Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Monday, July 25, 2011

Bhagavad Gita Kannada Chapter-09 Shloka 7-9


ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ  ಮಾಮಿಕಾಮ್
ಕಲ್ಪಕ್ಷಯೇ ಪುನಸ್ತಾನಿ ಕಲ್ಪಾದೌ ವಿಸೃಜಾಮ್ಯಹಮ್

ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ  ಮಾಮಿಕಾಮ್
ಕಲ್ಪಕ್ಷಯೇ ಪುನಃ ತಾನಿ ಕಲ್ಪದೌ ವಿಸೃಜಾಮಿ ಅಹಮ್ –ಸೃಷ್ಟಿಯ ಕೊನೆಯಲ್ಲಿ ಎಲ್ಲ ವಸ್ತುಗಳೂ ನನ್ನದೇ ಆದ ಮೂಲ ಪ್ರಕೃತಿಯನ್ನು ಸೇರುತ್ತವೆ. ಸೃಷ್ಟಿಯ ಮೊದಲಲ್ಲಿ ಮರಳಿ ಅವನ್ನುನಾನು ನಿರ್ಮಿಸುತ್ತೇನೆ.

ಸೃಷ್ಟಿಯಾಗಿ 31,104 ಸಾವಿರ ಕೋಟಿ ವರ್ಷಗಳ ನಂತರ ಮಹಾಪ್ರಳಯ. ಇದು ಚತುರ್ಮುಖ ಬ್ರಹ್ಮನ ನೂರು ವರ್ಷ. ಇದನ್ನು ಕಲ್ಪಕ್ಷಯ ಎನ್ನುತ್ತಾರೆ. ಈ ಮಹಪ್ರಳಯದಲ್ಲಿ ಸತ್ಯಲೋಕದಿಂದ ಹಿಡಿದು ಪ್ರತಿಯೊಂದೂ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಸೂಕ್ಷ್ಮ ರೂಪದಲ್ಲಿ ಭಗವಂತನ ಅಧೀನವಾದ ಪ್ರಕೃತಿಯನ್ನು ಸೇರುತ್ತವೆ. ಎಲ್ಲಾ ಜೀವ ಜಾತಗಳೂ ಕೂಡಾ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಭಗವಂತನ ಉದರವನ್ನು ಸೇರುತ್ತದೆ. ಮತ್ತೆ 31,104 ಸಾವಿರ ಕೋಟಿ ವರ್ಷ ಪ್ರಳಯಕಾಲ. ನಂತರ ಮರಳಿ ಈ ಸೃಷ್ಟಿ ನಿರ್ಮಾಣವಾಗುತ್ತವೆ. ಅಂದರೆ ಮರಳಿ ಸೂಕ್ಷ್ಮರೂಪದಿಂದ ಸ್ಥೂಲರೂಪವನ್ನು ಪಡೆಯುತ್ತವೆ.     

ಪ್ರಕೃತಿಂ ಸ್ವಾಮವಷ್ಟಭ್ಯ ವಿಸೃಜಾಮಿ ಪುನಃ ಪುನಃ
ಭೂತಗ್ರಾಮಮಿಮಂ ಕೃತ್ಸ್ನಮವಶಂ ಪ್ರಕೃತೇರ್ವಶಾತ್     

ಪ್ರಕೃತಿಮ್  ಸ್ವಾಮ್ ಅವಷ್ಟಭ್ಯ ವಿಸೃಜಾಮಿ ಪುನಃ ಪುನಃ
ಭೂತ ಗ್ರಾಮಮ್ ಇಮಿಮಮ್  ಕೃತ್ಸ್ನಮ್ ಅವಶಮ್  ಪ್ರಕೃತೇಃ ವಶಾತ್ – ಪ್ರಕೃತಿಯ ನಿಯತಿಗೊಳಪಟ್ಟು ಪರತಂತ್ರವಾದ [ನನ್ನಂಕೆಯಲ್ಲಿರುವ] ಈ ಇಡಿಯ ವಿಶ್ವವನ್ನು ನನ್ನದೆ ಆದ ಪ್ರಕೃತಿಯನ್ನು ಬಳಸಿ ಮತ್ತೆ ಮತ್ತೆ ನಿರ್ಮಿಸುತ್ತೇನೆ.

ಪ್ರಳಯ ಕಾಲದಲ್ಲಿ ಸೂಕ್ಷ್ಮರೂಪದಲ್ಲಿ ಭಗವಂತನನ್ನು ಸೇರಿದ ಜಡ ಮತ್ತು ಜೀವವನ್ನು ಭಗವಂತ ತನ್ನ ಅಧೀನವಾದ ಪ್ರಕೃತಿಯನ್ನು ಬಳಸಿ ಮತ್ತೆ ಸೃಷ್ಟಿ ಮಾಡುತ್ತಾನೆ. ಭಗವಂತನ ಈ ಸೃಷ್ಟಿ ಮತ್ತು ಸಂಹಾರಚಕ್ರ ನಿರಂತರ.  ಇಂತಹ ಅನಂತ ಬ್ರಹ್ಮಾಂಡಗಳು ಹಿಂದೆ ನಿರ್ಮಾಣವಾಗಿ ಸಂಹಾರವಾಗಿವೆ ಮತ್ತು ಇನ್ನೂ ಅನಂತ ಕಾಲದಲ್ಲೂ ಇದು ಮುಂದುವರಿಯುತ್ತದೆ. ಈ ಕಾರಣಕ್ಕಾಗಿ ಭಗವಂತನನ್ನು ಅನಂತ ಕೋಟಿ ಬ್ರಹ್ಮಾಂಡನಾಯಕ ಎಂದು ಕರೆಯುತ್ತಾರೆ.(ಈ ಬಗ್ಗೆ ವಿವರವಾಗಿ ನಾವು ಏಳನೇ ಅಧ್ಯಾಯದಲ್ಲೇ ಚರ್ಚಿಸಿದ್ದೇವೆ).

ಹೀಗೆ ನಿರಂತರ ಸೃಷ್ಟಿ-ಸಂಹಾರ ಮಾಡುವ ಭಗವಂತನಿಗೆ ಕರ್ಮ ಅಂಟುವುದಿಲ್ಲವೇ? ಮುಂದಿನ ಶ್ಲೋಕಗಳಲ್ಲಿ ನೋಡೋಣ:
ನಚ ಮಾಂ ತಾನಿ ಕರ್ಮಾಣಿ ನಿಬಧ್ನನ್ತಿ ಧನಂಜಯ
ಉದಾಸೀನವದಾಸೀನಮಸಕ್ತಂ ತೇಷು ಕರ್ಮಸು

ನಚ ಮಾಮ್  ತಾನಿ ಕರ್ಮಾಣಿ ನಿಬಧ್ನನ್ತಿ ಧನಂಜಯ
ಉದಾಸೀನವತ್ ಆಸೀನಮ್ ಅಸಕ್ತಮ್  ತೇಷು ಕರ್ಮಸು –ಧನಂಜಯ, ನಾನು ಮಾಡಿಯೂ ಮಾಡದವನಂತೆ ಇದ್ದುಬಿಡುತ್ತೇನೆ. ಆ ಕರ್ಮಗಳಲ್ಲಿ ನನಗೆ ನಂಟಿಲ್ಲ. ಅದರಿಂದ ಆ ಕರ್ಮಗಳು ನನ್ನನ್ನು ಕಟ್ಟಿ ಹಾಕಲಾರವು.

ಭಗವಂತ ನಿರ್ಲಿಪ್ತ, ಆತ ಕರ್ಮ ಮಾಡುವುದು ಆತನಿಗೊಸ್ಕರ ಅಲ್ಲ. ಸ್ವತಂತ್ರನಾದ ಭಗವಂತನನ್ನು ಎಂದೂ ಯಾವ ಕರ್ಮವೂ ಕಟ್ಟಿ ಹಾಕಲಾರವು.(ಒಂದು ವೇಳೆ ಹಾಗೆ ಕಟ್ಟಿ ಹಾಕುವುದಾದರೆ ಭಗವಂತ ಸ್ವತಂತ್ರ ಎನಿಸುವುದಿಲ್ಲ!). “ನಾನು ನನಗೋಸ್ಕರ ಏನೂ ಮಾಡುವುದಿಲ್ಲ ಮತ್ತು ಕರ್ಮ ನನಗೆ ಅಂಟುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳುತ್ತಾನೆ ಕೃಷ್ಣ.
ಈ ಶ್ಲೋಕದಲ್ಲಿ ಧನಂಜಯ ಎನ್ನುವ ವಿಶೇಷಣ ಬಳಕೆಯಾಗಿದೆ. ವ್ಯವಹಾರಿಕವಾಗಿ ಈ ನಾಮವನ್ನು ನೋಡಿದರೆ ‘ಜನರಿಂದ ಹಣವನ್ನು ದೋಚಿ ದುಷ್ಟ ರಾಜ್ಯಭಾರ ಮಾಡುವ ಶತ್ರು ರಾಜರನ್ನು ಸೋಲಿಸಿ, ಆ ಸಂಪತ್ತನ್ನು ಜಯಿಸಿ, ಅದನ್ನು ಪ್ರಜೆಗಳಿಗಾಗಿ ಸದುಪಯೋಗ ಮಾಡುವವ ಧನಂಜಯ’.  [ತನ್ನ ಸ್ವಾರ್ಥಕ್ಕಾಗಿ ಇನ್ನೊಬ್ಬರ ಮೇಲೆ ದಾಳಿಮಾಡಿ ಹಣ ಗಳಿಸುವವ ‘ದರೋಡೆಕೋರ’ ಎನಿಸುತ್ತಾನೆ ಹೊರತು ಧನಂಜಯ ಎನಿಸುವುದಿಲ್ಲ. ಮಹಾಭಾರತದಲ್ಲಿ ಏಕಲವ್ಯ ಈ ಎರಡನೇ ಗುಂಪಿಗೆ ಸೇರಿದವನಾಗಿದ್ದ. ಆದ್ದರಿಂದ ಆತನ ಬೆರಳನ್ನು ಕತ್ತರಿಸಲಾಯಿತು ಮತ್ತು ಕೃಷ್ಣ ಸ್ವತಃ ಆತನನ್ನು ಸಂಹಾರ ಮಾಡಿದ್ದ.] ಆಧ್ಯಾತ್ಮಿಕವಾಗಿ ನಿಜವಾದ ಧನ ಎಂದರೆ ಭಗವಂತ. ಅಂತಹ ಭಗವಂತನ ಜ್ಞಾನವನ್ನು ಪಡೆದವ ಧನಂಜಯ. ನಾವೆಲ್ಲರೂ ಅರ್ಜುನನಂತೆ ಭಗವಂತನ ಜ್ಞಾನವನ್ನು ಪಡೆದು  ಧನಂಜಯರಾದಾಗ ಮಾತ್ರ  ಮೋಕ್ಷವನ್ನು ಪಡೆಯಲು ಸಾಧ್ಯ.

