Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Tuesday, August 9, 2011

Bhagavad Gita Kannada Chapter-10 Shloka-01


ಅಧ್ಯಾಯ ಹತ್ತು
 ನಾವು ಉಪಾಸನೆ ಮಾಡಬೇಕಾದ ಭಗವಂತನ ಗುಣವನ್ನು, ಜ್ಞಾನ ವಿಜ್ಞಾನವನ್ನು ಅರ್ಜುನನಿಗೆ ವಿವರಿಸಿದ ಕೃಷ್ಣ, ಆತನಲ್ಲಿ ಅರಳಿದ ಜ್ಞಾನ ತೃಷೆಯನ್ನು, ಪೂರ್ಣ ನಿಷ್ಠೆಯನ್ನು ಗುರುತಿಸಿ-ವಿಶೇಷವಾಗಿ ಉಪಾಸನೆಯಲ್ಲಿ ಅಳವಡಿಸಿಕೊಳ್ಳಬೇಕಾದ ಅನುಸಂಧಾನವನ್ನು, ಭಗವಂತನ ವಿಭೂತಿಯನ್ನು  ಈ ಅಧ್ಯಾಯದಲ್ಲಿ ವಿವರಿಸುತ್ತಾನೆ.
ಸಾಮಾನ್ಯವಾಗಿ ಅಮೂಲ್ಯ ವಿದ್ಯೆಯನ್ನು ಗುರು ಸುಲಭವಾಗಿ ಬಹಿರಂಗಗೊಳಿಸುವುದಿಲ್ಲ.  ಶಿಷ್ಯ ಗುರುವಿನಲ್ಲಿ ಪೂರ್ಣ ನಿಷ್ಠೆ ತೋರಿದಾಗ, ಆತನಲ್ಲಿ ಯೋಗ್ಯತೆ ಇದ್ದಾಗ  ಮಾತ್ರ ಅಂತಹ ವಿಚಾರವನ್ನು ಬಿಚ್ಚಬೇಕು ಎನ್ನುತ್ತದೆ ಶಾಸ್ತ್ರ. ಹೀಗಾಗಿ ಗುರು ತನ್ನ ಶಿಷ್ಯನನ್ನು ಪರೀಕ್ಷೆ ಮಾಡದೆ ಅಮೂಲ್ಯ ವಿಚಾರವನ್ನು ಆತನಿಗೆ ಹೇಳುವುದಿಲ್ಲ. ಇದಕ್ಕೆ ಉತ್ತಮ ದೃಷ್ಟಾಂತವನ್ನು  ಪ್ರಶ್ನೋಪನಿಷತ್ತಿನಲ್ಲಿ ಕಾಣಬಹುದು.
ಪಿಪ್ಪಲಾದನ ಹತ್ತಿರ ಬಂದ ಆರು ಮಂದಿ ಮಹಾನ್ ವಿದ್ವಾಂಸರನ್ನು ಕುರಿತು ಆತ ಹೀಗೆ ಹೇಳುತ್ತಾನೆ:
ಭೂಯ ಏವ ತಪಸಾ ಬ್ರಹ್ಮಚರ್ಯೇಣ ಶ್ರದ್ಧಯಾ ಸಂವಸ್ಸರಂ ಸಂವತ್ಸ್ಯಥ;

ಯಥಾಕಾಮಂ ಪ್ರಶ್ನಾನ್ ಪೈಚ್ಛತ; ಯದಿ ವಿಜ್ಞಾಸ್ಯಾಮಃ ಸರ್ವಂ ಹ ವೋ ವಕ್ಷ್ಯಾಮ ಇತಿ ||||
 “ಒಂದು ವರ್ಷ ತಪಸ್ಸಿನಿಂದಲೂ ಬ್ರಹ್ಮಚರ್ಯದಿಂದಲೂ ಶ್ರದ್ಧೆಯಿಂದ ವಾಸಮಾಡಿರಿ ಒಂದು ವರ್ಷದ ನಂತರ ನಿಮ್ಮ ಇಚ್ಛಾನುಸಾರ ಪ್ರಶ್ನೆ ಕೇಳಿ, ನನಗೆ ಗೊತ್ತಿದ್ದರೆ ಉತ್ತರಿಸುತ್ತೇನೆ” ಎಂದು.  ಇಲ್ಲಿ ಗುರು ಮತ್ತು ಶಿಷ್ಯರ ಪರಸ್ಪರ ಪರೀಕ್ಷೆ ಎದ್ದು ಕಾಣುತ್ತದೆ.  ಆದರೆ ಗುರು ತನ್ನ ಯೋಗ್ಯ ಶಿಷ್ಯನಲ್ಲಿ ಪೂರ್ಣ ನಿಷ್ಠೆಯನ್ನು ಗುರುತಿಸಿದಾಗ, ಆತ ಪ್ರಶ್ನಿಸದಿದ್ದರೂ ಕೂಡಾ ಸಂತೋಷದಿಂದ ತನ್ನಲ್ಲಿರುವ ಜ್ಞಾನವನ್ನು ಆತನಿಗೆ  ಧಾರೆಯೆರೆಯುತ್ತಾನೆ. ಈ ಹಂತದಲ್ಲಿ ಕೃಷ್ಣ ಅರ್ಜುನನಲ್ಲಿ ಕಂಡಿದ್ದು ಇಂತಹ ಪೂರ್ಣನಿಷ್ಠೆ.

ಭಗವಾನುವಾಚ
ಭೂಯ ಏವ ಮಹಾಬಾಹೋ ಶೃಣು ಮೇ ಪರಮಂ ವಚಃ      
ತ್ ತೇSಹಂ ಪ್ರೀಯಮಾಣಾಯ ವಕ್ಷ್ಯಾಮಿ ಹಿತಕಾಮ್ಯಯಾ         

ಭಗವಾನ್ ಉವಾಚ –ಭಗವಂತ ಹೇಳಿದನು:
ಭೂಯಃ  ಏವ ಮಹಾಬಾಹೋ ಶೃಣು ಮೇ ಪರಮಮ್  ವಚಃ
ತ್  ತೇ ಅಮ್  ಪ್ರೀಯಮಾಣಾಯ ವಕ್ಷ್ಯಾಮಿ ಹಿತ ಕಾಮ್ಯಯಾ- ಓ ಮಹಾವೀರ, ಇನ್ನೂ  ಕೇಳು ನನ್ನ ಹಿರಿನುಡಿಯನ್ನು, ಏಕೆಂದರೆ ಕೇಳಿ ಖುಷಿಪಡುತ್ತಿರುವ ನಿನಗೆ ಒಳಿತನ್ನು ಬಯಸಿಯೆ ನಾನು ಹೇಳುತ್ತಿದ್ದೇನೆ.

ಗುರುವಿಗೆ ಜ್ಞಾನ ಕೊಡುವುದರಲ್ಲಿ ಅತೃಪ್ತಿ ಬರುವುದು ಶಿಷ್ಯನ ಪ್ರತಿಭೆ ಮತ್ತು ಗುಣ ವಿಶೇಷದಿಂದ. ಇಲ್ಲಿ ಕೃಷ್ಣ ಹೇಳುತ್ತಾನೆ:  “ನಿನಗೆ ಇನ್ನಷ್ಟು ಹೇಳುತ್ತೇನೆ”  ಎಂದು. ಏಕೆಂದರೆ ಇಲ್ಲಿ ಹೇಳುವ ವಿಷಯ “ಪರಮಮ್  ವಚಃ” ಎನ್ನುತ್ತಾನೆ ಕೃಷ್ಣ.  ಇಲ್ಲಿ ‘ಪರಮಂ’ ಎಂದರೆ ನಾವು ತಿಳಿದುಕೊಳ್ಳಬೇಕಾದ ವಿಷಯದಲ್ಲೇ ಶ್ರೇಷ್ಠವಾದ ವಿಷಯ. ಅದು ಎಲ್ಲಕ್ಕಿಂತ ಮಿಗಿಲಾದ ಪರತತ್ವದ ಅರಿವನ್ನು ಕೊಡತಕ್ಕ ಶ್ರೇಷ್ಠ ಜ್ಞಾನ. ಇಡೀ ಲೋಕಕ್ಕೇ ಉಪಕಾರವಾಗುವಂತದ್ದು . ಇದಕ್ಕಿಂತ ಮಿಗಿಲಾದ ಇನ್ನೊಂದು ಸಂಗತಿ ಇಲ್ಲ. “ನೀನು ಈ ಯುದ್ಧ ಭೂಮಿಯಲ್ಲಿ ನಿಂತು ಇದನ್ನು ಕೇಳಿ ಸಂತೋಷ ಪಡುತ್ತಿದ್ದೀಯ, ನಿನ್ನಲ್ಲಿ ಆ ಆನಂದ ಚಿಮ್ಮುತ್ತಿದೆ. ಅದಕ್ಕೋಸ್ಕರ, ಜಗತ್ತಿನ ಹಿತಕ್ಕೋಸ್ಕರ  ಹೇಳುತ್ತೇನೆ ಕೇಳು” ಎನ್ನುತ್ತಾನೆ ಕೃಷ್ಣ.

