ.
ಧ್ಯಾನ  ಮಾಡುವಾಗ ನಮ್ಮ ಮನಸ್ಸು ಹೊರ ಪ್ರಪಂಚದತ್ತ ಸುಳಿಯದಂತೆ ನೋಡಿಕೊಳ್ಳಬೇಕು. ಆತ್ಮಜ್ಞಾನವಿಲ್ಲದೆ ಹೋಮ ಹವನ ಮಾಡಿ ಉಪಯೋಗವಿಲ್ಲ. ನಮಗೆ ಆಶ್ರಯವಾಗಿರುವ ಆತ್ಮತತ್ವ ಭಗವಂತನ ಅರಿವಿನಿಂದ ನಿಸ್ವಾರ್ಥವಾಗಿ ಸಾಧನೆ ಮಾಡಬೇಕು. ಎಂದೂ ಕಪಟ ವಂಚನೆ ಇಲ್ಲದ ಧರ್ಮವನ್ನು ಆಚರಿಸಬೇಕು. ನಮ್ಮ ಮನಸ್ಸನ್ನು ಶುದ್ಧ ಭಾವ ಚಿಂತನೆಗೆ ಅಣಿಗೊಳಿಸಬೇಕು. ನಮ್ಮ ಸ್ವಾರ್ಥದತ್ತ ನೋಡದೆ, ತ್ರಿಗುಣಗಳನ್ನು ದಾಟಿ ನಿಂತರೆ ಮಾತ್ರ ನಮಗೆ ವೇದದ ನಿಜ ಸಂದೇಶ ತಿಳಿಯುತ್ತದೆ.  ಈ ಸ್ಥಿತಿಯಲ್ಲಿ ವೇದ ಓದಿದರೆ ಅದು ಕೇವಲ ಲೌಕಿಕ ವಿಷಯವಲ್ಲ ಎನ್ನುವುದು ಅರ್ಥವಾಗುತ್ತದೆ. ನಾವು ಮಾಡುವ ಪ್ರತಿಯೊಂದು ಕರ್ಮವನ್ನು, ಪೂಜೆ ಪುರಸ್ಕಾರವನ್ನು, ನಿಸ್ವಾರ್ಥವಾಗಿ ಭಗವಂತನ ಆರಾಧನೆ ಎಂದು ಮಾಡಬೇಕು. ನಮಗೇನು ಬೇಕು ಅನ್ನುವುದು ನಮಗೆ ಗೊತ್ತಿಲ್ಲ , ನಮಗೆ ಅಗತ್ಯವಾದುದ್ದನ್ನು ಭಗವಂತ ಕೊಟ್ಟೇ ಕೊಡುತ್ತಾನೆ ಎಂದು, ನಮ್ಮ ಭವಿಷ್ಯದ ಚಿಂತೆಯನ್ನು ಭಗವಂತನಿಗೊಪ್ಪಿಸಿ, ಮುನ್ನೆಡೆದರೆ ಜ್ಞಾನ ಸಿದ್ಧಿಯಾಗುತ್ತದೆ.
ಇಲ್ಲದ್ದನ್ನು ಪಡೆಯುವುದು ಯೋಗ, ಪಡೆದಿದ್ದನ್ನು ಉಳಿಸಿಕೊಳ್ಳುವುದು ಕ್ಷೇಮ. ಈ ಯೋಗ ಕ್ಷೇಮದಲ್ಲೇ ನಮ್ಮ ಇಡೀ ಜೀವನ ಕಳೆದು ಹೋಗುತ್ತದೆ. ಇದನ್ನು ಬಿಟ್ಟು ಭಗವಂತ ನಮಗೆ ಏನು ಕೊಟ್ಟಿದ್ದಾನೋ ಅದರಲ್ಲಿ ಸಂತೋಷವಾಗಿರಲು ಕಲಿಯಬೇಕು.  'ನಿರ್ಯೋಗಕ್ಷೇಮದ'  ಸ್ಥಿತಿಯಲ್ಲಿ ಮಾತ್ರ ಸತ್ಯದ ಸಾಕ್ಷಾತ್ಕಾರವಾಗುತ್ತದೆ. ನಮ್ಮ ಯೋಗಕ್ಷೇಮದ ಹೊಣೆ ಆ ಭಗವಂತನದ್ದು, ಎಲ್ಲರೊಳಗೆ ಅಂತರ್ಯಾಮಿಯಾಗಿರುವ ಭಗವಂತ ಎಂದೆಂದೂ ನಮ್ಮನ್ನು ರಕ್ಷಿಸುತ್ತಾನೆ ಎನ್ನುವ ಭರವಸೆಯಿಂದ, ಭಗವಂತನ ಚಿಂತನೆಗೆ ತೊಡಗಬೇಕು. ಇದು ಆಧ್ಯಾತ್ಮ ಸಾಧನೆಗೆ ಬೇಕಾದ ಮಾನಸಿಕ ತಯಾರಿ. ಇಂಥಹ ಮನಃಸ್ಥಿತಿಯಲ್ಲಿ ಯಾವ ಗ್ರಂಥ ಓದಿದರೂ ಅದು ಭಗವಂತನ ಸ್ತುತಿಯಾಗುತ್ತದೆ. ಈ ಮನಃಸ್ಥಿತಿ ತಲುಪದೆ ವೇದಾಂತ ನಮಗೆ ಅರ್ಥವಾಗುವುದಿಲ್ಲ.

