Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Thursday, November 17, 2011

Bhagavad GitA Kannada Chapter-14 Shloka 5-9


ಸತ್ತ್ವಂ ರಜಸ್ತಮ ಇತಿ ಗುಣಾಃ ಪ್ರಕೃತಿಸಂಭವಾಃ
ನಿಬಧ್ನಂತಿ ಮಹಾಬಾಹೋ ದೇಹೇ ದೇಹಿನಮವ್ಯಯಮ್                  

ಸತ್ತ್ವಮ್ ಜಃ ತಮಃ  ಇತಿ ಗುಣಾಃ ಪ್ರಕೃತಿ ಸಂಭವಾಃ
ನಿಬಧ್ನಂತಿ ಮಹಾಬಾಹೋ ದೇಹೇ ದೇಹಿನಮ್ ಅವ್ಯಯಮ್ ಮಹಾಬಾಹೋ, ಸತ್ವ-ರಜಸ್ಸು-ತಮಸ್ಸು ಎಂಬಿವು ಜಡಪ್ರಕೃತಿಯಿಂದ ಮೂಡಿಬಂದ ಗುಣಗಳು. ಅಳಿವಿರದ ಜೀವನನ್ನು ಇವು ದೇಹದಲ್ಲಿ ಕಟ್ಟಿಹಾಕುತ್ತವೆ.

ಈ ಪ್ರಪಂಚದ, ಸರ್ವಜೀವಜಾತದ ತಾಯಿಯಾದ ಪ್ರಕೃತಿ- ಗುಣತ್ರಯಮಾನಿನಿ. ಆದ್ದರಿಂದ ಪ್ರತಿಯೊಂದು ಜೀವ ಹುಟ್ಟುವಾಗಲೂ ಕೂಡ ಸತ್ವ-ರಜಸ್ಸು ಮತ್ತು ತಮಸ್ಸೆಂಬ ಮೂರು ಗುಣಗಳೊಂದಿಗೆ ಹುಟ್ಟುತ್ತವೆ ಮತ್ತು ಈ ಗುಣಗಳ ಪ್ರಭಾವದಲ್ಲಿ ಬೆಳೆಯುತ್ತವೆ. ಮೂರು ಗುಣಗಳಿಲ್ಲದೆ ಶುದ್ಧವಾದ ಏಕಗುಣದಿಂದ ಯಾವ ಜೀವವೂ ಸೃಷ್ಟಿಯಾಗುವುದಿಲ್ಲ. ಜಡದಲ್ಲಿ ಕೂಡ ಈ ಮೂರು ಗುಣಗಳನ್ನು ಕಾಣುತ್ತೇವೆ. ಸದಾ ಊರ್ಧ್ವಮುಖ ಬೆಳಕನ್ನು ಕೊಡುವ ಬೆಂಕಿ ಸತ್ವ; ಅಸ್ಪಷ್ಟತೆಯ ಸ್ಥಾನವಾದ ನೀರು ರಜಸ್ಸು ಮತ್ತು ಸದಾ ಕೆಳಮುಖವಾಗಿ ಸೆಳೆಯುವ ಮಣ್ಣು-ತಮಸ್ಸು. ಜಗತ್ತಿನ ಎಲ್ಲ ವಸ್ತುಗಳೂ ಈ ಮೂರರ ಸಂಯೋಗ(Combination). ಉದಾಹರಣೆಗೆ ಬತ್ತ. ಅದನ್ನು ಭೂಮಿಯಲ್ಲಿ(ಮಣ್ಣು-ತಮಸ್ಸು) ಬಿತ್ತಿದೆವು. ಅಲ್ಲಿ ಅದಕ್ಕೆ ನೀರೆರೆದೆವು(ನೀರು-ರಜಸ್ಸು), ಅದು ಸೂರ್ಯನ ಪ್ರಕಾಶವನ್ನು(ಸೂರ್ಯ-ಸತ್ವ) ಹೀರಿ  ಚಿಗುರಿ ಬೆಳೆದು ಫಸಲನ್ನು ಕೊಟ್ಟಿತು. ಆ ಫಸಲನ್ನು ಕೊಯ್ದು ಅಕ್ಕಿಯನ್ನಾಗಿ ಮಾಡಿದೆವು. ಅಕ್ಕಿಗೆ(ತಮಸ್ಸು) ನೀರನ್ನು(ರಜಸ್ಸು) ಸೇರಿಸಿ ಬೇಯಿಸಿ(ಶಾಖ-ಸತ್ವ) ಅನ್ನವನ್ನಾಗಿ ಮಾಡಿದೆವು. ಅಕ್ಕಿ ಇರಲಿ, ಅನ್ನವಿರಲಿ, ಎಲ್ಲವೂ ಮಣ್ಣು-ನೀರು-ಬೆಂಕಿ ಈ ಮೂರರ ಸಂಯೋಜನೆ. ಹೀಗೆ ಸತ್ವ-ರಜಸ್ಸು ಮತ್ತು ತಮಸ್ಸೆಂಬ ಗುಣತ್ರಯಗಳಿಂದ ಈ ಸಮಗ್ರ ಸೃಷ್ಟಿ ನಿರ್ಮಾಣವಾಗಿದೆ. ಹುಟ್ಟುವ ಪ್ರತಿಯೊಂದು ಜೀವಜಾತವನ್ನು ಈ ಮೂರು ಗುಣಗಳು ಬಂಧಿಸುತ್ತವೆ. ಒಬ್ಬ ವ್ಯಕ್ತಿಯಲ್ಲಿ ಈ ಮೂರು ಗುಣಗಳ ಪ್ರಮಾಣ ಬೇರೆ ಬೇರೆಯಾಗಿರುತ್ತದೆ. ಅತ್ಯಂತ ಸಾತ್ವಿಕನಾದ ಮೋಕ್ಷಯೋಗ್ಯ ಜೀವನಲ್ಲಿ ಕೂಡ ಈ ಮೂರು ಗುಣಗಳಿರುತ್ತವೆ. ನೂರಕ್ಕೆ ನೂರು ಶುದ್ಧ ಸತ್ವಗುಣ  ಒಬ್ಬ ವ್ಯಕ್ತಿಯಲ್ಲಿರುವುದಿಲ್ಲ. ಜಡದಲ್ಲಿ ನೋಡಿದರೆ ಬೆಂಕಿ-ಸತ್ವ. ಆದರೆ ಅದರೊಂದಿಗೆ ಹೊಗೆ-ರಜಸ್ಸು, ಕಟ್ಟಿಗೆ-ತಮಸ್ಸು. ಸತ್ವ ಗುಣದ ಸಾಕ್ಷಾತ್ಕಾರವಿರುವುದೇ ರಜಸ್ಸು ಮತ್ತು ತಮಸ್ಸಿನ ಮೂಲಕ. ಹೀಗೆ ಈ ಗುಣತ್ರಯಗಳ ಬಂಧನದಿಂದಾಗಿ ಸ್ವರೂಪತಃ ಹುಟ್ಟುಸಾವಿಲ್ಲದ ಜೀವ-ಸ್ಥೂಲ ದೇಹವನ್ನು ಪಡೆದು ಹುಟ್ಟುತ್ತಾನೆ ಮತ್ತು ಆ ದೇಹವನ್ನು ಕಳೆದುಕೊಂಡು ಸಾಯುತ್ತಾನೆ.  ಹುಟ್ಟು ಸಾವಿಲ್ಲದ ಮೋಕ್ಷವನ್ನು ಸೇರಲು ನಾವು ನಮ್ಮೊಂದಿಗಿರುವ ಈ ಮೂರು ಅಂತಃಶತ್ರುಗಳನ್ನು ಗೆಲ್ಲಬೇಕು. 
ಇಲ್ಲಿ ವ್ಯಾಸರು ‘ಮಹಾಬಾಹು’ ಎನ್ನುವ ವಿಶೇಷಣವನ್ನು ಬಳಸಿದ್ದಾರೆ. “ನಿನ್ನನ್ನು ಬಂಧಿಸಿ ತಮ್ಮ ಇಷ್ಟದಂತೆ ಕುಣಿಸುವ ಈ ತ್ರಿಗುಣಗಳನ್ನು ಗೆದೆಯುವ ಮಹಾಬಾಹುವಾಗು; ಕುಸ್ಸಿತವನ್ನು ನಿರಾಕರಣೆಮಾಡಿ ಅಧ್ಯಾತ್ಮದ ಶೂರನಾಗು” ಎನ್ನುವ ಧ್ವನಿ ಈ ವಿಶೇಷಣದ ಹಿಂದಿದೆ.

ಇಡೀ ವಿಶ್ವ, ಈ ನಮ್ಮ  ಬದುಕು, ಎಲ್ಲವೂ  ಗುಣತ್ರಯದ ವಿಕಾರ. ನಮ್ಮ ಮನಸ್ಸು, ನಮ್ಮ ಚಿಂತನೆ, ನಮ್ಮ ನಿರ್ಧಾರ, ನಮ್ಮ ಓದು, ನಮ್ಮ ನಂಬಿಕೆ, ಎಲ್ಲವೂ ಈ ಗುಣಗಳ ಪ್ರಭಾವದಿಂದ. ನಮ್ಮನ್ನು ಸರಿ ದಾರಿಯಲ್ಲಿ ನಡೆಸುವುದೂ ತ್ರಿಗುಣಗಳು, ನಮ್ಮನ್ನು ದಾರಿ ತಪ್ಪಿಸುವುದೂ ಈ ತ್ರಿಗುಣಗಳು. ಮೂರು ದಾರಿಯಲ್ಲಿ ಯಾವ ದಾರಿಯಲ್ಲಿ ಸಾಗಿದರೆ ಒಳಿತಾಗುತ್ತದೆ ಎನ್ನುವ ತೀರ್ಮಾನ ಮಾಡಿಕೊಂಡು ಆಯ್ಕೆ ಮಾಡುವ ಎಚ್ಚರ ನಮಗೆ ಬರಬೇಕಾಗಿದ್ದರೆ, ನಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎನ್ನುವ ಅರಿವು ನಮಗೆ ಬೇಕು. ಈ ಕಾರಣಕ್ಕಾಗಿ ತ್ರಿಗುಣಗಳ ಅರಿವು ನಮಗೆ ಬಹಳ ಮುಖ್ಯ.
ಒಬ್ಬ ವ್ಯಕ್ತಿಯನ್ನು ನಿಯಂತ್ರಿಸುವ ಸಂಗತಿಗಳು ನಾಲ್ಕು. ಒಂದು ಅನಾದಿಕಾಲದಿಂದ  ಜೀವದ ಜೊತೆಗೆ ಜೀವ ಸ್ವರೂಪದಲ್ಲಿ ಸೇರಿಕೊಂಡಿರತಕ್ಕಂತಹ ‘ಸ್ವಭಾವ’. ಇದರ ಜೊತೆಗೆ ಸತ್ವ, ರಜಸ್ಸು, ತಮಸ್ಸು-ಈ ಮೂರು ‘ಪ್ರಭಾವ’ಗಳು. ಸ್ವಭಾವ ಎಂದೂ ಬದಲಾಗುವುದಿಲ್ಲ. ನಾವು ನಮ್ಮ ಸ್ವಭಾವವನ್ನು ಗುರುತಿಸಿಕೊಳ್ಳಬೇಕು. ಆದರೆ ನಮ್ಮ ಸ್ವಭಾವ ಏನು ಎನ್ನುವುದು ನಮಗೆ ತಿಳಿಯುವುದೇ ಇಲ್ಲ! ಏಕೆಂದರೆ ಈ ಸ್ವಭಾವದ ಮೇಲೆ ಮುಚ್ಚಳವಾಗಿ ‘ಪ್ರಭಾವ’ ಕೂತಿದೆ. ನಾವು ಸದಾ ಈ ಮುಚ್ಚಳದ ಪ್ರಭಾವವನ್ನೇ ನಮ್ಮ ಸ್ವಭಾವ ಎಂದು ಭ್ರಮಿಸುತ್ತೇವೆ. ಆದರೆ ಅದು  ನಮ್ಮ ನಿಜವಾದ ಸ್ವರೂಪ ಸ್ವಭಾವವಲ್ಲ-ಅದು ಪ್ರಭಾವ. ಇಡೀ ಜೀವಮಾನದುದ್ದಕ್ಕೂ ನಮ್ಮ ಸ್ವಭಾವವೇನು ಎನ್ನುವುದು ನಮಗೆ ತಿಳಿಯದೇ ಹೋಗಬಹುದು. ಸ್ವಭಾವವೇನು ಎಂದು ತಿಳಿಯದೆ ನಾವು ಈ ಪ್ರಭಾವದೊಳಗೆ ಬಿದ್ದು ಒದ್ದಾಡುತ್ತಿರುತ್ತೇವೆ. ನಮಗೆ ಈ ತ್ರಿಗುಣಗಳ ಪ್ರಭಾವ ಹೇಗೆ ಕೆಲಸ ಮಾಡುತ್ತದೆ ಎಂದು ತಿಳಿಯದೇ ಇದ್ದರೆ- ನಮ್ಮನ್ನು ನಾವು ತಿದ್ದಿಕೊಳ್ಳಲು ಆಗುವುದಿಲ್ಲ. ಇಂದು ನಾವು ನಮ್ಮ ಸ್ವಭಾವವನ್ನು ಮತ್ತು ಸತ್ವಗುಣವನ್ನು ಮೂಲೆಗುಂಪಾಗಿಸಿ, ರಜಸ್ಸು ಮತ್ತು ತಮಸ್ಸುಗಳ ಹತೋಟಿಯಲ್ಲಿ ಬದುಕುತ್ತಿದ್ದೇವೆ.
ಮೊದಲು ನಾವು ನಮ್ಮನ್ನು ತಿದ್ದಿಕೊಳ್ಳಬೇಕು-ಸಮಾಜವನ್ನಲ್ಲ. ನಮ್ಮಲ್ಲಿ ಸತ್ವದ ಅಂಶ ಎಷ್ಟಿದೆ; ರಜಸ್ಸಿನ ಅಂಶ ಎಷ್ಟಿದೆ; ತಮಸ್ಸಿನ ಅಂಶ ಎಷ್ಟಿದೆ ಎನ್ನುವುದನ್ನು ತಿಳಿದು, ನಮ್ಮ ನಡೆಯಲ್ಲಿ ಸತ್ವದ ಅಂಶವನ್ನು ಹೆಚ್ಚಾಗಿ ಬಳಸಿ, ಅದರ ಅಂಶವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಹಿಂದೆ ನಡೆದ ಘಟನೆಗಳಲ್ಲಿ ನಾವು ಎಲ್ಲಿ ರಜಸ್ಸಿನ ಮತ್ತು ತಮಸ್ಸಿನ ಪ್ರಭಾವದಿಂದ ತಪ್ಪಿದ್ದೇವೆ ಎನ್ನುವ ಆತ್ಮಚಿಂತನೆ ನಡೆಸಿ, ಮುಂದೆ ಹಾಗಾಗದಂತೆ ಎಚ್ಚರವಹಿಸಬೇಕು. ಈ ವಿಚಾರವನ್ನು ತಿಳಿದು ನಡೆದರೆ ನಾವು ನಮ್ಮನ್ನು ನಿಯಂತ್ರಿಸಿಕೊಂಡು ಬಹಳ ಆನಂದದಿಂದ ಬದುಕಬಹುದು.
ಮುಂದಿನ ಶ್ಲೋಕಗಳಲ್ಲಿ ಕೃಷ್ಣ ಸತ್ವದ ಬದುಕು ಹೇಗಿರುತ್ತದೆ; ರಜಸ್ಸಿನ ಬದುಕು ಹೇಗಿರುತ್ತದೆ; ತಮಸ್ಸಿನ ಬದುಕು ಹೇಗಿರುತ್ತದೆ ಎನ್ನುವುದನ್ನು ವಿವರಿಸುತ್ತಾನೆ. ತ್ರಿಗುಣದ ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಜೀವರು, ಯಾವ ಕಟ್ಟಿನ ಪ್ರಭಾವದಲ್ಲಿ ಹೇಗೆ ನೆಡೆದುಕೊಳ್ಳುತ್ತಾರೆ ಎನ್ನುವ ಅಂಶ ತಿಳಿದರೆ, ಸತ್ಯದ ದಾರಿಯಲ್ಲಿ ಸಾಗಲು ಪ್ರಯತ್ನ ಮಾಡಬಹುದು. ಇದಕ್ಕೆ ಬಹಳ ಸುಂದರವಾದ ವಿಶ್ಲೇಷಣೆಯನ್ನು ಕೃಷ್ಣ ಮುಂದಿನ ಶ್ಲೋಕಗಳಲ್ಲಿ ನೀಡಿದ್ದಾನೆ.