Sunday, August 7, 2011

Bhagavad Gita Kannada Chapter-09 Shloka 32-34


ಮಾಂ ಹಿ ಪಾರ್ಥ ವ್ಯಪಾಶ್ರಿತ್ಯ ಯೇSಪಿ ಸ್ಯುಃ ಪಾಪಯೋನಯಃ
ಸ್ತ್ರಿಯೋ ವೈಶ್ಯಾಸ್ತಥಾ ಶೂದ್ರಾಸ್ತೇSಪಿ ಯಾಂತಿ ಪರಾಂ ಗತಿಮ್ ೩೨

ಮಾಮ್  ಹಿ ಪಾರ್ಥ ವ್ಯಪಾಶ್ರಿತ್ಯ ಯೇಪಿ ಸ್ಯುಃ ಪಾಪಯೋನಯಃ
ಸ್ತ್ರಿಯಃ  ವೈಶ್ಯಾಃ ತಥಾ ಶೂದ್ರಾಃ ತೇ ಅಪಿ ಯಾಂತಿ ಪರಾಮ್  ಗತಿಮ್ –ಪಾರ್ಥ, ನನಗೆ ಶರಣು ಬಂದವರು ಯಾವುದೋ ಪಾಪದಿಂದ ಹೆಣ್ಣಾಗಿ, ವೈಶ್ಯರಾಗಿ, ಶೂದ್ರರಾಗಿ ಸಾಧನೆಯಿಂದ ವಂಚಿತರಾದರೂ ಹಿರಿಯ ನೆಲೆಯಾದ ನನ್ನನ್ನೆ ಪಡೆಯುತ್ತಾರೆ.

ಈ ಶ್ಲೋಕ ಕೆಲವು ಭಾಷ್ಯಕಾರರಿಗೇ ಗೊಂದಲ ಮಾಡಿದ ಶ್ಲೋಕ. ಮಧ್ವಾಚಾರ್ಯರು ಈ ಶ್ಲೋಕಕ್ಕೆ ಭಾಷ್ಯ ನೀಡುವ ತನಕ ಹೆಚ್ಚಿನವರು ಇದಕ್ಕೆ ತಪ್ಪು ಅರ್ಥವನ್ನು ಕಲ್ಪಿಸಿಕೊಂಡಿದ್ದರು. ಮೇಲ್ನೋಟದಲ್ಲಿ ಈ ಶ್ಲೋಕವನ್ನು ನೋಡಿದಾಗ “ಸ್ತ್ರೀಯರು, ವೈಶ್ಯರು ಮತ್ತು ಶೂದ್ರರು ಪಾಪಿಗಳು” ಎಂದು ತಿಳಿಯುವ ಅಪಾಯ ಹೆಚ್ಚು. ಇಲ್ಲಿ ಕೃಷ್ಣ ಹೇಳುತ್ತಿರುವುದು ಸ್ತ್ರೀ ಜೀವದ ಬಗ್ಗೆ ಅಲ್ಲ. ಸ್ತ್ರೀಯರು ಪಾಪಿಗಳಲ್ಲ. ಯಾವುದೋ ಪಾಪದಿಂದ ಅಥವಾ ಶಾಪದಿಂದ ಸ್ತ್ರೀ ಜನ್ಮ ಪಡೆದ ಗಂಡು ‘ ಸ್ತ್ರೀ ಪಾಪಯೋನಿ’ ಹೊರತು ಹೆಣ್ಣಾಗಿರುವ ಸ್ತ್ರೀಜೀವ ಪಾಪಯೋನಿಯಲ್ಲ.
ಕೃಷ್ಣ ಹೇಳುತ್ತಾನೆ “ಯಾವುದೋ ಪಾಪದಿಂದ ಹೀನಯೋನಿ ಬಂದಿರಬಹುದು, ಆದರೆ ಅಂತವರು ನನ್ನನ್ನು ಆರಾಧಿಸಿ ಎಲ್ಲಾ ದೋಷಗಳಿಂದ ಬಿಡುಗಡೆ ಹೊಂದಬಹುದು” ಎಂದು. ಇದಕ್ಕೆ ಉತ್ತಮ ದೃಷ್ಟಾಂತ ನರಕಾಸುರನ ಸೆರೆಯಲ್ಲಿದ್ದ ಹದಿನಾರು ಸಾವಿರದ ನೂರು ಮಂದಿ ಸ್ತ್ರೀಯರು. ಇವರು ಅಗ್ನಿ ಪುತ್ರರು. ಭಗವಂತನ ಪತ್ನಿಯರಾಗಬೇಕು ಎಂಬ ಆಸೆಯಿಂದ ತಮ್ಮ ಎತ್ತರವನ್ನು ಕಳೆದುಕೊಂಡು ಭೂಮಿಯಲ್ಲಿ ಹೆಣ್ಣಾಗಿ ಹುಟ್ಟಿ ನರಕಾಸುರನ ಸೆರೆಮನೆಯಲ್ಲಿ ಸಿಕ್ಕಿ ಒದ್ದಾಡಿದವರು. ಕೃಷ್ಣ ಅವರನ್ನು ಮದುವೆಯಾಗಿ ಉದ್ಧರಿಸಿದ.
ನಂದಗೋಪ ಮತ್ತು ಯಶೋದೆ ಇವರು ಮೂಲತಃ ದೇವಾಂಶ ಸಂಭೂತರು. ‘ದ್ರೋಣ’ ನಾಮಕ ವಸು ನಂದಗೋಪ ಮತ್ತು ‘ಧರ’ ನಾಮಕ ವಸುಪತ್ನಿ ಯಶೋದೆ. ಅವರು ಭೂಮಿಯಲ್ಲಿ ವೈಶ್ಯರಾಗಿ ಹುಟ್ಟಿದರು. ಭಗವಂತ ತನ್ನ ಅವತಾರದಲ್ಲಿ ಅವರ ಮನೆಯಲ್ಲಿ ಬೆಳೆದು ಅವರನ್ನು ಉದ್ಧರಿಸಿದ.
ಮಹಾ ಚೇತನ ವಿಧುರ. ಈತ ಸ್ವಯಂ ಧರ್ಮರಾಯ. ಶಾಪದ ಫಲವಾಗಿ ಭೂಮಿಯಲ್ಲಿ ಶೂದ್ರನಾಗಿ ಬದುಕಬೇಕಾಗಿ ಬಂತು. ಸಂಧಾನಕ್ಕೆ ಬಂದ ಕೃಷ್ಣ ದುರ್ಯೋಧನ, ಭೀಷ್ಮ, ದ್ರೋಣರ ಮನೆಗೆ ಹೋಗದೆ ನೇರವಾಗಿ ವಿಧುರನ ಮನೆಗೆ ಬಂದು ಅಲ್ಲಿ ವಿಧುರನಿಂದ ಸರಳ ಆಹಾರ ಸೇವಿಸಿ ಆತನನ್ನು ಪ್ರಸನ್ನನಾಗಿ ಮಾಡಿದ. ಇಲ್ಲಿ ಭಗವಂತ ಬಯಸುವುದು ಪ್ರದರ್ಶನವನ್ನಲ್ಲ ಬದಲಿಗೆ ಪ್ರೀತಿಯನ್ನು ಎನ್ನುವುದು ಸ್ಪಷ್ಟವಾಗುತ್ತದೆ. ಆತನಿಗೆ ಅಂತರಾತ್ಮ ಮುಖ್ಯ, ಮುಖವಾಡವಲ್ಲ.
ಹೀಗೆ ಕೃಷ್ಣ ಸ್ಪಷ್ಟವಾಗಿ ಹೇಳುತ್ತಾನೆ “ಯಾವುದೋ ಪಾಪ ಕರ್ಮದಿಂದ ಅಥವಾ ಶಾಪದಿಂದ ಹೀನಯೋನಿಯಾಗಿ ಹುಟ್ಟಿದವರು ನನ್ನನ್ನು ಆಶ್ರಯಿಸಿದಾಗ ಪಾಪದಿಂದ ಕಳಚಿಕೊಂಡು ನನ್ನನ್ನು ಸೇರುತ್ತಾರೆ” ಎಂದು.                   

ಕಿಂ ಪುನರ್ಬ್ರಾಹ್ಮಣಾಃ ಪುಣ್ಯಾ ಭಕ್ತಾ ರಾಜರ್ಷಯಸ್ತಥಾ
ಅನಿತ್ಯಮಸುಖಂ ಲೋಕಮಿಮಂ ಪ್ರಾಪ್ಯ ಭಜಸ್ವ ಮಾಮ್     ೩೩

ಕಿಮ್  ಪುನಃ ಬ್ರಾಹ್ಮಣಾಃ ಪುಣ್ಯಾಃ ಭಕ್ತಾಃ  ರಾಜ ಋಷಯಃ ತಥಾ
ಅನಿತ್ಯಮ್ ಅಸುಖಮ್ ಲೋಕಮ್ ಇಮಮ್  ಪ್ರಾಪ್ಯ ಭಜಸ್ವ ಮಾಮ್-ಪುಣ್ಯದ ಫಲದಿಂದ ಬ್ರಾಹ್ಮಣರಾಗಿ, ಋಷಿಗಳಂಥ ಅರಸರಾಗಿ ಹುಟ್ಟಿ ಬಂದು ಭಕ್ತಿ ಮಾಡುವವರ ಬಗೆಗೆ ಹೇಳುವುದೇನು? ಅದರಿಂದ ಸ್ಥಿರವಲ್ಲದ, ಸುಖವಿಲ್ಲದ ನರಜನ್ಮ ಬಂದಾಗ ನನ್ನನ್ನು ಆರಾಧಿಸು.