Sunday, July 24, 2011

Bhagavad Geeta In Kannada Chapter-9 Shloka 4-6


ಮಯಾ ತತಮಿದಂ ಸರ್ವಂ ಜಗದವ್ಯಕ್ತಮೂರ್ತಿನಾ
ತ್ ಸ್ಥಾನಿ ಸರ್ವಭೂತಾನಿ ನಚಾಹಂ ತೇಷ್ವವಸ್ಥಿತಃ    

ಮಯಾ ತತಮಿದಂ ಸರ್ವಂ ಜಗದವ್ಯಕ್ತಮೂರ್ತಿನಾ
ತ್ ಸ್ಥಾನಿ ಸರ್ವಭೂತಾನಿ ನಚಾಹಂ ತೇಷ್ವವಸ್ಥಿತಃ –ಈ ಎಲ್ಲ ಜಗತ್ತು ಮೈದೋರದ ನನ್ನಿಂದ ತುಂಬಿದೆ.ಇಲ್ಲಿ ಇರುವವೆಲ್ಲ ನನ್ನಲ್ಲಿ ನೆಲೆಸಿವೆ. ನಾನು ಅವುಗಳ ನೆರವಿನಲ್ಲಿಲ್ಲ.

ಕೃಷ್ಣ ಹೇಳುತ್ತಾನೆ “ನಾನು ಇಡೀ ಜಗತ್ತಿನಲ್ಲಿ ತುಂಬಿರುವ ಅವ್ಯಕ್ತಮೂರ್ತಿ” ಎಂದು. ಇಲ್ಲಿ ಬಳಸಿರುವ ಅವ್ಯಕ್ತಮೂರ್ತಿ ಎನ್ನುವ ಪದದಲ್ಲಿ ಅವ್ಯಕ್ತ ಮತ್ತು ಮೂರ್ತಿ ಎನ್ನುವುದು ಪರಸ್ಪರ ವಿರುದ್ಧ ಪದಗಳು. ಅವ್ಯಕ್ತ ಎಂದರೆ ಕಾಣದ್ದು, ಆಕಾರವಿಲ್ಲದ್ದು. ಮೂರ್ತಿ ಎಂದರೆ ಆಕೃತಿ ಮತ್ತು ರೂಪ. ಭಗವಂತ ಆಕಾಶದಂತೆ ಎಲ್ಲೆಡೆ ವ್ಯಾಪಿಸಿರುವ ಅವ್ಯಕ್ತ  ಆದರೆ ಆತ ಜ್ಞಾನಾನಂದಮಯನಾಗಿ ಎಲ್ಲರೊಳಗೆ ತುಂಬಿರುವ ಮೂರ್ತಿ. ಒಂದೊಂದು ವಸ್ತುವಿನಲ್ಲೂ ಒಂದೊಂದು ರೂಪದಲ್ಲಿ ತುಂಬಿರುವ ಅನಂತ ರೂಪಗಳುಳ್ಳವ ಆ ಭಗವಂತ. ಕೃಷ್ಣ ಹೇಳುತ್ತಾನೆ “ಪ್ರತಿಯೊಂದು ವಸ್ತುವಿಗೂ  ನಾನು ಆಧಾರ, ಈ ಇಡೀ ಪ್ರಪಂಚ ನನ್ನನ್ನು ಅವಲಂಬಿಸಿಕೊಂಡಿದೆ. ಆದರೆ ನಾನು ನಿರಾಲಂಬನಾಗಿ ಎಲ್ಲೆಡೆ ತುಂಬಿದ್ದೇನೆ”. ಎಂದು.

ನಚ ಮತ್ ಸ್ಥಾನಿ ಭೂತಾನಿ ಪಶ್ಯ ಮೇ ಯೋಗಮೈಶ್ವರಮ್
ಭೂತಭೃನ್ನ ಚ ಭೂತಸ್ಥೋ ಮಮಾSತ್ಮಾ ಭೂತಭಾವನಃ    

ಚ ಮತ್ ಸ್ಥಾನಿ ಭೂತಾನಿ ಪಶ್ಯ ಮೇ ಯೋಗಮ್ ಈಶ್ವರಮ್
ಭೂತಭೃತ್ ನಚ ಭೂತಸ್ಥಃ  ಮಮ ತ್ಮಾ ಭೂತಭಾವನಃ – ನನ್ನಲ್ಲಿ ಎಲ್ಲ ಉಂಟು; ನನಗಿಲ್ಲ ಯಾವುದರ ಅಂಟು. ನೋಡು-ಮಿಗಿಲಾದ ನನ್ನ ಮಹಿಮೆಯನ್ನು. ನನ್ನ ರೂಪ ಇವುಗಳಿಗೆ ರೂಪು ಕೊಟ್ಟಿದೆ. ಹೊತ್ತು ಸಲಹಿದೆ. ಆದರೂ ಇವುಗಳಲ್ಲಿಲ್ಲ.

ಹಿಂದಿನ ಮತ್ತು ಈ ಶ್ಲೋಕದಲ್ಲಿ ಕೃಷ್ಣ ಹೇಳುವ ವಿಚಾರವನ್ನು ನಾವು ಗಮನವಿಟ್ಟು ನೋಡಬೇಕು. ಮೇಲ್ನೋಟಕ್ಕೆ ಇವು ಒಂದೊಕ್ಕೊಂದು ವಿರುದ್ಧವಾಗಿರುವ ಒಗಟಿನ ಹೇಳಿಕೆಯಂತೆ ಕಾಣುತ್ತದೆ. ಕೃಷ್ಣ ಹೇಳುವ ಮಾತು ಹೀಗಿದೆ "ನನ್ನ ಸಾಮರ್ಥ್ಯವನ್ನು ತಿಳಿ, ನಾನು ಎಲ್ಲವುದರಲ್ಲೂ ಇದ್ದೇನೆ-ಆದರೆ ಯಾವುದರಲ್ಲೂ ಇಲ್ಲ. ಎಲ್ಲವೂ ನನ್ನಲ್ಲಿದೆ ಆದರೆ ಯಾವುದೂ ನನ್ನಲ್ಲಿಲ್ಲ” ಇದು ಭಗವಂತನ ಅಚಿಂತ್ಯ  ಶಕ್ತಿಯ ಅನುಸಂಧಾನ. ಭಾಗವತದಲ್ಲಿ ಹೇಳುವಂತೆ ‘ನಾವು ಯಾವುದನ್ನು ಪ್ರಪಂಚದಲ್ಲಿ ವಿರೋಧಾತ್ಮಕ(Contradictory) ಎನ್ನುತ್ತೇವೋ ಅವು ಶುಭ ಧರ್ಮವಾದಲ್ಲಿ ಭಗವಂತನಲ್ಲಿ ಅನ್ವಯವಾಗುತ್ತವೆ’. ಈ ವಿರುದ್ಧವಾದ ಧರ್ಮವನ್ನು ಹೇಳುವುದರ ಮೂಲಕ ಇಲ್ಲಿ ಭಗವಂತ ಏನನ್ನು ತಿಳಿಸುತ್ತಿದ್ದಾನೆ ಅಂದರೆ “ ಎಲ್ಲವೂ ನನ್ನಲ್ಲಿದೆ ಆದರೆ ಯಾವ ಮಮಕಾರ(Attachment)ನನಗಿಲ್ಲ”. ಅಂದರೆ ಇದು ಭಗವಂತನ ನಿರ್ಲಿಪ್ತತೆಯನ್ನು ಸೂಚಿಸುತ್ತದೆ. ಆತ ಯಾವುದನ್ನೂ ಅಂಟಿಸಿಕೊಳ್ಳುವುದಿಲ್ಲ. ಆತ ಯಾವುದನ್ನೂ ಆಶ್ರಯಿಸಿಕೊಂಡಿಲ್ಲ ಮತ್ತು ಯಾವುದರ ಲೇಪವೂ ಆತನಿಗಿಲ್ಲ. ಕೃಷ್ಣ ಹೇಳುತ್ತಾನೆ “ಇದು ನನ್ನ ಈಶ್ವರೀಯ ಶಕ್ತಿ” ಎಂದು. ಇದು ಭಗವಂತನ ಸರ್ವಸಮರ್ಥತೆ.
ಈ ವಿಚಾರವನ್ನು ಕೃಷ್ಣ ಇನ್ನೊಮ್ಮೆ ಸಂಕ್ಷಿಪ್ತ(Crisp)ವಾಗಿಭೂತಭೃತ್ ನಚ ಭೂತಸ್ಥಃ” ಎಂದು ವಿವರಿಸುತ್ತಾನೆ. ಇಲ್ಲಿ ‘ನಚ’ ಅನ್ನುವ ಪದ ಹೊಸ್ತಿಲಲ್ಲಿ ಇಟ್ಟ ದೀಪದಂತೆ ಎರಡು ಪದಗಳ ನಡುವೆ ಬಳಕೆಯಾಗಿದೆ. ಇದರರ್ಥ ಹೀಗೆ: “ನಾನು ಭೂತಭೃತ್-ಎಲ್ಲಾ ಜೀವಜಾತಗಳನ್ನು ಧರಿಸಿದ್ದೇನೆ ಮತ್ತು  ನಚಭೂತಭೃತ್-ಏನನ್ನೂ ಧರಿಸಿಲ್ಲ; ನಾನು ಭೂತಸ್ಥ-ಎಲ್ಲ ಜೀವಜಾತಗಳು ನನ್ನಲ್ಲಿವೆ ಮತ್ತು ನಾನು ನಚಭೂತಸ್ಥ-ಯಾವುದರಲ್ಲೂ ನಾನಿಲ್ಲ”.
ಕೃಷ್ಣ ಹೇಳುತ್ತಾನೆ “ಮಮ ತ್ಮಾ ಭೂತಭಾವನಃ” ಎಂದು.  ಅಂದರೆ ಈ ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ-ನಿಯಮನ-ಜ್ಞಾನ-ಅಜ್ಞಾನ-ಬಂಧ-ಮೋಕ್ಷ ಎಲ್ಲವೂ ಭಗವಂತನಿಂದ. ಇಲ್ಲಿ ಕೃಷ್ಣ ‘ಮಮ ಆತ್ಮ’ ಎಂದಿದ್ದಾನೆ. ಭಗವಂತ ಜ್ಞಾನಾನಂದ ಸ್ವರೂಪ. ಭಗವಂತ ಬೇರೆ ಆತನ ದೇಹ ಬೇರೆ ಅಲ್ಲ. ಭಗವಂತನ ಗುಣ ಕ್ರಿಯೆಗಳು ಬೇರೆ ಅಲ್ಲ. ಅವೆಲ್ಲವೂ ಅಖಂಡ. ಇದನ್ನು ಪಾಂಚಬೌತಿಕ ಮತ್ತು ತ್ರೈಗುಣ್ಯದ ಪರಿದಿಯಲ್ಲಿ ನಾವು ಕಲ್ಪಿಸಲು ಸಾಧ್ಯವಿಲ್ಲ.