ತತ್ರ ಸತ್ತ್ವಂ ನಿರ್ಮಲತ್ವಾತ್ ಪ್ರಕಾಶಕಮನಾಮಯಮ್
ಸುಖಸಂಗೇನ ಬಧ್ನಾತಿ ಜ್ಞಾನಸಂಗೇನ ಚಾನಘ                             

ತತ್ರ ಸತ್ತ್ವಮ್  ನಿರ್ಮಲತ್ವಾತ್ ಪ್ರಕಾಶಕಮ್ ಅನಾಮಯಮ್
ಸುಖ ಸಂಗೇನ ಬಧ್ನಾತಿ ಜ್ಞಾನ ಸಂಗೇನ ಚನಘ –ಅವುಗಳಲ್ಲಿ ಸತ್ವಗುಣ ಪರಿಶುದ್ಧವಾದದ್ದು. ಆದ್ದರಿಂದ ಜ್ಞಾನದ ಬೆಳಕು ನೀಡುವಂಥದು; ಬೇನೆಗಳನ್ನು ನೀಗುವಂಥದು. ಓ ನಘ, ಅದು ಸುಖದ ನಂಟಿನಿಂದ ಮತ್ತು ತಿಳಿವಿನ ನಂಟಿನಿಂದ ಕಟ್ಟಿಹಾಕುತ್ತದೆ.

ಕಣ್ಮುಚ್ಚಿ ಕುಳಿತು ನಿನ್ನೊಳಗೆ ನಿನ್ನನ್ನು ನೋಡು. ನಿನ್ನೊಳಗೆ ನಡೆಯುವ ಮಾನಸಿಕ ಬೆಳವಣಿಗೆಗಳು, ಚಿಂತನೆಗಳು, ಯೋಚನೆಗಳು, ಭಾವನೆಗಳನ್ನು ನೋಡು.  ಸತ್ವ ಗುಣದ ಪ್ರಭಾವ ನಿನ್ನ ಮೇಲೆ ಆಗಿದ್ದರೆ-ನಿನ್ನೊಳಗೆ ನೀನು ಸ್ವಚ್ಛ, ನಿರ್ಮಲ ನಿರಾಳವಾದ ಪ್ರಜ್ವಲಿಸುವ ಬೆಳಕನ್ನು ಕಾಣುತ್ತೀಯ. ನಮ್ಮ ಅಂತರಂಗ ಪ್ರಪಂಚಕ್ಕೆ ಪೂರ್ಣ ವಿದ್ಯುತ್  ಸಂಪರ್ಕವಾಗಿದೆ, ದೀಪವನ್ನು, ಈ ದೀಪವನ್ನು ನಿಯಂತ್ರಿಸುವ ಅನೇಕ ಒತ್ತುಗುಂಡಿ(Switch)ಯನ್ನು  ಅಳವಡಿಸಲಾಗಿದೆ. ಇಲ್ಲಿ ನಿರಂತರ ವಿದ್ಯುತ್  ಸರಬರಾಜಿದೆ. ಆದರೆ ನಮಗೆ ಈ ಸ್ವಿಚ್  ಎಲ್ಲಿದೆ ಅನ್ನುವುದು ಗೊತ್ತಿಲ್ಲ. ಆದ್ದರಿಂದ- ಎಲ್ಲ ಇದ್ದರೂ ಸದಾ ನಮ್ಮೊಳಗೆ ಕತ್ತಲು ಆವರಿಸಿಕೊಂಡಿರುತ್ತದೆ. ನಾವು ಅದನ್ನು ಉಪಯೋಗಿಸುವುದೇ ಇಲ್ಲ. ನಮ್ಮಲ್ಲಿ ಸತ್ವಗುಣ ಜಾಗೃತವಾದಾಗ ನಮಗೆ ಈ ಸ್ವಿಚ್  ಸಿಗುತ್ತದೆ. ಅದರಿಂದ ಯಾವುದೇ ದೋಷವಿಲ್ಲದ ಜ್ಞಾನದ ಬೆಳಕು ನಮ್ಮೊಳಗೆ ಬೆಳಗುತ್ತದೆ.      
ಸತ್ವದ ಗುಣ ಜಾಗೃತವಾದಾಗ ನಮ್ಮಲ್ಲಿ ಅಂತರಂಗದ ಆನಂದ ತುಂಬಿ ತುಳುಕುತ್ತಿರುತ್ತದೆ. ಈ ಅನುಭವ ಹೆಚ್ಚಿನವರಿಗೆ ಆಗಿರುತ್ತದೆ. ಉದಾಹರಣೆಗೆ: ಕೆಲವೊಮ್ಮೆ ನಾವು ಹೇಳುವುದಿದೆ “ಏಕೋ ಇಂದು ಬಹಳ ಸಂತೋಷವಾಗುತ್ತಿದೆ” ಎಂದು. ಅಲ್ಲಿ ಏನೂ ವಿಶೇಷ ಕಾರಣವಿರುವುದಿಲ್ಲ. ಆದರೆ ಅಂತರಂಗದ ಆನಂದ ಹೊರ ಹೊಮ್ಮುವುದನ್ನು ನಾವು ಅನುಭವಿಸುತ್ತಿರುತ್ತೇವೆ.  ಇದು ಸತ್ವ ಗುಣದ ಜಾಗೃತಾವಸ್ಥೆ. ಜ್ಞಾನದಿಂದ ಬರುವ ಸುಖವೆಲ್ಲವೂ ಸಾತ್ವಿಕ.
ಇಲ್ಲಿ ಒಂದು ಎಚ್ಚರವನ್ನು ಕೃಷ್ಣ ಕೊಡುತ್ತಾನೆ. ಸತ್ವಗುಣ ನಮ್ಮಲ್ಲಿ ಜಾಗೃತವಾಗಬೇಕಾದರೆ ನಾವು ‘ಅನಘ’ರಾಗಬೇಕು. ಪಾಪ ಸ್ಪರ್ಶ ನಮ್ಮಲ್ಲಿದ್ದರೆ-ಸತ್ವಗುಣ ಜಾಗೃತವಾಗದು. ಅದಕ್ಕಾಗಿ ನಾವು ಪಾಪ ದೂರರಾಗಬೇಕು. ಪಾಪ ಸ್ಪರ್ಶ ಎಷ್ಟು ಹೆಚ್ಚಾಯಿತೋ- ಅಷ್ಟು ಸತ್ವ ದೂರ ಹೋಗುತ್ತದೆ. 
ಮೋಕ್ಷ ಸಾಧನೆಯಲ್ಲಿ ಸತ್ವಗುಣ ಸಾಧನವಾದರೂ ಕೂಡ, ಇದು ತ್ರಿಗುಣಗಳಲ್ಲಿ ಒಂದು. ಆದ್ದರಿಂದ ಸತ್ವಗುಣ ಕೂಡ ಬಂಧಕವಾಗಬಹುದು. ಇದು ಸುಖದ ನಂಟಿನಿಂದ ಮತ್ತು ತಿಳಿವಿನ ನಂಟಿನಿಂದ ನಮ್ಮನ್ನು ಕಟ್ಟಿ ಹಾಕಬಹುದು. ಉದಾಹರಣೆಗೆ: ಜ್ಞಾನ ಸಾಧನೆ ಸಾತ್ವಿಕ ಗುಣ. ಇಲ್ಲಿ ಭಗವಂತನ ವಿಷಯವಲ್ಲದ ಜ್ಞಾನ ಸಾಧನೆಯ ನಂಟಿನಲ್ಲಿ ನಾವು ಬಿದ್ದರೆ-ಆಗ ಅದು ಬಂಧಕವಾಗುತ್ತದೆ. ನಾವು ಯಾವುದೋ ಸಂಶೋಧನೆ, ಅನ್ವೇಷಣೆಯಲ್ಲಿ ಮುಳುಗಿದ್ದರೆ ಅದು ನಮ್ಮನ್ನು ಮೊಕ್ಷದತ್ತ ಕೊಂಡೊಯ್ಯಲಾರದು. ನಾವು ಆ ಸಂಶೋಧನೆಯಲ್ಲಿ ಬರುವ ಫಲಿತಾಂಶದ  ಸುಖದ ನಂಟಿನಲ್ಲಿ ಸಿಲುಕಿ ಸತ್ವಗುಣದ ಬಂಧನಕ್ಕೊಳಗಾಗಬಹುದು.  ಮೋಕ್ಷ ಸಾಧನೆಯಲ್ಲಿ ನಾವು ಸತ್ವವನ್ನೂ ದಾಟಬೇಕು-ಏಕೆಂದರೆ ಮೋಕ್ಷ  ತ್ರಿಗುಣಾತೀತ. ಕೃಷ್ಣ ಇಲ್ಲಿ ಸತ್ವ ಗುಣವನ್ನು ‘ಬಧ್ನಾತಿ’ ಎಂದಿದ್ದಾನೆ. ಏಕೆಂದರೆ ಈ ಬಂಧನ ಸುಲಭದಲ್ಲಿ ಬಿಡಿಸಿಕೊಳ್ಳಬಹುದಾದ ಬಂಧನ. ಅದು ಎಂದೂ ನಮ್ಮನ್ನು ಕೆಳಕ್ಕೆಳೆಯುವುದಿಲ್ಲ. [ಆದರೆ ರಜಸ್ಸು ಮತ್ತು ತಮಸ್ಸು ‘ನಿಬಧ್ನಾತಿ’ ಎಂದು ಕೃಷ್ಣ ಮುಂದಿನ ಶ್ಲೋಕಗಳಲ್ಲಿ ಉಲ್ಲೇಖಿಸಿದ್ದಾನೆ]. ಯಾವ ಸತ್ವ ಭಗವಂತನ ಕಡೆಗೆ ಹೋಗದೆ ನಮ್ಮನ್ನು ಬಂಧನದಲ್ಲಿ ಸುತ್ತಾಡಿಸುತ್ತದೋ- ಆ ಸತ್ವದಿಂದ ನಾವು ಪಾರಾಗಬೇಕು. 