“ಪುಣ್ಯದ ಫಲದಿಂದ ರಾಜರ್ಷಿಗಳಾಗಿ, ಬ್ರಹ್ಮಜ್ಞಾನಿಗಳಾಗಿ ಹುಟ್ಟಿ ಭಗವಂತನನ್ನು ಆರಾಧಿಸುವವರ ಬಗೆಗೆ ವಿಶೇಷವಾಗಿ ಹೇಳಬೇಕೆನು?”    ಎಂದು ಪ್ರಶ್ನಿಸುತ್ತಾನೆ ಕೃಷ್ಣ. ಹೀಗೆ ಭಗವಂತನಲ್ಲಿ ಶರಣಾಗಿ ಆಶ್ರಯ ಬೇಡುವ ಪ್ರತಿಯೊಬ್ಬರ ರಕ್ಷಣೆಯ ಭಾರ ಭಗವಂತನದ್ದು. ಅದಕ್ಕಾಗಿ ಕೃಷ್ಣ ಇಲ್ಲಿ ನಮಗೆ ಕಿವಿ ಮಾತನ್ನು ಹೇಳುತ್ತಾನೆ: “ನೀನು ಈ ಪ್ರಪಂಚವೇ ಸರ್ವಸ್ವ ಎಂದು ಪ್ರಪಂಚದಲ್ಲಿ ಬಿದ್ದು ಒದ್ದಾಡಬೇಡ. ಏಕೆಂದರೆ ಇದು  ಅನಿತ್ಯಮ್ ಅಸುಖಮ್ ಲೋಕಮ್’. ಇದರಲ್ಲಿ ಸುಖವಿಲ್ಲ. ಇದು ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಆನಂದವನ್ನು ಪಡೆಯುವುದಕ್ಕೋಸ್ಕರ ನನ್ನನ್ನು ಆಶ್ರಯಿಸು. ನನಗೆ ಶರಣಾಗು. ನಿನ್ನನ್ನು ಉದ್ಧಾರ ಮಾಡುವ ಹೊಣೆ ನನ್ನದು”.  

ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕುರು    
ಮಾಮೇವೈಷ್ಯಸಿ ಯುಕ್ತ್ವೈವಮಾತ್ಮಾನಂ ಮತ್ಪರಾಯಣಃ    ೩೪

ತ್ ಮನಾಃ  ಭವ ಮತ್ ಭಕ್ತಃ  ತ್ ಯಾಜೀ ಮಾಮ್  ನಮಸ್ಕುರು         
ಮಾಮ್ ಏವ ಎಷ್ಯಸಿ ಯುಕ್ತ್ವಾ ಏವಮ್ ಆತ್ಮಾನಮ್  ತ್ ಪರಾಯಣಃ –ನನ್ನಲ್ಲೆ ಬಗೆಯಿಡು. ನನ್ನನ್ನು ಅತಿಶಯವಾಗಿ ಪ್ರೀತಿಸು. ನನ್ನನ್ನೆ ಆರಾಧಿಸು.ನನಗೇ ತಲೆಬಾಗು. ಬಗೆಯನ್ನು ಹೀಗೆ ಅಣಿಗೊಳಿಸಿ ನನಗೇ ಮೊರೆ ಹೊಕ್ಕಾಗ ನನ್ನನ್ನೆ ಸೇರುವೆ.

ನಾವು ನಮ್ಮ ಜೀವನದಲ್ಲಿ ಸಾಧಿಸಬೇಕಾದ ಒಂದೇ ಒಂದು ಸಂಗತಿ ಎಂದರೆ ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸುವುದು. ವ್ಯವಹಾರ ಪ್ರಪಂಚದಲ್ಲಿನ ಸಾವಿರಾರು ವಿಚಾರಗಳು ನಮ್ಮನ್ನು ಉದ್ಧಾರ ಮಾಡಲಾರವು. ಅವು ನಮ್ಮನ್ನು ಮರಳಿ ಅಧಃಪಾತಕ್ಕೆ ಕೊಂಡೊಯ್ಯುತ್ತವೆ. ಆದ್ದರಿಂದ ಅವೆಲ್ಲವನ್ನೂ ಬಿಟ್ಟು ಮನಸ್ಸಿನಲ್ಲಿ ಭಗವಂತನನ್ನು ತುಂಬಿಸಬೇಕು. ಭಗವಂತನನ್ನು ನಿರಂತರ ಪ್ರೀತಿಸಬೇಕು. ನೀನು ಎಷ್ಟು ಗಾಢವಾಗಿ ಭಗವಂತನನ್ನು ಪ್ರೀತಿಸುತ್ತೀಯೋ ಅಷ್ಟೇ ಗಾಢವಾಗಿ ಭಗವಂತ ನಿನ್ನನ್ನು ಪ್ರೀತಿಸುತ್ತಾನೆ. ಶ್ರೀ ಸೂಕ್ತದಲ್ಲಿ ಹೇಳುವಂತೆ “ತ್ವನ್ಮಾ ಭಜಸ್ವ ಪದ್ಮಾಕ್ಷಿ, ಯೇನ ಸೌಖ್ಯಂ ಲಭಾಮ್ಯಹಮ್”. ನಾನು ನಿನ್ನನ್ನು ಭಜನೆ ಮಾಡುತ್ತೇನೆ, ನೀನು ನನ್ನನ್ನು ಭಜನೆ ಮಾಡು”. ಇಲ್ಲಿ ಭಜನೆ ಎಂದರೆ ಭಕ್ತಿಯಿಂದ ಪ್ರೀತಿಸುವುದು.
ನೀನು ಏನು ಪೂಜೆ ಮಾಡುತ್ತೀಯೋ ಅದು ಭಗವಂತನ  ಪೂಜೆಯಾಗಿರಲಿ, ನಿನ್ನ ಎಲ್ಲಾ ಪ್ರೀತಿಯಲ್ಲಿ ಭಗವಂತನನ್ನು ಕಾಣು. ನೀನು ಮಾಡುವ ಎಲ್ಲಾ ನಮಸ್ಕಾರ ಭಗವಂತನ ನಮಸ್ಕಾರವಾಗಿರಲಿ. ಹೀಗೆ ಮಾಡಿ ನಿನ್ನ ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸಿ ಇಡಿಯ ಬದುಕನ್ನು ಭಗವನ್ಮಯ ಮಾಡಿಕೊ- ನಿನಗೆ ಎಲ್ಲಕ್ಕಿಂತ ದೊಡ್ಡ ವಸ್ತು ಭಗವಂತ, ಬದುಕಿನ ಸಾರ ಸರ್ವಸ್ವ ಭಗವಂತ, ನಿರಂತರ ಚಿಂತನೆಯ ವಸ್ತು ಭಗವಂತನಾಗಲಿ. ನಿನ್ನ ಬದುಕಿನ ಒಂದೊಂದು ಕ್ರಿಯೆಯೂ ಭಗವಂತನ ಆರಾಧನೆಯಾಗಲಿ. ಆಗ “ನೀನು ನನ್ನನ್ನು ಸೇರಲೇ ಬೇಕು” ಎನ್ನುತ್ತಾನೆ ಕೃಷ್ಣ. ಹೀಗೆ ಮೋಕ್ಷ ಸಾಧಕವಾದ ಉಪಾಸನೆಯನ್ನು ಕೃಷ್ಣ ವಿವರಿಸಿದ ಅನ್ನುವಲ್ಲಿಗೆ ಒಂಬತ್ತನೆಯ ಅಧ್ಯಾಯ ಮುಕ್ತಾಯವಾಯಿತು.     

ಇತಿ  ನವಮೋSಧ್ಯಾಯಃ
      
ಒಂಬತ್ತನೆಯ ಅಧ್ಯಾಯ ಮುಗಿಯಿತು   
*******

Bhagavad Gita Kannada Chapter-09 Shloka 28-31


ಭಾಗವತ ಧರ್ಮ ಅನುಷ್ಠಾನದಿಂದ ಎನು ಫಲ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.
        