ಭಗವಂತ ಹೇಗೆ ಎಲ್ಲಾ ಕಡೆ ತುಂಬಿದ್ದಾನೆ ಎನ್ನುವುದನ್ನು ಕೃಷ್ಣ ಒಂದು ದೃಷ್ಟಾಂತದ ಮೂಲಕ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.

ಯಥಾSSಕಾಶಸ್ಥಿತೋ ನಿತ್ಯಂ ವಾಯುಃ ಸರ್ವತ್ರಗೋ ಮಹಾನ್
ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನೀತ್ಯುಪಧಾರಯ      

ಯಥಾ ಕಾಶಸ್ಥಿತಃ ನಿತ್ಯಮ್  ವಾಯುಃ ಸರ್ವತ್ರ ಗಃ  ಮಹಾನ್
ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನಿ ಇತಿ ಉಪಧಾರಯ –ಎಲ್ಲೆಡೆ ಹಿಗ್ಗಿ ತುಂಬಿರುವ ಗಾಳಿ ಎಂದೆಂದೂ ಆಗಸದಲ್ಲಿರುವಂತೆ ಜಗದ ಎಲ್ಲ ಇರುವಿಕೆಗಳೂ ನನ್ನಲ್ಲಿವೆ. ಎಂದು ಮನಗಾಣು.

ಗಾಳಿ ಎಲ್ಲಾ ಕಡೆ ಇದೆ. ಅದು ಒಳಗೂ ಇದೆ, ಹೊರಗೂ ಇದೆ. ಗಾಳಿ ನಮಗೆ ಕಾಣುವುದಿಲ್ಲ. ಗಾಳಿ ಈ ಆಕಾಶದಲ್ಲಿ ತುಂಬಿದೆ. ಹೀಗೆ ಭಗವಂತ ನಮ್ಮ ಒಳಗೂ ಹೊರಗೂ ತುಂಬಿ ನಿಂತಿದ್ದಾನೆ. ಆದರೆ ಯಾವುದರ ಲೇಪವೂ ಆತನಿಗಿಲ್ಲ. ಈ ಜಗತ್ತಿನ ಸರ್ವ ಇರುವಿಕೆಯೂ ಭಗವಂತನಲ್ಲಿದೆ.

Bhagavad Gita Kannada Chapter-9 Shloka 2-3


ರಾಜವಿದ್ಯಾ ರಾಜಗುಹ್ಯಂ ಪವಿತ್ರಮಿದಮುತ್ತಮಮ್           
ಪ್ರತ್ಯಕ್ಷಾವಗಮಂ ಧರ್ಮ್ಯಂ ಸುಸುಖಂ ಕರ್ತುಮವ್ಯಯಮ್

ರಾಜವಿದ್ಯಾ ರಾಜಗುಹ್ಯಮ್ ಪವಿತ್ರಮ್ ಇದಮ್  ಉತ್ತಮಮ್         
ಪ್ರತ್ಯಕ್ಷವಗಮಮ್  ಧರ್ಮ್ಯಮ್  ಸು ಸುಖಮ್  ಕರ್ತುಮ್ ಅವ್ಯಯಮ್-ಇದು ಅರಿವುಗಳ ಅರಸ. ಗುಟ್ಟುಗಳ ಗುಟ್ಟು. ಮಿಗಿಲಾದ ಅಪ್ಪಟ. ಕಣ್ಣಲ್ಲಿ ಕೂತವನ ಕಾಣಿಸುವ ದಾರಿ. ಎಲ್ಲ ಹೊತ್ತವನನ್ನು ಕುರಿತದ್ದು. ಆಚರಿಸಲು ಆರಾಮ. ಅಳಿವಿಲ್ಲದ್ದು.

ಕೃಷ್ಣ ತಾನು ಮುಂದೆ ಉಪದೇಶ ಮಾಡಲಿರುವ ಅಧ್ಯಾತ್ಮ ವಿಜ್ಞಾನದ ಬಗ್ಗೆ ಹೇಳುತ್ತಾ ಹೇಳುತ್ತಾನೆ “ಇದು ವಿದ್ಯೆಗಳಲ್ಲೆಲ್ಲಾ ಪ್ರಧಾನ ವಿದ್ಯೆ; ಅತ್ಯಂತ ರಹಸ್ಯವಾದ ಮತ್ತು ಪರಮ ಪವಿತ್ರವಾದ ವಿದ್ಯೆ” ಎಂದು. ಪ್ರತ್ಯಕ್ಷ ಶಬ್ದವಾಚ್ಯನಾದ(ಇಂದ್ರಿಯ ನಿಯಾಮಕಗಿರುವ ) ಭಗವಂತನನ್ನು ಪ್ರತ್ಯಕ್ಷ ತೋರಿಸುವಂತಹ, ಜಗತ್ತಿನ ಧಾರಕ ಶಕ್ತಿಯಾದ ಭಗವಂತನನ್ನು ನೇರ ವಿಷಯೀಕರಿಸುವ ಸಾಕ್ಷಾತ್ ಭಗವದ್ ವಿಷಯಕವಾದ ವಿದ್ಯೆ. ಈ ವಿದ್ಯೆಯನ್ನು ತಿಳಿದು ಭಗವಂತನನ್ನು ಒಲಿಸಿಕೊಳ್ಳುವುದು ಬಹಳ ಸುಲಭ. ಏಕೆಂದರೆ ಭಗವಂತನಿಗೆ ಅತ್ಯಂತ ಪ್ರೀಯವಾದದ್ದು ಜ್ಞಾನ. ಭಗವಂತ ಜ್ಞಾನಕ್ಕೆ ಒಲಿದಷ್ಟು ಸುಲಭವಾಗಿ ಯಾವ ದಾರಿಗೂ ಒಲಿಯುವುದಿಲ್ಲ. “ಇದು ಅಳಿವಿರದ ದಾರಿ”     ಎನ್ನುತ್ತಾನೆ ಕೃಷ್ಣ.  ಆದ್ದರಿಂದ ಜ್ಞಾನದ ದಾರಿ ಎಂದೂ ವ್ಯರ್ಥವಲ್ಲ.

ಅಶ್ರದ್ದಧಾನಾಃ ಪುರುಷಾ ಧರ್ಮಸ್ಯಾಸ್ಯ ಪರಂತಪ 
ಅಪ್ರಾಪ್ಯ ಮಾಂ ನಿವರ್ತಂತೇ ಮೃತ್ಯುಸಂಸಾರವರ್ತ್ಮನಿ     

ಅಶ್ರದ್ದಧಾನಾಃ ಪುರುಷಾಃ ಧರ್ಮಸ್ಯಸ್ಯ ಪರಂತಪ          
ಅಪ್ರಾಪ್ಯ ಮಾಮ್ ನಿವರ್ತಂತೇ ಮೃತ್ಯು ಸಂಸಾರ ವರ್ತ್ಮನಿ-ಅರಿಗಳ ಉರಿಯೆ, ಈ ನಡೆಯ ಬಗೆಗೆ ನಂಬಿಕೆಯಿಡದ ಮಂದಿ ನನ್ನನ್ನು ಪಡೆಯದೆ ಸಾವಿನ ಸುಳಿಯಾದ ಬಾಳ ದಾರಿಯಲ್ಲಿ ಜಾರಿಬೀಳುತ್ತಾರೆ.