ರಜೋ ರಾಗಾತ್ಮಕಂ ವಿದ್ಧಿ ತೃಷ್ಣಾಸಂಗಸಮುದ್ಭವಮ್
ತನ್ನಿಬಧ್ನಾತಿ ಕೌಂತೇಯ ಕರ್ಮಸಂಗೇನ ದೇಹಿನಮ್                     

ಜಃ  ರಾಗಾತ್ಮಕಮ್  ವಿದ್ಧಿ ತೃಷ್ಣಾ ಸಂಗ ಸಮುದ್ಭವಮ್
ತ್ ನಿಬಧ್ನಾತಿ ಕೌಂತೇಯ ಕರ್ಮಸಂಗೇನ ದೇಹಿನಮ್—ರಜೋಗುಣ ರಂಜಿಸುವಂಥದು, ಆಸೆ-ಆಸಕ್ತಿಗಳನ್ನು ಹುಟ್ಟಿಸುವಂಥದು ಎಂದು ತಿಳಿ. ಕೌಂತೇಯ, ಅದು ಜೀವನನ್ನು ಕರ್ಮದ ನಂಟಿನಿಂದ ಕಟ್ಟಿಹಾಕುತ್ತದೆ.

ರಜಸ್ಸು ಅಂದರೆ ‘ರಾಗ’. ಒಂದು ವಸ್ತುವನ್ನು ತುಂಬಾ ಇಷ್ಟಪಡುವುದು, ಬಯಕೆಗಳ ಸರಮಾಲೆ- ಹೀಗೆ ಎಲ್ಲಾ  ಪಂಚೇಂದ್ರಿಯಗಳ ಬಯಕೆ ರಜೋಗುಣದ ಪ್ರಭಾವದಿಂದ ಬರುವಂಥದ್ದು. ಇದು  ತೃಷ್ಣಾ  ಮತ್ತು ಸಂಗಕ್ಕೆ ಕಾರಣ. ಇಲ್ಲಿ ತೃಷ್ಣಾ ಅಂದರೆ ಬೇಕು-ಬೇಕು ಎನ್ನುವ ದಾಹ. ಸಂಗ ಎಂದರೆ ಒಂದು ವಸ್ತುವಿನ ನಿರಂತರ ಒಡನಾಟ. ರಜೋಗುಣ ಬಯಕೆಯನ್ನು ಹುಟ್ಟಿಸುತ್ತದೆ. ಆ ಬಯಕೆಯಿಂದ ಒಡನಾಟ, ಒಡನಾಟದಿಂದ ಅದು ಅಂಟಿಕೊಳ್ಳುವಂತೆ ಮಾಡುತ್ತದೆ. ಹೀಗೆ ಹಂತ ಹಂತವಾಗಿ ರಜೋಗುಣ ನಮ್ಮನ್ನು ಬಿಡಿಸಿಕೊಳ್ಳಲಾಗದ ಬಂಧನಕ್ಕೊಳಪಡಿಸುತ್ತದೆ(ನಿಬಧ್ನಾತಿ). ಇದರ ಪ್ರಭಾವದಿಂದ ನಾವು ಜ್ಞಾನದ ಬಯಕೆ ಇಲ್ಲದ ಕರ್ಮಸಂಗ ಮಾಡಲಾರಂಭಿಸುತ್ತೇವೆ. ಉದಾಹರಣೆಗೆ: ದುಡ್ಡಿಗಾಗಿ ಹೋರಾಟ, ದುಡ್ಡಿಗಾಗಿ ಇಡೀ ಬದುಕನ್ನು ಮೀಸಲಿಡುವುದು. ದುಡ್ಡೇ ಪ್ರಪಂಚ ಎಂದು ಹೋರಾಡುವುದು, ಇತ್ಯಾದಿ. ಇದು ರಜಸ್ಸಿನ ಗಾಢವಾದ ಬಂಧನದ ಪ್ರಭಾವ.   

ತಮಸ್ತ್ವಜ್ಞಾನಜಂ ವಿದ್ಧಿ ಮೋಹನಂ ಸರ್ವದೇಹಿನಾಮ್
ಪ್ರಮಾದಾಲಸ್ಯನಿದ್ರಾಭಿಸ್ತನ್ನಿಬಧ್ನಾತಿ ಭಾರತ                               

ಮಃ ತು ಅಜ್ಞಾನಜಮ್  ವಿದ್ಧಿ ಮೋಹನಂ ಸರ್ವದೇಹಿನಾಮ್
ಪ್ರಮಾದ ಲಸ್ಯ ನಿದ್ರಾಭಿಃ ತತ್ ನಿಬಧ್ನಾತಿ ಭಾರತ –ಎಲ್ಲ ಜೀವಿಗಳಿಗೆ ಅಜ್ಞಾನ ನೀಡುವಂಥದು, ಭ್ರಮೆಗೊಳಿಸುವಂಥದು- ತಮೋಗುಣ ಎಂದು ತಿಳಿ. ಭಾರತ, ಅದು ಮೈಮರೆವು, ಸೋಮಾರಿತನ ಮತ್ತು ನಿದ್ದೆಗಳಿಂದ ಕಟ್ಟಿಹಾಕುತ್ತದೆ.

ಏನೂ ಗೊತ್ತಿಲ್ಲದೆ ಇರುವುದು ತಮಸ್ಸು. ತಮೋಗುಣದಿಂದ ಅಜ್ಞಾನ ಹುಟ್ಟುತ್ತದೆ. ಅದು ಎಷ್ಟು ಬಲಿಷ್ಟ ಎಂದರೆ-ಅದು   ನನ್ನಲ್ಲಿ ಜ್ಞಾನವಿಲ್ಲ, ನಾನು ಅಜ್ಞಾನಿ ಎನ್ನುವ ಜ್ಞಾನವೂ ಬಾರದಂತೆ ಮಾಡಬಲ್ಲದು. ಇದು ಅತ್ಯಂತ ಭಯಾನಕ. ಆಂಗ್ಲ ಭಾಷೆಯಲ್ಲಿ ಹೇಳುವಂತೆ: “He who knows not, and knows not that he knows not, is a fool”. ನನಗೆ ಏನೂ ಗೊತ್ತಿಲ್ಲ ಅನ್ನುವ ವಿಷಯ ಕೂಡ ನನಗೆ ಗೊತ್ತಿಲ್ಲದೆ ಇರುವುದು ತಮೋಗುಣದಿಂದ.  ಇದು ಸಮಸ್ತರನ್ನು ಭ್ರಮೆಯಲ್ಲಿ ಸಿಲುಕಿಹಾಕಿಸುವ ಗುಣ. ತಮಸ್ಸು ನಾವು ಬಿಡಿಸಿಕೊಳ್ಳಲಾಗದ ಮೂರು ಕಟ್ಟಿನಿಂದ ನಮ್ಮನ್ನು ಬಂಧಿಸುತ್ತದೆ. ಅವುಗಳೆಂದರೆ ನಿದ್ದೆ, ಆಲಸ್ಯ ಮತ್ತು ಪ್ರಮಾದ. ಎಚ್ಚರದಲ್ಲೂ  ಎಚ್ಚರವಿಲ್ಲದೆ ಬದುಕುವುದು ಪ್ರಮಾದ. ತಪ್ಪು ಮಾಡುವುದು ತಪ್ಪಲ್ಲ, ಆದರೆ ತಪ್ಪು ಮಾಡಿಯೂ ತಿದ್ದಿಕೊಳ್ಳದೆ ಇರುವುದು ಪ್ರಮಾದ. ಇದಕ್ಕೆ ಕಾರಣ ನಮ್ಮಲ್ಲಿರುವ ಈ ತಮೋಗುಣ.

ಸತ್ತ್ವಂ ಸುಖೇ ಸಂಜಯತಿ ರಜಃ ಕರ್ಮಣಿ ಭಾರತ
ಜ್ಞಾನಮಾವೃತ್ಯ ತು ತಮಃ ಪ್ರಮಾದೇ ಸಂಜಯತ್ಯುತ                    

ಸತ್ತ್ವಂ ಸುಖೇ ಸಂಜಯತಿ ರಜಃ ಕರ್ಮಣಿ ಭಾರತ
ಜ್ಞಾನಮ್ ಆವೃತ್ಯ ತು ತಮಃ ಪ್ರಮಾದೇ ಸಂಜಯತಿ ಉ –ಸತ್ವಗುಣ ಸುಖದ ನಂಟಿನಲ್ಲಿರುತ್ತದೆ. ಭಾರತ, ರಜೋಗುಣ  ಕರ್ಮದ ನಂಟಿನಲ್ಲಿರುತ್ತದೆ. ತಮೋಗುಣ ಅರಿವನ್ನು ಮುಚ್ಚಿ ಮೈಮರೆಸಿ ಬಿಡುತ್ತದೆ.    

ಈ ಶ್ಲೋಕದಲ್ಲಿ ಕೃಷ್ಣ   ಮೂರು ಗುಣಗಳನ್ನು ಒಟ್ಟಿನಲ್ಲಿ ಸಂಕ್ಷೇಪಿಸಿ ಹೇಳುತ್ತಾನೆ. ಸತ್ವದ ಮೂಲ ಗುಣಧರ್ಮ ಏನೆಂದರೆ -ಅದರಿಂದಾಗಿ ನಮ್ಮಿಂದ ಒಂದು ಸಹಜವಾದ ಆನಂದ ಚಿಮ್ಮುತ್ತದೆ. ರಜೋಗುಣ “ಏನಾದರೂ ಮಾಡಬೇಕು ಇಲ್ಲದಿದ್ದರೆ ಜೀವನದಲ್ಲಿ ಸುಖವಿಲ್ಲ” ಎಂದು, ಸದಾ ದುಡ್ಡಿಗಾಗಿ ಹೋರಾಟ ಮಾಡುತ್ತಾ, ತಮ್ಮ ಜೀವನವನ್ನು ಸವೆಸುವಂತೆ ಮಾಡುತ್ತದೆ. ತಮಸ್ಸು ನಮ್ಮಲ್ಲಿರುವ ಜ್ಞಾನವನ್ನು ಮುಚ್ಚಿಬಿಡುತ್ತದೆ. ಉದಾಹರಣೆಗೆ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು ಎನ್ನುವ ಒಳ್ಳೆಯತನ, ಕೊಡುವುದರಲ್ಲಿ ಖುಷಿಪಡುವುದು-ಸತ್ವಗುಣ. ತಾನು ಸುಖವಾಗಿರಬೇಕು ಎಂದು ಸದಾ ಸುಖದ ಅನ್ವೇಷಣೆಯಲ್ಲಿ ತೊಡಗಿ, ಮಾಡಬಾರದ ಕೆಲಸವನ್ನು ಮಾಡುತ್ತ ಬದುಕುವುದು ರಜೋಗುಣ. ನಮ್ಮಿಂದ ನಡೆಯುವ ಪ್ರಮಾದವೆಲ್ಲವೂ ತಮೋಗುಣದ ಪ್ರಭಾವ. ಇದು ನಮಗೆ ಕೃಷ್ಣ ಗೀತೆಯ ಮೂಲಕ ಹೇಳಿದ ಅತ್ಯುನ್ನತವಾದ ಮನಃಶಾಸ್ತ್ರ.     

Sunday, November 13, 2011

Bhagavad GitA Kannada Chapter-14 Shloka 3-4


ಮಮ ಯೋನಿರ್ಮಹದ್ ಬ್ರಹ್ಮ ತಸ್ಮಿನ್ ಗರ್ಭಂ ದಧಾಮ್ಯಹಮ್
ಸಂಭವಃ ಸರ್ವಭೂತಾನಾಂ ತತೋ ಭವತಿ ಭಾರತ                                   

ಮಮ ಯೋನಿಃ ಮಹತ್ ಬ್ರಹ್ಮ ತಸ್ಮಿನ್ ಗರ್ಭಮ್  ದಧಾಮಿ ಅಹಮ್
ಸಂಭವಃ ಸರ್ವಭೂತಾನಾಮ್  ತತಃ  ಭವತಿ ಭಾರತ –ಚೇತನ ಪ್ರಕೃತಿ ನನ್ನ ಅರ್ಧಾಂಗಿ. ಅವಳಲ್ಲಿ ಸೃಷ್ಟಿಯ ಬೀಜವನ್ನು ಬಿತ್ತುತ್ತೇನೆ. ಭಾರತ, ಎಲ್ಲ ಜೀವಿಗಳ ಹುಟ್ಟು ಅದರ ಮೂಲಕ ನಡೆಯುತ್ತದೆ.