ಅಧ್ಯಾತ್ಮ ಮಾರ್ಗದಲ್ಲಿ ಸಾಗುವ ವ್ಯಕ್ತಿಯ ಸಾಧನೆ ಏನಿರಬೇಕು, ಅಂತರಂಗದ ಅನುಷ್ಠಾನ ಹೇಗಿರಬೇಕು, ಎನ್ನುವುದನ್ನು ಸ್ಪಷ್ಟಪಡಿಸಿದ ಕೃಷ್ಣನ ಮಾತಿನಿಂದ ನಮಗೆ ಒಂದು ಪ್ರಶ್ನೆ ಮೂಡಬಹುದು. ಕೃಷ್ಣ  ಕರ್ಮ ಮತ್ತು ಜ್ಞಾನಗಳಲ್ಲಿ- ಜ್ಞಾನಕ್ಕೆ ಒತ್ತುಕೊಟ್ಟು ಸಾಗಬೇಕು, ನಮ್ಮ ಯಾವುದೇ ಕ್ರಿಯೆಯ  ಅನುಸಂಧಾನ ಜ್ಞಾನದ ಕಡೆಗೆ ಪೂರಕವಾಗಿರಬೇಕು ಎನ್ನುತ್ತಾನೆ. “ಏಕೆ ಜ್ಞಾನ ಸಾಧನೆಗೆ ಇಷ್ಟೊಂದು ಮಹತ್ವ? ಕರ್ಮಯೋಗದಿಂದ ಸ್ವರ್ಗವನ್ನು ಪಡೆಯಬಹುದಲ್ಲ? ಎನ್ನುವ ಪ್ರಶ್ನೆ. ಈ ಪ್ರಶ್ನೆಗೆ ಕೃಷ್ಣ ಇಲ್ಲಿ ಉತ್ತರಿಸುತ್ತಾನೆ.  ಹಿಂದೆ ವೇದವನ್ನು ಜ್ಞಾನಕಾಂಡ, ಕರ್ಮಕಾಂಡ ಮತ್ತು ಉಪಾಸನಕಾಂಡ ಎಂದು ಮೂರು ವಿಭಾಗ ಮಾಡಿದ ಪರಂಪರೆ ಇತ್ತು. ಆದರೆ ಕೃಷ್ಣ ಹೇಳುತ್ತಾನೆ, ವೇದಕ್ಕೆ ಇರುವುದು ಒಂದೇ ಮುಖ ಎಂದು. ವೇದದಲ್ಲಿ ಹೇಳುವ ಕರ್ಮ, ಉಪಾಸನೆ, ಎಲ್ಲವುದರ ಹಿಂದೆ ಜ್ಞಾನವಡಗಿದೆ. ಎಲ್ಲವೂ ಜ್ಞಾನಕ್ಕೊಸ್ಕರ. ಆದ್ದರಿಂದ ಇಡೀ ವೇದವೇ ಜ್ಞಾನಕಾಂಡ ಎಂದು ಮುಂದಿನ ಶ್ಲೋಕದಲ್ಲಿ ಕೃಷ್ಣ ಒತ್ತಿ ಹೇಳುತ್ತಾನೆ.

Wednesday, March 2, 2011

Bhagavad Gita Kannada Chapter-02 Shloka 42-44

ಯಾಮಿಮಾಂ ಪುಷ್ಪಿತಾಂ ವಾಚಂ ಪ್ರವದಂತ್ಯವಿಪಶ್ಚಿತಃ
ವೇದವಾದರತಾಃ ಪಾರ್ಥ ನಾನ್ಯದಸ್ತೀತಿ ವಾದಿನಃ  ೪೨

ಯಾಮ್  ಇಮಾಮ್ ಪುಷ್ಪಿತಾಮ್  ವಾಚಮ್  ಪ್ರವದಂತಿ ಅವಿಪಶ್ಚಿತಃ
ವೇದವಾದರತಾಃ ಪಾರ್ಥ ನ ಅನ್ಯತ್ ಅಸ್ತಿ ಇತಿ  ವಾದಿನಃ - -ಓ ಪಾರ್ಥ, ಅರೆಬರೆ ತಿಳಿದವರು ಹೇಳುತ್ತಾರೆ: ಈ ವೇದವಾಣಿ ಸ್ವರ್ಗವೆಂಬ ಹೂಬಿಡುವ ಬಳ್ಳಿ.   ಹುಟ್ಟು,  ಕರ್ಮದ ಕಟ್ಟುಗಳ ಸಂಸಾರವೆ ಇದರ ಹಣ್ಣು.