ಹಿಂದೆ ಅಸೂಯೆ ಬಗ್ಗೆ ಹೇಳಿದ್ದ ಕೃಷ್ಣ ಇಲ್ಲಿ ಇನ್ನೊಂದು ಅತೀ ಮುಖ್ಯವಾದ  ಗುಣದ ಬಗ್ಗೆ ಹೇಳುತ್ತಾನೆ- ಅದೇ ‘ಶ್ರದ್ಧೆ’.  ಯಾರಿಗೆ ಶ್ರದ್ಧೆ ಇಲ್ಲ ಅವರಿಗೆ ಏನನ್ನು ಹೇಳಿಯೂ ಉಪಯೋಗವಿಲ್ಲ. ನಮಗೆ ಯಾವುದರ ಮೇಲೆ ಶ್ರದ್ಧೆ ಇಲ್ಲವೋ ಅದನ್ನು ನಮ್ಮ ಮನಸ್ಸು ಸ್ವೀಕರಿಸುವುದೇ ಇಲ್ಲ. ಒಂದು ವಿಷಯವನ್ನು ನಾವು ಗ್ರಹಣ ಮಾಡಬೇಕಾದರೆ ನಮಗೆ ಆ ವಿಷಯದಲ್ಲಿ ಶ್ರದ್ಧೆ ಇರಬೇಕು. “ನನಗೆ ಗೊತ್ತಿಲ್ಲದ ವಿಷಯಗಳು ಇರಲು ಸಾಧ್ಯ, ಏಕೆಂದರೆ ನನಗೆ ಗೊತ್ತಿಲ್ಲದೇ ಇರುವ ಬಹಳ ಸಂಗತಿಗಳಿವೆ” –ಎಂದು ತಿಳಿಯುವುದು  ಶ್ರದ್ಧೆಯ ಮೊದಲ ಮೆಟ್ಟಿಲು. (I must know that I do not know). ನಮ್ಮ ಅಜ್ಞಾನದ ಅರಿವು ನಮಗಿರಬೇಕು. ಆಗ ಗೊತ್ತಿಲ್ಲದ್ದನ್ನು ಗೊತ್ತು ಮಾಡಿಕೊಳ್ಳುವ ಶ್ರದ್ಧೆ ಬರುತ್ತದೆ. ಮೊದಲು ಗೊತ್ತಿಲ್ಲ ಅನ್ನುವುದರ ಬಗ್ಗೆ ನಮಗೆ ಗೊತ್ತಿರಬೇಕು; ಆಮೇಲೆ ನಮಗೆ ಗೊತ್ತಿಲ್ಲದೆ ಇರುವ ಇರುವ ವಿಷಯ ಸತ್ಯವಾಗಿರುವ ಸಾಧ್ಯತೆ ಇದೆ ಎನ್ನುವ ಸಾಧ್ಯತೆಯ ಅರಿವು ಬೇಕು; ಅದನ್ನು ತಿಳಿಯುವ ಶ್ರದ್ಧೆ ಬೇಕು. ಹೀಗೆ ತಿಳಿಯುತ್ತಾ ಗೊತ್ತಿಲ್ಲದ ವಸ್ತು ಇದೆ ಎನ್ನುವ ಸತ್ಯ ತಿಳಿಯುತ್ತದೆ.
ಜ್ಞಾನದ ದಾರಿಯಲ್ಲಿ ಸಾಗುವ ಸಾಧಕನಿಗೆ ಮೂಲಭೂತವಾಗಿ ನಂಬಿಕೆ ಬೇಕು. ನಂಬದವನ ಮುಂದೆ ಏನು ಹೇಳಿಯೂ ಪ್ರಯೋಜನವಿಲ್ಲ. ಇದನ್ನೇ ಇಲ್ಲಿ ಕೃಷ್ಣ ಹೇಳುತ್ತಾನೆ “ಯಾರಿಗೆ ಶ್ರದ್ಧೆ ಇಲ್ಲವೋ ಅಂತವರ ಪಾಲಿಗೆ ಸತ್ಯ ಇಲ್ಲ” ಎಂದು. ಜಗತ್ತಿನ ಧಾರಕನಾದ ಭಗವಂತನ ಬಗೆಗೆ ನಂಬಿಕೆ ಇಲ್ಲದವರು ಭಗವಂತನನ್ನು  ಸೇರುವುದಿಲ್ಲ. “ಅಂತವರು ಆತ್ಮ ನಾಶವಾದ ತಮಸ್ಸನ್ನು ಸೇರುತ್ತಾರೆ ಅಥವಾ ಸಂಸಾರದ ಸುಳಿಯಲ್ಲಿ ಸುತ್ತುತ್ತಿರುತ್ತಾರೆ” ಎನ್ನುತ್ತಾನೆ ಕೃಷ್ಣ.
ಈ ಶ್ಲೋಕದಲ್ಲಿ ಪರಂತಪ ಎನ್ನುವ ವಿಶೇಷಣವನ್ನು ಬಳಸಲಾಗಿದೆ. ಇದರ ಮೇಲ್ನೋಟದ ಅರ್ಥ ಶತ್ರುಗಳನ್ನು ಸುಡುವ ಶೂರ ಎಂದು. ನಮ್ಮ ಜೀವನ ಯುದ್ಧದಲ್ಲಿ ನಮ್ಮ ಶತ್ರುಗಳೆಂದರೆ ನಮ್ಮೊಳಗೆ ಇರುವ ಅಜ್ಞಾನ, ಮೋಹ, ಕಾಮ, ಕ್ರೋಧ, ಇತ್ಯಾದಿಗಳು. ಪ್ರತಿಯೊಬ್ಬ ಸಾಧಕ ಕೂಡಾ ಪರತತ್ವದಲ್ಲಿ ಶ್ರದ್ಧೆಯನ್ನಿಟ್ಟು ಇಂತಹ ಶತ್ರುಗಳನ್ನು ಸುಡುವ ಬೆಂಕಿಯಾಗಬೇಕು, ಸುಟ್ಟು ಬೆಳಗುವ ಪರಂತಪನಾಗಬೇಕು.

ಮುಂದಿನ ಶ್ಲೋಕಗಳಲ್ಲಿ ಕೃಷ್ಣ ತಿಳಿಯಬೇಕಾದ ಜ್ಞಾನದ ಬಗ್ಗೆ ಉಪದೇಶ ಮಾಡುತ್ತಾನೆ.                  

Saturday, July 23, 2011

Bhagavad Geeta Kannada Chapter-09 Shloka-01


ಅಧ್ಯಾಯ ಒಂಭತ್ತು

ಜ್ಞಾನ ಎಂದರೆ ಭಗವಂತನ ಅರಿವು(Spiritual wisdom).  ಎಲ್ಲವನ್ನು ತಿಳಿದ ಭಗವಂತನೆಡೆಗೆ ನಮ್ಮ ಮನಸ್ಸು ಹರಿಯುವುದು ಜ್ಞಾನ. ಭಗವಂತ ಸರ್ವೋತ್ತಮ, ಭಗವಂತ ಸರ್ವಗತ, ಭಗವಂತ ಸರ್ವಜ್ಞ, ಇತ್ಯಾದಿಯಾಗಿ ತಿಳಿಯುವುದು ಜ್ಞಾನ. ಆ ನಂತರ ಅದರ ವಿವರಗಳ ಅರಿವು ವಿಜ್ಞಾನ(ವಿಶಿಷ್ಟವಾದ ಜ್ಞಾನ).  ಭಗವಂತ ಗುಣಪೂರ್ಣ ಎನ್ನುವುದು ಜ್ಞಾನ. ಭಗವಂತ ಜ್ಞಾನಪೂರ್ಣ, ಭಗವಂತ ಆನಂದಪೂರ್ಣ, ಭಗವಂತ ಸೌಂದರ್ಯಪೂರ್ಣ, ಭಗವಂತ ದಯಾಪೂರ್ಣ, ಹೀಗೆ ಒಂದೊಂದು ಗುಣಗಳ ಪೂರ್ಣತೆಯನ್ನು ವಿವರವಾಗಿ ಅನುಸಂಧಾನ ಮಾಡುವುದು ವಿಜ್ಞಾನ(exclusive wisdom of God). ನಾವು ದೇವರನ್ನು ಪೂರ್ಣವಾಗಿ ಅರಿಯಲು ಸಾಧ್ಯವಿಲ್ಲ. ಆದರೆ ಪ್ರತಿಯೊಂದು ಜೀವನಿಗೆ ಅವನವನಿಗೆ ವಿಶಿಷ್ಟವಾದಂತಹ ಅರಿವಿನ ಮಟ್ಟವಿದೆ. ಎಲ್ಲರೂ ಒಂದೇ ರೀತಿ ತಿಳಿದುಕೊಳ್ಳಲು ಬರುವುದಿಲ್ಲ. ಅವರವರ ಮಟ್ಟಕ್ಕೆ ತಕ್ಕಂತೆ ಭಗವಂತನನ್ನು ಅರಿಯುವುದು ವಿಜ್ಞಾನ(individual exclusive wisdom of God ). ಹೀಗೆ ಭಗವಂತ ಸರ್ವೋತ್ತಮ ಎಂದು ತಿಳಿದುಕೊಳ್ಳುವುದು ಜ್ಞಾನವಾದರೆ, ಆ ಸರ್ವೋತ್ತಮ ತತ್ವವನ್ನು ವಿವರವಾಗಿ ಅದರ ಬೇರೆ ಬೇರೆ ಮುಖಗಳಿಂದ ಅವರವರ ಯೋಗ್ಯತೆಗೆ ತಕ್ಕಂತೆ  ಅನುಸಂಧಾನ ಮಾಡುವುದು ವಿಜ್ಞಾನ. ಹೀಗೆ ಅನುಸಂಧಾನ ಮಾಡುವುದರಿಂದ ಭಗವಂತ ಎಲ್ಲವುದಕ್ಕಿಂತ ವಿಲಕ್ಷಣ ಎನ್ನುವ ಸತ್ಯದ ಸಾಕ್ಷಾತ್ಕಾರವಾಗುತ್ತದೆ.
ಕೃಷ್ಣ ಏಳನೇ ಅಧ್ಯಾಯದಲ್ಲಿ ಅರ್ಜುನನಿಗೆ ಹೇಳಿದ್ದ- “ತಿಳಿಯಬೇಕಾದ ನನ್ನ ಹಿರಿಮೆಯನ್ನು ಅದರ ಬಿತ್ತರದ ಜತೆಗೆ ನಿನಗೆ ನಾನು ಪೂರ್ತಿಯಾಗಿ ಹೇಳುತ್ತೇನೆ. ಇದನ್ನು ತಿಳಿದರೆ ಮತ್ತೆ ವಿಷಯದಲ್ಲಿ ಬೇರೆ ತಿಳಿಯುವಂಥದೇನೂ ಉಳಿದಿರುವುದಿಲ್ಲ” ಎಂದು (ಅ-೭ , ಶ್ಲೋ-೨). ಮತ್ತೆ ಇಲ್ಲಿ ಈ ಅಧ್ಯಾಯದಲ್ಲಿ ಪುನಃ ಜ್ಞಾನ ವಿಜ್ಞಾನದ ಬಗ್ಗೆ ವಿವರಿಸುತ್ತಾನೆ!  ಏಕೆ ಹೀಗೆ? ಹಿಂದೆ ಹೇಳಿದ್ದನ್ನು ಕೃಷ್ಣ ಮರೆತು ಪುನಃ ವಿವರಿಸುತ್ತಿದ್ದಾನೋ?! ಅಲ್ಲ, ಅದಕ್ಕೆ ಕಾರಣಗಳಿವೆ. ಒಮ್ಮೆ ಹೇಳಿದ್ದನ್ನು ಮತ್ತೆ ಏಕೆ ಹೇಳುತ್ತಿದ್ದಾನೆ ಎಂದರೆ ‘ಬೇರೆಬೇರೆ ಆಯಾಮದಲ್ಲಿ ಹೇಳುವುದಕ್ಕೊಸ್ಕರ’. ಆದ್ದರಿಂದ ಇಲ್ಲಿ ಹೇಳುವುದು ಹಿಂದೆ ಹೇಳಿದುದರ ವಿವರಣೆ ಮತ್ತು ಸೃಷ್ಟೀಕರಣ. ಸಂಕ್ಷಿಪ್ತವಾಗಿ ಅಲ್ಲಿ ವಿವರಿಸಿದ್ದನ್ನು ಇಲ್ಲಿ ಕೆಲವು ಹೊಸ ಅರ್ಥಗಳಿಂದ ಇನ್ನೊಂದು ರೀತಿಯಲ್ಲಿ ಕೃಷ್ಣ ವಿವರಿಸುತ್ತಾನೆ. ಭಗವಂತನ ತತ್ವ ಚಿಂತನೆಯನ್ನು ಒಂದು ಬಾರಿ ಮಾಡಿದರೆ ನಮ್ಮ ತಲೆಯೊಳಗೆ ಹೋಗುವುದಿಲ್ಲ! ನಿರಂತರ ಚಿಂತನೆ ಮಾಡುತ್ತಾ ಇದ್ದರೆ ಎಲ್ಲೋ ಸ್ವಲ್ಪ ಒಳಗೆ ಹೋಗುತ್ತದೆ! ಕೇಳಿದಾಗ, ಓದಿದಾಗ ಎಲ್ಲವೂ ತಿಳಿಯಿತು ಅನಿಸುತ್ತದೆ. ಆದರೆ ಸ್ವಲ್ಪ ಹೊತ್ತಿನ ನಂತರ ಒಂದೂ ನೆನಪಾಗುವುದಿಲ್ಲ! ಅದಕ್ಕೋಸ್ಕರ ಆವೃತ್ತಿ ಮಾಡುತ್ತಾ ಬೇರೆಬೇರೆ ಆಯಾಮದಲ್ಲಿ ಚಿಂತನೆ ಮಾಡಬೇಕು. ಈ ಅಧ್ಯಾಯದಲ್ಲಿ ಕೃಷ್ಣ ಹಿಂದೆ ಹೇಳಿದ್ದ  ಜ್ಞಾನ-ವಿಜ್ಞಾನವನ್ನು ನಮಗೆ ಅರ್ಥವಾಗುವ ರೀತಿಯಲ್ಲಿ ಬೇರೆ ಬೇರೆ ಮುಖಗಳಿಂದ ಬೇರೆ ಬೇರೆ ಆಯಾಮದಲ್ಲಿ ವಿವರಿಸುತ್ತಾನೆ.
ಒಬ್ಬ ಸೈನಿಕನಾಗಿ ಯುದ್ಧರಂಗದಲ್ಲಿ ನಿಂತಿರುವ ವ್ಯಕ್ತಿಯ ಮಾನಸಿಕ ಸ್ಥಿತಿ ಅಧ್ಯಾತ್ಮ ಚಿಂತನೆಯಲ್ಲಿ ಬಹಳ ಹತ್ತಿರವಾಗಿರುತ್ತದೆ. ಈ ಕಾರಣದಿಂದ ಯುದ್ಧರಂಗದಲ್ಲಿ ಕೃಷ್ಣ ಅಧ್ಯಾತ್ಮವನ್ನು ಬಿಚ್ಚುತ್ತಾನೆ. ಅರ್ಜುನ ಬಹಳ ದೊಡ್ಡ ಜ್ಞಾನಿ. ಸದಾ ಭಗವದ್ ಚಿಂತನೆಯಲ್ಲಿ ಇರತಕ್ಕಂತಹ ದೇವಾಂಶಸಂಭೂತ. ಅದರ ಜೊತೆಗೆ ಆತನನ್ನು ಯುದ್ಧರಂಗದಲ್ಲಿ ನಿಲ್ಲಿಸಿ ಮಾನಸಿಕವಾಗಿ ಹುಟ್ಟು ಸಾವುಗಳ ಈ ಲೀಲೆಯ ಆಚೆಗೆ ಅವನನ್ನು ಕರೆದೊಯ್ದು ಮಾನಸಿಕವಾಗಿ ಅಣಿಗೊಳಿಸಿ ಕೃಷ್ಣ ವೇದಾಂತವನ್ನು ಹೇಳುತ್ತಾನೆ. ಇಂತಹ ಕ್ಷಣದಲ್ಲಿ ಭಗವಂತನ ಬಗೆಗೆ ಹೇಳಿದರೆ ಬಹುಬೇಗ ಹೃದಯ ತುಂಬಿಕೊಳ್ಳುತ್ತದೆ. ನಾವಾದರೂ ಅಷ್ಟೇ, ನಮ್ಮ ದೈನಂದಿನ ಜೀವನದಲ್ಲಿ ಸರಿ-ತಪ್ಪು, ಧರ್ಮಾಧರ್ಮಗಳ ಸಂಘರ್ಷ ನಡೆಯುತ್ತಲೇ ಇರುತ್ತದೆ. ಅಂತಹ ಯುದ್ಧದ ಸಂದರ್ಭದಲ್ಲೇ ನಮಗೆ ಅಧ್ಯಾತ್ಮ ಅರ್ಥವಾಗುವುದು.
    