ಇಲ್ಲಿ ಕೃಷ್ಣ ಬಹಳ ವಿಚಿತ್ರವಾದ ಒಂದು ಸಂಗತಿಯನ್ನು ಹೇಳುತ್ತಾನೆ. ಈ ಶ್ಲೋಕ ಅರ್ಥವಾಗಬೇಕಿದ್ದರೆ ನಾವು ಮೊದಲು ‘ಭಾ-ರತ’ ರಾಗಬೇಕು. ‘ರತ’ ಅಂದರೆ ತತ್ಪರತೆ. ನಾವು   ಭಗವಂತನಲ್ಲಿ ರತರಾಗಬೇಕು; ಜ್ಞಾನದ ಮಾರ್ಗದಲ್ಲಿ ರತರಾಗಬೇಕು; ಭಕ್ತಿಯಿಂದ ಭರಿತರಾಗಿ ತುಂಬಿದ ಕೊಡವಾಗಬೇಕು; ವಿನೀತರಾಗಿರಬೇಕು. ಆಗ ಸೃಷ್ಟಿಯ ಈ ಗುಟ್ಟು ಅರ್ಥವಾಗುತ್ತದೆ.
ಯಾವುದೇ ಒಂದು ವಸ್ತು ಸೃಷ್ಟಿಯಾಗಬೇಕಿದ್ದರೂ ಅಲ್ಲಿ ಒಂದಕ್ಕಿಂತ  ಹೆಚ್ಚು ಕಾರಣಗಳು ಬೇಕು. ಜಡವಾದರೆ ಅಲ್ಲಿ ಎರಡು ಕಾರಣಗಳು ಅಗತ್ಯ. ಉದಾಹರಣೆಗೆ ಒಂದು ಮಡಕೆ ಸೃಷ್ಟಿಯಾಗಬೇಕಿದ್ದರೆ ಅಲ್ಲಿ ಮೂಲದ್ರವ್ಯ(raw materials) ಬೇಕು ಮತ್ತು ರೂಪ ಕೊಡುವ ಕುಂಬಾರ ಬೇಕು. ವನಸ್ಪತಿಗಳ ಸೃಷ್ಟಿ- ಜಡದೊಳಗೆ ಭಗವಂತ ಜೀವವನ್ನು ಸೇರಿಸುವುದರ ಮೂಲಕ ಆಗುತ್ತದೆ. ಆದರೆ ಗರ್ಭದ ಮೂಲಕ ಹುಟ್ಟುವ  'ಚೇತನ ಸೃಷ್ಟಿ'ಗೆ ಜಡದ್ರವ್ಯದೊಂದಿಗೆ ಸೃಷ್ಟಿ ಮಾಡತಕ್ಕಂತಹ ಒಂದು ಗಂಡು ಮತ್ತು ಒಂದು ಹೆಣ್ಣು ಬೇಕು.  ಇಬ್ಬರ ಸಮಾಗಮದಿಂದ ಮೂರನೆಯದು ಸೃಷ್ಟಿಯಾಗುತ್ತದೆ.
ಈ ಶ್ಲೋಕದಲ್ಲಿ  ‘ಮಮ ಯೋನಿಃ ಮಹತ್ ಬ್ರಹ್ಮ’ ಎನ್ನುವಲ್ಲಿ ಬಂದಿರುವ 'ಯೋನಿ' ಮತ್ತು 'ಬ್ರಹ್ಮ' ಎನ್ನುವ ಪದಗಳು ಅನೇಕ ಅರ್ಥವನ್ನು ಕೊಡುವ ಪದಗಳು. ಯಾವ ಸಂದರ್ಭದಲ್ಲಿ ಯಾವ ಅರ್ಥ ಹೊಂದಿಕೆಯಾಗುತ್ತದೆ ಎಂದು ತಿಳಿದು ನಾವು  ಶ್ಲೋಕವನ್ನು ಅರ್ಥ ಮಾಡಿಕೊಳ್ಳಬೇಕು. ಯೋನಿ- ಕಾರಣ, ಉತ್ಪತ್ತಿಸ್ಥಾನ, ಹೆಂಡತಿ ಇತ್ಯಾದಿ ಅರ್ಥವನ್ನು ಕೊಡುತ್ತದೆ. ಅದೇ ರೀತಿ ಬ್ರಹ್ಮ- ಜೀವ, ಚತುರ್ಮುಖ, ಲಕ್ಷ್ಮಿ, ಭಗವಂತ ಇತ್ಯಾದಿ ಅನೇಕ ಅರ್ಥವನ್ನು ಕೊಡುತ್ತದೆ.  ಈ ಶ್ಲೋಕದಲ್ಲಿ  ಯೋನಿ ಅಂದರೆ ಹೆಂಡತಿ; ‘ಮಹತ್ ಬ್ರಹ್ಮ’ ಎಂದರೆ ಚತುರ್ಮುಖನಿಗೂ ತಾಯಿಯಾಗಿರುವ ಶ್ರೀಲಕ್ಷ್ಮಿ. ಕೃಷ್ಣ ಹೇಳುತ್ತಾನೆ “ ನಾನು ನನ್ನ ಪತ್ನಿಯಾದ ಚಿತ್ ಪ್ರಕೃತಿ (ಲಕ್ಷ್ಮಿ)ಯಲ್ಲಿ ಗರ್ಭದಾನ ಮಾಡುತ್ತೇನೆ. ಆ ಗರ್ಭ ಬೆಳೆದು ಸಮಸ್ತ ಜೀವಜಾತಗಳು ಸೃಷ್ಟಿಯಾಗುತ್ತವೆ” ಎಂದು. ಇದು ನಮಗೆ ಹೊಸ ಸಂಗತಿ. ಏಕೆಂದರೆ ಋಗ್ವೇದದಲ್ಲಿ ಚತುರ್ಮುಖನ ಸೃಷ್ಟಿಯ ಬಗ್ಗೆ ಈ ರೀತಿ ಹೇಳಲಾಗಿದೆ:
ತಮಿದ್ಗರ್ಭಂ ಪ್ರಥಮಂ ದಧ್ರ ಆಪೋ ಯತ್ರ ದೇವಾಃ ಸಮಗಚ್ಛಂತ ವಿಶ್ವೇ|
ಅಜಸ್ಯ ನಾಭಾವಧ್ಯೇಕಮರ್ಪಿತಂ ಯಸ್ಮಿನ್ವಿಶ್ವಾನಿ ಭುವನಾನಿ ತಸ್ಥುಃ ||  ೧೦.೮೨.೦೬||
ಇಲ್ಲಿ  “ಭಗವಂತನ ನಾಭಿ ಕಮಲದಿಂದ ಬ್ರಹ್ಮ ಹೊರ ಬಂದ” ಎಂದು ಹೇಳಲಾಗಿದೆ. ಚತುರ್ಮುಖನಿಂದ ಜೀವ  ಸೃಷ್ಟಿ ನಿರ್ಮಾಣವಾಯಿತು ಆದ್ದರಿಂದ ಚತುರ್ಮುಖ ಜಗತ್ತಿನ ತಂದೆ ಎನ್ನುವ ವಿಚಾರವೂ ನಮಗೆ ತಿಳಿದಿದೆ. ವೇದದಲ್ಲಿ ಇನ್ನೊಂದು ಕಡೆ(ಅಂಭ್ರಿಣೀಸೂಕ್ತ) ಹೀಗೆ ಹೇಳಿದ್ದಾರೆ:
ಅಹಂ ಸುವೇ ಪಿತರಮಸ್ಯ ಮೂರ್ಧನ್ ಮಮ ಯೋನಿರಪ್ಸ್ವ‌೦ತಃ ಸಮುದ್ರೇ |
ತತೋ ವಿ ತಿಷ್ಠೇ ಭುವನಾನು ವಿಶ್ವೋ-ತಾಮೂಂ ದ್ಯಾಂ ವರ್ಷ್ಮಣೋಪ ಸ್ಪೃಶಾಮಿ ||||
ಇದು ಲಕ್ಷ್ಮಿ ಹೇಳುವ ಮಾತು: “ನಾನು ಈ ಜಗತ್ತಿನ ತಂದೆಯಾದ ಚತುರ್ಮುಖನನ್ನು ನನ್ನ ನೆತ್ತಿ(ಮೂರ್ಧನ್-ಬೈತಲೆ)ಯಿಂದ ಹೆತ್ತೆ. ನನಗೂ ಕಾರಣನಾದ ಭಗವಂತ ಸಮುದ್ರದಲ್ಲಿದ್ದಾನೆ ” ಎಂದು.  ಸಮಸ್ತ ಬ್ರಹ್ಮಾಂಡದ ಸೃಷ್ಟಿ ಶಿವನಿಂದಾಯಿತು ಎಂದು ಇನ್ನೊಂದೆಡೆ ಹೇಳುತ್ತಾರೆ. ಶಾಸ್ತ್ರ ಪ್ರಕ್ರಿಯೆ ಗೊತ್ತಿಲ್ಲದಿದ್ದರೆ ಇದೆಲ್ಲವೂ ಬರಿಯ ಗೊಂದಲ. ಮೋಕ್ಷ ಸಾಧನೆ ಮಾಡುವವರು ಇದನ್ನು ಸೂಕ್ಷ್ಮವಾಗಿ ವಿಶ್ಲೇಷಿಸಬೇಕು-ಆಗ ಸತ್ಯ ಸಾಕ್ಷಾತ್ಕಾರವಾಗುತ್ತದೆ.
ಜೀವ-ಪ್ರಕೃತಿ-ಭಗವಂತ ಅನಾದಿ ಅನಂತ. ಸೃಷ್ಟಿ ಪೂರ್ವದಲ್ಲಿ ಸಮಸ್ತ ಪ್ರಪಂಚ ಸೂಕ್ಷ್ಮ ರೂಪದಲ್ಲಿ ಭಗವಂತನ ಉದರದಲ್ಲಿತ್ತು. ಇದನ್ನು ಇನ್ನೂ ಸೂಕ್ಷ್ಮವಾಗಿ ನೋಡಿದರೆ- ಸಮಸ್ತ ವಿಶ್ವ ಲಕ್ಷ್ಮೀದೇವಿಯ ಉದರದಲ್ಲಿತ್ತು ಮತ್ತು ಲಕ್ಷ್ಮಿ  ಭಗವಂತನ ಉದರದಲ್ಲಿದ್ದಳು. ಭಗವಂತ ಲಕ್ಷ್ಮಿಯ ಉದರದಲ್ಲಿ ಸಮಸ್ತ ಜೀವಜಾತಗಳ ಬೀಜಕ್ಷೇಪ ಮಾಡಿದ. ಕಮಲ ರೂಪದ ಇಡೀ ಬ್ರಹ್ಮಾಂಡ ಲಕ್ಷ್ಮಿಯ ನೆತ್ತಿಯ ಮೂಲಕ ಭಗವಂತನ ನಾಭಿಯಿಂದ ಹೊರಚಿಮ್ಮಿತು. ಅದರಲ್ಲಿ ಚತುರ್ಮುಖನಿದ್ದ ಜೊತೆಗೆ ಅವ್ಯಕ್ತ ರೂಪದಲ್ಲಿ ಸಮಸ್ತ ದೇವತೆಗಳೂ, ಜೀವಜಾತರೂ ಹುಟ್ಟಿದರು. ಈ ಕಾರಣದಿಂದ ಲಕ್ಷ್ಮೀನಾರಾಯಣರು ಸಮಸ್ತ ಜಗತ್ತಿನ ತಾಯಿ-ತಂದೆ. ಇಲ್ಲಿ ನಾವು ಅರಿಯಬೇಕಾದ ಒಂದು ಮುಖ್ಯ ವಿಚಾರವೆಂದರೆ-ಸೃಷ್ಟಿ ಕ್ರಿಯೆ ಹಂತ ಹಂತವಾಗಿ ನಡೆದ ಕ್ರಿಯೆ. ಲಕ್ಷ್ಮೀ ನಾರಾಯಣರ ಸಮಾಗಮದಿಂದ ನಿರ್ಮಾಣವಾದದ್ದು ಕೇವಲ ಅವ್ಯಕ್ತ ಸೃಷ್ಟಿ. ನಂತರ ಚತುರ್ಮುಖ ಬ್ರಹ್ಮ ಈ ಸೂಕ್ಷ್ಮರೂಪಿ ಅವ್ಯಕ್ತ ಪ್ರಪಂಚಕ್ಕೆ(ಜೀವ ಜಾತಕ್ಕೆ) ಒಂದು ಮೂಲ ಸ್ಥೂಲರೂಪವನ್ನು ಕೊಟ್ಟು ಜಗತ್ತಿನ ಪಿತಾಮಹನೆನಿಸಿದ. ತದನಂತರ ಶಿವನಿಂದ ಈ ಪ್ರಪಂಚ ಪೂರ್ಣ ಸ್ಥೂಲರೂಪವನ್ನು ಪಡೆಯಿತು. ಈ ಪ್ರಕ್ರೀಯೆಯನ್ನು ನಾವು ಅರ್ಥ ಮಾಡಿಕೊಂಡರೆ ಇಲ್ಲಿ ಯಾವುದೇ ಗೊಂದಲವಿಲ್ಲ. ಚತುರ್ಮುಖ ಲಕ್ಷ್ಮಿಯ ನೆತ್ತಿಯಿಂದ ಹುಟ್ಟಿದ್ದು ಹೌದು; ಆತ ಭಗವಂತನ ನಾಭಿಯಿಂದ ಹುಟ್ಟಿರುವುದೂ ಹೌದು; ಆತ ಜಗತ್ತಿನ ತಂದೆ ಹೌದು; ಶಿವನಿಂದ ಈ ಸ್ಥೂಲ ಪ್ರಪಂಚ ನಿರ್ಮಾಣವಾದದ್ದೂ ಹೌದು; ಲಕ್ಷ್ಮೀ ನಾರಾಯಣರು ಸಮಸ್ತ ಜೀವಜಾತದ ತಾಯಿ-ತಂದೆ ಕೂಡ ಹೌದು. ಈ ಕುರಿತ ವಿವರವನ್ನು 'ಮಹಾಭಾರತ ತಾತ್ಪರ್ಯ ನಿರ್ಣಯ'ದಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ.
 ಒಂದು ಚೇತನ[ಭೂತಿ(ಉನ್ನತಿ) ಉಳ್ಳ ಜೀವ)ದ ಸೃಷ್ಟಿಗೆ ಒಂದು ಗಂಡು ಒಂದು ಹೆಣ್ಣಿನ ಸಮಾಗಮ ಅಗತ್ಯ. ಇದು ಸೃಷ್ಟಿ ಆರಂಭದಿಂದಲೇ ಬೆಳೆದುಕೊಂಡು ಬಂದ ಸಂಪ್ರದಾಯ. ಜಗತ್ತಿನ ಎಲ್ಲಾ ಸೃಷ್ಟಿಯ ಹಿಂದೆ ಲಕ್ಷ್ಮೀನಾರಾಯಣರು ತಂದೆ ತಾಯಿಯಾಗಿ ನಿಂತಿದ್ದಾರೆ. ಈ ವಿಷಯವನ್ನು ಇನ್ನೂ ಸ್ಪಷ್ಟವಾಗಿ ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.