ಕಾಮಾತ್ಮಾನಃ ಸ್ವರ್ಗಪರಾ ಜನ್ಮಕರ್ಮಫಲಪ್ರದಾಮ್ ।
ಕ್ರಿಯಾವಿಶೇಷಬಹುಲಾಂ ಭೋಗೈಶ್ವರ್ಯಗತಿಂ ಪ್ರತಿ    ॥೪೩॥

ಕಾಮ ಆತ್ಮಾನಃ ಸ್ವರ್ಗ ಪರಾಃ  ಜನ್ಮ ಕರ್ಮ ಫಲ ಪ್ರದಾಮ್ 
ಕ್ರಿಯಾ ವಿಶೇಷ ಬಹುಲಾಮ್  ಭೋಗ ಐಶ್ವರ್ಯ ಗತಿಮ್  ಪ್ರತಿ - ಐಷಾರಾಮದ ಐಸಿರಿಯ ಬದುಕಿಗಾಗಿ ಅದರ ತುಂಬ ಬಗೆ ಬಗೆಯ ಕರ್ಮ ಕಲಾಪಗಳು. ಅವರು ವೇದದ ಹೊರನೋಟದ ಅರ್ಥದಲ್ಲೇ ನಿಂತುಬಿಡುವರು. [ವೇದದಲ್ಲಿ ವಿವಾದ ಬೆಳೆಸುವವರು, ಅಥವಾ ಅರ್ಥವನ್ನರಿಯದೆ ಬರಿದೆ ಉರು ಹೊಡೆಯುವವರು] ಅದರಾಚೆ ಏನೂ ಇಲ್ಲ ಎನ್ನುವವರು. ಬಗೆಯಲ್ಲಿ ಆಸೆ ತುಂಬಿ ಸ್ವರ್ಗದ ಕನಸು ಕಾಣುವವರು.

ಭೋಗೈಶ್ವರ್ಯಪ್ರಸಕ್ತಾನಾಂ ತಯಾSಪಹೃತಚೇತಸಾಮ್         
ವ್ಯವಸಾಯಾತ್ಮಿಕಾ ಬುದ್ಧಿಃ ಸಮಾಧೌ ನ ವಿಧೀಯತೇ  ೪೪

ಭೋಗ ಐಶ್ವರ್ಯ ಪ್ರಸಕ್ತಾನಾಮ್  ತಯಾ ಅಪಹೃತ ಚೇತಸಾಮ್   
ವ್ಯವಸಾಯ ಆತ್ಮಿಕಾ ಬುದ್ಧಿಃ ಸಮಾಧೌ ನ ವಿಧೀಯತೇ- ಐಷಾರಾಮದ ಐಸಿರಿಯಲ್ಲಿ ಮುಳುಗಿ, ವೇದ ಓದಿಯೇ ತಲೆ ಕೆಡಿಸಿಕೊಂಡ ಇಂಥವರಿಗೆ, ಹದಗೊಂಡ ತಿಳಿನುಡಿ ಕೂಡ ಮನಸ್ಸಿನ ಸಮಸ್ಥಿತಿಗೆ ನೆರವಾಗದು.

ಮೇಲಿನ ಮೂರು ಶ್ಲೋಕ ಅತ್ಯಂತ ಮುಖ್ಯವಾದುದು. ಹೆಚ್ಚಿನವರಿಗೆ ಇದು ಅರ್ಥವೇ ಆಗುವುದಿಲ್ಲ. ಅರ್ಥವಾಗದೆ ಈ ಶ್ಲೋಕವನ್ನು ಟೀಕಿಸಿದವರೂ ಇದ್ದಾರೆ! ಪ್ರಾಚೀನ ಗ್ರಂಥಗಳಲ್ಲಿ, ವೇದಗಳಲ್ಲಿ, ಶ್ರುತಿಗಳಲ್ಲಿ, ಕೇವಲ ಅಧ್ಯಾತ್ಮವಲ್ಲದೆ ಅನೇಕ ಲೌಕಿಕ ವಿಷಯಗಳು ತುಂಬಿಕೊಂಡಂತೆ ಕಾಣುತ್ತದೆ.  ಬರಿಯ ವೇದ ಗ್ರಂಥಗಳನ್ನು ಓದುವುದರಿಂದ ನನ್ನನ್ನು ತಿಳಿಯಲು ಸಾಧ್ಯವಿಲ್ಲ ಎನ್ನುತ್ತಾನೆ ಕೃಷ್ಣ.  ಕೃಷ್ಣ ಹೇಳುತ್ತಾನೆ ವೇದವಾದಿಗಳಾದವರು ವೇದದ ಮೇಲ್ನೋಟದ ಅರ್ಥವೆಂಬ ಹೂವನ್ನು ಕಿತ್ತು ತೆಗೆದುಕೊಂಡು ಆಳವಾದ ಜ್ಞಾನ ಸಾಗರವೆಂಬ ಹಣ್ಣಿನಿಂದ ವಂಚಿತರಾಗುತ್ತಾರೆ ಎಂದು. ವೇದವನ್ನು ಆಳವಾಗಿ ಅರ್ಥ ಮಾಡಿಕೊಳ್ಳದೆ, ಕೇವಲ ಮೇಲ್ನೋಟದ ಅರ್ಥದಲ್ಲೇ ನಿಂತು ವೇದವೆಂದರೆ ಇಷ್ಟೇ ಎಂದು ಹೇಳುವವರಿಗೆ ಕೃಷ್ಣ ಈ ಮಾತನ್ನು ಹೇಳಿದ್ದಾನೆ. ಇಲ್ಲಿ 'ವೇದವಾದರು' ಎಂದರೆ ವೇದದ ಅರ್ಥ ತಿಳಿಯದೆ ಅದರ ಬಗ್ಗೆ ವಿವಾದ ಮಾಡುವವರು. ವೇದವನ್ನು ಬಾಯಿಪಾಠ   ಮಾಡಿ ಅದರ ಅರ್ಥ ತಿಳಿಯದೆ ಮಾತನಾಡುವವರು. ವೇದದ ಮೇಲ್ನೋಟದ ಅರ್ಥದಲ್ಲೇ ನಿಂತವರು. ಇವರು