ಶುಭಾಶುಭಫಲೈರೇವಂ ಮೋಕ್ಷ್ಯಸೇ ಕರ್ಮಬಂಧನೈಃ
ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ ೨೮

ಶುಭಶುಭ ಭಲೈಃ ಏವಮ್  ಮೋಕ್ಷ್ಯಸೇ ಕರ್ಮ ಬಂಧನೈಃ
ಸಂನ್ಯಾಸ ಯೋಗ ಯುಕ್ತತ್ಮಾ ವಿಮುಕ್ತಃ  ಮಾಮ್ ಉಪೈಷ್ಯಸಿ-ಹೀಗೆ ಬದುಕಿದಾಗ, ಒಳಿತು-ಕೆಡುಕುಗಳ ಕಡೆಗೆಳೆವ ಕರ್ಮದ ಸೆರೆಯಿಂದ ಪಾರಾಗುವೆ. ಫಲದ ಹಂಗು ತೊರೆದು ಕರ್ತವ್ಯದಲ್ಲಿ ಬಗೆ ತೊಡಗಿಸುತ್ತ ಸೆರೆ ಕಳಚಿಕೊಂಡು ನನ್ನ ಬಳಿ ಸೇರುವೆ.

ನಾವು ಯಾವುದೇ ಕರ್ಮವನ್ನು ‘ನನಗೆ  ಇಂತಹ ಫಲ ಬರಬೇಕು’ ಎನ್ನುವ ಫಲದ ನಂಟಿನಿಂದ ಮತ್ತು ‘ನಾನು ಈ ಕರ್ಮವನ್ನು ಮಾಡಿದೆ’ ಎನ್ನುವ ಅಹಮ್ ಇದ್ದು ಮಾಡಿದಾಗ ಆ ಕರ್ಮ ನಮಗೆ ಅಂಟುತ್ತದೆ. ಅದಕ್ಕೋಸ್ಕರ ಹಿಂದಿನ ಕಾಲದಲ್ಲಿ  ‘ಕರ್ಮಕರಿಷ್ಯೇ’ ಎಂದು ಸಂಕಲ್ಪ ಮಾಡುವಾಗ ಈ ರೀತಿ ಹೇಳುತ್ತಿದ್ದರು:
ಭಗವತೋ ಬಲೇನ ಭಗವತೋ ವೀರ್ಯೇನ ಭಗವದಃ ತೇಜಸಾ |
ಭಗವತಾ ಕರ್ಮಣಾ ಕರ್ಮಕರಿಷ್ಯಾಮಿ ಭಗವತೋ ವಾಸುದೇವಸ್ಯಃ ||
“ನಾನು ಮಾಡುವ ಕರ್ಮ ನನ್ನ ಕರ್ಮವಲ್ಲ, ನನ್ನೊಳಗಿರುವ ಭಗವಂತ ಮಾಡುವ ಕರ್ಮ. ಅದರ ಹಿಂದಿರುವ ಶಕ್ತಿ ಸಾಮರ್ಥ್ಯ ಎಲ್ಲವೂ ಭಗವಂತನದ್ದು, ನನ್ನದೇನೂ ಇಲ್ಲ” ಎಂದು. ಇದು ಭಾಗವತಧರ್ಮದ ಸಂಕಲ್ಪ. ಭಗವತ್ ಪ್ರೀತ್ಯರ್ಥ ಮಾಡಿದ ಯಾವ ಕರ್ಮವೂ ನಮಗೆ ಬಂಧನವಾಗುವುದಿಲ್ಲ. ಬ್ರಹ್ಮಸೂತ್ರದಲ್ಲಿ ವೇದವ್ಯಾಸರು ಇದನ್ನು ಹೀಗೆ ಹೇಳಿದ್ದಾರೆ: “ಭಗವಂತನ ಜ್ಞಾನ ನಮ್ಮೊಳಗೆ ದೃಢವಾಗಿ ಅಪರೋಕ್ಷವಾದಾಗ, ಹಿಂದೆ ಫಲಕಾಮನೆಯಿಂದ ಮಾಡಿದ ಎಲ್ಲಾ ಪಾಪಗಳನ್ನು ಆ ಜ್ಞಾನಾಗ್ನಿ ಸುಟ್ಟುಬಿಡುತ್ತದೆ” ಎಂದು.  ಆದ್ದರಿಂದ ಜ್ಞಾನ ಎಲ್ಲಕ್ಕಿಂತ ಶ್ರೇಷ್ಠ. ಇದನ್ನು ನಾವು ಕಠೋಪನಿಷತ್ತಿನಲ್ಲಿ ಬರುವ ಯಮ ಮತ್ತು ನಚಿಕೇತನ ಸಂಭಾಷಣೆಯಲ್ಲಿ ಕಾಣುತ್ತೇವೆ.  ಅಲ್ಲಿ ನಚಿಕೇತ ಯಮನಲ್ಲಿ ಜ್ಞಾನವನ್ನು ವರವಾಗಿ ಬೇಡಿದಾಗ ಯಮ ಆತನಿಗೆ “ನಿನಗೆ ಎಷ್ಟು ಸಂಪತ್ತು ಬೇಕು ಅದನ್ನು ಕೇಳು, ನಿನ್ನನ್ನು ಬೇಕಿದ್ದರೆ ದೊಡ್ಡ ಸಾಮ್ರಾಜ್ಯದ ಚಕ್ರವರ್ತಿಯನ್ನಾಗಿ ಮಾಡುತ್ತೇನೆ” ಎನ್ನುತ್ತಾನೆ. ಇದಕ್ಕೆ ನಚಿಕೇತ ಹೇಳುತ್ತಾನೆ “ ಇದೆಲ್ಲವೂ ನರಕಕ್ಕೆ ಹೋಗುವ ಸಾಧನಗಳು, ಇದ್ಯಾವುದೂ ನನಗೆ ಬೇಡ. ನನಗೆ ಭಗವಂತನ ಬಗ್ಗೆ ತಿಳಿಯಬೇಕು” ಎಂದು. ಹೀಗೆ ನಮ್ಮ ಪಾಪ ಕರ್ಮವನ್ನು ಸಂಪೂರ್ಣ ತೊಳೆದುಕೊಂಡು ಮೋಕ್ಷಕ್ಕೆ ಹೋಗುವ ಏಕಮಾತ್ರ ಮಾರ್ಗ ಭಗವಂತನ ಬಗೆಗಿನ ಜ್ಞಾನ. ಭಗವದರ್ಪಣ ಬುದ್ಧಿಯಿಂದ ಕರ್ಮ ಅನುಷ್ಠಾನ ಮಾಡಿದಾಗ ಶುಭಾಶುಭ ಕರ್ಮದ ಕಟ್ಟಿನಿಂದ ಬಿಡುಗಡೆ ಸಾಧ್ಯ.  ಕೃಷ್ಣ ಹೇಳುತ್ತಾನೆ “ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ” ಎಂದು. ಇಲ್ಲಿ ಹೇಳುವ ಸಂನ್ಯಾಸ ಒಂದು ಯೋಗ(ಉಪಾಯ). ಎಲ್ಲವನ್ನೂ ಭಗವಂತನಿಗೆ ಅರ್ಪಣೆ ಮಾಡಿ ಫಲಕಾಮನೆ ಇಲ್ಲದೆ ಭಗವತ್ ಪೂಜಾ ದೃಷ್ಟಿಯಿಂದ ಮಾಡುವಂತಹ ಸಾತ್ವಿಕರ ಸಾಧನೆ. ಸಂನ್ಯಾಸ ಎಂದರೆ ಕಾಮ-ಸಂಕಲ್ಪವನ್ನು ಭಗವಂತನಲ್ಲಿ ಅರ್ಪಿಸುವುದು. ಕಾಮ ಅಂದರೆ ಮಾಡಬೇಕುಎಂದು ಬಯಸುವುದು, ಸಂಕಲ್ಪ ಎಂದರೆ  ಮಾಡುತ್ತೇನೆಎಂದು ನಿರ್ಧರಿಸುವುದು. ಕಾಮಸಂಕಲ್ಪ ವರ್ಜಿತ-ಸಂನ್ಯಾಸ. ಹೀಗೆ ಭಾಗವತ ಧರ್ಮ ಪಾಲನೆ ಮಾಡಿದರೆ ಸುಲಭವಾಗಿ ಭಗವಂತನನ್ನು ಸೇರಬಹುದು-“ನಿಶ್ಚಿತವಾಗಿಯೂ ನನ್ನನ್ನು ಸೇರುತ್ತಾರೆ” ಎನ್ನುವುದು ಕೃಷ್ಣನ ಭರವಸೆ.  

ಸಮೋSಹಂ ಸರ್ವಭೂತೇಷು ನ ಮೇ ದ್ವೇಷ್ಯೋSಸ್ತಿ ನ ಪ್ರಿಯಃ
ಯೇ ಭಜಂತಿ ತು ಮಾಂ ಭಕ್ತ್ಯಾ ಮಯಿ ತೇ ತೇಷು ಚಾಪ್ಯಹಮ್ ೨೯

ಮಃ ಅಮ್  ಸರ್ವಭೂತೇಷು ನ ಮೇ ದ್ವೇಷ್ಯಃ ಅಸ್ತಿ ನ ಪ್ರಿಯಃ
ಯೇ ಭಜಂತಿ ತು ಮಾಮ್  ಭಕ್ತ್ಯಾ ಮಯಿ ತೇ ತೇಷು ಚ ಅಪಿ ಅಹಮ್-ಎಲ್ಲ ಜೀವಿಗಳೂ ನನಗೆ ಒಂದೆ. ನನಗೆ ಹಗೆಯನೂ ಇಲ್ಲ, ಗೆಳೆಯನೂ ಇಲ್ಲ. ಆದರೆ ಯಾರು ನನ್ನನ್ನು ಭಕ್ತಿಯಿಂದ ಒಲಿಸುತ್ತಾರೆ ಅವರು ನನ್ನ ವಶ; ನಾನು ಅವರ ವಶ.

ಭಗವಂತನಿಗೆ ಯಾರ ಮೇಲೂ ಹಗೆಯಾಗಲೀ ಅಥವಾ ಗೆಳೆತನವಾಗಲೀ ಇಲ್ಲ. ಆತ ಪ್ರೀತಿಸುವುದು ವ್ಯಕ್ತಿಯನ್ನಲ್ಲ ಬದಲಿಗೆ ವ್ಯಕ್ತಿಯಲ್ಲಿರುವ ಜ್ಞಾನವನ್ನು ಮತ್ತು ಭಕ್ತಿಯನ್ನು. ಅರ್ಹತೆ ಇದ್ದವರು ಭಗವಂತನನ್ನು ಭಕ್ತಿಯಿಂದ ಒಲಿಸುತ್ತಾರೆ. ನಿಜವಾದ ಭಕ್ತರಿಗೆ ಭಗವಂತ ವಶನಾಗುತ್ತಾನೆ.
ಅಪಿ ಚೇತ್ ಸುದುರಾಚಾರೋ ಭಜತೇ ಮಾಮನನ್ಯಭಾಕ್
ಸಾಧುರೇವ ಸ ಮಂತವ್ಯಃ ಸಮ್ಯಗ್ ವ್ಯವಸಿತೋ ಹಿ ಸಃ ೩೦

ಅಪಿ ಚೇತ್ ಸು ದುರಾಚಾರಃ  ಭಜತೇ ಮಾಮ್ ಅನನ್ಯ ಭಾಕ್
ಸಾಧುಃ ಏಸಃ  ಮಂತವ್ಯಃ ಸಮ್ಯಗ್ ವ್ಯವಸಿತಃ  ಹಿ ಸಃ –ಬೇರೆಡೆಗೆ ಬಗೆಗೊಡದೆ ನನ್ನಲ್ಲೇ ಭಕ್ತಿಯಿಡುವವನು ಎಂಥ ನಡತೆಗೇಡಿಯಾದರೂ ಮೂಲತಃ ಒಳ್ಳೆಯವನೆಂದೇ ತಿಳಿಯಬೇಕು. ಏಕೆಂದರೆ ಅವನು ಖಚಿತವಾಗಿ ನಿಜವನರಿತವನು.

ನಿಜವಾದ ಭಕ್ತರು ಸಾಮಾನ್ಯವಾಗಿ ಎಂದೂ ದುರಾಚಾರಿಗಳಾಗಿರುವುದಿಲ್ಲ. ಆಕಸ್ಮಾತ್ ಒಬ್ಬ ಸಾತ್ವಿಕ ಯಾವುದೋ ಪ್ರಾರಬ್ಧ ಕರ್ಮದಿಂದ ಒಂದು ಜನ್ಮದಲ್ಲಿ ನಡತೆಗೇಡಿಯಾಗಿದ್ದರೂ ಸಹ ಆತ ಮೂಲತಃ ಉತ್ತಮನೇ ಆಗಿರುತ್ತಾನೆ. ಏಕೆಂದರೆ ಆತ ತನ್ನ ಅನೇಕ ಜನ್ಮದಲ್ಲಿ ಭಗವತ್ ಸಾಧನೆ ಮಾಡಿರುತ್ತಾನೆ. ಇದು ಸಾಮಾನ್ಯರಾದ ನಮಗೆ ಕಾಣದಿದ್ದರೂ ಕೂಡಾ ಭಗವಂತನಿಗೆ ಕಾಣುತ್ತದೆ. ಭಗವಂತನ ದೃಷ್ಟಿಯಲ್ಲಿ ಆತ ಉತ್ತಮನೆನಿಸಿರುತ್ತಾನೆ. ಈ ಕಾರಣಕ್ಕಾಗಿ ನಾವು ಯಾರನ್ನೂ ಹಗುರವಾಗಿ ಕಾಣಬಾರದು. ಒಬ್ಬ ಕೆಟ್ಟ ದಾರಿಯಲ್ಲಿ ನಡೆಯುತ್ತಿದ್ದರೆ ಅದಕ್ಕೆ ಅನೇಕ ಕಾರಣಗಳಿರಬಹುದು. ಆತ ಸಾತ್ವಿಕನೂ ಇರಬಹುದು. ಆದರೆ ಆತನ ಪ್ರರಾಬ್ಧ ಕರ್ಮ ಆತನನ್ನು ಆ ಮಾರ್ಗದಲ್ಲಿ ನಡೆಯುವಂತೆ ಮಾಡಿರಬಹುದು. ಉತ್ತಮನೆನಿಸಿದವನು ಶಾಶ್ವತವಾಗಿ ಆ ದಾರಿಯಲ್ಲಿ ಸಾಗುವುದಿಲ್ಲ ಎನ್ನುತ್ತಾನೆ ಕೃಷ್ಣ ಮುಂದಿನ ಶ್ಲೋಕದಲ್ಲಿ.   

ಕ್ಷಿಪ್ರಂ ಭವತಿ ಧರ್ಮಾತ್ಮಾ ಶಶ್ವಚ್ಛಾನ್ತಿಂ ನಿಗಚ್ಛತಿ
ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ ೩೧

ಕ್ಷಿಪ್ರಮ್  ಭವತಿ ಧರ್ಮ ಆತ್ಮಾ ಶಶ್ವತ್ ಶಾಂತಿಮ್  ನಿಗಚ್ಛತಿ
ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ –ಅವನು ಒಡನೆಯೆ ಸರಿದಾರಿ ಹಿಡಿಯುತ್ತಾನೆ; ಅಳಿವಿರದ ಸುಖದ ಸೆಲೆಯನ್ನು ಪಡೆಯುತ್ತಾನೆ. ಕೌಂತೇಯ, ಇದನ್ನು ಆಣೆಯಿಟ್ಟಾಡು: ‘ನನ್ನ ಭಕ್ತನೆಂದೂ ಕೆಡುವುದಿಲ್ಲ’.