ಭಗವಾನುವಾಚ
ಇದಂ ತು ತೇ ಗುಹ್ಯತಮಂ ಪ್ರವಕ್ಷ್ಯಾಮ್ಯನಸೂಯವೇ
ಜ್ಞಾನಂ ವಿಜ್ಞಾನಸಹಿತಂ ಯಜ್ ಜ್ಞಾತ್ವಾ ಮೋಕ್ಷ್ಯಸೇSಶುಭಾತ್

ಭಗವಾನುವಾಚ-ಭಗವಂತ ಹೇಳಿದನು:
ಇದಮ್  ತು ತೇ ಗುಹ್ಯತಮಮ್  ಪ್ರವಕ್ಷ್ಯಾಮಿ ಅನಸೂಯವೇ
ಜ್ಞಾನಮ್  ವಿಜ್ಞಾನ ಸಹಿತಮ್  ಯತ್  ಜ್ಞಾತ್ವಾ ಮೋಕ್ಷ್ಯಸೇ ಶುಭಾತ್- ಇದಂತೂ ತುಂಬಾ ಬಚ್ಚಿಡಬೇಕಾದದ್ದು. ಕಿಚ್ಚು ಪಡದೆ ಮೆಚ್ಚುವವನೆಂದು ಹೇಳುತ್ತಿದ್ದೇನೆ: ತಿಳಿವು ಮತ್ತು ತಿಳಿವಿನ ಬಿತ್ತರ. ಇದನ್ನು ತಿಳಿದು ಕುತ್ತಿನಿಂದ ಪಾರಾಗುವೆ.