ಮೇಲಿನಿಂದ ಈಜುವವರು. ಇವರಿಗೆ ತಳದಲ್ಲಿರುವ ಮುತ್ತು ರತ್ನಗಳ ಅರಿವಿಲ್ಲ. ವೇದವನ್ನು ನಿಜವಾಗಿ ಅರಿತುಕೊಳ್ಳದೆ, ಅದರ ಬಗ್ಗೆ ತಪ್ಪು ಕಲ್ಪನೆ ಮಾಡಿಕೊಂಡು, ಅದನ್ನೇ ಜನರಿಗೆ ಹೇಳುವುದು ನರಕಕ್ಕೆ ನೇರ ದಾರಿ. ಪೌರೋಹಿತ್ಯ ಕೂಡಾ ಹೀಗೆ. ನಿಜವಾದ ಜ್ಞಾನವಿಲ್ಲದೆ, ಮಂತ್ರದ ಅರ್ಥ ಗೊತ್ತಿಲ್ಲದೆ ಪೌರೋಹಿತ್ಯ ಮಾಡುವುದು ಕೂಡಾ ಅಷ್ಟೇ ಅಪಾಯಕಾರಿ. ಪೌರೋಹಿತ್ಯ ಒಂದು ಜವಾಬ್ದಾರಿಯುತ ಕೆಲಸ. ಒಬ್ಬ ಮನುಷ್ಯನ ಪಾಪವನ್ನು ಪರಿಹರಿಸಿ ಅವನನ್ನು ಎತ್ತರಕ್ಕೇರಿಸಬೇಕಾದರೆ ಪೌರೋಹಿತ್ಯ ಮಾಡುವವನೂ ಕೂಡಾ ಎತ್ತರದಲ್ಲಿರಬೇಕು. ವೇದ ಮಂತ್ರದ ರಹಸ್ಯ ತಿಳಿದವನಾಗಿರಬೇಕು. ಕೃಷ್ಣ ಇಲ್ಲಿ ಹೇಳುತ್ತಾನೆ: “ವೇದದ ಅಂತರಂಗದ ಅರ್ಥ ತಿಳಿಯದಿದ್ದರೆ ಎಲ್ಲವೂ ಅಪಾರ್ಥವಾಗುತ್ತದೆ. ಯಾರು ಪ್ರಾಚೀನ ಗ್ರಂಥಗಳ ಮೇಲ್ನೋಟದ ಅರ್ಥವನ್ನು ಹೇಳಿ ಸಮಾಜಕ್ಕೆ ಮೋಸ ಮಾಡುತ್ತಾರೋ ಅವರು ಅವಿಪಶ್ಚಿತರು” ಎಂದು. 'ವಿಪಶ್ಚಿತರು' ಎಂದರೆ ಜ್ಞಾನ ಸ್ವರೂಪವಾದ ಆತ್ಮವನ್ನು ಕಂಡವರು, ಆತ್ಮ ಜ್ಞಾನಿಗಳು.  ಅವಿಪಶ್ಚಿತರು ಶಾಸ್ತ್ರಕ್ಕೆ ಮೇಲ್ನೋಟದ ಅರ್ಥವನ್ನು ಹೇಳುವವರು-ಅವರು ತಿಳಿಗೇಡಿಗಳು ಎನ್ನುತ್ತಾನೆ ಕೃಷ್ಣ! ಈ ಮಾತು ಪ್ರಪಂಚದ ಪ್ರತಿಯೊಂದು ಧರ್ಮ ಗ್ರಂಥಗಳಲ್ಲಿದೆ. ಬೈಬಲ್ ನಲ್ಲಿ ಇದನ್ನು ಗೂಡಾರ್ಥ ಎನ್ನುತ್ತಾರೆ.  ಕುರಾನಿನಲ್ಲಿ  ಕೂಡಾ ಈ ಬಗ್ಗೆ ಎಚ್ಚರದ ನುಡಿ ಇದೆ. "There are Sentences that are clear in meaning and there are Sentences that are susceptible of different interpretations" . ಇದು ಕುರಾನ್ ನಲ್ಲಿ ಬರುವ ಒಂದು ನುಡಿ. ಎಲ್ಲಾ ಪ್ರಾಚೀನ ಅನುಭಾವ ಸಾಹಿತ್ಯದಲ್ಲಿ ಈ ಎಚ್ಚರವನ್ನು ಕೊಟ್ಟಿದ್ದಾರೆ. ಪ್ರಾಚೀನ ಗ್ರಂಥಗಳು ಒಗಟಿನಂತೆ. ಅದರ ಮೇಲ್ನೋಟದ ಅರ್ಥವನ್ನು ತಿಳಿದುಕೊಂಡರೆ ಅಸಂಗತವಾಗುತ್ತದೆ. ಅಧ್ಯಾತ್ಮ ಗ್ರಂಥಗಳಲ್ಲಿ ನಮ್ಮನ್ನು ಆಭೂತಿಗೆ ಕೊಂಡೊಯ್ಯಲು ಈ ರೀತಿ ಒಗಟಿನ ಬಾಷೆಯನ್ನು (mystical language) ಉಪಯೋಗಿಸಿದ್ದಾರೆ. ವೇದವೆನ್ನುವುದು ಸಾಂಕೇತಿಕ ಭಾಷೆ ಎನ್ನುವುದನ್ನು ಅರಿಯದಿದ್ದರೆ ಆಧ್ಯಾತ್ಮ ಚಿಂತನೆ ಅನರ್ಥವಾಗುತ್ತದೆ. ಈ ರೀತಿ ತಿಳಿಯದೆ ಮಾಡುವ ಸಾಧನೆಯಿಂದ ಏನೂ ಉಪಯೋಗವಿಲ್ಲ.