ಹೀಗೆ ಪ್ರರಾಬ್ಧ ಕರ್ಮದಿಂದ ದಾರಿತಪ್ಪಿದವರು ಯಾವುದೋ ಒಂದು ಸಂದರ್ಭದಲ್ಲಿ ಒಡನೆಯೇ ತಾವು ಮಾಡುತ್ತಿರುವ ತಪ್ಪಿನ ಅರಿವಾಗಿ ಸರಿದಾರಿಯನ್ನು ಹಿಡಿಯುತ್ತಾನೆ, ಮತ್ತು ಅಳಿವಿರದ ಮೋಕ್ಷವನ್ನು ಸೇರುತ್ತಾನೆ. ಇದು ನಿಶ್ಚಿತ. ಇದನ್ನು ನೀನು ಆಣೆಮಾಡಿ ಹೇಳು ಎನ್ನುತ್ತಾನೆ ಕೃಷ್ಣ. ಇದಕ್ಕೆ ಉತ್ತಮ ಉದಾಹರಣೆ ಅಜಾಮಿಳನ ಕಥೆ. ತನ್ನ ಜೀವನದಲ್ಲಿ ಮಾಡಬಾರದ್ದನ್ನೆಲ್ಲಾ ಮಾಡಿದ ಅಜಾಮಿಳ ಮೂಲತಃ ಒಬ್ಬ ಶ್ರೇಷ್ಠ ಜೀವ. ಇಂತಹ ಅಜಾಮಿಳನಿಗೆ ಭಗವಂತ ಜೀವನದ ಕೊನೆಗಾಲದಲ್ಲಿ ಸತ್ಯದ ದಾರಿ ತೋರಿಸಿ ಉದ್ಧಾರ ಮಾಡುತ್ತಾನೆ. ಆತ ತನ್ನ ಕೊನೆಗಾಲದಲ್ಲಿ ಸಾಧನೆ ಮಾಡಿ ಮೋಕ್ಷವನ್ನು ಸೇರುತ್ತಾನೆ.
ಇಲ್ಲಿ ಕೃಷ್ಣ ಅರ್ಜುನನಲ್ಲಿ ಏಕೆ “ನೀನು ಪ್ರತಿಜ್ಞೆ ಮಾಡು” ಎಂದು ಹೇಳುತ್ತಾನೆ ಎಂದರೆ-ಭಗವಂತ ಭಕ್ತರಿಗಾಗಿ ತನ್ನ ಪ್ರತಿಜ್ಞೆಯನ್ನು ಮುರಿದಾನು ಆದರೆ ಎಂದೂ ಭಕ್ತರ ಪ್ರತಿಜ್ಞೆಯನ್ನಲ್ಲ. ಇದಕ್ಕೆ ಉದಾಹರಣೆ ಮಹಾಭಾರತ ಯುದ್ಧದಲ್ಲಿ ನಡೆದ ಒಂದು ಘಟನೆ:
ಮಹಾಭಾರತ ಯುದ್ಧದ ಮೊದಲು ತಾನು ಶಸ್ತ್ರ ಹಿಡಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಕೃಷ್ಣ, ಯುದ್ಧದ ನಡುವೆ ಅರ್ಜುನ ಭೀಷ್ಮನ ಎದುರು ಯುದ್ಧ ಮಾಡುವುದಕ್ಕೆ ಹಿಂಜರಿದಾಗ, ಕೋಪಾವೇಶದಿಂದ  ಭೀಷ್ಮನನ್ನು ಸಾಯಿಸಲೆಂಬಂತೆ ರಥದಚಕ್ರವೊಂದನ್ನು ಹಿಡಿದು ಮುಂದೊತ್ತಿ ಬರುತ್ತಾನೆ! ಇದನ್ನು ನೋಡಿದ ಬೀಷ್ಮ  ತನ್ನ ಎರಡೂ ಕೈಗಳನ್ನು ಜೋಡಿಸಿ  ಹೀಗೆ ಹೇಳುತ್ತಾನೆ: " ಓ ಭಗವಂತ; ನಿನ್ನ ಕೈಯಲ್ಲಿ ಚಕ್ರ ಹಿಡಿಸುತ್ತೇನೆ, ಹಾಗೆ ಯುದ್ಧ ಮಾಡಿಸುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡಿದ್ದೆ.  ಚಕ್ರ ಹಿಡಿಯುವುದಿಲ್ಲ ಎಂದಿದ್ದೆ ನೀನು. ಆದರೆ ಈಗ ನನ್ನ ಪ್ರತಿಜ್ಞೆಯನ್ನು ಈಡೇರಿಸಲು ನೀನು ಚಕ್ರ ಹಿಡಿದಿರುವೆ. ನಿನ್ನನ್ನೇ ನೀನು ಮರೆತಿರುವೆ, ಆದರೆ  ನಿನ್ನ ಭಕ್ತನ ಪ್ರತಿಜ್ಞೆಯನ್ನಲ್ಲ; ನೀನಲ್ಲದೆ  ನಮಗೆ  ಗತಿ ಇನ್ಯಾರು?" ಎಂದು.  ಈ ಘಟನೆಯಲ್ಲಿ ಭಗವಂತ ಎಂತಹ ಭಕ್ತವತ್ಸಲ ಎನ್ನುವುದು ತಿಳಿಯುತ್ತದೆ.

Saturday, August 6, 2011

Bhagavad Geeta Kannada Chapter-09 Shloka 26-27


ಮುಂದಿನ ಶ್ಲೋಕಕ್ಕೆ ಹೋಗುವ ಮುನ್ನ ಇಲ್ಲಿ ನಾವು ಒಂದು ವಿಚಾರವನ್ನು ಸ್ಪಷ್ಟವಾಗಿ ತಿಳಿಯಬೇಕು. ನಾವು ನಮ್ಮ ದೈನಂದಿನ ಜೀವನದಲ್ಲಿ ಗಣಹೋಮ, ನವಗ್ರಹಹೋಮ, ದೈವಾರಾಧನೆ, ಸಂಕಷ್ಟಿ, ಇತ್ಯಾದಿ ರೂಪದಲ್ಲಿ ಉಪಾಸನೆ ಮಾಡುತ್ತೇವೆ. ಇದು ತಪ್ಪೇ? ನಾವು ಗಣಪತಿ ಅಥವಾ ಇನ್ಯಾವುದೋ ಪ್ರತೀಕದಲ್ಲಿ ಭಗವಂತನ ಆರಾಧನೆ ಮಾಡಿದರೆ ನಮಗೆ ಮೋಕ್ಷ ಪ್ರಾಪ್ತಿ ಇಲ್ಲವೇ? ಯಾವುದು ಸರಿ, ಯಾವುದು ತಪ್ಪು? ಯಾವುದು ತ್ರೈವಿಧ್ಯಧರ್ಮ, ಯಾವುದು ಭಾಗವತ ಧರ್ಮ  ?
ನಮ್ಮಲ್ಲಿ ಇಂದು ಭಾಗವತ ಧರ್ಮ ಕಣ್ಮರೆಯಾಗುತ್ತಿದೆ. ಯಾವುದೇ ಪ್ರತೀಕದ ಅಂತರ್ಯಾಮಿ ಭಗವಂತನ ಪೂಜೆ ತಪ್ಪಲ್ಲ. ಆದರೆ ಅದರ ಹಿಂದಿರುವ ನಮ್ಮ ಸಂಕಲ್ಪ ತಪ್ಪು. ಉದಾಹರಣೆಗೆ ನವಗ್ರಹ ಹೋಮ. ಒಂದು ವೇಳೆ ನಾವು ಯಾವ ಫಲ ಕಾಮನೆ ಇಲ್ಲದೆ, ಕೇವಲ ಮೋಕ್ಷ ಪ್ರಾಪ್ತಿಗಾಗಿ,  ಸಕಲ ದೇವತಾಪರಿವಾರನಾದ, ನವಗ್ರಹ ಅಂತರ್ಗತ ನಾರಾಯಣ ಪ್ರೀತ್ಯರ್ಥ  ನವಗ್ರಹ ಹೋಮ ಮಾಡಿದರೆ ಏನೂ ತಪ್ಪಿಲ್ಲ. ಆದರೆ   ಅಲ್ಲಿ ನಾವು  ‘ನವಗ್ರಹ ಅಂತರ್ಗತ ನಾರಾಯಣ ಪ್ರಸನ್ನನಾಗಿ ಆ ಮೂಲಕ ನವಗ್ರಹ ದೋಷ ಪರಿಹಾರ ಮಾಡಲಿ’ ಎಂದು ಸಂಕಲ್ಪ ಮಾಡಿದಾಗ   ಅದು ತ್ರೈವಿಧ್ಯ ಧರ್ಮವಾಗುತ್ತದೆ. ಸಂಕಲ್ಪ ಮಾಡುವಾಗ ಯಾವುದೇ ಕಾಮನೆ ಸೇರಿಸದೆ ಕೇವಲ ಭಗವದ್ ಪ್ರೀತ್ಯರ್ಥ ಎಂದು ಯಾವ ಕಾಮ್ಯ ಕರ್ಮ ಮಾಡಿದರೂ ಅದು ಭಾಗವತ ಧರ್ಮ. ಭಗವಂತ ಸುಪ್ರೀತನಾದರೆ ಎಲ್ಲವೂ ಸಿದ್ಧಿ. ಅವನು ಕೊಟ್ಟಿದ್ದನ್ನು ಸಂತೋಷವಾಗಿ ಭೋಗಿಸು, ಕೊಡದಿದ್ದನ್ನು ಬಯಸಬೇಡ. ನಿನಗೆ ಬಂದ ಕಷ್ಟ ನಿವಾರಣೆ ಮಾಡು ಎಂದು ಭಗವಂತನನ್ನು ಪೂಜಿಸಬೇಡ, ಬದಲಿಗೆ ಬಂದದ್ದನ್ನು ಪ್ರಸಾದವಾಗಿ ಸ್ವೀಕರಿಸು ಮತ್ತು ಜ್ಞಾನ ವೈರಾಗ್ಯ ಭಕ್ತಿ-ಮೋಕ್ಷ ಕೊಡು ಎಂದು ನಿರಂತರ ಭಗವಂತನನ್ನು ಪ್ರಾರ್ಥಿಸು. ನಿನ್ನ ರಕ್ಷಣೆಯ ಭಾರ ಆ ಭಗವಂತನದ್ದು. ಅದಕ್ಕಾಗಿ ನೀನು ತಲೆ ಕೆಡಿಸಿಕೊಳ್ಳಬೇಡ. ನಿನ್ನ ಜೀವನದಲ್ಲಿ ಏನು ನಡೆಯುತ್ತಿದೆ ಅದು ಆಕಸ್ಮಿಕವಲ್ಲ. ಅದು ಭಗವಂತನ ಇಚ್ಛೆ, ಅದರ ನಿವಾರಣೆಗಾಗಿ ನೀನು ಭಗವಂತನನ್ನು ಪೂಜಿಸುವುದಲ್ಲ ಬದಲಿಗೆ ಭಗವಂತನನ್ನು ಸೇರಲು ಭಗವಂತನನ್ನು ಪೂಜಿಸುವುದು. ಈ ರೀತಿ ನಾವು ನಮ್ಮ ಸಂಕಲ್ಪದ ಹಿಂದಿನ ಅನುಸಂಧಾನವನ್ನು ಬದಲಿಸಿಕೊಂಡಾಗ ಅದು ಭಾಗವತ ಧರ್ಮವಾಗುತ್ತದೆ. ಒಬ್ಬ ತ್ರೈವಿಧ್ಯ ತನ್ನ ಗುರುವಿಗೆ ‘ನನ್ನ ಗುರು’ ಎಂದು ನಮಸ್ಕಾರ ಮಾಡಿದರೆ ಭಾಗವತ ‘ಆ ಗುರುಗಳ ಒಳಗೆ ಭಗವಂತ  ಕೂತು ನನಗೆ ಪಾಠ ಹೇಳುತ್ತಿದ್ದಾನೆ’ ಎಂದು ತಿಳಿದು ನಮಸ್ಕಾರ ಮಾಡುತ್ತಾನೆ. ಭಾಗವತ ತನ್ನೆಲ್ಲಾ ಕ್ರಿಯೆಯಲ್ಲಿ ಭಗವಂತನನ್ನು ಕಾಣುತ್ತಾನೆ. ಆತ ತನ್ನೆಲ್ಲಾ ಕ್ರಿಯಾ ಕರ್ಮದಲ್ಲಿ ಮೋಕ್ಷ ಮತ್ತು ಭಗವಂತನನ್ನು ಬಿಟ್ಟು ಇನ್ನೇನನ್ನೂ ಬಯಸುವುದಿಲ್ಲ. ಆತನ ಪೂಜಾ ಸಂಕಲ್ಪದಲ್ಲಿ  ಮೋಕ್ಷದ ಬಯಕೆಯನ್ನು ಬಿಟ್ಟು ಇನ್ಯಾವುದೇ ಬಯಕೆ ಇರುವುದಿಲ್ಲ.  ನಾವು ಈ ಎತ್ತರಕ್ಕೇರುವುದು ಅಸಾಧ್ಯವಲ್ಲ. ಇದನ್ನು ಸಾಧ್ಯ ಮಾಡಲು ಪ್ರಯತ್ನ ಬೇಕು ಅಷ್ಟೇ. ನಾವು ಎಷ್ಟುಎಷ್ಟು ಭಗವತ್ ಪ್ರೀತ್ಯರ್ಥ ಕರ್ಮ ಮಾಡುತ್ತೇವೋ ಅಷ್ಟುಅಷ್ಟು ಹೆಚ್ಚು ಮೋಕ್ಷಕ್ಕೆ ಹತ್ತಿರವಾಗುತ್ತೇವೆ. ಭಗವಂತನಲ್ಲಿ ‘ನನಗೆ ಇದನ್ನು ಕೊಡು’ ಎಂದಾಗಾಲಿ ಅಥವಾ  ‘ಇದನ್ನು ನಿವಾರಿಸು’ ಎಂದಾಗಲಿ  ಎಂದೂ  ಕೇಳಬೇಡ. ನಿನಗೆ ಏನು ಬೇಕು ಎನ್ನುವುದು ಭಗವಂತನಿಗೆ ಗೊತ್ತಿದೆ, ಅದನ್ನು ಭಗವಂತನಿಗೆ ಬಿಡು. ಕೇವಲ ಭಗವತ್ ಪ್ರೀತಿಗಾಗಿ, ಮೋಕ್ಷ ಸಾಧನೆಗಾಗಿ  ಕರ್ಮ ಮಾಡು”. “ಇದು ಕೇವಲ ಭೀಮಸೇನ/ವಾಯುದೇವರಿಗೆ ಮಾತ್ರ” ಎಂದು ಪಲಾಯನ ವಾದ ಮಾಡದೆ ಯಾವುದೇ ಫಲ ಕಾಮನೆ ಇಲ್ಲದೆ ಪೂರ್ಣ ಭಕ್ತಿಯಿಂದ ಭಗವಂತನ ಪೂಜೆ ಮಾಡು. ಪೂಜೆಯಲ್ಲಿ ನಿನಗೆ ಬೇಡಲು ಇರುವ ಅಧಿಕಾರ ಕೇವಲ ‘ಮೋಕ್ಷ ಮತ್ತು ಭಗವಂತ’. ಅದನ್ನು ಪಡೆಯಲು ನಿನ್ನ ಸಾಧನೆಯನ್ನು ಮೀಸಲಿಡು. ಜೀವನದಲ್ಲಿ ಬರುವ ಏಳು ಬೀಳು ಎಲ್ಲವೂ ನಶ್ವರ, ಆ ಬಗ್ಗೆ ಯೋಚಿಸದೆ, ಸಂಸಾರದಿಂದ ಕಳಚಿಕೊಂಡು ಸಾವಿಲ್ಲದ ಮೋಕ್ಷವನ್ನು ಸೇರುವುದಕ್ಕಾಗಿ ಸಾಧನೆ ಮಾಡು.  ಇದು ಇಲ್ಲಿರುವ ಮೂಲ ಸಂದೇಶ.
ಭಗವಂತನ ಪೂಜೆಗೆ ಬೇಕಾಗಿರುವುದು ಧನ-ಕನಕವಲ್ಲ. ಕೇವಲ ನಿಷ್ಕಾಮ ಭಕ್ತಿ. ಭಗವಂತನ ಪೂಜೆ ಎಷ್ಟು ಸುಲಭ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ:         

ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ
ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ ೨೬

ಪತ್ರಮ್  ಪುಷ್ಪಮ್  ಫಲಮ್  ತೋಯಮ್  ಯಃ  ಮೇ ಭಕ್ತ್ಯಾ ಪ್ರಯಚ್ಛತಿ
ತ್ ಅಮ್  ಭಕ್ತಿ ಉಪಹೃತಮ್ ಅಶ್ನಾಮಿ ಪ್ರಯತತ್ಮನಃ –ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೆ ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಆ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.

  ಮಹೋನ್ನತನಾದ ಭಗವಂತನ ಪೂಜೆಗೆ ಮೂಲವಾಗಿ ಬೇಕಾಗಿರುವುದು ‘ತನ್ನನ್ನು ತಾನು ಸಂಪೂರ್ಣ ತೊಡಗಿಸಿಕೊಳ್ಳುವುದು(involvement)’, ಮತ್ತು ‘ಮನಸ್ಸು ತುಂಬಿ ಆರಾಧನೆ’ ಮಾಡುವುದು. ಮನಸ್ಸಿನಲ್ಲಿ ಭಕ್ತಿ ತುಂಬಿ ತುಳಸಿ ಪತ್ರೆಯನ್ನೋ, ಹೂವನ್ನೋ ಅರ್ಪಿಸಿದರೆ ಅದನ್ನು ಭಗವಂತ ಪ್ರೀತಿಯಿಂದ ಸ್ವೀಕರಿಸುತ್ತಾನೆ. ಇಲ್ಲಿ ಬಂಗಾರದ ಪೀಠವಾಗಲೀ, ಬೆಳ್ಳಿಯ ಹರಿವಾಣವಾಗಲಿ, ಪಂಚಪಾತ್ರೆಯಾಗಲಿ ಏನೂ ಬೇಡ. ಮನೆಯಲ್ಲಿ, ಮನೆ ತೋಟದಲ್ಲಿ ಏನಿದೆ ಅದನ್ನೇ ಅರ್ಪಿಸು. ಮನೆಯಲ್ಲಿ ಹಾಲಿಲ್ಲದಿದ್ದರೆ ಒಂದು ಲೋಟ ನೀರನ್ನು ಭಕ್ತಿಯಿಂದ ಅರ್ಪಿಸು. ಆದರೆ ಅದರ ಹಿಂದೆ ಭಾವ ಶುದ್ಧಿ ಇರಲಿ ಅಷ್ಟೇ.  ಕೃಷ್ಣ ಹೇಳುತ್ತಾನೆ “ಯೋ ಮೇ ಭಕ್ತ್ಯಾ ಪ್ರಯಚ್ಛತಿ” ಎಂದು. ಭಗವಂತ ಬಯಸುವುದು ನಮ್ಮ ಅಂತರಂಗದ ಪ್ರೀತಿಯನ್ನು ಮತ್ತು ಹೃದಯವಂತಿಕೆಯನ್ನು ಹೊರತು ಹೊರಗಿನ ವೈಭವವನ್ನಲ್ಲ. “ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ”-“ನೀನು ಮನಸ್ಸನ್ನು ನನ್ನಲ್ಲಿ ನೆಲೆಗೊಳಿಸಿ, ಭಕ್ತಿಯಿಂದ ಏನು ಕೊಟ್ಟರೂ ಅದನ್ನು ನಾನು ಸ್ವೀಕರಿಸುತ್ತೇನೆ” ಎನ್ನುತ್ತಾನೆ ಕೃಷ್ಣ. ರಾಮಾಯಣದಲ್ಲಿ ಬರುವ ಶಬರಿಯ ಕಥೆ ಭಗವಂತನ ಈ ನುಡಿಗೆ ಒಂದು ದೃಷ್ಟಾಂತ.  