ಸರ್ವಯೋನಿಷು ಕೌಂತೇಯ ಮೂರ್ತಯಃ ಸಂಭವಂತಿ ಯಾಃ
ತಾಸಾಂ ಬ್ರಹ್ಮ ಮಹದ್ ಯೋನಿರಹಂ ಬೀಜಪ್ರದಃ ಪಿತಾ                

ಸರ್ವಯೋನಿಷು ಕೌಂತೇಯ ಮೂರ್ತಯಃ ಸಂಭವಂತಿ ಯಾಃ
ತಾಸಾಮ್  ಬ್ರಹ್ಮ ಮಹತ್  ಯೋನಿಃ ಅಮ್ ಬೀಜಪ್ರದಃ ಪಿತಾ ಕೌಂತೇಯ, ಯಾವೆಲ್ಲ ಬಸಿರುಗಳಲ್ಲಿ ಏನೆಲ್ಲ ರೂಪಗಳು ರೂಪುಗೊಳ್ಳುತ್ತವೆ- ಅವುಗಳಿಗೆಲ್ಲ ಚೇತನ ಪ್ರಕೃತಿಯೆ ತಾಯಿ; ನಾನೆ ಬೀಜ ಬಿತ್ತುವ ತಂದೆ.

ಕೇವಲ ದೇವತೆಗಳು, ಮಾನವರಷ್ಟೇ ಅಲ್ಲ. ಸಮಸ್ತ ಜೀವಜಾತದ ಹುಟ್ಟಿನ ಹಿಂದೆ ತಂದೆ ತಾಯಿಯಾಗಿ ಲಕ್ಷ್ಮೀ-ನಾರಾಯಣರಿದ್ದಾರೆ. ಎಲ್ಲವುದರ ತಾಯಿ ಚೇತನ ಪ್ರಕೃತಿ ಲಕ್ಷ್ಮಿ. ಬೀಜ ಬಿತ್ತುವ ತಂದೆ ನಾರಾಯಣ. ಮುಂಡಕ ಉಪನಿಷತ್ತಿನಲ್ಲಿ ಹೇಳುವಂತೆ:
ಪುಮಾನ್ ರೇತಃ ಸಿಂಚತಿ ಯೋಷಿತಾಯಾಂ ಬಹ್ವೀಃ ಪ್ರಜಾಃ ಪುರುಷಾತ್ ಸಂಪ್ರಸೂತಾಃ || ೨.೨.||
ಇಲ್ಲಿ 'ಪುಮಾನ್' ಎಂದರೆ ಗಂಡಿನಲ್ಲಿ ವಿಶೇಷವಾಗಿ ಸನ್ನಿಹಿತನಾಗಿರುವ ಭಗವಂತ ಮತ್ತು  'ಯೋಷಿತಾ' ಎಂದರೆ ಹೆಣ್ಣಿನಲ್ಲಿ ವಿಶೇಷವಾಗಿ ಸನ್ನಿಹಿತಳಾಗಿರುವ ಲಕ್ಷ್ಮಿ. ಹೇಗೆ ಹೊಲದಲ್ಲಿ ಬೀಜ ಬಿತ್ತಿದರೆ ಅದು ಅಲ್ಲಿ ನಿಜವಾದ ರೂಪವನ್ನು ತಾಳುತ್ತದೋ, ಹಾಗೆ ಭಗವಂತ ಜಡಪ್ರಕೃತಿಯ ಅಭಿಮಾನಿನಿಯಾದ ಶ್ರೀಲಕ್ಷ್ಮಿಯಲ್ಲಿ ಬೀಜಪ್ರದ ಮಾಡುತ್ತಾನೆ. ತಾಯಿ ಲಕ್ಷ್ಮಿ ಆ ಬೀಜಕ್ಕೆ ಒಂದು ಆಕಾರ ಕೊಡುತ್ತಾಳೆ. ಈ ಅನುಸಂಧಾನ ಎಷ್ಟು ಭವ್ಯ. ಈ ಕಾರಣಕ್ಕಾಗಿ  ಹಿಂದಿನ ಕಾಲದ ಶಾಸ್ತ್ರಕಾರರು ಗರ್ಭಿಣಿ ಹೆಣ್ಣಿನ ದೇಹವನ್ನು ದೇವಾಲಯ ಎಂದೂ, ಆ ಗರ್ಭಿಣಿಯ ಗರ್ಭವಿರುವ ಸ್ಥಳ ಗರ್ಭಗುಡಿ ಎಂತಲೂ, ಆ ಗರ್ಭದ ಒಳಗೆ ಸನ್ನಿಹಿತನಾಗಿ ಬೆಳೆಸುತ್ತಿರುವವ  ಭಗವಂತ ಎಂತಲೂ ಗೌರವಿಸುತ್ತಿದ್ದರು. ಇದು ನಮ್ಮ ಪ್ರಾಚೀನರು ಪ್ರತಿಯೊಂದು ಕ್ರಿಯೆಯಲ್ಲೂ ಭಗವಂತನನ್ನು ಅನುಸಂಧಾನ ಮಾಡುವ ಭವ್ಯತೆ. ಹೆಣ್ಣು ದೇವಾಲಯವಾಗುವುದು ಆಕೆ ಗರ್ಭಿಣಿಯಾದಾಗ. ಹಾಗಾಗಿ ಹೆಣ್ಣಿನ ಸರ್ವ ಶ್ರೇಷ್ಠ ಭಯಕೆ ತಾನು ತಾಯಿಯಾಗಬೇಕು ಎನ್ನುವುದು. ಆಕೆಯ ಬಯಕೆಯ ಕೊನೆಯ ಗುರಿ ಮಾತೃತ್ವ. ಲಕ್ಷ್ಮಿ ಆಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಸನ್ನಿಹಿತಳಾಗುವುದು ಆಕೆ ಗರ್ಭವತಿಯಾದಾಗ.  ಈ ಕಾರಣದಿಂದ ದಾಂಪತ್ಯ ಅನ್ನುವುದು ಲಕ್ಷ್ಮೀನಾರಾಯಣರ ಆರಾಧನೆ. ದಾಂಪತ್ಯದಲ್ಲಿ ಗಂಡು ಹೆಣ್ಣಿನ ಸಮಾಗಮ ಎನ್ನುವುದು ಲಕ್ಷ್ಮೀ ನಾರಾಯಣರ ಸಮಾಗಮ. ಇಲ್ಲಿ ನಮ್ಮ ಭಾಗ್ಯ ಎಂದರೆ ನಮ್ಮನ್ನು ಮಾಧ್ಯಮವಾಗಿ ಬಳಸಿ ಭಗವಂತ ಸೃಷ್ಟಿ ಮಾಡುವುದು. ಈ ರೀತಿ ಸೃಷ್ಟಿಯಾಗುವಾಗ  ಇಲ್ಲಿ ಬೇಕಾಗುವ ಮೂಲದ್ರವ್ಯದ ವಿಸ್ತಾರವಾದ ವಿವರಣೆಯನ್ನು ಕೃಷ್ಣ ಮುಂದಿನ ಶ್ಲೋಕಗಳಲ್ಲಿ ನೀಡಿದ್ದಾನೆ.   

Saturday, November 12, 2011

Bhagavad Gita in Kannada Chapter-14 Shloka 01-02


ಅಧ್ಯಾಯ ಹದಿನಾಲ್ಕು

ಗೀತೆಯಲ್ಲಿ ಇಲ್ಲಿಯ ತನಕ ಅಲ್ಲಲ್ಲಿ ಸಾಧನೆಯ ಮಾತು ಬಂದಿದ್ದರೂ ಕೂಡ, ಭಗವಂತನ ಸ್ವರೂಪದ ಮಹಿಮೆಯ ಮಾತು ಹೆಚ್ಚಾಗಿ ಬಂದಿದೆ. ಇಂಥಹ ಭಗವಂತನ ಉಪಾಸನೆಯ ಮುಖಗಳ ವರ್ಣನೆಯನ್ನು ನಾವು ಇನ್ನು ಮುಂದೆ ಕಾಣಬಹುದು. ಹನ್ನೆರಡನೆ ಅಧ್ಯಾಯದಲ್ಲಿ(ಶ್ಲೋ-೦೫) ಕೃಷ್ಣ "ಶ್ರೀತತ್ವದ ಉಪಾಸನೆ ತುಂಬಾ ಕಷ್ಟ, ಇದು ನೇರ ದಾರಿಯನ್ನು ಬಿಟ್ಟು ಬಳಸುದಾರಿಯಲ್ಲಿ ಭಗವಂತನೆಡೆಗೆ ಪಯಣಿಸಿದಂತೆ, ಸಾಧಕರು ಇದನ್ನು ಬಹಳ ಕಷ್ಟದಿಂದ ಸಾಧಿಸಬೇಕು"-ಎನ್ನುವ ಎಚ್ಚರವನ್ನು ಕೊಟ್ಟ. ಹದಿಮೂರನೇ ಅಧ್ಯಾಯದಲ್ಲಿ(ಶ್ಲೋ-೨೬)- "ಸ್ಥಿರ ಮತ್ತು ಚರ ಜೀವಿಗಳಲ್ಲಿ  ಯಾವುದು ಹುಟ್ಟಿದರೂ ಅದು ಕ್ಷೇತ್ರ[ಶ್ರೀತತ್ವ] ಮತ್ತು ಕ್ಷೇತ್ರಜ್ಞ[ಭಗವಂತ]ರ ಸಂಯೋಗದಿಂದಲೆ ಎಂದು ತಿಳಿ"-ಎಂದು ಹೇಳಿದ. ಸಾಮಾನ್ಯವಾಗಿ ಸೃಷ್ಟಿಯ ಮಾತು ಬಂದಾಗ ‘ಭಗವಂತ ಸೃಷ್ಟಿ ಮಾಡಿದ’ ಎನ್ನುತ್ತೇವೆ. ಇಲ್ಲಿ ಎಲ್ಲಿಯೂ ಲಕ್ಷ್ಮಿಯ ಮಾತು ಬರುವುದಿಲ್ಲ. ಆದರೆ ಹಿಂದಿನ ಅಧ್ಯಾಯದಲ್ಲಿ ಕೃಷ್ಣ ಸ್ಪಷ್ಟವಾಗಿ ಹೇಳಿದ: “ಈ ಸೃಷ್ಟಿ ಲಕ್ಷ್ಮೀನಾರಾಯಣರ ದಾಂಪತ್ಯದ ಫಲ” ಎಂದು. ಈ ಕಾರಣದಿಂದ ಸೃಷ್ಟಿ ಮೂಲದ ಚಿಂತನೆಯಲ್ಲಿ ಲಕ್ಷ್ಮೀನಾರಾಯಣರನ್ನು ಒಟ್ಟಿಗೆ ಸ್ತುತಿಸುವುದು ಶ್ರೇಷ್ಠ. ಲಕ್ಷ್ಮಿಯನ್ನು ಸ್ತುತಿಸುವಾಗ ಜೊತೆಗೆ ನಾರಾಯಣನನ್ನು ಸ್ತುತಿಸಿ ಲಕ್ಷ್ಮಿಯ ಸ್ತೋತ್ರ ಮಾಡಬೇಕು ಎನ್ನುವುದನ್ನು ಆಚಾರ್ಯರು ದ್ವಾದಶ ಸ್ತೋತ್ರದಲ್ಲಿ ಸ್ಪಷ್ಟವಾಗಿ ತೋರಿಸಿದ್ದಾರೆ. ಅಲ್ಲಿ ‘ಶ್ರೀಸ್ತುತಿ’ ಎನ್ನುವ ಲಕ್ಷ್ಮೀದೇವಿಯ ಸ್ತುತಿ ಈ ರೀತಿ ಹೇಳುತ್ತದೆ:
ವಿಶ್ವಸ್ಥಿತಿಪ್ರಳಯಸರ್ಗಮಹಾವಿಭೂತಿ ವೃತ್ತಿಪ್ರಕಾಶನಿಯಮಾವೃತಿ ಬಂಧಮೋಕ್ಷಾಃ |
ಯಸ್ಯಾ ಅಪಾಂಗಲವಮಾತ್ರತ ಊರ್ಜಿತಾ ಸಾ ಶ್ರೀಃ ಯತ್ಕಟಾಕ್ಷಬಲವತ್ಯಜಿತಂ ನಮಾಮಿ || ||
ಅಂದರೆ “ಯಾರ ಕಟಾಕ್ಷದ ಬಲದಿಂದ ಇಡಿಯ ಸೃಷ್ಟಿ-ಸ್ಥಿತಿ-ಸಂಹಾರವನ್ನು ಲಕ್ಷ್ಮಿ  ಮಾಡುತ್ತಾಳೋ, ಅಂಥಹ ಲಕ್ಷ್ಮಿಯ ಪತಿಯಾದ ನಾರಾಯಣನಿಗೆ ನಮಸ್ಕಾರ” ಎಂದು. ಇಲ್ಲಿ ಲಕ್ಷ್ಮಿಯನ್ನು ಒಂದು ಸ್ತೋತ್ರದಲ್ಲಿ ಪೂರ್ಣ ವರ್ಣನೆ ಮಾಡಿ, ಅಂಥಹ ಲಕ್ಷ್ಮಿಯ ಪತಿಯಾದ ನಾರಾಯಣನಿಗೆ ನಮಸ್ಕಾರ ಎಂದು ಹೇಳಿದ್ದಾರೆ. ಆದ್ದರಿಂದ ಲಕ್ಷ್ಮೀನಾರಾಯಣರ ಸ್ತುತಿಯೇ ಲಕ್ಷ್ಮಿಸ್ತುತಿ ಹೊರತು ಕೇವಲ ಲಕ್ಷ್ಮಿ ಸ್ತುತಿ ಅಲ್ಲ. ಇದಕ್ಕೆ ಮೂಲ-ಗೀತೆಯ ಹನ್ನೆರಡು, ಹದಿಮೂರು ಮತ್ತು ಹದಿನಾಲ್ಕನೇ ಅಧ್ಯಾಯ. ಹನ್ನೆರಡನೆ ಅಧ್ಯಾಯದಲ್ಲಿ ಕೇವಲ ಲಕ್ಷ್ಮಿ ಉಪಾಸನೆ ಮಾಡಿದರೆ ಖಂಡಿತವಾಗಿ ಆಕೆ ಒಲಿಯಳು ಎನ್ನುವ ಎಚ್ಚರವಿದ್ದರೆ, ಹದಿಮೂರನೇ ಅಧ್ಯಾಯದಲ್ಲಿ  ಈ ಜಗತ್ತು ಲಕ್ಷ್ಮೀ ನಾರಾಯಣರ ಸಂಯೋಗದಿಂದ ರಚನೆಯಾಯಿತು- ಆದ್ದರಿಂದ ನಾವೆಲ್ಲರೂ ಅವರ ಮಕ್ಕಳು ಎನ್ನುವ ಸಂದೇಶವಿದೆ.  ಭಗವಂತನ ಜೊತೆಗೆ ಸೃಷ್ಟಿ ಪ್ರಕ್ರಿಯೆಯಲ್ಲಿ ಲಕ್ಷ್ಮಿಯ ಅನುಸಂಧಾನ ಹೇಗೆ ಅನ್ನುವುದನ್ನು ಹದಿನಾಲ್ಕನೆ ಅಧ್ಯಾಯ ವಿವರಿಸುತ್ತದೆ. ಲಕ್ಷ್ಮಿ ಶ್ರೀ-ಭೂ-ದುರ್ಗ ಈ ಮೂರು ರೂಪದಲ್ಲಿ ಸತ್ವ-ರಜಸ್ಸು-ತಮೋಗುಣಗಳ ನಿಯಾಮಕ ಶಕ್ತಿಯಾದ್ದರಿಂದ-ಅವಳ ಮಕ್ಕಳು ಸಾತ್ವಿಕರು-ರಾಜಸರು-ತಾಮಸರು  ಎನ್ನುವ  ಮೂರು ಬಗೆ. ಈ ವಿಚಾರವನ್ನು ಮೊತ್ತಮೊದಲ ಬಾರಿ ಈ ಅಧ್ಯಾಯದಲ್ಲಿ ಹೇಳಲಾಗಿದೆ. ಹಿಂದಿನ ಯಾವ ಅಧ್ಯಾಯದಲ್ಲಿ ಕೂಡ  ತ್ರೈವಿದ್ಯರ ವಿವರ ಇಷ್ಟು ಸ್ಪಷ್ಟವಾಗಿ ಬಂದಿಲ್ಲ. ನಾವು ಈ ತ್ರಿಗುಣಗಳ  ವಿಶ್ಲೇಷಣೆ ಮಾಡಿ,  ನಮ್ಮಲ್ಲಿರುವ  ರಾಜಸ ಮತ್ತು ತಾಮಸ ಅಂಶವನ್ನು ತಿದ್ದಿಕೊಂಡು, ಹೇಗೆ ಸಾತ್ವಿಕ ದಾರಿಯಲ್ಲಿ ಸಾಧನೆಯನ್ನು ಮಾಡಬಹುದು ಎನ್ನುವ ಅಂಶವನ್ನು ಈ ಅಧ್ಯಾಯದಲ್ಲಿ ಕಾಣಬಹುದು.