ಪ್ರಾಚೀನ ಗ್ರಂಥಗಳಲ್ಲಿ ಅನೇಕ ಕಥೆಗಳನ್ನು ಕಾಣುತ್ತೇವೆ. ಅದನ್ನು ಮೇಲ್ನೋಟದಲ್ಲಿ ನೋಡಿದರೆ ವಿನೋದವೆನಿಸುತ್ತದೆ. ಆದರೆ ಅದರ ತಿರುಳನ್ನು ಅರಿತರೆ ಜೀವನ ಸಾರ್ಥಕ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಗಣಪತಿಯ ಕಥೆ. "ಪಾರ್ವತಿ ತನ್ನ ಮೈಯ  ಮಣ್ಣಿನಿಂದ ಗಣಪತಿಯನ್ನು ನಿರ್ಮಿಸಿದಳು, ಆತನ ತಲೆಯನ್ನು ಶಿವ ಕಡಿದ, ನಂತರ ಆತನಿಗೆ ಉತ್ತರ  ದಿಕ್ಕಿಗೆ ತಲೆ ಹಾಕಿದ ಆನೆಯ ತಲೆಯನ್ನು ಜೋಡಿಸಿದರು, ಕಡಬು ತಿಂದ ಗಣೇಶ ಹೊಟ್ಟೆಗೆ ಹಾವನ್ನು ಸುತ್ತಿಕೊಂಡ".  ಏನಿದರ ಅರ್ಥ? ಭಾಗಶಃ ಈ ಕಥೆಯನ್ನು ಕೇಳದವರಿಲ್ಲ; ಆದರೆ ಅರ್ಥ ತಿಳಿದವರು ಸಾವಿರಕ್ಕೆ ಒಬ್ಬರಿಲ್ಲ! ಈ ಕಥೆಯನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದರೆ ಮಾತ್ರ ನಮಗೆ ಕಥೆಯ ಮಹತ್ವ, ಪೂಜೆಯ ಮಹತ್ವ, ನಂಬಿಕೆಯ ಮಹತ್ವ ಅರಿಯುತ್ತದೆ. ಗಣಪತಿ ಆಕಾಶದ ದೇವತೆ. ಆಕಾಶ ಪಂಚ ಭೂತಗಳಲ್ಲಿ ಮಹತ್ತಾದದ್ದು.  ಗಣಪತಿಯ ಸ್ಥಾನ ಇಪ್ಪತ್ತೊಂದನೆಯದು. ಅದಕ್ಕಾಗಿ ಆತನಿಗೆ ಇಪ್ಪತ್ತೊಂದು ಮೋದಕ ಅರ್ಪಣೆ. ಐದು ಅಂತಃಕರಣ, ಐದು ಜ್ಞಾನೇಂದ್ರಿಯ, ಐದು ಕರ್ಮೇಂದ್ರಿಯ, ಐದು ತನ್ಮಾತ್ರೆಗಳು(ಶಬ್ದ, ಸ್ಪರ್ಶ ರೂಪ ರಸ ಗಂಧ) ಇದರಿಂದ ಆಚೆಗೆ ಆಕಾಶ, ಗಾಳಿ, ಬೆಂಕಿ,ನೀರು, ಮಣ್ಣು. ಇಲ್ಲಿ ಆಕಾಶ ಇಪ್ಪತ್ತೊಂದನೆ ಮೆಟ್ಟಿಲಲ್ಲಿದೆ. ಇದು ಇಪ್ಪತ್ತೊಂದನೆ ತತ್ವ. ಗಣಪತಿಗಿಂತ ಮೊದಲ ಸ್ತರದಲ್ಲಿರುವ ತತ್ವಾಭಿಮಾನಿಗಳು ಇಪ್ಪತ್ತುಮಂದಿ. ಬ್ರಹ್ಮ, ವಾಯು, ಗರುಡ, ಶೇಷ, ರುದ್ರ, ಇಂದ್ರ, ಕಾಮ, ಅಹಂಪ್ರಾಣ, ಅನಿರುದ್ಧ, ಸ್ವಾಯಂಭುವಮನು, ಬೃಹಸ್ಪತಿ, ದಕ್ಷಪ್ರಜಾಪತಿ, ಪ್ರವಹವಾಯು, ಚಂದ್ರ, ಸೂರ್ಯ, ಯಮಧರ್ಮ, ವರುಣ, ವಹ್ನಿ, ಮಿತ್ರ ಮತ್ತು ನಿರ್ ಋತಿ. ಗಣಪತಿ ಇಪ್ಪತ್ತೊಂದನೆಯವನು.