ಕೃಷ್ಣ ಹೇಳುತ್ತಾನೆ “ಭಗವದ್ ತತ್ವದ ಬಗೆಗೆ ನಿನಗೆ ಪುನಃ ಹೇಳುತ್ತೇನೆ; ಅತ್ಯಂತ ರಹಸ್ಯವಾದ ಉಪಾಸನೆ ಸಂಗತಿಯನ್ನು ನಿನ್ನ ಮುಂದೆ ಬಿಚ್ಚಿಡುತ್ತಿದ್ದೇನೆ” ಎಂದು. ಇದು ಎಲ್ಲರ ಮುಂದೆ ತೆರೆದಿಡುವ ಸಂಗತಿಯಲ್ಲ. ಯಾರಿಗೆ ಭಗವಂತನ ಉಪಾಸನೆಯಲ್ಲಿ ಅನನ್ಯವಾದ ಕಾತರ ಇದೆ, ಭಗವಂತನಲ್ಲದೆ ನನಗೆ ಇನ್ನೇನೂ ಬೇಡ ಎನ್ನುವ ಮನಸ್ಸುಳ್ಳವರ ಮತ್ತು  ಭಗವಂತನಿಗೋಸ್ಕರ ಹಾತೊರೆಯುವವರ ಮುಂದೆ ಹೇಳಬೇಕಾದ ಮಾತು. ಅತ್ಯಂತ ರಹಸ್ಯವಾದ ಗೊಪನೆ ಮಾಡಬೇಕಾದ ಸಂಗತಿ. “ಅದನ್ನು ನಾನು ನಿನಗೆ ಹೇಳುತ್ತಿದ್ದೇನೆ” ಎನ್ನುತ್ತಾನೆ ಕೃಷ್ಣ.  ಇಲ್ಲಿ ಅರ್ಜುನನಿಗೆ ಈ ವಿಚಾರವನ್ನು ತಿಳಿಯುವ ಜಿಜ್ಞಾಸೆ ಮತ್ತು ಅರ್ಹತೆ ಇದ್ದುದರಿಂದ ಕೃಷ್ಣ ಆತನಿಗೆ ಆ ಗೋಪ್ಯವಾದ ವಿಚಾರವನ್ನು ಹೇಳುತ್ತಾನೆ. ಕೇಳುವ ಅರ್ಹತೆ ಮತ್ತು ಬಯಕೆ ಇದ್ದವರಿಗೆ ಮಾತ್ರ ಕೊಡಬೇಕಾದ ವಿದ್ಯೆ ಇದು. ಇದನ್ನು ಎಲ್ಲರಿಗೂ ಕೊಡಲಾಗುವುದಿಲ್ಲ.
ಇಲ್ಲಿ ಕೃಷ್ಣ “ಅನಸೂಯವೇ” ಎನ್ನುವ ಪದವನ್ನು ಬಳಸಿದ್ದಾನೆ. ಮನುಷ್ಯನಿಗೆ ವೇದಾಂತ ಓದುವ ಮತ್ತು ವೇದಾಂತ ಓದಿದ ನಂತರವೂ ಇರಬೇಕಾದ ಗುಣಮಟ್ಟ(Quality) ‘ಅಹಂಕಾರ ರಹಿತತೆ’(egolessness). ಅಹಂಕಾರ ಇದ್ದು ವೇದಾಂತ ಓದಿದರೆ ಏನೂ ಉಪಯೋಗವಿಲ್ಲ. ವೇದಾಂತ ಓದುವ ಮೊದಲು ಅಹಂ  ಇರಬಾರದು. “ಭಗವಂತನ ಮುಂದೆ ನಾನು ಏನೂ ಅಲ್ಲ” ಎಂದು ತಿಳಿದಿದ್ದರೆ ಅಹಂಕಾರ ಬರುವುದಿಲ್ಲ. ವೇದಾಂತ ಓದಿ ‘ನಾನು ದೊಡ್ಡ ಜ್ಞಾನಿ’ ಅನ್ನುವ ಅಹಂಕಾರ ಬಂದರೆ- ಓದಿ ದೇವರನ್ನು ಕಳೆದುಕೊಂಡಂತಾಗುತ್ತದೆ. ಆದರೆ ಇಂದು ನಾವು ಒಂದಲ್ಲ ಒಂದು ಅಹಂಕಾರಕ್ಕೆ ಒಳಗಾಗಿರುತ್ತೇವೆ. ಜ್ಞಾನದ ಅಹಂಕಾರ, ಅಧಿಕಾರದ ಅಹಂಕಾರ, ಸಂಪತ್ತಿನ ಅಹಂಕಾರ, ಸೌಂದರ್ಯದ ಅಹಂಕಾರ, ಯೌವನದ ಅಹಂಕಾರ, ಇಂತಹ ಅನೇಕ ಸಂಗತಿಗಳು ನಮ್ಮನ್ನು ಕಾಡುತ್ತಿರುತ್ತವೆ. ಅದನ್ನು ಕಳಚಿಕೊಂಡಾಗ ಮಾತ್ರ ವೇದಾಂತವನ್ನು ಅರಿಯಲು ನಾವು ಅರ್ಹತೆ ಪಡೆದಂತಾಗುತ್ತದೆ. ಎಲ್ಲಿಯ ತನಕ ನಮ್ಮಲ್ಲಿ ಅಹಂಕಾರ ತುಂಬಿದೆಯೋ ಅಲ್ಲಿಯ ತನಕ ವೇದಾಂತ ನಮಗೆ ಉಪಯೋಗಕ್ಕೆ ಬರುವುದಿಲ್ಲ.
ಎಲ್ಲಾ ಅಹಂಕಾರಕ್ಕಿಂತ ಜ್ಞಾನದ ಅಹಂಕಾರ ಬಹಳ ಅಪಾಯಕಾರಿ. ಇತರ ಅಹಂಕಾರಕ್ಕೆ ಕೊನೆ ಇದೆ, ಆದರೆ ಜ್ಞಾನದ ಅಹಂಕಾರಕ್ಕೆ ಕೊನೆ ಇಲ್ಲ.  ‘ನಾನು ಪಂಡಿತ’ ಎನ್ನುವ ಅಹಂಕಾರ ತಲೆಗೆ ಬಂದರೆ ಅಂತವನು ಮಹಾ ದರಿದ್ರ ಎನಿಸುತ್ತಾನೆ!  ಅಹಂಕಾರದ ಮರಿ ‘ಅಸೂಯೆ’. ಈ ಅಸೂಯೆ ನಮ್ಮನ್ನು ಸುಡುವ ಬೆಂಕಿ. ಅದಕ್ಕಾಗಿ ಅದನ್ನು ಕನ್ನಡದಲ್ಲಿ ‘ಹೊಟ್ಟೆಕಿಚ್ಚು’ ಎನ್ನುತ್ತಾರೆ. ಇದು ನಮ್ಮ ವ್ಯಕ್ತಿತ್ವವನ್ನು ನಾಶ ಮಾಡುತ್ತದೆ. ಅಂತವರಿಗೆ ವೇದಾಂತ ಹೇಳಿ  ಉಪಯೋಗವಿಲ್ಲ. “ ನಿನಗೆ ಅಸೂಯೆ ಇಲ್ಲ,  ಅದಕ್ಕಾಗಿ ನಿನಗೆ ಈ ಗೋಪ್ಯವನ್ನು ಹೇಳುತ್ತಿದ್ದೇನೆ” ಎನ್ನುತ್ತಾನೆ ಕೃಷ್ಣ.
ಯುದ್ಧ ರಂಗದಲ್ಲಿ ನಿಂತ ವ್ಯಕ್ತಿಗೆ ಅಸೂಯೆ ಇಲ್ಲದೆ ಇರುವುದು ಅತ್ಯಂತ ಮಹಾನ್ ಸಂಗತಿ. ದ್ವೇಷ-ಅಸೂಯೆ ಅಹಂಕಾರಗಳು ಯುದ್ಧರಂಗದಲ್ಲಿ ಸದಾ ತುಂಬಿ ತುಳುಕುತ್ತಿರುತ್ತವೆ. ಇದನ್ನು ಗೆದ್ದು ನಿಂತವ  ಅತ್ಯಂತ ಶ್ರೇಷ್ಠ. ಇಲ್ಲಿ ಕೃಷ್ಣ ಹೇಳುತ್ತಾನೆ “ಇದನ್ನು ತಿಳಿದುಕೊಂಡರೆ ನಿನ್ನ ಮನಸ್ಸು ಪರಿಶುದ್ಧವಾಗಿ ಭಗವಂತನನ್ನು ಬಯಸುವುದು ಸಾಧ್ಯವಾಗುತ್ತದೆ” ಎಂದು. ಜ್ಞಾನ ಬಂದರೆ ನಮ್ಮೊಳಗಿನ ಕೊಳೆ ತೊಳೆದು ಹೋಗಿ ಮನಸ್ಸು ನಿರ್ಮಲವಾಗುತ್ತದೆ. ನಮ್ಮ ಅತಿ ದೊಡ್ಡ ಸಂಪತ್ತು ಎಂದರೆ ಪ್ರಸನ್ನವಾದ ಸ್ವಚ್ಛ ಮನಸ್ಸು. ಅಂತಹ ಮನಸ್ಸಿನಲ್ಲಿ ಭಗವಂತ ಕಾಣಿಸಿಕೊಳ್ಳುತ್ತಾನೆ. ಅಹಂಕಾರ-ಅಸೂಯೆ ಇಲ್ಲದ ಮನಸ್ಸು ‘ವಸುದೇವ’ ಹಾಗು ಇಂತಹ ಮನಸ್ಸಿಗೆ ಕಾಣುವ ಭಗವಂತ ‘ವಾಸುದೇವ’. ಶುದ್ಧ ಮನಸ್ಸಿನಿಂದ ಜ್ಞಾನ, ಇದರಿಂದ ಅಭಯ ಮತ್ತು ಆನಂದ. ಆನಂದಮಯವಾದ ಈ ಸ್ಥಿತಿಯಿಂದ ಪಾಂಚಬೌತಿಕ ಶರೀರದಿಂದ ಮತ್ತು ಸಂಸಾರದಿಂದ   ಬಿಡುಗಡೆ ಮತ್ತು ಮೋಕ್ಷ.
ನಮಗೆ ಪಾಂಚಬೌತಿಕವಾದ ಮೂರು ಆವರಣವಿದೆ. ಈ ಮೂರು ಆವರಣದ ಒಳಗೆ ಜ್ಞಾನಾನಂದಮಯವಾದ ಆತ್ಮಸ್ವರೂಪವಿದೆ. ಲಿಂಗಶರೀರ, ಸೂಕ್ಷ್ಮಶರೀರ ಮತ್ತು ಸ್ಥೂಲಶರೀರ ಇವು ಆತ್ಮವನ್ನು ಆವರಿಸಿರುವ ಆವರಣಗಳು. ನಾವು ಈ ಮೂರೂ ಅಂಗಿಗಳನ್ನು ಕಳಚಿ, ಅಶುಭದಿಂದ ಬಿಡುಗಡೆಹೊಂದಿ,    ಸ್ವರೂಪಭೂತವಾದ ನೈಜ ಸ್ಥಿತಿಯಲ್ಲಿ ಭಗವಂತನ ಮುಂದೆ ನಿಲ್ಲುವುದನ್ನು ಇಲ್ಲಿ ಕೃಷ್ಣ  ಮೋಕ್ಷ್ಯಸೇSಶುಭಾತ್’ ಎಂದು ಸಂಕ್ಷಿಪ್ತವಾಗಿ ಹೇಳಿದ್ದಾನೆ.[ನಾವು ದೇವಸ್ಥಾನದಲ್ಲಿ ದೇವರ ಮುಂದೆ ಅಂಗಿ ತೆಗೆಯುವುದು ‘ಭಗವಂತನ ಮುಂದೆ ಹಾಕಿಕೊಂಡಿರುವ ಎಲ್ಲ ಆವರಣವನ್ನು ತೆಗೆದು ದೇವರ ಮುಂದೆ ಬತ್ತಲಾಗುವುದು’ ಎನ್ನುವ ಮುಖ್ಯಾರ್ಥವನ್ನು ಹೊಂದಿದೆ. ನಾವು ಭಗವಂತನ ಮುಂದೆ ಹಾಕಿಕೊಂಡ ಎಲ್ಲ ಮುಚ್ಚಳಗಳನ್ನು ಬಿಚ್ಚಿ ಆತನ ಮುಂದೆ ತೆರೆದುಕೊಳ್ಳಬೇಕು. ಆಗ ಆತ ನಮಗೆ ತೆರೆದುಕೊಳ್ಳುತ್ತಾನೆ.] ಹೀಗೆ ಯಾವ ರೀತಿ  ಪಾಂಚಬೌತಿಕ ಶರೀರದಿಂದ ಬಿಡುಗಡೆ ಮತ್ತು ಮೋಕ್ಷ  ಎನ್ನುವ  ಜ್ಞಾನ-ವಿಜ್ಞಾನವನ್ನು ಭಗವಂತ  ಸಮಷ್ಠಿಯಾಗಿ ಅರ್ಜುನನಿಗೆ ಹೇಳುವುದನ್ನುಮುಂದಿನ ಶ್ಲೋಕಗಳಲ್ಲಿ ನೋಡೋಣ.                   