ತ್ ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್  
ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್ ೨೭

ತ್ ಕರೋಷಿ ಯತ್ ಅಶ್ನಾಸಿ ಯತ್ ಜುಹೋಷಿ ದದಾಸಿ ಯತ್     
ತ್ ತಪಸ್ಯಸಿ ಕೌಂತೇಯ ತತ್ ಕುರುಷ್ವ ಮತ್ ಅರ್ಪಣಮ್-ಕೌಂತೇಯ, ಏನು ಮಾಡುವೆ, ಏನು ತಿನ್ನುವೆ, ಏನು ಹೋಮಿಸುವೆ, ಏನು ನೀಡುವೆ, ಏನು ತಪಗೈವೆ ಅದನು ನನಗೆ ಒಪ್ಪಿಸು.

ಕೃಷ್ಣ ಹೇಳುತ್ತಾನೆ “ನನಗಾಗಿ ನೀನು ಏನನ್ನೂ ಮಾಡುವುದು ಬೇಡ ಆದರೆ ನಿನಗೋಸ್ಕರ ಏನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸು” ಎಂದು. ನಮ್ಮ ನಿತ್ಯ ಜೀವನದಲ್ಲಿ ಮಾಡಬೇಕಾದ ಅನೇಕ ಅನಿವಾರ್ಯ ವೃತ್ತಿ ಕಾರ್ಯಗಳಿರುತ್ತವೆ. ಜೀವನ ನಿರ್ವಹಣೆಯ ಕಾಯಕವಿರುತ್ತದೆ. ನಾವು ಅದನ್ನೇ ಭಗವಂತನ ಪೂಜೆ ಎಂದು ತಿಳಿದು ಮಾಡಬೇಕು. ಇದಕ್ಕೆ ಉತ್ತಮ ದೃಷ್ಟಾಂತ ಧರ್ಮವ್ಯಾಧನ ಕಥೆ. ಮಾಂಸ ವಿಕ್ರಯ ಮಾಡಿ ಜೀವನ ಸಾಗಿಸುತ್ತಿದ್ದ ಆತನಲ್ಲಿ ಒಂದು ಸಂಕಲ್ಪ ಇತ್ತು. “ಮಾಂಸ ತಿನ್ನುವುದು ನನಗೆ ಆನುವಂಶೀಯವಾಗಿ ಬಂದ ಅಭ್ಯಾಸ. ಆದ್ದರಿಂದ ನಾನು ಮಾಂಸ ತಿನ್ನುತ್ತೇನೆ, ನನಗೆ ಬದುಕುವುದಕ್ಕೋಸ್ಕರ ಮತ್ತು ನನ್ನ ತಂದೆತಾಯಿಯನ್ನು ಸಾಕುವುದಕ್ಕೊಸ್ಕರ ನನ್ನ ಪಾಲಿಗೆ ಬಂದ ಈ ವೃತ್ತಿಯನ್ನು ನಾನು ಮಾಡುತ್ತೇನೆ. ಇದರಿಂದ ನನ್ನ ಬದುಕಿಗೆ ಬೇಕಾದಷ್ಟನ್ನು ಮಾತ್ರ ನಾನು ಗಳಿಸುತ್ತೇನೆ. ಎಂದೂ ವ್ಯವಹಾರದಲ್ಲಿ ಜನರ ಶೋಷಣೆ ಮಾಡುವುದಿಲ್ಲ” ಎಂದುಕೊಂಡು ಮಾಂಸ ವಿಕ್ರಯ ಮಾಡುತ್ತಿದ್ದ ಆತ. ಇದರಿಂದ ಆತನಿಗೆ ದೊಡ್ಡ ಜ್ಞಾನಿ ಧರ್ಮವ್ಯಾಧ ಎನ್ನುವ ಹೆಸರು ಬಂತು. ಋಷಿ ಮುನಿಗಳು ಆತನಿಂದ ಪಾಠ ಕಲಿಯುವ ಪ್ರಸಂಗ ಬಂತು. ಇದಕ್ಕೆ ಮೂಲ ಕಾರಣ ಆತ ತಾನು ಏನು ಮಾಡುತ್ತಿದ್ದನೋ ಅದನ್ನು ದೇವರ ಪೂಜೆ ಎಂದು ಮಾಡಿದ ಅಷ್ಟೇ. ಹೀಗೆ ಎಂದೂ ನಾವು ಮಾಡುವ ವೃತ್ತಿ  ಮುಖ್ಯವಾಗುವುದಿಲ್ಲ,  ಬದಲಿಗೆ ಅದನ್ನು ಭಗವಂತನ ಪೂಜೆ ಎಂದು ಮಾಡುವ ಅನುಸಂಧಾನ ಮುಖ್ಯವಾಗುತ್ತದೆ.
ನಿನ್ನ ನಿತ್ಯ ಕರ್ತವ್ಯ ಏನಿದೆ ಅದನ್ನು ಭಗವಂತನಿಗೆ ಅರ್ಪಿಸು. ಅದನ್ನು ಭಗವಂತನ ಪೂಜೆ ಎಂದು ಮಾಡು. ಭಗವಂತನಿಗಾಗಿ ಭಕ್ಷ್ಯ ಭೋಜ್ಯವನ್ನು ಮಾಡುವ ಅಗತ್ಯವಿಲ್ಲ. ನೀನು ಏನನ್ನು ತಿನ್ನುತ್ತೀಯೋ ಅದನ್ನು ಭಗವಂತನಿಗೆ ಅರ್ಪಿಸು. ಹೀಗೆ ಮಾಡಿದಾಗ ಭಗವಂತನ ಆರಾಧನೆ ಪ್ರತ್ಯೇಕವಾಗುವುದಿಲ್ಲ ಮತ್ತು ಕಷ್ಟವಾಗುವುದಿಲ್ಲ. ಭಗವಂತನಿಗಾಗಿ ಯಾವುದೋ ವಿಶೇಷ ಹೋಮ ಹವನ ಮಾಡುವ ಅಗತ್ಯವಿಲ್ಲ. ನೀನು ಏನು ಹೋಮ ಮಾಡುತ್ತೀಯೋ ಅದನ್ನೇ ‘ಅಗ್ನಿ ಅಂತರ್ಗತ ನಾರಾಯಣಾಯ ಇದಮ್ ನ ಮಮ’ ಎಂದು ಅರ್ಪಿಸು.  ಒಬ್ಬ ಹಸಿದ ವ್ಯಕ್ತಿ ಆತನ ಹೊಟ್ಟೆಯಲ್ಲಿ ವೈಶ್ವಾನರ ರೂಪಿ ಭಗವಂತನನ್ನು ಹೊತ್ತು ಬಂದಿದ್ದಾನೆ ಎಂದು ತಿಳಿದು  ಆತನೊಳಗಿರುವ  ವೈಶ್ವಾನರ ಪ್ರಸನ್ನನಾಗಲಿ ಎಂದು ಆ ವ್ಯಕ್ತಿಯನ್ನು ಸತ್ಕಾರ ಮಾಡು. ಇದೇ ಭಗವಂತನ ಮಹಾ ಪೂಜೆ ಎನಿಸುತ್ತದೆ.
ಕೃಷ್ಣ ಹೇಳುತ್ತಾನೆ “ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್” ಎಂದು. ಇಲ್ಲಿ ತಪಸ್ಸು ಎಂದರೆ ‘ಚಿಂತನೆ’ ಅಥವಾ ವೃತಾನುಷ್ಟಾನ. ಉದಾಹರಣೆಗೆ ‘ಸಂಕಷ್ಟಿ’- ಅದನ್ನು ಆಚರಿಸುವಾಗ ಗಣಪತಿ ಅಂತರ್ಗತನಾದ ಭಗವಂತನಿಗೆ ಅರ್ಪಿತವಾಗಲಿ ಎಂದು ಮಾಡು. ಅಲ್ಲಿ ಯಾವುದೇ ಫಲಾಪೇಕ್ಷೆ ಅಹಂಕಾರ ಇಟ್ಟುಕೊಳ್ಳಬೇಡ. ಹೀಗೆ ಯಾವ ಆಚರಣೆಯೂ ಕೂಡಾ ಅಂತತಃ ಪರಮ ಪುರುಷನಾದ ಭಗವಂತನಿಗೆ ಅರ್ಪಿತ ಎಂದು ತಿಳಿದು ಮಾಡಿದಾಗ ಅದು ನಿಜವಾದ ತಪಸ್ಸಾಗುತ್ತದೆ.  ಇಲ್ಲಿ ಅರ್ಜುನನಿಗೆ “ನಿನ್ನ ಕರ್ತವ್ಯ ಕರ್ಮವಾಗಿ ಬಂದಿರುವ ಈ  ಯುದ್ಧವನ್ನೂ ಕೂಡಾ ಭಗವಂತನ ಪೂಜೆಯಾಗಿ ಮಾಡು” ಎನ್ನುವ ಸಂದೇಶವನ್ನು ಈ ಶ್ಲೋಕದ ಮೂಲಕ  ಕೃಷ್ಣ ನೀಡಿದ್ದಾನೆ.