ಭಗವಾನುವಾಚ
ಪರಂ ಭೂಯಃ ಪ್ರವಕ್ಷ್ಯಾಮಿ ಜ್ಞಾನಾನಾಂ ಜ್ಞಾನಮುತ್ತಮಮ್
ಜ್ ಜ್ಞಾತ್ವಾ ಮುನಯಃ ಸರ್ವೇ ಪರಾಂ ಸಿದ್ಧಿಮಿತೋ ಗತಾಃ                     

ಭಗವಾನ್ ಉವಾಚ-ಭಗವಂತ ಹೇಳಿದನು:
ಪರಮ್ ಭೂಯಃ ಪ್ರವಕ್ಷ್ಯಾಮಿ ಜ್ಞಾನಾನಾಮ್  ಜ್ಞಾನಮ್ ಉತ್ತಮಮ್
ತ್  ಜ್ಞಾತ್ವಾ ಮುನಯಃ ಸರ್ವೇ ಪರಾಮ್  ಸಿದ್ಧಿಮ್ ಇತಃ  ಗತಾಃ –ತಿಳಿಯಬೇಕಾದ ಸಂಗತಿಗಳಲ್ಲಿ ಹಿರಿದಾದ ತಿಳಿವನ್ನು ಇನ್ನಷ್ಟು ಹೇಳುತ್ತೇನೆ; ಎಲ್ಲ ಮುನಿಗಳು ಇದನ್ನರಿತು ಇಲ್ಲಿಂದ ಪರಮಪದವನ್ನೈದಿದರು.

ಕೃಷ್ಣ ಹೇಳುತ್ತಾನೆ “ಇನ್ನೂ ಹೇಳುತ್ತೇನೆ” ಎಂದು. ಇದು ಬಹಳ ಮುಖ್ಯವಾದ ಮಾತು. ಸಾಮಾನ್ಯವಾಗಿ ಶಿಷ್ಯರು ಒತ್ತಾಯ ಮಾಡಿದರೂ ಗುರುಗಳು ಹೇಳುವುದಿಲ್ಲ. ಗುರುಗಳಿಗೆ ಶಿಷ್ಯನ ಜ್ಞಾನ ತೃಷೆಯನ್ನು ಕಂಡು ಹೇಳಬೇಕು ಅನ್ನಿಸಬೇಕು ಮತ್ತು ಅವರು ಖುಷಿಯಿಂದ ಹೇಳಬೇಕು. ಆಗ ಶಿಷ್ಯನಿಗೆ ಆ ವಿದ್ಯೆ ಫಲಿಸುತ್ತದೆ. ಹೀಗೆ ಜ್ಞಾನ ತೃಷೆಯನ್ನು ಕಂಡು ಖುಷಿಯಿಂದ ಗುರು ಹೇಳುವ ಜ್ಞಾನ ನಿಜವಾದ ಜ್ಞಾನ. ಇಲ್ಲಿ ಕೃಷ್ಣ ತಾನಾಗಿಯೇ ಅರ್ಜುನನಿಗೆ ಅಪೂರ್ವವಾದ ಜ್ಞಾನವನ್ನು ಹೇಳುತ್ತಿದ್ದಾನೆ. ಕೃಷ್ಣ ಹೇಳುತ್ತಾನೆ: “ಹಿಂದೆ ಹೇಳಿದ ಕ್ಷೇತ್ರ(ಪ್ರಕೃತಿ-ಲಕ್ಷ್ಮಿ) ಮತ್ತು ಕ್ಷೇತ್ರಜ್ಞ(ನಾರಾಯಣ)ರ ವಿಚಾರವನ್ನು ಇನ್ನೂ ವಿವರವಾಗಿ ಹೇಳುತ್ತೇನೆ. ಏಕೆಂದರೆ ಅದು ತಿಳಿದುಕೊಳ್ಳಬೇಕಾದ ವಿಚಾರದಲ್ಲೇ ಅತ್ಯಂತ ಮುಖ್ಯವಾದ ವಿಚಾರ” ಎಂದು. ಈ ಜಗತ್ತಿನ ಸೃಷ್ಟಿಯ ಹಿಂದೆ ತಂದೆ-ತಾಯಿಯಾಗಿ ಲಕ್ಷ್ಮೀ-ನಾರಾಯಣರಿದ್ದಾರೆ. ಆದ್ದರಿಂದ ಕೇವಲ ತಂದೆಯ ಸ್ಮರಣೆಯಾಗಲಿ ಅಥವಾ ಕೇವಲ ತಾಯಿಯ ಸ್ಮರಣೆಯಾಗಲಿ ಮಾಡುವುದಕ್ಕಿಂತ, ತಂದೆ-ತಾಯಿಯರ ಸ್ಮರಣೆಯನ್ನು ತಿಳಿದು ಮಾಡುವುದು ಒಳಿತು. ಕೃಷ್ಣ ಹೇಳುತ್ತಾನೆ: “ಈ ವಿಚಾರವನ್ನು ಇನ್ನೂ ವಿಸ್ತಾರವಾಗಿ ನಿನಗೆ ಹೇಳುತ್ತೇನೆ. ಏಕೆಂದರೆ ಇದು ಒಬ್ಬ ಮೋಕ್ಷ ಸಾಧನೆ ಮಾಡುವ ವ್ಯಕ್ತಿ ತಿಳಿದುಕೊಳ್ಳಲೇಬೇಕಾದ ವಿಷಯ” ಎಂದು. ಲಕ್ಷ್ಮೀ-ನಾರಾಯಣರನ್ನು ಸೃಷ್ಟಿ ಮೂಲದಲ್ಲಿ ಚಿಂತನೆ ಮಾಡದೆ ಮೋಕ್ಷ ಸಾಧನೆ ಅಸಾಧ್ಯ. “ಈ ಸಾಧನಾ ಭೂಮಿಯಲ್ಲಿ ಹುಟ್ಟಿಬಂದು ಬ್ರಹ್ಮಸಾಕ್ಷಾತ್ಕಾರ ಪಡೆದ ಮುನಿಗಳೂ ಕೂಡ, ಇದನ್ನು ತಿಳಿದೇ ಜೀವನದ ಪರಮ ಸಿದ್ಧಿಯಾದ ಮೋಕ್ಷವನ್ನು ಪಡೆದರು” ಎನ್ನುತ್ತಾನೆ ಕೃಷ್ಣ.  ಇದನ್ನೇ ಮುಂದಿನ ಶ್ಲೋಕದಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ.

ಇದಂ ಜ್ಞಾನಮಪಾಶ್ರಿತ್ಯ ಮಮ ಸಾಧರ್ಮ್ಯಮಾಗತಾಃ        
ಸರ್ಗೇSಪಿ ನೋಪಜಾಯಂತೇ ಪ್ರಯೇ ನ ವ್ಯಥಂತಿ                 

ಇದಮ್  ಜ್ಞಾನಮ್ ಅಪಾಶ್ರಿತ್ಯ ಮಮ ಸಾಧರ್ಮ್ಯಮ್ ಆಗತಾಃ        
ಸರ್ಗೇಪಿ ನ ಉಪಜಾಯಂತೇ ಪ್ರಯೇ ನ ವ್ಯಥಂತಿ –ಈ ತಿಳಿವು ಗಳಿಸಿ ದುಗುಡ ದೂರರಾಗಿ ನನ್ನನ್ನು ಹೋಲುವವರು ಸೃಷ್ಟಿಕಾಲದಲ್ಲಿ ಹುಟ್ಟುವುದಿಲ್ಲ; ಪ್ರಳಯಕಾಲದಲ್ಲಿ ನೋಯುವುದಿಲ್ಲ.