ಇನ್ನು ಶಿವ  ಪಾರ್ವತಿಯರು. ಇವರು ದಂಪತಿಗಳು. ಇಲ್ಲಿ ಶಿವ ಮನಸ್ಸಿನ ಅಭಿಮಾನಿ ಮತ್ತು ಪಾರ್ವತಿ ವಾಕ್ ದೇವತೆ.  ಮನಸ್ಸು ಯೋಚಿಸಿದಂತೆ ಮಾತು. ಅದಕ್ಕಾಗಿ ಅವರದು ಅನ್ಯೋನ್ಯ ದಾಂಪತ್ಯ. ಶಬ್ದದ ಮೂಲ ಶಕ್ತಿ ಗಾಳಿ ಮತ್ತು ಆಕಾಶ. ಆಕಾಶ ಮತ್ತು ಗಾಳಿ ಇಲ್ಲದಿದ್ದರೆ ಶಬ್ದವಿಲ್ಲ. ನಮ್ಮ ಒಳಗಿಂದ ವಾಕ್ ನಾದವೇ ಪಾರ್ವತಿ-ಅದು ಶಬ್ದ ರೂಪದಲ್ಲಿ ಹೊರ ಹೊಮ್ಮುವುದೇ ಮಾತು. ಇದು ಮೂಲ ನಾದದ ಸ್ಥೂಲ ರೂಪ.  ಮನುಷ್ಯನಿಗೆ ದೊಡ್ಡ ಆಪತ್ತು ಮಾತು. ಅದ್ಯಾತ್ಮ ಸಾಧನೆಗೆ ಬೇಕಾಗಿರುವುದು ಮಾತಿಗಿಂತ ಹೆಚ್ಚಾಗಿ ಮೌನ. ತನ್ನತನದ ಅರಿವಿಲ್ಲದೆ(Awareness of self), ಅಹಂಕಾರ ತತ್ವದ ವಿರುದ್ಧ ಮಾತು ಬೆಳೆದಾಗ, ಮಾತಿನ ಶಿರಛೇದನವಾಗದೆ ಜ್ಞಾನವಿಲ್ಲ. ಶಿರಛೇದನವಾದ ಮೇಲೆ ಪುನಃ ಅದೇ ಮಾತು ಮುಂದುವರಿಯಬಾರದು. ಅದಕ್ಕಾಗಿ ಎಲ್ಲವನ್ನು ಕೇಳುವ ದೊಡ್ಡ ಕಿವಿಯುಳ್ಳ, ಪ್ರಾಣಶಕ್ತಿಯನ್ನು ನಿಯಂತ್ರಿಸುವ ಉದ್ದನೆಯ ಮೂಗಿನ ಸಾಂಕೇತ ರೂಪವಾದ ಆನೆಯ ತಲೆಯನ್ನು ಇಟ್ಟು ಗಣಪತಿ ಎನ್ನುವ ಹೊಸ ಆಕಾರದ ಜನನವಾಯಿತು. ಗಣಪತಿಯನ್ನು ನೋಡಿದಾಕ್ಷಣ ನಮಗೆ ನೆನಪಿಗೆ ಬರಬೇಕಾದ ವಿಷಯ ಮಾತಿಗಿಂತ ಮನನ ಹೆಚ್ಚು ಮಾಡು, ಸರಿಯಾಗಿ ಕೇಳಿಸಿಕೋ (Be a good listener) ಎನ್ನುವ ವಿಚಾರ. ಇನ್ನು ಉತ್ತರ ದಿಕ್ಕಿಗೆ ತಲೆ ಹಾಕುವುದು ಅಂದರೆ ಏನು? ಸಾಮಾನ್ಯವಾಗಿ ನಮಗೆಲ್ಲರಿಗೂ ಗೊತ್ತಿರುವಂತೆ ಉತ್ತರಕ್ಕೆ ತಲೆ ಹಾಕಿ ಮಲಗಬಾರದು. ದಕ್ಷಿಣಕ್ಕೆ ಮುಖ ಮಾಡಿ ಪೂಜೆಗೆ ಕುಳಿತು ಕೊಳ್ಳಬಾರದು. ದೇವಸ್ಥಾನದಲ್ಲಿ ಅಪ್ರದಕ್ಷಿಣೆ ಸುತ್ತಬಾರದು ಇತ್ಯಾದಿ. ಆದರೆ ಈ ಎಲ್ಲಾ ವಿಚಾರ ಏಕೆ? ಇದರ ಹಿಂದಿರುವ ಸಿದ್ಧಾಂತ ಏನುಈ ಭೂಮಿಯಲ್ಲಿ ಉತ್ತರ  ದ್ರುವದ ಶಕ್ತಿ ಉತ್ತರದಿಂದ ಪೂರ್ವಕ್ಕೆ ಹರಿಯುತ್ತಿರುತ್ತದೆ ಹಾಗು ದಕ್ಷಿಣ ದ್ರುವದ ಶಕ್ತಿ ದಕ್ಷಿಣದಿಂದ ಪಶ್ಚಿಮಕ್ಕೆ  ಹರಿಯುತ್ತಿರುತ್ತದೆ. ನಮ್ಮ ಚಲನೆ ಕೂಡಾ  ಈ ಶಕ್ತಿಪಾತಕ್ಕೆ ಅನುಗುಣವಾಗಿರಬೇಕು. ನಾವು ದಕ್ಷಿಣಕ್ಕೆ ಮುಖ ಮಾಡಿದರೆ ದಕ್ಷಿಣ ದ್ರುವದ ಶಕ್ತಿಪಾತಕ್ಕೆ ನಮ್ಮನ್ನು ನಾವು ಒಡ್ಡಿಕೊಂಡಂತೆ ಹಾಗು ಉತ್ತರಕ್ಕೆ ಮುಖ ಮಾಡಿದರೆ ಉತ್ತರ ದ್ರುವದ ಶಕ್ತಿಪಾತಕ್ಕೆ ಒಡ್ಡಿಕೊಂಡಂತೆ. ಉತ್ತರಕ್ಕೆ ತಲೆ ಹಾಕಿ ಮಲಗುವುದು ಎಂದರೆ ಎದ್ದಾಗ ದಕ್ಷಿಣಕ್ಕೆ ಮುಖ ಮಾಡುವುದು. ಆದ್ದರಿಂದ ದಕ್ಷಿಣ ಮುಖ ಹಾಗು ಉತ್ತರ ತಲೆ ಎರಡೂ ಒಂದೆ.   ಎರಡು ಶಕ್ತಿಪಾತದಲ್ಲಿ ಒಂದು ದೊಡ್ಡ ವ್ಯತ್ಯಾಸವಿದೆ. ಅದೇನೆಂದರೆ ಉತ್ತರದ ಶಕ್ತಿಪಾತ ಊರ್ಧ್ವಮುಖವಾದದ್ದು ಹಾಗು ದಕ್ಷಿಣದ ಶಕ್ತಿಪಾತ ಸಂಸಾರದ ಸುಳಿಯಲ್ಲಿ ಸಿಲುಕಿಸುವಂತಾದ್ದು. ಈ ಕಾರಣಕ್ಕಾಗಿ ಉತ್ತರಕ್ಕೆ ತಲೆ ಹಾಕಿ ಮಲಗಿದರೆ ಅಥವಾ ದಕ್ಷಿಣಕ್ಕೆ ಮುಖ ಮಾಡಿ ಪೂಜೆಗೆ ಕುಳಿತರೆ ನಮ್ಮ ಶಿರಛೇದವಾಗುತ್ತದೆ. ನಾವು ಪುನಃ ಈ ಸಂಸಾರದ ಸುಳಿಯಲ್ಲಿ ಸುತ್ತಬೇಕಾಗುತ್ತದೆ. ಇನ್ನು ಹೊಟ್ಟೆಗೆ ಹಾವಿನ ಸುತ್ತು. ಹಾವು ಕುಂಡಲಿನಿ ಶಕ್ತಿಯ ಸಂಕೇತ. ಇದು ಚಕ್ರಾಕಾರವಾಗಿ ತಲೆ ಕೆಳಗೆ ಹಾಕಿ ಮಲಗಿದ ಹಾವಿನ ರೂಪದಲ್ಲಿ ನಮ್ಮ ಮಲ-ಮೂತ್ರ ದ್ವಾರದ ಮಧ್ಯದಲ್ಲಿರುತ್ತದೆ. ಕುಂಡಲಿನಿ ಜಾಗೃತವಾಗುವುದು ಎಂದರೆ ಈ ಹಾವು ಹೆಡೆಯತ್ತಿ ನಿಲ್ಲುವುದು. ಕುಂಡಲಿನಿ ಜಾಗೃತವಾದಾಗ ಶಕ್ತಿ- ಮೂಲದಾರ, ಮಣಿಪುರ ಹಾಗು ಸ್ವದಿಷ್ಟಾನ ಶಕ್ತಿ ಕೇಂದ್ರಗಳಲ್ಲಿ ಊರ್ಧ್ವ ಮುಖವಾಗಿ ಸಂಚರಿಸುತ್ತದೆ. ನಮ್ಮ ಹೊಕ್ಕುಳಿನ ಮೇಲಿನ ಶಕ್ತಿ ಕೇಂದ್ರ  ಜ್ಞಾನದ ಬಾಗಿಲು, ಗಣಪತಿ ಈ ಮೂರು ಶಕ್ತಿ ಕೇಂದ್ರಗಳನ್ನು ನಿಯಂತ್ರಿಸಿ ನಮಗೆ ಜ್ಞಾನದ ಬಾಗಿಲನ್ನು ತೆರೆಯುವ ಶಕ್ತಿದೇವತೆ. ಇಷ್ಟೊಂದು ಸಂಗತಿ ಈ ಪುಟ್ಟ ಕಥೆಯಲ್ಲಿದೆ. ಇದು ಹೂವಿನಿಂದ ಹಣ್ಣಿಗೆ ಹೋಗುವ ರೀತಿ. ಕೇವಲ ಮೇಲ್ನೋಟದ ಅರ್ಥದಲ್ಲೇ ನಿಂತರೆ ತೊಂದರೆಯಿಲ್ಲ, ಅದರಿಂದಾಚೆಗೆ ಏನೂ ಇಲ್ಲ ಎಂದು ತಿಳಿದರೆ ಅದು ಅನರ್ಥ.