Thursday, July 21, 2011

Bhagavad Geeta Kannada Chapter-08 Shloka 23-28


ಯತ್ರ ಕಾಲೇ ತ್ವನಾವೃತ್ತಿಮಾವೃತ್ತಿಂ ಚೈವ ಯೋಗಿನಃ        
ಪ್ರಯಾತಾ ಯಾಂತಿ  ತಂ ಕಾಲಂ ವಕ್ಷ್ಯಾಮಿ ಭರತರ್ಷಭ     ೨೩

ಯತ್ರ ಕಾಲೇ ತು ಅನಾವೃತ್ತಿಮ್ ಆವೃತ್ತಿಮ್  ಚ ಏವ  ಯೋಗಿನಃ     
ಪ್ರಯಾತಾಃ  ಯಾಂತಿ  ಮ್  ಕಾಲಮ್  ವಕ್ಷ್ಯಾಮಿ ಭರತ ಋಷ –ಭರತ ಶ್ರೇಷ್ಠ, ಯಾವ ಕಾಲದೇವತೆಗಳ ದಾರಿಯಲ್ಲಿ ಹೋದ ಸಾಧಕರು ಮರಳುವುದಿಲ್ಲ ಮತ್ತು ಯಾವ ದಾರಿಯಲ್ಲಿ ಮರಳುತ್ತಾರೆ ಅಂಥ 'ಕಾಲ' ದೇವತೆಗಳನ್ನು ಹೇಳುತ್ತೇನೆ .

“ಶರೀರವನ್ನು ತ್ಯಾಗ ಮಾಡಿದ(ಕಾಲ ವಶನಾದ) ಜೀವನನ್ನು ಯಾವಯಾವ ದೇವತೆಗಳು  ನಿಯಮನ ಮಾಡಿ ಮುಂದೆ ಕರೆದುಕೊಂಡು ಹೋಗುತ್ತಾರೆ; ಯಾವ ದಾರಿಯಲ್ಲಿ ಹೋದವರು ಮರಳಿ ಭೂಮಿಯಲ್ಲಿ ಹುಟ್ಟುತ್ತಾರೆ ಮತ್ತು ಯಾರು ನೇರವಾಗಿ ಮೋಕ್ಷವನ್ನು ತಲುಪುತ್ತಾರೆ, ಆ ವಿಷಯವನ್ನು ನಿನಗೆ ಹೇಳುತ್ತೇನೆ” ಎನ್ನುತ್ತಾನೆ ಕೃಷ್ಣ. ಇಲ್ಲಿ ಕೆಲವರು ಕಾಲ ಎನ್ನುವ ಪದವನ್ನೂ ತಪ್ಪಾಗಿ ತಿಳಿದುಕೊಳ್ಳುತ್ತಾರೆ. ಈ ಶ್ಲೋಕದಲ್ಲಿ  ಕೃಷ್ಣ ಹೇಳುವ  ಕಾಲ ಅಂದರೆ ಸಮಯವಲ್ಲ. ಶರೀರ ತ್ಯಾಗ ಮಾಡಿದ  ಜೀವನ ನಿಯಮನ ಮಾಡುವ ದೇವತೆಗಳ ಗಣ ‘ಕಾಲ’.

ಅಗ್ನಿರ್ಜೋತಿರಹಃ ಶುಕ್ಲಃ ಷಣ್ಮಾಸಾ ಉತ್ತರಾಯಣಮ್        
ತತ್ರ ಪ್ರಯಾತಾ ಗಚ್ಛಂತಿ  ಬ್ರಹ್ಮ ಬ್ರಹ್ಮವಿದೋ ಜನಾಃ ೨೪

ಅಗ್ನಿಃ ಜ್ಯೋತಿಃ ಅಹಃ ಶುಕ್ಲಃ ಷಟ್ ಮಾಸಾಃ ಉತ್ತರಮ್       
ತತ್ರ ಪ್ರಯಾತಾ ಗಚ್ಛಂತಿ ಬ್ರಹ್ಮ ಬ್ರಹ್ಮವಿದಃ  ಜನಾಃ –ಅಗ್ನಿ ಮತ್ತು ಜ್ಯೋತಿ [ಎಂಬಿಬ್ಬರು ವಹ್ನಿಯ ಮಕ್ಕಳು].[ಮಧ್ಯಾಹ್ನದ ದೇವತೆಯ ಜತೆ] ಹಗಲಿನ ದೇವತೆ, [ಹುಣ್ಣಿಮೆಯ ದೇವತೆ ಜತೆ] ಶುಕ್ಲಪಕ್ಷದ ದೇವತೆ , ಉತ್ತರಾಯಣದ ಆರು ತಿಂಗಳ ದೇವತೆಗಳು, [ಸಂಕ್ರಾಂತಿಯ ದೇವತೆಯ ಜತೆ] ಉತ್ತರಾಯಣದ ದೇವತೆ- ಈ ದಾರಿಯಲ್ಲಿ ಹೋದವರು ಭಗವಂತನನ್ನು ಬಲ್ಲವರು ಭಗವಂತನನ್ನು ಸೇರುತ್ತಾರೆ; ಮತ್ತೆ ಮರಳುವುದಿಲ್ಲ.

ದೇಹದಿಂದ ಹೊರಬಂದ ಮೋಕ್ಷ ಯೋಗ್ಯ ಜೀವವನ್ನು ಮೊದಲು ಸ್ವಾಗತಿಸುವವರು ವೈಶ್ವಾನರ(ಪ್ರಧಾನ ಅಗ್ನಿ)ನ ಮಕ್ಕಳಾದ ಅಗ್ನಿ ಮತ್ತು ಜ್ಯೋತಿ. ಈ ದೇವತೆಗಳು ಜೀವನನ್ನು ಸತ್ಕರಿಸಿ ಮುಂದಕ್ಕೆ ಕಳುಹಿಸುತ್ತಾರೆ. ಮುಂದೆ ಜೀವನನ್ನು ಬೆಳಕಿನ ಮತ್ತು ಮಧ್ಯಾಹ್ನದ ದೇವತೆಗಳು ಸ್ವಾಗತಿಸುತ್ತಾರೆ. ಈ ನಿಜವಾದ ಬೆಳಕಿನ ಅನುಭವದೊಂದಿಗೆ ಜೀವ ಮುಂದೆ ಸಾಗಿ ಶುಕ್ಲಪಕ್ಷದ ಮತ್ತು ಹುಣ್ಣಿಮೆಯ ದೇವತೆಯನ್ನು ತಲುಪುತ್ತಾನೆ. ಆ ನಂತರ ಸಂಕ್ರಮಣದ, ಉತ್ತರಾಯಣದ ದೇವತೆ ಜೊತೆಗೆ ಉತ್ತರಾಯಣದ ಆರು ತಿಂಗಳ ದೇವತೆಗಳು ಜೀವನನ್ನು ಭಗವಂತನೆಡೆಗೆ ಕಳುಹಿಸುತ್ತಾರೆ. ಹೀಗೆ ಯಾರು ಈ ದಾರಿಯಲ್ಲಿ ಸಾಗುತ್ತಾರೆ ಅವರು ಎಂದೂ ಮರಳಿ ಬರುವುದಿಲ್ಲ-ನಿತ್ಯ ಸತ್ಯವಾದ ಭಗವಂತನನ್ನು ಸೇರುತ್ತಾರೆ.   

ಧೂಮೋ ರಾತ್ರಿಸ್ತಥಾ ಕೃಷ್ಣಃ ಷಣ್ಮಾಸಾ ದಕ್ಷಿಣಾಯನಮ್     
ತತ್ರ ಚಾಂದ್ರಮಸಂ ಜ್ಯೋತಿರ್ಯೋಗೀ ಪ್ರಾಪ್ಯ ನಿವರ್ತತೇ   ೨೫

ಧೂಮಃ  ರಾತ್ರಿಃ ತದಾ  ಕೃಷ್ಣಃ ಷಟ್ ಮಾಸಾ ದಕ್ಷಿಣಾಯನಮ್         
ತತ್ರ ಚಾಂದ್ರಮಸಮ್  ಜ್ಯೋತಿಃ ಯೋಗೀ ಪ್ರಾಪ್ಯ ನಿವರ್ತತೇ –ಹೊಗೆಯ ದೇವತೆ, ಇರುಳ ದೇವತೆ, ಕೃಷ್ಣಪಕ್ಷದ ದೇವತೆ, ದಕ್ಷಿಣಾಯನದ ಆರು ತಿಂಗಳ ದೇವತೆಗಳು, ಮತ್ತು ದಕ್ಷಿಣಾಯನದ ದೇವತೆ-ಈ ದಾರಿಯಲ್ಲಿ ಸಾಗಿದ ಸಾಧಕ ಚಂದ್ರನ ಬೆಳಕಿನ ಲೋಕವನ್ನು ಸೇರಿ ಮರಳಿ ಬರುತ್ತಾನೆ.

ಮೋಕ್ಷ ಯೋಗ್ಯವಲ್ಲದ ಜೀವ ದೇಹದಿಂದ ಹೊರ ಬಂದಾಗ ಆತನನ್ನು ಸ್ವಾಗತಿಸುವ ದೇವತೆ ಹೊಗೆಯ ಮತ್ತು ಕತ್ತಲಿನ ದೇವತೆ. ಆ ನಂತರ ಕೃಷ್ಣಪಕ್ಷದ ದೇವತೆ; ನಂತರ  ದಕ್ಷಿಣಾಯನದ ಮತ್ತು ‘ದಕ್ಷಿಣಾಯನದ ಆರು ತಿಂಗಳ’ ದೇವತೆಗಳು ಜೀವನನ್ನು ಸೋಮಲೋಕಕ್ಕೆ ತಲುಪಿಸುತ್ತಾರೆ. ಜೀವ ಇಲ್ಲಿ ತನ್ನ  ಪುಣ್ಯ ಕ್ಷಯವಾಗುವ ತನಕ ಸುಖವನ್ನು ಅನುಭವಿಸಿ, ಮರಳಿ ಮೋಡದಲ್ಲಿ ಸೇರಿ, ಮಳೆಯ ಮೂಲಕ ಭೂಮಿಯನ್ನು ತಲುಪಿ, ಒಂದು ಗಂಡಿನ ದೇಹದ ಮೂಲಕ ಹೆಣ್ಣಿನ ಗರ್ಭವನ್ನು ಪ್ರವೇಶಿಸಿ, ಮರಳಿ  ಭೂಮಿಯಲ್ಲಿ ಹುಟ್ಟುತ್ತದೆ.  