ಈ ಶ್ಲೋಕದಲ್ಲಿ ಬಂದಿರುವ ‘ಅಪಾಶ್ರಿತ್ಯ’ ಎನ್ನುವ ಪದ ವಿಶೇಷ ಅರ್ಥವನ್ನು ಕೊಡುವ ಪದ. ‘ಅನ್ಯತ್ ಸರ್ವಂ ಅಪಾಹಾಯಾSಶ್ರಯಣಂ-ಅಪಾSಶ್ರಯಣಃ’  “ಇನ್ಯಾರೂ ಇಲ್ಲ-ನೀನೇ ನನಗೆ ಆಶ್ರಯ” ಎಂದು ಭಗವಂತನಲ್ಲಿ ಆಶ್ರಯ ಹೊಂದುವುದನ್ನು ಇಲ್ಲಿ   ‘ಅಪಾಶ್ರಿತ್ಯ’ ಎಂದಿದ್ದಾರೆ.  ದ್ವಾದಶ ಸ್ತೋತ್ರದಲ್ಲಿ ಹೇಳುವಂತೆ:
ಕುರು ಭುಂಕ್ಷ್ವ ಚ ಕರ್ಮ ನಿಜಂ ನಿಯತಂ ಹರಿಪಾದವಿನಮ್ರಧಿಯಾ ಸತತಂ |
ಹರಿರೇವ ಪರೋ ಹರಿರೇವ ಗುರುಃ ಹರಿರೇವ ಜಗತ್ಪಿತೃಮಾತೃಗತಿಃ || ||

ಇದು ‘ಅಪಾಶ್ರಿತ್ಯ’ ಪದದ ಮೂಲ ಅರ್ಥವನ್ನು ಹೇಳುತ್ತದೆ. ಇಲ್ಲಿ ಕೃಷ್ಣ ಹೇಳುತ್ತಾನೆ: “ಲಕ್ಷ್ಮೀ-ನಾರಾಯಣರು ಜಗತ್ತಿನ ತಂದೆ ತಾಯಿ-ಅನ್ನುವ ಜ್ಞಾನದಿಂದ ನನ್ನನ್ನು ಉಪಾಸನೆ ಮಾಡುವವರು, ನನ್ನಂತೆ ದಿವ್ಯ ಸ್ವಭಾವವನ್ನು ಪಡೆಯುತ್ತಾನೆ” ಎಂದು. ಇಂಥವರು ಸರ್ವದೋಷವನ್ನು ಕಳೆದುಕೊಂಡು, ತ್ರಿಗುಣಾತೀತ ಸ್ಥಿತಿಯಲ್ಲಿ ಭಗವಂತನನ್ನು ಸೇರಿ ಭಗವಂತನಲ್ಲಿ ನೆಲೆಸುತ್ತಾರೆ. ಈ ಜಗತ್ತು ಸೃಷ್ಟಿಯಾಗುವುದೂ ಲಕ್ಷ್ಮೀ-ನಾರಾಯಣರಿಂದ ಮತ್ತು ಹೋಗಿ ಸೇರುವುದೂ ಅವರನ್ನೆ. ಇದನ್ನು ತಿಳಿದವನು ಹುಟ್ಟು ಸಾವನ್ನು ದಾಟಬಲ್ಲ. ಆತ ಮರಳಿ ಎಂದೂ ಈ ಸಂಸಾರ ಬಂಧದಲ್ಲಿ ಸೀಲುಕುವುದಿಲ್ಲ. ಇಲ್ಲಿ ‘ಉಪಜಾಯತೆ’ ಎನ್ನುವ ಪದ ಬಳಕೆಯಾಗಿದೆ.  ಸಂಸ್ಕೃತದಲ್ಲಿ ‘ಉಪ’ ಅಂದರೆ ‘ಉತ್ಕೃಷ್ಟ’.[ಇದು ಆಂಗ್ಲ ಭಾಷೆಯಲ್ಲಿ ‘up/upper’ ಆದರೆ,  ಹಿಂದಿಯಲ್ಲಿ ‘ऊपर’ ಆಗಿದೆ. ಜರ್ಮನ್ ಭಾಷೆಯಲ್ಲಿ ಇದು  ‘über’. ಕನ್ನಡದಲ್ಲಿ ಉಪ್ಪರಿಗೆ ಅನ್ನುವಲ್ಲಿ ‘ಉಪ’ - ‘’ಮೇಲೆ’ ಎನ್ನುವ ಅರ್ಥವನ್ನು ಕೊಡುತ್ತದೆ].  ಆದ್ದರಿಂದ ‘ಉಪಜಾಯತೆ’ ಎಂದರೆ ಉತ್ಕೃಷ್ಟವಾದ ಜನನ. ಭಗವಂತನ ಅರಿವಿಗೋಸ್ಕರ ಈ ದೇಹ ಧಾರಣೆ ಮಾಡಿ ಹುಟ್ಟುವುದು ಎತ್ತರದ ಹುಟ್ಟು. ಅಧ್ಯಾತ್ಮದ ಸಾಧನೆಯಿಂದ ಎತ್ತರಕ್ಕೇರುವ ಜನನ  ‘ಉಪಜನನ’. ತನ್ನ ಜೀವಮಾನದಲ್ಲಿ ಈ ಸೃಷ್ಟಿಯ ಮೂಲದ ಜ್ಞಾನವನ್ನು ಗಳಿಸಿದವ ಮತ್ತೆ ಮರಳಿ ಹುಟ್ಟಲಾರ. ಆತ ಭಗವಂತನಲ್ಲಿ ನಿರಂತರ ವಾಸ ಮಾಡುವ ಪರಮ ಪದವನ್ನು ಪಡೆಯುತ್ತಾನೆ. 

Tuesday, November 8, 2011

Bhagavad Gita Kannada Chapter-13 shloka 29-34


ಭಗವಂತನ ಚಿಂತನೆಯ ಇನ್ನೊಂದು ಅನುಸಂಧಾನವನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ನಮ್ಮ ಮುಂದಿಟ್ಟಿದ್ದಾನೆ. ಎಚ್ಚರಿಕೆಯಿಂದ ಈ ಶ್ಲೋಕವನ್ನು ನಾವು ನೋಡಿದರೆ ನಮಗೆ ಸತ್ಯ ತಿಳಿಯುತ್ತದೆ. ನಮ್ಮಲ್ಲಿ ಎಲ್ಲರಲ್ಲೂ ಇರುವ ಒಂದು ಗೊಂದಲ ಎಂದರೆ- “ಕ್ರಿಯೆಯನ್ನು  ನಾನು ಮಾಡುವುದೇ ಅಥವಾ ನನ್ನಿಂದ ಭಗವಂತ ಮಾಡಿಸುವುದೇ? ಭಗವಂತ ಮಾಡಿಸುವುದಾದರೆ ಏಕೆ ನನ್ನಿಂದ ಕೆಟ್ಟ ಕೆಲಸವನ್ನು ಮಾಡಿಸುತ್ತಾನೆ?”ಎಂಬುದು. ಈ ಪ್ರಶ್ನೆಗೆ ಕೃಷ್ಣ ಈ ಶ್ಲೋಕದಲ್ಲಿ ಅಡಕವಾಗಿ ಉತ್ತರ ಕೊಟ್ಟಿದ್ದಾನೆ. ಇಲ್ಲಿ ಹಿಂದೆ ಕೃಷ್ಣ ಹೇಳಿದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ಶ್ಲೋಕವನ್ನು ನಾವು ನೋಡಬೇಕಾಗಿದೆ.

ಪ್ರಕೃತ್ಯೈವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ
ಯಃ ಪಶ್ಯತಿ ತಥಾSSತ್ಮಾನಮಕರ್ತಾರಂ ಸ ಪಶ್ಯತಿ                                   ೨೯

ಪ್ರಕೃತ್ಯಾ ಏವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ
ಯಃ ಪಶ್ಯತಿ ತಥಾತ್ಮಾನಮ್ ಅಕರ್ತಾರಮ್ ಸಃ ಪಶ್ಯತಿ -- ಪ್ರಕೃತಿಯಿಂದಲೆ ಎಲ್ಲ ಕಾರ್ಯಗಳೂ ನಡೆಯುತ್ತಿವೆ[ಜೀವನ ಕರ್ಮಕ್ಕನುಗುಣವಾಗಿ ಭಗವಂತನೆ ತೊಡಗಿ ಎಲ್ಲ ಕಾರ್ಯಗಳಲ್ಲು ಮುನ್ನೆಡೆಸುತ್ತಾನೆ] ಎಂದು ತಿಳಿದವನು ಮತ್ತು ಏನು ಮಾಡುವುದಕ್ಕೂ ತಾನು ಸ್ವತಂತ್ರನಲ್ಲ[ಭಗವಂತನಿಗೆ ಇನ್ನೊಬ್ಬ ಕಾರಣ ಪುರುಷನಿಲ್ಲ] ಎಂದು ತಿಳಿದವನು ‘ನಿಜವಾಗಿ ತಿಳಿದವನು’.

ಕೃಷ್ಣ ಹೇಳುತ್ತಾನೆ “ಯಾರಿಗೆ ‘ನಾನು’ ಮಾಡುತ್ತಿಲ್ಲ ಎಂದು ಗೊತ್ತಿದೆಯೋ ಅವನು ತಿಳಿದವನು” ಎಂದು. ಆದ್ದರಿಂದ ಮೊದಲು ನಾವು “ನಾನು ಮಾಡುತ್ತಿದ್ದೇನೆ” ಎನ್ನುವ ಅಹಂಕಾರವನ್ನು ಬಿಟ್ಟುಬಿಡಬೇಕು. ನಾನು ಮಾಡುತ್ತಿದ್ದೇನೆ ಎನ್ನುವುದು ಕೇವಲ ವ್ಯವಹಾರಿಕ ಸತ್ಯ ಹೊರತು ಪಾರಮಾರ್ಥಿಕ ಸತ್ಯವಲ್ಲ. ಉದಾಹರಣೆಗೆ: “ನಾನು ಮಾತನಾಡುತ್ತಿದ್ದೇನೆ”. ಇಲ್ಲಿ ನಾನು ಮಾತನಾಡಬೇಕಾದರೆ ಮೊದಲು ನಾನು ಮೂಗನಾಗಿರಬಾರದು. ಅದಕ್ಕೆ ಸರಿಯಾದ ಅಂಗಾಂಗವಿರುವ ಮಾನವ ಶರೀರವಿರಬೇಕು. ಮಾತನಾಡಬೇಕಾದರೆ ನನ್ನ ಮನಸ್ಸು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ಯೋಚಿಸಿ ಸಂದೇಶವನ್ನು ರವಾನಿಸಬೇಕು. ಅಂದರೆ ಇದಕ್ಕೆ ಸರಿಯಾದ ಮೆದುಳಿನ ಶಕ್ತಿ ನನಗೆ ಬೇಕು. ಮಾತನಾಡುವ ಧೈರ್ಯ ನನಗೆ ಬೇಕು. ಈಗ ನಮಗೆ ನಾವೇ ಪ್ರಶ್ನೆ ಹಾಕಿಕೊಳ್ಳೋಣ: ನನಗೆ ಮಾತನಾಡಬಲ್ಲ ಮಾನವ ದೇಹವನ್ನು ಕೊಟ್ಟವನ್ಯಾರು? ನನಗೆ ಯೋಚಿಸಬಲ್ಲ ಮೆದುಳನ್ನು ವಿನ್ಯಾಸಗೊಳಿಸಿ ಕರುಣಿಸಿದನ್ಯಾರು? ಸಮಯಕ್ಕೆ ಸರಿಯಾಗಿ ಈ ಮೆದುಳಿನಿಂದ ಸಂದೇಶವನ್ನು ರವಾನಿಸಿದವನ್ಯಾರು? ಮಾತನಾಡುವ ಅದ್ಭುತ ಕಲೆಯನ್ನು ನನಗೆ ದಯಾಪಾಲಿಸಿದವನ್ಯಾರು? ಈ ಎಲ್ಲಾ ಪ್ರಶ್ನೆಯಿಂದ ನಮಗೆ ತಿಳಿಯುವುದೇನೆಂದರೆ: “ನನ್ನೊಳಗಿರುವ ಭಗವಂತ ನುಡಿಸಿದ-ನಾನು ನುಡಿದೆ” ಎನ್ನುವ ಸತ್ಯ. ಇದನ್ನೇ ಇಲ್ಲಿ ಭಗವಂತ ವಿವರಿಸುತ್ತ ಹೇಳುತ್ತಾನೆ “ಪ್ರಕೃತ್ಯೈವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ” ಎಂದು. ಅವರವರ ಜೀವಪ್ರಕೃತಿ(ಜೀವ ಸ್ವಭಾವ)ಗೆ  ಅನುಗುಣವಾಗಿ, ಪ್ರಕೃತಿ(ತ್ರಿಗುಣಗಳ) ಪ್ರಭಾವದಿಂದ, ಪ್ರಕೃತಿಪುರುಷರು(ಲಕ್ಷ್ಮೀನಾರಾಯಣರು) ನಮ್ಮಿಂದ ಕರ್ಮವನ್ನು ಮಾಡಿಸುತ್ತಾರೆ.  ಆದ್ದರಿಂದ ಜೀವನಿಗೆ ಅನಾಧಿನಿತ್ಯವಾಗಿ ಬಂದ ಜೀವಸ್ವಭಾವಕ್ಕನುಗುಣವಾಗಿ ಆತನ ದೇಹ ಸೃಷ್ಟಿ; ಅದಕ್ಕನುಗುಣವಾಗಿ ಆತನ ಮೇಲೆ ವಾತಾವರಣದಲ್ಲಿನ ತ್ರಿಗುಣಗಳ ಪ್ರಭಾವ; ತ್ರಿಗುಣಗಳ ಪ್ರಭಾವದಂತೆ ಆತನ ಎಲ್ಲಾ ವಿಧದ ಕರ್ಮ. ಇದೆಲ್ಲವನ್ನು ಮಾಡಿಸುವವ- ಸರ್ವದೇವತೆಗಳ ಅಧಿಪತಿಯಾದ, ಲಕ್ಷ್ಮೀ ಸಮೇತನಾದ ನಾರಾಯಣ.