ನಾವು     ನಮ್ಮ ತಲೆಯಲ್ಲಿದ್ದದ್ದನ್ನು ವೇದದಲ್ಲಿ ಕಾಣದೆ, ವೇದದಲ್ಲಿದ್ದದ್ದನ್ನು ತಲೆಯೊಳಗೆ ತುಂಬಿಕೊಳ್ಳಬೇಕು.  ವೇದವನ್ನು ಮೇಲ್ನೋಟದಲ್ಲಿ ಕಂಡಾಗ ಕೇವಲ ಜನ್ಮ-ಕರ್ಮ, ಹುಟ್ಟು-ಸಾವು, ಈ ಸುಳಿಯಲ್ಲೇ ಇರುತ್ತೇವೆ, ಎಂದೂ ಅಮರತ್ವದ ದಾರಿ ಕಾಣದು. ಮೇಲ್ನೋಟಕ್ಕೆ ವೇದವನ್ನು ಕಾಣುವವರು  ಬೆಳಗಿನಿಂದ ಸಂಜೆಯ ತನಕ  ಭೋಗ ಐಶ್ವರ್ಯ ಕರ್ಮ ಕಲಾಪದಲ್ಲಿ ನಿಂತು ಆತ್ಮ ಸಾಕ್ಷಾತ್ಕಾರವನ್ನು ಮರೆತು ನಿಲ್ಲುತ್ತಾರೆ. ಇದು ದೊಡ್ಡ ದುರಂತ.
ಈಗ ನಮಗೆ ಒಂದು ಪ್ರಶ್ನೆ ಕಾಡುತ್ತದೆ. ಅದೇನೆಂದರೆ ಪ್ರಾಚೀನ ಅಧ್ಯಾತ್ಮ ಗ್ರಂಥಗಳನ್ನು ಏಕೆ ಒಗಟಿನ ರೂಪದಲ್ಲಿ ಬರೆದಿದ್ದಾರೆ? ಎಂದು. ತರಗತಿಗೊಂದು ಪಠ್ಯಪುಸ್ತಕವಿರುವಂತೆ ಈ ಗ್ರಂಥಗಳನ್ನು ಹಂತಹಂತವಾಗಿ ಅರ್ಥವಾಗುವ ರೀತಿ ಏಕೆ ಬರೆದಿಲ್ಲ? ಇತ್ಯಾದಿ. ಇಲ್ಲಿ ನಾವು ತಿಳಿದುಕೊಳ್ಳಬೇಕಾದ ಮುಖ್ಯ ವಿಷಯ ಏನೆಂದರೆ ಈ ಗ್ರಂಥಗಳನ್ನು ತಿಳಿದುಕೊಳ್ಳಲು ಯೋಗ್ಯತೆ ಬೇಕು. ಇಲ್ಲಿ ಪುಸ್ತಕ ಒಂದೆ; ಆದರೆ ಒಂದೇ ಪುಸ್ತಕದಲ್ಲಿ ಅನೇಕ ಹಂತದ ಶಿಕ್ಷಣ ಅಡಗಿದೆ. ಈ ವೇದ ಗ್ರಂಥಗಳು ಎಂದೂ ಅಯೋಗ್ಯರಿಗೆ ದಕ್ಕದು. ಅವು ಕೇವಲ ತನ್ನನ್ನು ಅರಿಯಬಲ್ಲ, ಅರಿತು ಅದರ ಸದುಪಯೋಗ ಮಾಡಬಲ್ಲವನ  ಮುಂದೆ ಮಾತ್ರ ತೆರೆದುಕೊಳ್ಳುತ್ತವೆ. ಯೋಗ್ಯನಾದವನು ಈ ಗ್ರಂಥದ ಆಳಕ್ಕಿಳಿದಷ್ಟೂ ಹೆಚ್ಚು ಹೆಚ್ಚು ವಿಷಯ ತಿಳಿಯುತ್ತಾನೆ. ಒಂದು ಗ್ರಂಥವನ್ನು  ಅರಿಯಲು  ಅನೇಕ ಜನ್ಮಗಳ ಸಾಧನೆ  ಬೇಕು.