ಶುಕ್ಲಕೃಷ್ಣೇ ಗತೀ ಹ್ಯೇತೇ ಜಗತಃ ಶಾಶ್ವತೇ ಮತೇ   
ಏಕಯಾ ಯಾತ್ಯನಾವೃತ್ತಿಮನ್ಯಯಾSSವರ್ತತೇ ಪುನಃ      ೨೬

ಶುಕ್ಲ ಕೃಷ್ಣೇ ಗತೀ ಹಿ ಏತೇ ಜಗತಃ ಶಾಶ್ವತೇ ಮತೇ  
ಏಕಯಾ ಯಾತಿ ಅನಾವೃತ್ತಿಮ್ ಅನ್ಯಯಾವರ್ತತೇ ಪುನಃ –ಇವು ಜಗದ ಬಿಳಿ ಮತ್ತು ಕಪ್ಪು ದಾರಿಗಳು. ಅನುಗಾಲ ಇರುವಂಥವು ಎಂದು ಶಾಸ್ತ್ರದ ತೀರ್ಮಾನ. ಒಂದರಿಂದ ಮರಳಿ ಬರುವುದಿಲ್ಲ. ಇನ್ನೊಂದರಿಂದ ಮತ್ತೆ ಮರಳುತ್ತಾನೆ.

ಹೀಗೆ ಒಂದು ಮೋಕ್ಷಕ್ಕೆ ಹೋಗುವ ಬೆಳಕಿನ ಬಿಳಿಯ ದಾರಿ ಮತ್ತು ಇನ್ನೊಂದು ಮರಳಿ ಸಂಸಾರಕ್ಕೆ ಬರುವ ಕತ್ತಲಿನ ಕಪ್ಪು ದಾರಿ. ಈ ಎರಡೂ ದಾರಿಗಳೂ ಅನಾದಿ ಅನಂತ ಕಾಲದಲ್ಲಿ ಎಲ್ಲ ಜೀವಗಳಿಗೆ ಸಮನಾಗಿ ಇರತಕ್ಕಂತಹ ವ್ಯವಸ್ಥೆ. ಬೆಳಕಿನ ದಾರಿಯಲ್ಲಿ ಹೋದವ ಮರಳಿ ಬರುವುದಿಲ್ಲ, ಕತ್ತಲೆಯ ದಾರಿಯಲ್ಲಿ ಹೋದವ ಮರಳಿ ಬರುತ್ತಾನೆ.

ನೈತೇ ಸೃತೀ ಪಾರ್ಥ ಜಾನನ್ ಯೋಗೀ ಮುಹ್ಯತಿ ಕಶ್ಚನ     
ತಸ್ಮಾತ್ ಸರ್ವೇಷು ಕಾಲೇಷು ಯೋಗಯುಕ್ತೋ ಭವಾರ್ಜುನ ೨೭

ನ ಏತೇ  ಸೃತೀ ಪಾರ್ಥ ಜಾನನ್ ಯೋಗೀ ಮುಹ್ಯತಿ ಕಶ್ಚನ 
ತಸ್ಮಾತ್ ಸರ್ವೇಷು ಕಾಲೇಷು ಯೋಗಯುಕ್ತಃ  ಭವರ್ಜುನ- ಪಾರ್ಥ, ಈ ದಾರಿಗಳನ್ನರಿತ ಯಾವ ಸಾಧಕನೂ ದಾರಿ ತಪ್ಪುವುದಿಲ್ಲ. ಅದರಿಂದ, ಓ ಅರ್ಜುನ, ಎಲ್ಲ ಕಾಲಗಳಲ್ಲು ಉಪಾಯವನ್ನರಿತು ನಡೆ.

ಈ ಎರಡೂ ದಾರಿಗಳ ಬಗ್ಗೆ ಸರಿಯಾದ ತಿಳುವಳಿಕೆ ಇದ್ದು, ನೀನು ಹೋಗಬೇಕಾದ ದಾರಿ ಯಾವುದು ಎಂದು ತಿಳಿದು, ಆಯಾ ಅಭಿಮಾನಿ ದೇವತೆಗಳ ಜೊತೆಗೆ ಮುಂದಕ್ಕೆ ಸಾಗಬೇಕು. ಆಯಾ ಅಭಿಮಾನಿ ದೇವತೆಗಳು ಬೇರೆಬೇರೆ ಮೆಟ್ಟಲಿನಲ್ಲಿ ಬಂದು ಜೀವನನ್ನು ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ. ಈ ಕಾರಣದಿಂದ ಅಂತ್ಯ ಕಾಲದ ಸ್ಮರಣೆಯಲ್ಲಿ ಮಾರ್ಗ ಮತ್ತು ಅಭಿಮಾನಿ ದೇವತೆಗಳ ಚಿಂತನೆ ಅತ್ಯಗತ್ಯ. ಇದನ್ನು ತಿಳಿದು ಅನುಸಂಧಾನ ಮಾಡಿಕೊಂಡು ಅನುಷ್ಠಾನ ಮಾಡಿದರೆ ಯಾವ ಸಾಧಕನಿಗೂ ಗೊಂದಲವಿಲ್ಲ. ಆದ್ದರಿಂದ ಕೃಷ್ಣ ಅರ್ಜುನನಿಗೆ ಹೇಳುತ್ತಾನೆ – “ಎಲ್ಲ ಕಾಲದಲ್ಲೂ ಈ ಉಪಾಯವನ್ನರಿತು ನಡೆ” ಎಂದು.    

ವೇದೇಷು ಯಜ್ಞೇಷು ತಪಸ್ಸು  ಚೈವ ದಾನೇಷು ಯತ್ ಪುಣ್ಯಫಲಂ ಪ್ರದಿಷ್ಟಮ್
ಅತ್ಯೇತಿ ತತ್ ಸರ್ವಮಿದಂ ವಿದಿತ್ವಾಯೋಗೀ ಪರಂ ಸ್ಥಾನಮುಪೈತಿ ಚಾSದ್ಯಮ್ ೨೮

ವೇದೇಷು ಯಜ್ಞೇಷು ತಪಸ್ಸು  ಚ ಏವ ದಾನೇಷು ಯತ್ ಪುಣ್ಯಫಲಮ್  ಪ್ರದಿಷ್ಟಮ್
ಅತ್ಯೇತಿ ತತ್ ಸರ್ವಮ್ ಇಮ್  ವಿದಿತ್ವಾ ಯೋಗೀ ಪರಮ್  ಸ್ಥಾನಮ್ ಉಪೈತಿ ಚ ಆದ್ಯಮ್ –ವೇದವನ್ನು ಓದಿದರೆ, ಯಜ್ಞಗಳನ್ನು ಮಾಡಿದರೆ, ತಪಗಳನ್ನು ಆಚರಿಸಿದರೆ, ದಾನಗಳನ್ನು ನೀಡಿದರೆ ಏನು ಪುಣ್ಯಫಲ ಹೇಳಲಾಗಿದೆ ಅದನ್ನೆಲ್ಲ ಮೀರಿ ನಿಲ್ಲುತ್ತಾನೆ ಇದನ್ನು ಬಲ್ಲ ಸಾಧಕ; ಎಲ್ಲಕ್ಕೂ ಮೊದಲ ಹಿರಿಯ ತಾಣವನ್ನು ಸೇರುತ್ತಾನೆ.

 ಉಪಸಂಹಾರ ಮಾಡುತ್ತಾ ಕೃಷ್ಣ ಹೇಳುತ್ತಾನೆ-ಎಲ್ಲಕ್ಕಿಂತ ಮಿಗಿಲಾದ ತಿಳಿವು ಅಂದರೆ ಈ ಅಂತ್ಯ ಕಾಲದ ಅರಿವು ಎಂದು . ಸಮಸ್ತ ಶಾಸ್ತ್ರದಲ್ಲಿ ಯಜ್ಞ-ದಾನ-ತಪಸ್ಸುಗಳ ಮೂಲಕ ಏನು ಪುಣ್ಯ ಹೇಳಿದ್ದಾರೆ, ಈ ಅಂತ್ಯ ಕಾಲದ ಸಾವಿನ ರಹಸ್ಯದ ಅರಿವು  ಈ ಎಲ್ಲಾ ಪುಣ್ಯ ಫಲವನ್ನು ಮೀರಿ ನಿಲ್ಲುತ್ತದೆ. ಆದ್ದರಿಂದ ಎಲ್ಲಕ್ಕಿಂತ ದೊಡ್ಡ ಸಾಧನೆ ಅಂತ್ಯ ಕಾಲದ ಚಿಂತನೆ.  ಈ ಕಾರಣದಿಂದ ಬದುಕಿಗಿಂತ ಸಾವಿನ ಬಗ್ಗೆ ಹೆಚ್ಚು ಚಿಂತನೆಯ ಅಗತ್ಯವಿದೆ.
ಸಾವು ಅಮಂಗಳವಲ್ಲ. ಸಾವು ದುಃಖದ ಅನುಭವ ಎನ್ನುವುದು ನಮ್ಮ ಭ್ರಮೆ. ದೇಹದ ಒಳಗಿರುವಾಗ ಬೌತಿಕ ಶರೀರದ ಎಲ್ಲಾ ಯಾತನೆ ಜೀವಕ್ಕೆ ಅಂಟಿಕೊಂಡಿರುತ್ತದೆ. ಸಾವು ಎಂದರೆ ಈ ಸ್ಥೂಲ ಶರೀರದಿಂದ ಬಿಡುಗಡೆ. ಆದ್ದರಿಂದ ಸೂಕ್ಷ್ಮ ಶರೀರದಲ್ಲಿರುವ ಜೀವ ಪಂಜರದಿಂದ ಹೊರ ಬಂದು ಮುಕ್ತವಾಗಿ ಆಕಾಶದಲ್ಲಿ ಹಾರಾಡುವ ಪಕ್ಷಿಯಂತೆ. ಈ ಕಾರಣದಿಂದ ಸಾವಿನ ಭಯ ಬಿಟ್ಟು ಕೊನೇ ಕ್ಷಣದಲ್ಲಿ ಮಾಂಗಲಿಕವಾಗಿ ಎತ್ತರಕ್ಕೇರುವ ದೇವತಾ ಅನುಸಂಧಾನ ನಿರಂತರವಾಗಿ ನಮ್ಮ ಬದುಕಿನಲ್ಲಿರಬೇಕು.
      
ಇತಿ ಅಷ್ಟಮೋಧ್ಯಾಯಃ 
ಎಂಟನೆಯ ಅಧ್ಯಾಯ ಮುಗಿಯಿತು 
*******