ಯದಾ ಭೂತಪೃಥಗ್ ಭಾವಮೇಕಸ್ಥಮನುಪಶ್ಯತಿ   
ತತ ಏವ ಚ ವಿಸ್ತಾರಂ ಬ್ರಹ್ಮ ಸಂಪದ್ಯತೇ ತದಾ                             ೩೦

ಯದಾ ಭೂತ ಪೃಥಕ್  ಭಾಮ್ ಏಕಸ್ಥಮ್ ಅನುಪಶ್ಯತಿ    
ತಃ  ಏವ ಚ ವಿಸ್ತಾರಂ ಬ್ರಹ್ಮ ಸಂಪದ್ಯತೇ ತದಾ –ಬಗೆಬಗೆಯ ಜೀವರಾಶಿ ಒಬ್ಬ ಭಗವಂತನಲ್ಲಿ ನೆಲೆಸಿದೆ ಎಂದು, ಅವನಿಂದಲೆ ಈ ಬಗೆಬಗೆಯ ಬಿತ್ತರ ಎಂದು ತಿಳಿದಾಗ ಭಗವಂತನನ್ನೇ ಸೇರುತ್ತಾನೆ.

ಜೀವ ಅನಾಧಿನಿತ್ಯ. ಸೃಷ್ಟಿಯಾಗುವುದು, ಸಂಹಾರವಾಗುವುದು  ಕೇವಲ ಕಾಣುವ ರೂಪ ಅಷ್ಟೆ. ಜೀವಜಾತಗಳು ಒಂದೊಂದೂ ಪೃಥಕ್  ಭಾ. ಯಾವ ಎರಡು ಜೀವಜಾತವೂ ನೂರಕ್ಕೆ ನೂರು ಸದೃಶವಾಗಿಲ್ಲ. ಈ ಅನೇಕ ಜೀವ ಸಮುದಾಯ ಏಕನಾದ ಭಗವಂತನಲ್ಲಿದೆ. ಸೃಷ್ಟಿ ಕಾಲದಲ್ಲಿ ಭಗವಂತನ ಉದರದಿಂದ ಹೊರ ಬಂದು ಆಕಾರ ಪಡೆಯುವ ಜೀವ ಜಾತಗಳು ಪ್ರಳಯ ಕಾಲದಲ್ಲಿ ಮರಳಿ ಸೂಕ್ಷ್ಮ ರೂಪದಲ್ಲಿ ಭಗವಂತನ ಉದರವನ್ನು ಸೇರುತ್ತವೆ. ಇದನ್ನು ನಾವು ವಸ್ತುಃಸ್ಥಿತಿಗೆ ಅನುಗುಣವಾಗಿ ಗ್ರಹಣ ಮಾಡಬೇಕು. ಯಾರು ಈ ಸತ್ಯವನ್ನು ಗ್ರಹಣ ಮಾಡಬಲ್ಲನೋ ಆತ ಮೋಕ್ಷವನ್ನು ಪಡೆಯಬಲ್ಲ.

ಅನಾದಿತ್ವಾನ್ನಿರ್ಗುಣತ್ವಾತ್ ಪರಮಾತ್ಮಾSಯಮವ್ಯಯಃ
ಶರೀರಸ್ಥೋSಪಿ ಕೌಂತೇಯ ನ ಕರೋತಿ ನ ಲಿಪ್ಯತೇ                                   ೩೧

ಅನಾದಿತ್ವಾತ್ ನಿರ್ಗುಣತ್ವಾತ್ ಪರಮತ್ಮಾಮ್ ಅವ್ಯಯಃ
ಶರೀರಸ್ಥಃ ಅಪಿ ಕೌಂತೇಯ ನ ಕರೋತಿ ನ ಲಿಪ್ಯತೇ            --ಕೌಂತೇಯ, ಪರಮಾತ್ಮ ಎಂದೂ ಹುಟ್ಟದವನು; ಗುಣಗಳು ಅಂಟದವನು; ಅದರಿಂದ ಅವನಿಗೆ ಅಳಿವೂ ಇಲ್ಲ. ಅವನು ದೇಹದೊಳಗಿದ್ದೂ ಏನನ್ನೂ ಮಾಡುವುದಿಲ್ಲ; ಏನನ್ನೂ ಅಂಟಿಸಿಕೊಳ್ಳುವುದಿಲ್ಲ.[ಅಳಿವಿರದ ಈ ಪರಮಾತ್ಮ ಸಂಸಾರಿ ಜೀವನಲ್ಲ; ಜಡದ ಮಾತೇನು! ಅವನು ಎಲ್ಲವನ್ನೂ ಮಾಡುತ್ತಾನೆ; ಏನನ್ನೂ ಅಂಟಿಸಿಕೊಳ್ಳುವುದಿಲ್ಲ.]

ನಿರ್ವೀಕಾರನಾಗಿರುವ ಏಕಮೇವ ವಸ್ತು ಎಂದರೆ ಭಗವಂತ. ಆತ ಎಂದೂ ಯಾವ ಕಾರಣ ವಿಶೇಷದಿಂದ ಕೂಡ ಹುಟ್ಟಿಲ್ಲ. ಭಗವಂತ ತ್ರೈಗುಣ್ಯವರ್ಜಿತ. ಇದರಿಂದ ಆತ ಎಂದೂ ಬದಲಾವಣೆಗೆ, ವಿಕಾರಕ್ಕೆ ಒಳಪಡುವುದಿಲ್ಲ. ಭಗವಂತ ಎಲ್ಲ ಜೀವರೊಳಗೆ ಬಿಂಬರೂಪನಾಗಿದ್ದರೂ ಕೂಡ ಆತನಿಗೆ ದೇಹದ ಬದ್ಧತೆ ಇಲ್ಲ. ಆತ ಎಲ್ಲವನ್ನು ನಮ್ಮಿಂದ ಮಾಡಿಸುತ್ತಾನೆ ಆದರೆ ಏನನ್ನೂ ಅಂಟಿಸಿಕೊಳ್ಳುವುದಿಲ್ಲ. ಆತ ನಿರ್ಲಿಪ್ತನಾಗಿ ಎಲ್ಲವನ್ನೂ ಮಾಡುತ್ತಾನೆ ಆದರೆ ಯಾವುದರ ಲೇಪವೂ ಆತನಿಗಿಲ್ಲ. ಇದು ಯಾವ ರೀತಿ ಎಂದು ಅರ್ಥ ಮಾಡಿಕೊಳ್ಳುವುದಕ್ಕೆ- ಕೃಷ್ಣ ಒಂದು ಉದಾಹರಣೆಯನ್ನು ಕೊಟ್ಟು ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.         

ಯಥಾ ಸರ್ವಗತಂ ಸೌಕ್ಷ್ಮ್ಯಾದಾಕಾಶಂ ನೋಪಲಿಪ್ಯತೇ      
ಸರ್ವತ್ರಾವಸ್ಥಿತೋ ದೇಹೇ ತಥಾSSತ್ಮಾ ನೋಪಲಿಪ್ಯತೇ                 ೩೨

ಯಥಾ ಸರ್ವಗತಮ್  ಸೌಕ್ಷ್ಮ್ಯಾತ್ ಆಕಾಶಮ್ ನ ಉಪಲಿಪ್ಯತೇ       
ಸರ್ವತ್ರವಸ್ಥಿತಃ  ದೇಹೇ ತಥಾತ್ಮಾ ನ ಉಪಲಿಪ್ಯತೇ –ಆಕಾಶ ಎಲ್ಲೆಡೆ ತುಂಬಿದ್ದರೂ ಏತಕ್ಕೂ ತಡೆಯಾಗದಷ್ಟು  ನವುರಾದ್ದರಿಂದ ಏತರಿಂದಲೂ ಅಂಟಿಸಿಕೊಳ್ಳುವುದಿಲ್ಲ ಹೇಗೆ ಹಾಗೆ- ಪರಮಾತ್ಮ ಕೂಡ ಎಲ್ಲ ದೇಹಗಳಲ್ಲಿ ತುಂಬಿದ್ದರೂ ಅಂಟಿಕೊಳ್ಳುವುದಿಲ್ಲ.

ಎಲ್ಲ ಕಡೆ ಆಕಾಶವಿದೆ. ಅದಿಲ್ಲದ ಸ್ಥಳವಿಲ್ಲ. ಇಂಥಹ ಆಕಾಶ ಎಲ್ಲೆಡೆ ಇದ್ದೂ ಹೇಗೆ ಏನನ್ನೂ ಅಂಟಿಸಿಕೊಳ್ಳದೆ ಇರುತ್ತದೋ- ಹಾಗೆ ಭಗವಂತ ಎಲ್ಲ ದೇಹದಲ್ಲಿದ್ದರೂ ಏನನ್ನೂ ಅಂಟಿಸಿಕೊಳ್ಳದೆ ನಿರ್ಲಿಪ್ತನಾಗಿದ್ದಾನೆ.
 
ಯಥಾ ಪ್ರಕಾಶಯತ್ಯೇಕಃ ಕೃತ್ಸ್ನಂ ಲೋಕಮಿಮಂ ರವಿಃ      
ಕ್ಷೇತ್ರಂ ಕ್ಷೇತ್ರೀ ತಥಾ ಕೃತ್ಸ್ನಂ ಪ್ರಕಾಶಯತಿ ಭಾರತ                                   ೩೩

ಯಥಾ ಪ್ರಕಾಶಯತಿ ಏಕಃ ಕೃತ್ಸ್ನಮ್  ಲೋಕಮ್ ಇಮಮ್ ರವಿಃ    
ಕ್ಷೇತ್ರಮ್  ಕ್ಷೇತ್ರೀ ತಥಾ ಕೃತ್ಸ್ನಮ್  ಪ್ರಕಾಶಯತಿ ಭಾರತ –ಭಾರತ, ಒಬ್ಬ ಸೂರ್ಯ ಇಡಿಯ ಈ ಭೂಮಿಯನ್ನು ಬೆಳಗುವಂತೆ ‘ಕ್ಷೇತ್ರಜ್ಞ’ನಾದ ಭಗವಂತನೊಬ್ಬನೆ ಇಡಿಯ ವಿಶ್ವವೆಂಬ ‘ಕ್ಷೇತ್ರ’ ವನ್ನು ಬೆಳಗುತ್ತಾನೆ.

ಏಕ ಸೂರ್ಯ ಹೇಗೆ ಇಡೀ ವಿಶ್ವವನ್ನು ಬೆಳಗಿಸುತ್ತಾನೋ ಹಾಗೆ, ಇಡೀ ಕ್ಷೇತ್ರವನ್ನು ಕ್ಷೇತ್ರಜ್ಞನಾದ ಭಗವಂತ ಬೆಳಗಿಸುತ್ತಾನೆ. ನಾವು ಮೊದಲು ಭಗವಂತನ ಬೆಳಕನ್ನು(ಜ್ಞಾನವನ್ನು) ತಿಳಿಯಬೇಕು. ಆಗ ನಮ್ಮೊಳಗಿನ ಬೆಳಕು ನಮಗೆ ಅರ್ಥವಾಗುತ್ತದೆ.  

ಕ್ಷೇತ್ರಕ್ಷೇತ್ರಜ್ಞಯೋರೇವಮಂತರಂ ಜ್ಞಾನಚಕ್ಷುಷಾ
ಭೂತಪ್ರಕೃತಿಮೋಕ್ಷಂ ಚ ಯೇ ವಿದುರ್ಯಾಂತಿ ತೇ ಪರಮ್              ೩೪

ಕ್ಷೇತ್ರ ಕ್ಷೇತ್ರಜ್ಞಯೋಃ ಏವಮ್ ಅಂತರಮ್  ಜ್ಞಾನೊ ಚಕ್ಷುಷಾ
ಭೂತ ಪ್ರಕೃತಿ ಮೋಕ್ಷಮ್  ಚ ಯೇ ವಿದುಃ ಯಾಂತಿ ತೇ ಪರಮ್ – ಕ್ಷೇತ್ರ-ಕ್ಷೇತ್ರಜ್ಞರೊಳಗಣ ಈ ಅಂತರವನ್ನು, ಪಂಚಭೂತಗಳಿಂದ  ಮತ್ತು ಪ್ರಕೃತಿಯಿಂದ [ಜೀವರಿಗೆ ಚೇತನ ಪ್ರಕೃತಿಯಿಂದ] ಬಿಡುಗಡೆಗೆ ಕಾರಣವಾದ ತಿಳಿವಿನ ದಾರಿಯನ್ನು ತುಳಿದವರು ಪರಮಾತ್ಮನನ್ನು ಪಡೆಯುತ್ತಾರೆ.

ಈ ಶ್ಲೋಕ ಈ ಅಧ್ಯಾಯದ ಉಪಸಂಹಾರ. ಕ್ಷೇತ್ರ ಅಂದರೇನು, ಕ್ಷೇತ್ರಜ್ಞ ಅಂದರೇನು, ಕ್ಷೇತ್ರ ಮತ್ತು ಕ್ಷೇತ್ರಜ್ಞರ ನಡುವಿನ ವೆತ್ಯಾಸವೇನು; ಜೀವಜಾತ ಜಡದಿಂದ ಬಿಡುಗಡೆ ಹೊಂದಲು ಇರಬೇಕಾದ ಮೋಕ್ಷ ಸಾಧಕ ಗುಣಗಳು-ಇವೆಲ್ಲವನ್ನು ಅರಿತು ಆಚರಣೆಗೆ ತಂದು ಬದುಕುವವರು ಸರ್ವಶ್ರೇಷ್ಠನಾದ ಭಗವಂತನನ್ನು ಸೇರುತ್ತಾರೆ.

ಇತಿ ತ್ರಯೋದಶೋSಧ್ಯಾಯಃ

ಹದಿಮೂರನೆಯ ಅಧ್ಯಾಯ ಮುಗಿಯಿತು
*******